accident
ಬಾಕ್ಸೈಟ್ ಲಾರಿಗಳ ಅಟ್ಟಹಾಸದಿಂದ ಎಕ್ಕುಟ್ಟಿ ಹೋದ ಅಂತರ್ರಾಜ್ಯ ಸಂಪರ್ಕ ರಸ್ತೆ..ಕನ್ಯಾನ-ಮುಗುಳಿ-ಉಪ್ಪಳ ರಸ್ತೆ ದುರವಸ್ಥೆ ಖಂಡಿಸಿ ಸಾರ್ವಜನಿಕರ ಪ್ರತಿಭಟನೆ.
ಬಂಟ್ವಾಳ ತಾಲೂಕು ಕನ್ಯಾನ ಮತ್ತು ಕರೋಪಾಡಿ ಗ್ರಾಮಗಳ ಮೂಲಕ ಹಾದುಹೋಗುವ ಕನ್ಯಾನ-ಮುಗುಳಿ-ಉಪ್ಪಳ ಅಂತರ್ರಾಜ್ಯ ರಸ್ತೆ ಸಂಪೂರ್ಣ ನರಕ ಸದೃಷವಾಗಿದೆ. ಗ್ರಾಮಾಂತರ ರಸ್ತೆಯಲ್ಲಿ ನಿಯಮಬಾಹಿರವಾಗಿ ಹನ್ನೆರಡು, ಹದಿನಾಲ್ಕು, ಹದಿನಾರು ಹಾಗೂ ಇಪ್ಪತ್ತೆರಡು ಚಕ್ರಗಳ ಭಾರೀ ಸರಕು ಸಾಗಾಟದ ಲಾರಿಗಳು ನಲ್ವತ್ತು, ಐವತ್ತು ಟನ್ ಬಾಕ್ಸೈಟ್ ತುಂಬಿಸಿ ಹೊರ ರಾಜ್ಯಗಳಿಗೆ ಸಂಚರಿಸುತ್ತಿವೆ.

ರಸ್ತೆಯಲ್ಲಿ ಓಡಾಡುವ ನಾಗರಿಕರ ಮತ್ತು ವಾಹನ ಸವಾರರ ಪಾಲಿಗೆ ಅಕ್ರಮ ಹಾಗೂ ಸಾರಿಗೆ ನಿಯಮ ಉಲ್ಲಂಘಿಸಿ ಸಂಚರಿಸುತ್ತಿರುವ ಬಾಕ್ಸೈಟ್ ಸಾಗಾಟದ ಯಮದೂತ ಲಾರಿಗಳು ಸಂಕಷ್ಟ ತಂದೊಡ್ಡಿದೆ.
ಈ ಬಗ್ಗೆ ಎಚ್ಚೆತ್ತುಕೊಂಡು ಬಾಕ್ಸೈಟ್ ಲಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಲವು ಬಾರಿ ಮನವಿ ನೀಡಿದ್ಜರು.
ಆದರೆ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಮನವಿಗೆ ಯಾವುದೇ ರೀತಿಯಲ್ಲಿ ಈವರೆಗೂ ಸ್ಪಂದಿಸದ ಕಾರಣ ಇಂದು ಬೆಳಗ್ಗಿನಿಂದ ನೆಲ್ಲಿಕಟ್ಟೆ ಜಂಕ್ಷನಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಹೋರಾಟಗಾರ ಶ್ರೀನಿವಾಸ ಭಟ್ ಕಮ್ಮಾಜೆ, ಮೊಯಿದು ಕುಂಞಿ ಪಾದೆಕಲ್ಲು, ಅಬ್ದುಲ್ ಹಮೀದ್ ಪಾದೆಕಲ್ಲು, ಆನಂದ ಪಾದೆಕಲ್ಲು, ವೆಂಕಟ್ರಮಣ ಭಟ್ ಪಾದೆಕಲ್ಲು, ಸಫಾನ್ ಕರೋಪಾಡಿ, ಕುಂಞಿಮೋನು ಮಂಡಿಯೂರು, ಖಾದರ್ ಕುಕ್ಕಾಜೆ, ರಘುರಾಮ ಶೆಟ್ಟಿ ಕನ್ಯಾನ, ಡಾ. ರಾಮಚಂದ್ರ ಭಟ್ ಮತ್ತು ಗಣೇಶ್ ಭಟ್ ಮಂಡ್ಯೂರು ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಸಹಾಯಕ ಇಂಜಿನಿಯರ್ ಜಗದೀಶ್, ಬಂಟ್ವಾಳ ಪ್ರಾದೇಶಿಕ ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರಾದ ಪ್ರಮೋದ್ ಎಂ.ಭಟ್, ಸಚಿನ್, ಕನ್ಯಾನ ಮತ್ತು ಕರೋಪಾಡಿ ಗ್ರಾಮಗಳ ಗ್ರಾಮ ಪಂಚಾಯತ್ ಅಧ್ಯಕ್ಷರುಗಳು, ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು. ಪ್ರತಿಭಟನಾ ಸಂದರ್ಭ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು.
accident
ಟ್ಯಾಬ್ಲೆಟ್ ಆರಿಫ್ ಹತ್ಯೆ ಪ್ರಕರಣ: ಸಿಸಿಬಿಗೆ ತನಿಖೆ ಹಸ್ತಾಂತರ; ಆರು ಮಂದಿ ಹಂತಕರ ಗುರುತು ಪತ್ತೆ
ಮಂಗಳೂರು: ತೊಕ್ಕೊಟ್ಟು ಫ್ಲೈಓವರ್ ನಲ್ಲಿ ನಡೆದ ರೌಡಿಶೀಟರ್ ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರು ಜನ ಆರೋಪಿಗಳ ಗುರುತು ಪತ್ತೆ ಹಚ್ಚುವಲ್ಲಿ ಪೊಲೀಸ್ ತಂಡ ಯಶಸ್ವಿಯಾಗಿದ್ದು, ಪ್ರಕರಣವನ್ನು ಎಸಿಪಿ ಮತ್ತು ಸಿಸಿಬಿ ತಂಡಕ್ಕೆ ವರ್ಗಾಯಿಸಲಾಗಿದೆ.
ಕೊಲೆ ಪಾತಕಿಗಳ ನಿರಂತರ ಸಂಚಾರದಿಂದಾಗಿ ತಕ್ಷಣವೇ ಬಂಧಿಸಲು ಪೊಲೀಸ್ ತಂಡಕ್ಕೆ ಸವಾಲುಗಳು ಎದುರಾಗಿದ್ದರೂ ಪಾಪಿಗಳ ಚಲನವಲನದ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ.
ಕೊಲೆ ಪ್ರಕರಣದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗವಹಿಸಿದ ಮತ್ತು ಪಾಪಿಗಳಿಗೆ ಪರಾರಿಯಾಗಲು ಸಹಕರಿಸಿ ಆಶ್ರಯ ನೀಡಿದ ಖದೀಮರಿಗೂ ಕಾನೂನಿನ ಉರುಳು ಬಿಗಿಯಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ವಿಚಾರಣೆಯಲ್ಲಿ ಶಂಕಿತರ ಕೈವಾಡ ಸ್ಪಷ್ಟವಾದಲ್ಲಿ ಅಂತಹವರನ್ನು ಕೂಡಾ ಬಂಧಿಸಲಾಗುವುದು ಎಂದು ಕಮಿಷನರ್ ಸ್ಪಷ್ಟವಾಗಿ ಹೇಳಿದ್ದಾರೆ. ಆರೋಪಿಗಳಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುವವರು ಭಾರತೀಯ ನ್ಯಾಯ ಸಂಹಿತೆಯ(BNS)ಕಲಂ 249(a)ಅಡಿಯಲ್ಲಿ (ಅಪರಾಧಿಯನ್ನು ಆಶ್ರಯಿಸುವುದು)ಶಿಕ್ಷೆಗೆ ಒಳಪಟ್ಟವರಾಗುತ್ತಾರೆ ಎಂಬುದನ್ನು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿಯವರು ಪುನರುಚ್ಚರಿಸಿದ್ದಾರೆ. ಯಾವುದೇ ಮುಲಾಜಿಲ್ಲದೇ ಈ ನಿಯಮವನ್ನು ಹಿಂದಿನ ಪ್ರಕರಣಗಳಂತೆಯೇ ಜಾರಿಗೆ ತರಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ನಗರದ ಉಳ್ಳಾಲ ಬಳಿಯ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಶುಕ್ರವಾರ ಮುಂಜಾನೆ ನಡೆದ ರೌಡಿಶೀಟರ್ ಆರಿಫ್ ಅಲಿಯಾಸ್ ‘ಟ್ಯಾಬ್ಲೆಟ್ ಆರಿಫ್’ (46) ಎಂಬಾತನ ಭೀಕರ ಹತ್ಯೆ ಪ್ರಕರಣವು ಕರಾವಳಿಯಲ್ಲಿ ಮತ್ತೆ ಗ್ಯಾಂಗ್ವಾರ್ ಭೀತಿಯನ್ನು ಹುಟ್ಟುಹಾಕಿದೆ. ಈ ಹತ್ಯೆಯ ಹಿಂದೆ ಹಳೆಯ ಸೇಡಿನ ಸಂಚು ಇರುವ ಬಲವಾದ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಹತ್ಯೆಯ ಹಿನ್ನೆಲೆ ಮತ್ತು ಸೇಡಿನ ಆಯಾಮ:
ಪೊಲೀಸ್ ಮೂಲಗಳ ಪ್ರಕಾರ, ಕಳೆದ ವರ್ಷ ನಡೆದಿದ್ದ ಮತ್ತೊಬ್ಬ ರೌಡಿಶೀಟರ್ ‘ಟೋಪಿ ನೌಫಾಲ್’ ಎಂಬಾತನ ಹತ್ಯೆಯ ಘಟನೆಯನ್ನು ಆರಿಫ್ ಮತ್ತು ಆತನ ತಂಡ ಸಂಭ್ರಮಿಸಿತ್ತು ಎಂದು ಹೇಳಲಾಗಿದೆ. ಈ ಸಂಭ್ರಮಾಚರಣೆಯೇ ಈಗ ಆರಿಫ್ ಪ್ರಾಣಕ್ಕೆ ಮುಳುವಾಗಿದೆ ಎನ್ನಲಾಗುತ್ತಿದೆ. ಈದ್ ಹಬ್ಬದ ದಿನದಂದೇ ಗೆಳೆಯನ ಗೋರಿಯ ಮುಂದೆ ನಿಂತು ಸೇಡು ತೀರಿಸಿಕೊಳ್ಳುವ ಶಪಥ ಮಾಡಲಾಗಿತ್ತು ಎಂಬ ಗಂಭೀರ ಮಾಹಿತಿ ತನಿಖೆಯ ವೇಳೆ ಹೊರಬಂದಿದೆ.

ಘಟನೆ ನಡೆದದ್ದು ಹೇಗೆ?
ಶುಕ್ರವಾರ ಮುಂಜಾನೆ ಸುಮಾರು 4 ಗಂಟೆಯ ಸುಮಾರಿಗೆ ಆರಿಫ್ ತನ್ನ ದ್ವಿಚಕ್ರ ವಾಹನದಲ್ಲಿ ಧಕ್ಕೆಯ ಮೀನು ಮಾರುಕಟ್ಟೆಗೆ ತೆರಳುತ್ತಿದ್ದಾಗ, ಕಾರಿನಲ್ಲಿ ಬೆನ್ನಟ್ಟಿಕೊಂಡು ಬಂದ ದುಷ್ಕರ್ಮಿಗಳ ತಂಡ ತೊಕ್ಕೊಟ್ಟು ಫ್ಲೈಓವರ್ ಮೇಲೆ ಆತನ ಗಾಡಿಗೆ ಡಿಕ್ಕಿ ಹೊಡೆದಿದೆ. ಆರಿಫ್ ಕೆಳಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ಮನಸೋಇಚ್ಛೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ತನಿಖೆ ಚುರುಕು:
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಹಲವು ತಂಡಗಳನ್ನು ರಚಿಸಲಾಗಿದೆ. ಸಿಸಿಬಿ ಪೊಲೀಸರು ಈಗಾಗಲೇ ಹಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆಗೆ ಬಳಸಲಾದ ಕಾರನ್ನು ಬಂಟ್ವಾಳದ ಬುಡೋಳಿ ಬಳಿ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.
ಈ ಹತ್ಯೆಯು ಮಂಗಳೂರು ನಗರದಲ್ಲಿ ಮತ್ತೆ ಗ್ಯಾಂಗ್ಗಳ ನಡುವಿನ ಸಂಘರ್ಷಕ್ಕೆ ನಾಂದಿ ಹಾಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
accident
ರೌಡಿ ಶೀಟರ್ ಆರಿಫ್ ಹಂತಕರ ಬೆನ್ನಟ್ಟಿದ ಪೊಲೀಸರು! ರಕ್ತಸಿಕ್ತ ಕಾರು ವಶಕ್ಕೆ
ರೌಡಿ ಶೀಟರ್ ಆರೀಫ್ ಹತ್ಯೆಯ ಹಂತಕರ ಕಾರನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ವಶಕ್ಕೆ ಪಡೆಯುವ ಮೂಲಕ ಹಂತಕರ ಜಾಡನ್ನು ಪತ್ತೆಹಚ್ಚಿದ್ದಾರೆ.
ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಇಂದು ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಆರಿಫ್ ಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿರುವ ಮಂಗಳೂರು ಪೊಲೀಸರು, ಹಂತಕರ ಕುರಿತು ಮಹತ್ವದ ಸುಳಿವು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾಗುವ ಮುನ್ನವೇ ಸಂಚು ರೂಪಿಸಿದ್ದ ಹಂತಕರು, ಆರಿಫ್ನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಬಿಳಿ ಬಣ್ಣದ ಇನ್ನೋವಾ ಕಾರಿನಲ್ಲಿ (ಕೆಎಲ್86ಬಿ 6645 ) ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೂಲಕ ಅತಿ ವೇಗವಾಗಿ ಪರಾರಿಯಾಗಿದ್ದರು.

ವಿಟ್ಲದಲ್ಲಿ ಹಂತಕರ ಕಾರು ಪತ್ತೆ
ಹಂತಕರ ಬೆನ್ನಟ್ಟಿದ ಪೊಲೀಸರಿಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊದಲ ಯಶಸ್ಸು ಸಿಕ್ಕಿದೆ. ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಹಂತಕರು ಬಳಸಿದ್ದ ಇನ್ನೋವಾ ಕಾರನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆದರೆ, ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ ಆರೋಪಿಗಳು ಕಾರನ್ನು ಅಲ್ಲಿಯೇ ಬಿಟ್ಟು ಆಟೋ ರಿಕ್ಷಾವೊಂದರಲ್ಲಿ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆಟೋದಲ್ಲಿ ಒಟ್ಟು ಆರು ಜನ ಹಂತಕರು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ವಿಟ್ಲ ಮತ್ತು ಮಂಗಳೂರು ಪೊಲೀಸರ ಜಂಟಿ ತಂಡಗಳು ಈಗ ಸಂಭವನೀಯ ಅಡಗುದಾಣಗಳ ಮೇಲೆ ನಿಗಾ ಇಟ್ಟಿವೆ. ಹಂತಕರು ಯಾವ ದಿಕ್ಕಿನತ್ತ ಸಾಗಿದ್ದಾರೆ ಎಂಬ ಬಗ್ಗೆ ಸಿಸಿಟಿವಿ ಹಾಗೂ ಸ್ಥಳೀಯ ಆಟೋ ಚಾಲಕರ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವನ್ನು ಪೊಲೀಸ್ ಇಲಾಖೆ ವ್ಯಕ್ತಪಡಿಸಿದೆ.

ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಹತ್ಯೆ ಸುದ್ದಿ ಬರುತ್ತಿದ್ದಂತೆ ಜಿಲ್ಲೆಯ ಪೊಲೀಸರು ಎಚ್ಚೆತ್ತುಕೊಂಡು ಎಲ್ಲಾ ಕಡೆ ಹದ್ದಿನ ಕಣ್ಣು ಇಟ್ಟಿದ್ದರು. ಇದೇ ಸಂದರ್ಭ ರಾಷ್ಟ್ರೀಯ ಹೆದ್ದಾರಿಯ ಮಾಣಿ-ಉಪ್ಪಿನಂಗಡಿ ರಸ್ತೆಯ ಬುಡೋಳಿ ಎಂಬಲ್ಲಿ ಮುಂಜಾನೆ ಹೊತ್ತು ಇನ್ನೋವಾ ಕಾರಿನಲ್ಲಿ ಬಂದ ಆರು ಜನ ಸ್ಥಳೀಯ ಆಟೋ ಚಾಲಕನ ಎಬ್ಬಿಸಿ ಕಾರು ಕೆಟ್ಟು ಹೋಗಿದೆ ಎಂಬ ಕಾರಣ ನೀಡಿ ಆಟೋದಲ್ಲಿ ಬಿಡುವಂತೆ ಹೇಳಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಕಾರು ನಿಂತಿರುವ ಬಗ್ಗೆ ಮಾಹಿತಿ ಪಡೆದ ವಿಟ್ಲ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ತನ್ನ ತಂಡದೊಂದಿಗೆ ತೆರಳಿ ಸೂಕ್ತ ಬಂದೋಬಸ್ತ್ ಏರ್ಪಡಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಇದೀಗ ಸ್ಥಳಕ್ಕೆ ಬೆರಳಚ್ಚು ತಜ್ಞರು, ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ
accident
ತೊಕ್ಕೊಟ್ಟು ಫ್ಲೈಓವರ್ ಮೇಲೆ ರೌಡಿಶೀಟರ್ ಆರಿಫ್ ಭೀಕರ ಹತ್ಯೆ: ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಶುಕ್ರವಾರ ಮುಂಜಾನೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದ ವ್ಯಕ್ತಿಯನ್ನು ತಲಪಾಡಿಯ ಮುಳ್ಳುಗುಡ್ಡೆ ಹೌಸ್ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ. ಧಕ್ಕೆಯಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದ ಆರಿಫ್, ಪ್ರತಿದಿನದಂತೆ ಇಂದು ಮುಂಜಾನೆ ತನ್ನ ಬೈಕ್ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಇಂದು ದುಷ್ಕರ್ಮಿಗಳು ಆರಿಫ್ ಗಾಗಿ ಫೈಓವರ್ ಮೇಲೆಯೇ ಕಾಯುತ್ತ ಕುಳಿತಿದ್ದು, ಆರಿಫ್ ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಅಡ್ಡಗಟ್ಟಿ, ಬಳಿಕ ತಲೆ ಭಾಗಕ್ಕೆ ಗಂಭೀರವಾಗಿ ಕಡಿದು ಕೊಲೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್ನಲ್ಲಿ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದಾಗ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅತಿ ವೇಗವಾಗಿ ಬಂದು ಬೈಕ್ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಆರಿಫ್ ರಸ್ತೆಗೆ ಬೀಳುತ್ತಿದ್ದಂತೆ, ಕಾರಿನಿಂದ ಇಳಿದು ಬಂದ ತಂಡವು ತಲವಾರ್ ಸೇರಿದಂತೆ ಮಾರಕಾಸ್ತ್ರಗಳಿಂದ ತಲೆ ಮತ್ತು ದೇಹದ ಭಾಗಕ್ಕೆ ಮನಬಂದಂತೆ ಕಡಿದು ಸಿನಿಮೀಯ ರೀತಿಯಲ್ಲಿ ಕೊಲೆಗೈದು ಪರಾರಿಯಾಗಿದೆ. ತೀವ್ರ ರಕ್ತಸ್ರಾವದಿಂದಾಗಿ ಆರಿಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪರಾಧ ಪ್ರಕರಣಗಳಲ್ಲಿ ತೊಡಗಿಸಿ ಕೊಂಡಿದ್ದ ಆರಿಫ್ ನನ್ನು ವೈಯಕ್ತಿಕ ದ್ವೇಷ ದಿಂದ ಹತ್ಯೆ ಗೈದಿರುವ ಶಂಕೆ ವ್ಯಕ್ತ ಪಡಿಸಿದ್ದಾರೆ.ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲ ಯಾವುದೇ ಪ್ರಕರಣಗಳಿರಲಿಲ್ಲ.

2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಆತನ ಮೇಲೆ ಒಮ್ಮೆ ಕೊಲೆ ಯತ್ನ ನಡೆದಿತ್ತು, ಆ ಪ್ರಕರಣದಲ್ಲಿ ನೌಫಾಲ್ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದರು. ಹಳೆಯ ವೈಯಕ್ತಿಕ ದ್ವೇಷವೇ ಈ ಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.’ ಹತ್ಯೆಗೆ ಸ್ಪಷ್ಟ ಕಾರಣ ಏನೆಂಬುದು ಪೊಲೀಸರ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಸದ್ಯಕ್ಕೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

-
crime1 day agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
