Connect with us

crime

ಕೋಳಿಜೂಜಿನಲ್ಲಿ 1.53 ಕೋಟಿ ಬಾಚಿದ ರಮೇಶ್

Published

on

ಇದೀಗ ಎಲ್ಲಿ ಹೋದರೂ ಕೋಳಿಅಂಕದ್ದೇ ಸುದ್ದಿ.. ಜೂಜು ರಹಿತವೋ ಸಹಿತವೋ ಕೋಳಿ ಅಂಕ ನಡೆಸುವಂತಿಲ್ಲ.. ಪ್ರಾಣಿಹಿಂಸೆ ಹೆಸರಿನಲ್ಲಿ ತಡೆಯಿದೆ. ಕರಾವಳಿಯಲ್ಲಿ ಇನ್ನು ಕೋಳಿ ಅಂಕ ನಡೆಸುವುದು ಸಾಧ್ಯವೇ ಇಲ್ಲ ಎಂದು ಕದ್ದು ಮುಚ್ಚಿ ಮಜಾ ಪಡೆಯುತ್ತಾ ಆ ವಿಚಾರವನ್ನು ಜನ ಬಿಟ್ಟೇ ಬಿಟ್ಟಿದ್ದಾರೆ. ಈ ಮದ್ಯೆ ಕೋಳಿ ಅಂಕದ ಜೂಜಿನಲ್ಲಿ ಒಬ್ಬರು ಬರೋಬ್ಬರಿ 1.53 ಕೋಟಿ ಪಡೆದುಕೊಂಡ ಸುದ್ದಿಯೊಂದು ಹರಿದಾಡುತ್ತಿದ್ದು, ಕಾನೂನು ಪಾಲಕರು ಅವರ ಹಿಂದೆ ಬಿದ್ದಿದ್ದಾರೆ.
ತಾಡೇಪಲ್ಲಿಗುಡೆಮ್ ಪಟ್ಟಣದ ಕೋಳಿ ಕಾಳಗದಲ್ಲಿ ರಾಜಮಂಡ್ರಿ ರಮೇಶ್ ಎಂಬವರೇ ಕೋಳಿ ಅಂಕದಲ್ಲಿ ಪಣಕಟ್ಟಿ 1.53 ಕೋಟಿ ರೂ. ಗೆದ್ದ ಉದ್ಯಮಿ. . ಕಾನೂನು ನಿಷೇಧದ ನಡುವೆಯೂ ಆಂದ್ರದಲ್ಲಿ ಹಬ್ಬದ ವೇಳೆ ಕೋಳಿ ಮತ್ತು ಎಮ್ಮೆ ಕಾಳಗಗಳು ನಡೆಯುತ್ತಲೇ ಇದೆ

ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಸಂಕ್ರಾoತಿ ಹಬ್ಬದ ಸಂದರ್ಭದಲ್ಲಿ ಆಯೋಜಿಸಲಾದ ಕೋಳಿ ಅಂಕದಲ್ಲಿ ವ್ಯಕ್ತಿಯೊಬ್ಬ1.53 ಕೋಟಿ ರೂ.ಗಳನ್ನು ಗೆದ್ದಿರುವ ಘಟನೆ ನಡೆದಿದ್ದು, ಈ ಮೊತ್ತವು ಕೋಳಿ ಅಂಕದ ಇತಿಹಾಸದಲ್ಲೇ ಅತೀ ಹೆಚ್ಚಿನ ಮೊತ್ತವಾಗಿ ದಾಖಲೆಯಾಗಿದೆ. ತಾಡೇಪಲ್ಲಿಗುಡೆಮ್ ಪಟ್ಟಣದಲ್ಲಿ ನಡೆದ ಈ ಜೂಜಿನಲ್ಲ್ಲಿ ರಾಜಮಂಡ್ರಿ ರಮೇಶ್ (Rajamandri Ramesh) ಎಂಬ ವ್ಯಕ್ತಿ ತನ್ನ ಕೋಳಿಯ ಮೂಲಕ ಕೋಟ್ಯಾಧಿಪತಿಯಾಗಿದ್ದಾರೆ.
ಸಂಕ್ರಾoತಿ ಹಬ್ಬದ ಆಚರಣೆಗಳ ಭಾಗವಾಗಿ ಆಯೋಜಿಸಲಾದ ಈ ಕೋಳಿ ಅಂಕದಲ್ಲಿ ರಮೇಶ್ ಮತ್ತು ಗುಡಿವಾಡ ಪ್ರಭಾಕರ್ ಎಂಬವರು ತಮ್ಮ ಕೋಳಿಗಳ ಮೇಲೆ ಭಾರೀ ಮೊತ್ತದ ಪಣ ತೊಟ್ಟಿದ್ದರು. ಹೋರಾಟಕ್ಕೆ ಬಳಸಲಾದ ಕೋಳಿಗಳ ಕಾಲುಗಳಿಗೆ ಸಣ್ಣ ಚೂರಿಗಳನ್ನು ಕಟ್ಟಲಾಗಿದ್ದು, ಈ ಹೋರಾಟದಲ್ಲಿ ರಮೇಶ್ ಅವರ ಕೋಳಿ ಗೆಲ್ಲುವ ಮೂಲಕ ವರ ಅಂಕದ ಕೋಳಿ ವಿಜಯಶಾಲಿಯಾಗಿ ಹೊರಹೊಮ್ಮಿ 1.53 ಕೋಟಿ ರೂ.ಗಳ ಮೊತ್ತವನ್ನು ಗೆಲ್ಲುವಂತೆ ಮಾಡಿದೆ.


ವಿಜಯದ ಬಳಿಕ ಮಾತನಾಡಿದ ರಮೇಶ್, “ನನ್ನ ಕೋಳಿಗಳನ್ನು ಹೋರಾಟಕ್ಕೆ ತಯಾರಿಸಲು ಕಳೆದ ಆರು ತಿಂಗಳುಗಳಿoದ ವಿಶೇಷ ಕಾಳಜಿ ವಹಿಸಿದ್ದೇನೆ. ಉತ್ತಮ ಆಹಾರ, ವ್ಯಾಯಾಮ ಮತ್ತು ವಿಶೇಷ ತಳಿಯ ಆಯ್ಕೆಯೇ ನನ್ನ ಗೆಲುವಿನ ರಹಸ್ಯ” ಎಂದು ತಿಳಿಸಿದ್ದಾರೆ. ಈ ಗೆಲುವಿನೊಂದಿಗೆ ರಮೇಶ್ ತಕ್ಷಣವೇ ಕೋಟ್ಯಾಧಿಪತಿಯಾಗಿದ್ದು, ಅವರ ಮನೆ ಮುಂದೆ ಜನಸಂದಣಿ ಜಮಾಯಿಸಿದ ದೃಶ್ಯಗಳು ಕಂಡುಬoದವು.
ವನ್ಯಜೀವಿ ಸಂರಕ್ಷಣಾ ಹಕ್ಕು ಸಂಘಟನೆಗಳ ಆಕ್ರೋಶ!
ಆದರೆ, ಈ ಘಟನೆಯು ಕೇವಲ ಸಂಭ್ರಮಕ್ಕೆ ಮಾತ್ರ ಸೀಮಿತವಾಗಿಲ್ಲ. ಕೋಳಿ ಕಾಳಗವು ಪ್ರಾಣಿ ಹಿಂಸೆ ಮತ್ತು ಜೂಜಿನ ರೂಪವಾಗಿದ್ದು, ಇದು ಕಾನೂನಾತ್ಮಕವಾಗಿ ನಿಷೇಧಿತ ಎಂಬ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಗುರುವಾರ ಸತತ ಎರಡನೇ ದಿನವೂ ಆಂಧ್ರಪ್ರದೇಶದ ಹಲವಾರು ಭಾಗಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಕೋಳಿ ಅಂಕಗಳು ನಡೆದಿರುವ ವರದಿಗಳು ಹೊರಬಿದ್ದಿವೆ. ಹಬ್ಬದ ಹೆಸರಿನಲ್ಲಿ ಕಾನೂನು ಉಲ್ಲಂಘನೆ ನಡೆಯುತ್ತಿರುವುದರ ಬಗ್ಗೆ ಪ್ರಾಣಿ ಹಕ್ಕು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಕೋರ್ಟ್ ನಿಷೇಧವಿದ್ದರೂ ಆಟ ಜಾರಿ!
ಇದೇ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ನಿಷೇಧ ಹೇರಿದ್ದರೂ ಅಸ್ಸಾಂನಲ್ಲಿಯೂ ಇಂತಹದ್ದೇ ಘಟನೆಗಳು ನಡೆದಿರುವುದು ಗಮನಾರ್ಹ. ಮಾಘ ಬಿಹು ಹಬ್ಬದ ಅಂಗವಾಗಿ ಮಧ್ಯ ಅಸ್ಸಾಂನ ಮೋರಿಗಾಂವ್ ಜಿಲ್ಲೆಯ ಬೈದ್ಯಾಬೋರಿ ಮತ್ತು ಅಹತ್ಗುರಿ ಪ್ರದೇಶಗಳಲ್ಲಿ ಸಾಂಪ್ರದಾಯಿಕ ಎಮ್ಮೆ ಕಾಳಗಗಳು ನಡೆದಿವೆ. ಸ್ಥಳೀಯವಾಗಿ ‘ಮೊಹ್ ಜುಜ್’ ಎಂದು ಕರೆಯಲ್ಪಡುವ ಈ ಕಾಳಗಗಳನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳಿಂದ ಜನರು ಆಗಮಿಸಿದ್ದರು ಎಂದು ಪಿಟಿಐ ವರದಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ಅಧಿಕಾರಿಗಳು ನಿರಾಕರಿಸಿದ್ದು, “ವಿಷಯ ನ್ಯಾಯಾಲಯದಲ್ಲಿ ಬಾಕಿ ಇದೆ” ಎಂದು ಮಾತ್ರ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ನಡುವೆಯೂ ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ಆಡಳಿತದ ಮೇಲೆ ಪ್ರಶ್ನಾರ್ಥಕ ಚಿಹ್ನೆ ಎಳೆದಿದೆ.
ಸುಪ್ರೀಂ ಕೋರ್ಟ್ ಆದೇಶದ ನಡುವೆಯೂ ಕೋಳಿಜೂಜುಗಳು ಅವ್ಯಾಹಿತವಾಗಿ ನಡೆದಿರುವ ಬಗ್ಗೆ ಸಂಘಟನೆಗಳು ಇನ್ನಷ್ಟು ಆಕ್ರೋಶಿತರಾಗಿದ್ದು, ಕೋಳಿ ಅಂಕವನ್ನು ಕಾನೂನಾತ್ಮಕವಾಗಿ ನಿಷೇಧ ಮತ್ತು ದಂಡ ವಿಧಿಸಲು ಆಡಳಿತದ ವಿರುದ್ಧ ಹೋರಾಟ ಮುಂದುವರಿಯುವ ಸಾಧ್ಯತೆ ಕಂಡುಬರುತ್ತಿದೆ.

Continue Reading
Advertisement

Belthangady

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಬೆಳ್ತಂಗಡಿಯಲ್ಲಿ ಸಿಐಡಿ ತನಿಖೆ ಆರಂಭ

Published

on

ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಅತ್ಯಾಚಾರ ಹಾಗೂ ಸುಲಿಗೆ ಆರೋಪದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಚುರುಕುಗೊಳಿಸಿದೆ. ಇಂದು ಸಿಐಡಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಆಗಮಿಸಿ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸುವ ಮೂಲಕ ಅಧಿಕೃತವಾಗಿ ತನಿಖೆ ಆರಂಭಿಸಿದೆ.

ಪ್ರಕರಣದ ಹಿನ್ನೆಲೆ:
ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ಪ್ರಾಂಶುಪಾಲರೊಬ್ಬರು ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2020 ರಿಂದ 2023ರ ಅವಧಿಯಲ್ಲಿ ಜಮೀನು ವಿವಾದವೊಂದರ ವಿಚಾರಣೆಯ ನೆಪದಲ್ಲಿ ತನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಕೇಸ್ ಮರುಚಾಲನೆ ಮಾಡುವ ಬೆದರಿಕೆ ಹಾಕಿ ಸುಮಾರು 16 ಲಕ್ಷ ರೂ. ನಗದು, 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮನೆ ನಿರ್ಮಾಣಕ್ಕಾಗಿ ತೇಗದ ಮರದ ದಿಮ್ಮಿಗಳನ್ನು ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.

ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸೂಚನೆಯಂತೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಈಗಾಗಲೇ ಸಂದೇಶ್ ಪಿ.ಜಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಮಾರ್ಚ್‌ 25ರಂದು ವೇಣೂರು ಪೊಲೀಸ್‌ ಠಾಣೆಯಿಂದ ಬೆಂಗಳೂರು ಸಿಐಡಿ ಕಚೇರಿಗೆ ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸಿದ್ದು, ಸಿಐಡಿ ಡಿವೈಎಸ್‌ಪಿ ನೇತೃತ್ವದ ತಂಡವು ಮಾರ್ಚ್‌ 31ರಂದು ಸಂಜೆ ನಾರಾವಿ ಐಬಿಗೆ ಆಗಮಿಸಿದೆ. ಇಂದು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಸಿಐಡಿ ತಂಡವು ಸಂತ್ರಸ್ತೆಯ ಹೇಳಿಕೆ ಪಡೆಯುವುದು, ಸ್ಥಳಗಳ ಪರಿಶೀಲನೆ ಹಾಗೂ ಸಾಕ್ಷ್ಯಾಧಾರಗಳ ಸಂಗ್ರಹಣೆಯ ಮೇಲೆ ತನಿಖೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಸಂತ್ರಸ್ತರು ಇದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಸಲಿದೆ.

Continue Reading

accident

ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು; ಚಾಲಕ, ನಿರ್ವಾಹಕನ ವಿರುದ್ಧ ಕೇಸ್ ದಾಖಲು

Published

on

ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ: ಮಾರ್ಚ್ 31ರಂದು ಬೆಳಗ್ಗೆ ಕಳಿಯ ಗ್ರಾಮದ ನಿವಾಸಿಗಳಾದ ಚರಿಷ್ಮಾ (17) ಮತ್ತು ಚದ್ಮಕಾ (15) ಎಂಬ ಸಹೋದರಿಯರು ಎಂದಿನಂತೆ ಕಾಲೇಜಿಗೆ ಹೋಗಲು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಕಳಿಯದಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿತ್ತು. ಗೇರುಕಟ್ಟೆ ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಬಾಗಿಲು ದಿಢೀರನೆ ತೆರೆದುಕೊಂಡಿದ್ದು, ಬಾಗಿಲ ಬಳಿಯಿದ್ದ ಇಬ್ಬರೂ ವಿದ್ಯಾರ್ಥಿನಿಯರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.

ರಸ್ತೆಗೆ ಬಿದ್ದ ಪರಿಣಾಮ ಇಬ್ಬರೂ ಸಹೋದರಿಯರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಜಾಗರೂಕತೆಯ ಆರೋಪ: ಬಸ್ ಚಾಲಕ ದಯಾನಂದ ಅವರು ವಾಹನವನ್ನು ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಮತ್ತು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯ ಲೋಪವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೆಕ್ಷನ್ 281: ಅಜಾಗರೂಕ ಚಾಲನೆ. ಸೆಕ್ಷನ್ 125: ಜೀವಕ್ಕೆ ಅಪಾಯ ತರುವಂತಹ ನಿರ್ಲಕ್ಷ್ಯದ ಕೃತ್ಯ.ಸೆಕ್ಷನ್ 125(a): ನಿರ್ಲಕ್ಷ್ಯದಿಂದ ಗಾಯ ಉಂಟುಮಾಡುವುದು.ಸೆಕ್ಷನ್‌ಗಳ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ:

ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತೆಯ ಕೊರತೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

crime

ಪೊಲೀಸ್ ಭೇಟೆ: ದೇವಸ್ಥಾನದ ಕಳ್ಳ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

Published

on

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜಪೆ ಮತ್ತು ಉರ್ವಾ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೇವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ್ದ ಅಂತರರಾಜ್ಯ ಕಳ್ಳ ಹಾಗೂ ಕಳೆದ 9 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಂಜಾರು ದೇವಸ್ಥಾನದ ಹುಂಡಿ ಕಳವು: ತಮಿಳುನಾಡು ಮೂಲದ ಆರೋಪಿ ಅರೆಸ್ಟ್
ಮಾರ್ಚ್ 3ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು, ಮೂರು ಕಾಣಿಕೆ ಹುಂಡಿಗಳಿಂದ ಸುಮಾರು ರೂ. 25,000/- ಹಣವನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಬಜಪೆ ಪೊಲೀಸರು ಮಾರ್ಚ್ 31ರಂದು ಅಂತರರಾಜ್ಯ ಕಳ್ಳ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಎಂಬಾತನನ್ನು ಬಂಧಿಸಿದ್ದಾರೆ.
ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿಯಾದ ಈತ, ರೈಲಿನಲ್ಲಿ ಬಂದು ಕಳ್ಳತನ ನಡೆಸಿ ತಮಿಳುನಾಡಿಗೆ ಪರಾರಿಯಾಗುತ್ತಿದ್ದ. ಈತ ಉಡುಪಿಯ ಬ್ರಹ್ಮಾವರ ಠಾಣೆಯ ಕಳವು ಪ್ರಕರಣ ಹಾಗೂ ಪಣಂಬೂರು ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆ ಪ್ರದೇಶದಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲೂ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಬಜಪೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ಈ ಕಾರ್ಯಾಚರಣೆ ನಡೆಸಿದ್ದಾರೆ.

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮುಂಬೈನಲ್ಲಿ ಸೆರೆ
ಮತ್ತೊಂದು ಪ್ರಕರಣದಲ್ಲಿ, ದರೋಡೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್.ಪಿ.ಸಿ (LPC) ವಾರಂಟ್ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಶೋಕ ನಗರದ ನಿವಾಸಿ ಸುಹಾನ್ @ ಸೋನು (33) ಬಂಧಿತ ಆರೋಪಿ.
ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು. ಮಾರ್ಚ್ 29ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಬೀಡುಬಿಟ್ಟಿದ್ದ ಆರೋಪಿಯನ್ನು ಉರ್ವಾ ಎಎಸ್ಐ ಲಕ್ಷ್ಮಣ್ ಮತ್ತು ತಂಡ ಪತ್ತೆಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ. ಈತನ ಮೇಲೆ ಉರ್ವಾ ಮತ್ತು ಮಂಗಳೂರು ಉತ್ತರ ಠಾಣೆಗಳಲ್ಲಿ ದರೋಡೆ ಸಂಚು ಹಾಗೂ ಹಲ್ಲೆಗೆ ಸಂಬಂಧಿಸಿದಂತೆ ಮೂರು ಪ್ರಮುಖ ಪ್ರಕರಣಗಳು ದಾಖಲಾಗಿವೆ.

ಬಂಧಿತ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸರ ಈ ಚುರುಕಿನ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

Trending

Copyright © 2025 Deevatige