crime
ವಿದ್ಯಾರ್ಥಿಯೊಬ್ಬನ ತಂದೆಯಿಂದ ಸಹಪಾಠಿ ವಿದ್ಯಾರ್ಥಿ, ಶಿಕ್ಷಕ ಮತ್ತು ಪೋಷಕರಿಗೆ ಧಮ್ಕಿ, ಕಿರುಕುಳ..ಹಾರಾಡಿ ಸರ್ಕಾರಿ ಶಾಲಾ ವಿದ್ಯಾರ್ಥಿ ಪೋಷಕನ ವಿರುದ್ಧ ಕ್ರಮಕೈಗೊಳ್ಳಲು ಶಾಸಕ ಅಶೋಕ್ ರೈಗೆ ಮನವಿ.
ಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲಾ ವಿದ್ಯಾರ್ಥಿಯೊಬ್ಬನ ತಂದೆ ಶಾಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಕಿರುಕುಳ,ಜೀವ ಬೆದರಿಕೆಯೊಡ್ಡಿ ಧಮ್ಕಿ ಹಾಕುತ್ತಿರುವ ಬಗ್ಗೆ ಶಿಕ್ಷಕರು ಹಾಗೂ ಪೋಷಕರು ಶಾಸಕ ಅಶೋಕ್ ರೈ ಬಳಿ ನ್ಯಾಯ ನೀಡುವಂತೆ ಮನವಿ ಮಾಡಿದ್ದಾರೆ.

“ನೀಲ್ ನಿಖಿಲ್ ಎಂಬ ವಿದ್ಯಾರ್ಥಿಯಾದ ನಾನು ಸ.ಮಾ.ಉ.ಹಿ.ಪ್ರ. ಶಾಲೆ ಹಾರಾಡಿ ಶಾಲೆಯ 7ನೇ ಬಿ ತರಗತಿಯಲ್ಲಿ ಕಲಿಯುತ್ತಿದ್ದೇನೆ. ನನ್ನ ತರಗತಿಯ ವಿದ್ಯಾರ್ಥಿಯಾದ ಯಶಸ್ ಎಂಬಾತ ಕಾರಣವಿಲ್ಲದೆ ನನ್ನ ಜೊತೆ ಜಗಳ ತೆಗೆಯುತ್ತಿದ್ದಾನೆ. ನಾನು ಅವನ ಜೊತೆ ಯಾವುದೇ ರೀತಿಯ ಜಗಳ ಮಾಡಿರುವುದಿಲ್ಲ. ಹೀಗಿದ್ದರೂ ಆತನ ತಂದೆಯಾದ ಅಣ್ಣು ಎಂಬವರು ತರಗತಿ ಬಿಡುವ ಸಮಯದಲ್ಲಿ ಶಾಲಾ ಸಮೀಪ ಕಾದು ಕುಳಿತು ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ “ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ನಿನ್ನನ್ನು ಕೊಲೆ ಮಾಡುತ್ತೇನೆ” ಎಂದು ಬೆದರಿಕೆ ಹಾಕಿರುತ್ತಾನೆ. ಇದರಿಂದ ನಾನು ಮಾನಸಿಕವಾಗಿ ಕುಗ್ಗಿದ್ದು ಶಾಲೆಯ ಕಡೆಗೆ ಹೋಗಲು ಮನಸ್ಸಿರುವುದಿಲ್ಲ. ನನ್ನ ಪೋಷಕರು ಇವನ ಚಿತ್ರಹಿಂಸೆ ತಾಳಲಾರದೆ ಮನೆಯನ್ನು ಕೂಡಾ ಬದಲಾಯಿಸಿರುತ್ತಾರೆ.

ಆಗಸ್ಟ್ 15/2025ರಂದು ಸ್ವಾತಂತ್ರೋತ್ಸವ ಕಾರ್ಯಕ್ರಮದಂದು ನನ್ನ ತಾಯಿಯ ಬಳಿ ನಾನು ಯಾರಿಗೂ ಹೆದರುವುದಿಲ್ಲ, ನಿಮ್ಮ ಮಗನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವರಿಗೂ ಕೂಡಾ ಶಾಲೆಯಲ್ಲಿಯೇ ಬೆದರಿಕೆ ಹಾಕಿರುತ್ತಾನೆ. ನನ್ನ ತಂದೆ ತಾಯಿ ಕೂಲಿ ಮಾಡಿ ಮಗನ ವಿದ್ಯೆಗೋಸ್ಕರ ಸರಕಾರಿ ಶಾಲೆಯನ್ನೇ ಆಶ್ರಯಿಸಬೇಕಾಗಿರುವುದು ಅನಿವಾರ್ಯವಾಗಿದೆ. ಆದ್ದರಿಂದ ನನ್ನ ಪೋಷಕರು ಹಾಗೂ ನನಗೂ ಶಾಲೆಗೆ ಬರಲು ತುಂಬಾ ಭಯವಾಗುತ್ತಿದೆ. ಬೇರೆ ವಿದ್ಯಾರ್ಥಿಗಳೊಡನೆ ಸುಮ್ಮನೆ ಜಗಳ ತೆಗೆದು ನನ್ನನ್ನೇ ಟಾರ್ಗೆಟ್ ಮಾಡಿ ಅವರಲ್ಲಿಯೂ “ಅವನನ್ನು ಸುಮ್ಮನೆ ಬಿಡುವುದಿಲ್ಲ” ಎಂದು ಹೇಳಿರುತ್ತಾರೆ. ಹಾಗೆಯೇ ಶಾಲಾ ಇತರ ಮಕ್ಕಳಲ್ಲಿಯೂ ಟೀಚರ್ ಗಳ ಹೆಸರು, ವಿಳಾಸ, ಮೊಬೈಲ್ ನಂಬರುಗಳನ್ನು ಕೇಳುವುದು. ಎಲ್ಲರನ್ನು ದುರುಗುಟ್ಟಿಕೊಂಡು ನೋಡುವುದು, ಅಪ್ಪಣೆಯಿಲ್ಲದೆ ನೇರವಾಗಿ ತರಗತಿಗೆ ಬಂದು ಮಕ್ಕಳಲ್ಲಿ ಪ್ರಶ್ನಿಸುವುದು ಹೀಗೆಲ್ಲಾ ಮಾಡುವಾಗ ನನಗೆ ಹೆದರಿಕೆಯಾಗುತ್ತದೆ. ನಾನು ಒಳ್ಳೆಯ ರೀತಿಯಲ್ಲಿ ಕಲಿತು ನನ್ನ ಪೋಷಕರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗಿದ್ದು ಇದೇ ರೀತಿ ಮುಂದುವರಿದರೆ ನನ್ನ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಬೇಕಾಗಬಹುದು ಎಂಬ ಆತಂಕ ಎದುರಾಗಿದೆ. ಇದರಿಂದಾಗಿ ನನ್ನ ಭವಿಷ್ಯವೇ ಹಾಳಾಗಬಹುದು. ನನಗೆ ಮತ್ತು ನನ್ನ ಮನೆಯವರ ಜೀವಕ್ಕೆ ತೊಂದರೆ ಏನಾದರೂ ಆದರೆ ಅದಕ್ಕೆ ನೇರ ಹೊಣೆ ಅಣ್ಣು ಅವರೇ ಆಗಿರುತ್ತಾರೆ. ಆದ್ದರಿಂದ ಅವರನ್ನು ಸಮಗ್ರವಾಗಿ ವಿಚಾರಿಸಿ ನನಗೆ ನ್ಯಾಯವನ್ನು, ಸೂಕ್ತ ಭದ್ರತೆಯನ್ನು ಹಾಗೂ ನನ್ನ ಶಿಕ್ಷಣವನ್ನು ಮುಂದುವರಿಸಲು ನನಗೆ ಶಾಲೆಯಲ್ಲಿ ಕಲಿಕೆಗೆ ಉತ್ತಮ ವಾತಾವರಣವನ್ನು ಕಲ್ಪಿಸಿ ಕೊಡಬೇಕಾಗಿ ತಮ್ಮಲ್ಲಿ ಕೈ ಮುಗಿದು ಬೇಡಿಕೊಳ್ಳುತ್ತೇನೆ ಎಂದು ಶಾಸಕರಿಗೆ ನೀಡಿದ ಮನವಿಯಲ್ಲಿ ತಿಳಿಸಲಾಗಿದೆ.

ಕಾನೂನು ಕ್ರಮಕ್ಕೆ ಶಾಸಕರ ಸೂಚನೆ:
ಘಟನೆಯ ಬಗ್ಗೆ ಶಾಸಕರು ಮಹಿಳಾ ಠಾಣೆಯ ಇನ್ಸ್ ಪೆಕ್ಟರ್ ಸುನಿಲ್ ರವರಿಗೆ ಕರೆ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕೈಗೊಳ್ಳಬೇಕು. ಬೆದರಿಕೆ ಹಾಕಿದವರು ಸರಕಾರಿ ಕಚೇರಿಯಲ್ಲಿ ನೌಕರನಾಗಿದ್ದಾನೆ ಎಂಬ ವಿಚಾರವನ್ನು ತಿಳಿಸಿದ್ದಾರೆ. ಆರೋಪಿ ವಿರುದ್ಧ ಏನು ಕಾನೂನು ಕ್ರಮಕೈಗೊಳ್ಳಲು ಸಾಧ್ಯವೋ ಅದನ್ನು ತಕ್ಷಣ ಕೈಗೊಳ್ಳಿ ಎಂದು ಶಾಸಕರು ಸೂಚನೆ ನೀಡಿದ್ದಾರೆ.
ಮಕ್ಕಳು ಶಾಲೆಗೆ ಬರಲು ಭಯ ಪಡುತ್ತಾರೆ:
ಎಸ್ ಡಿ ಎಂ ಸಿ ಅಧ್ಯಕ್ಷೆ.
ಘಟನೆಯ ಬಗ್ಗೆ ಅಧ್ಯಕ್ಷೆ ಸುಲೋಚಿನಿಯವರು ಮಾತನಾಡುತ್ತಾ, ಈ ವ್ಯಕ್ತಿ ಪದೇ ಪದೇ ಶಾಲೆಗೆ ಬಂದು ಮಕ್ಕಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಪುತ್ತೂರು ಲೋಕೋಪಯೋಗಿ ಇಲಾಖೆಯಲ್ಲಿ ನೌಕರನಾಗಿರುವ ಇವರು ನಮಗೆ ಹಿಂಸೆಯನ್ನು ನೀಡುತ್ತಿದ್ದಾರೆ. ದಾರಿಯಲ್ಲಿ ಓಡಾಡುವಾಗಲೂ ಅಡ್ಡ ನಿಂತು ಜೀವ ಬೆದರಿಕೆ ಹಾಕುತ್ತಿದ್ದಾರೆ. ಇವನ ಬಗ್ಗೆ ಪೊಲೀಸರಿಗೂ ದೂರು ನೀಡಿದ್ದೇವೆ. ಆದರೆ ಇದುವರೆಗೂ ಯಾವುದೇ ಕಾನೂನು ಕ್ರಮ ಜರಗಿಸಿಲ್ಲ ಎಂದು ಶಾಸಕರಲ್ಲಿ ಬಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಪೊಲೀಸರು ಕ್ರಮಕೈಗೊಳ್ಳಬೇಕು: ಮುಖ್ಯ ಶಿಕ್ಷಕ ಕೆ ಕೆ ಮಾಸ್ಟರ್
ಪೊಲೀಸರು ದೂರನ್ನು ಗಂಭೀರವಾಗಿ ಪರಿಗಣಿಸಿ ಆತನಿಂದ ಶಾಲೆಗೆ ಆಗುತ್ತಿರುವ ತೊಂದರೆಯನ್ನು ಪರಿಹರಿಸಬೇಕಿದೆ. ವಿನಾ ಕಾರಣ ಮಕ್ಕಳಲ್ಲಿ ಭಯ ಹುಟ್ಟಿಸುವ ಕೆಲಸ ಆತ ಮಾಡುತ್ತಿದ್ದು ನ್ಯಾಯಕ್ಕಾಗಿ ಶಾಸಕ ಅಶೋಕ್ ರೈ ಬಳಿ ಬಂದಿದ್ದೇವೆ ಎಂದು ತಿಳಿಸಿದ್ದಾರೆ.
crime
ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ:
- ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
- ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಜಂಕ್ಷನ್ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
- ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:
ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ
crime
ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ
ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು
ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.
ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.
crime
ಸಕಲೇಶಪುರ ಲಾಡ್ಜ್ನಲ್ಲಿ ಕರಾಳ ರಾತ್ರಿ: ಬಾತ್ರೂಮ್ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ವಿವರಣೆ:
ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.
ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್ನಲ್ಲಿ ಮೂವರು ಒಂದೇ ರೂಮ್ನಲ್ಲಿ ತಂಗಿದ್ದರು.
ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್ನ ಬಾತ್ರೂಮ್ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).
ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾತ್ರೂಮ್ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
