Connect with us

Bantawala

ವಿ.ಜಿ.ಗ್ರಾಮ್ ಜೀ ಯೋಜನೆ ವಾಪಸ್ಸಾತಿಗೆ ಎಲ್ಲಾ ಗ್ರಾಮ ಪಂಚಾಯತಿಗಳು ನಿರ್ಣಯ ಕೈಗೊಳ್ಳಿ- ಕುಳಾಲು ಸುಭಾಶ್ಚಂದ್ರ ಶೆಟ್ಟಿ ಕರೆ

Published

on

ಮನರೇಗಾ ಯೋಜನೆ ಬದಲು ವಿ.ಜಿ.ಗ್ರಾಮ್ ಜೀ ಯೋಜನೆ ಮಾಡದಂತೆ ಒತ್ತಾಯಿಸಿ ವಾಪಸ್ಸಾತಿಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳು ನಿರ್ಣಯ ಕೈಗೊಳ್ಳುವಂತೆ – ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಕರೆ

ಮನರೇಗಾ ಯೋಜನೆಯನ್ನು ಹಂತ ಹಂತವಾಗಿ ಮೊಟಕುಗೊಳಿಸುವ ಕೇಂದ್ರ ಸರ್ಕಾರದ ಉದ್ದೇಶದ ವಿರುದ್ಧ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳು ರಾಜಕೀಯ ನೋಡದೆ ಪಕ್ಷಾತೀತವಾಗಿ ಖಂಡನ ನಿರ್ಣಯ ಕೈಗೊಳ್ಳಬೇಕು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಆಗ್ರಹಿಸಿದ್ದಾರೆ. ಅವಧಿ ಮುಗಿದ ಗ್ರಾಮ ಪಂಚಾಯತಿಗಳಿದ್ದಲ್ಲಿ ವಿಶೇಷ ಸಭೆ ಕರೆದು ಆದರೂ ಈ ಕುರಿತು ಸ್ಪಷ್ಟ ನಿಲುವು ವ್ಯಕ್ತಪಡಿಸಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯು.ಪಿ.ಎ ಸರ್ಕಾರ ಜಾರಿಗೆ ತಂದ ಮನರೇಗಾ ಕಾನೂನು ಬಡಜನರಿಗೆ ಉದ್ಯೋಗ ಭದ್ರತೆ ನೀಡಿದಷ್ಟೇ ಅಲ್ಲದೆ, ಗ್ರಾಮ ಪಂಚಾಯತಿಗಳಿಗೆ ದೊಡ್ಡ ಆರ್ಥಿಕ ಸಂಪನ್ಮೂಲವಾಗಿ ಪರಿಣಮಿಸಿತ್ತು. ಗ್ರಾಮೀಣ ಅಭಿವೃದ್ಧಿ, ಆಸ್ತಿ ನಿರ್ಮಾಣ ಹಾಗೂ ಆಡಳಿತಾತ್ಮಕ ಕಾರ್ಯಗಳಿಗೆ ಈ ಯೋಜನೆ ಪ್ರಮುಖ ಆಧಾರವಾಗಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಸಂಪನ್ಮೂಲ ಕೊರತೆಯಿಂದಾಗಿ ಪಂಚಾಯತಿಗಳು ಕನಿಷ್ಠ ಕೆಲಸಗಳನ್ನೂ ನಿರ್ವಹಿಸಲಾಗದ ಸ್ಥಿತಿಗೆ ತಲುಪಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

15ನೇ ಹಣಕಾಸು ಆಯೋಗದ ಅನುದಾನ ಇನ್ನೂ ಬಿಡುಗಡೆಯಾಗದಿರುವುದರಿಂದ ಸ್ವಂತ ನಿಧಿ ಸಂಪನ್ಮೂಲವಿಲ್ಲದ ಅನೇಕ ಗ್ರಾಮ ಪಂಚಾಯತಿಗಳಲ್ಲಿ ಜನಪ್ರತಿನಿಧಿಗಳು ಸಾರ್ವಜನಿಕರನ್ನು ಎದುರಿಸಲು ಸಾಧ್ಯವಾಗದೆ ತರೆಮರೆಸಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗದೆ ಪಂಚಾಯತಿಗಳು ಅಸಹಾಯಕ ಸ್ಥಿತಿಗೆ ತಳ್ಳಲ್ಪಟ್ಟಿವೆ.

ಯು.ಪಿ.ಎ ಸರಕಾರದ ಅವಧಿಯ ಸೋನಿಯಾ ಗಾಂಧಿಯ ಮಾರ್ಗದರ್ಶನದಲ್ಲಿ ಮನಮೋಹನ ಸಿಂಗ್ ರವರು ಮನರೇಗಾ ಯೋಜನೆಯನ್ನು ಜಾರಿಗೆ ತಂದ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅದ್ಯಕ್ಷನಾಗಿದ್ದ ಸ್ವತಃ ನನ್ನ ಅನುಭವದಲ್ಲಿ ಗ್ರಾಮದ ಕೃಷಿ,ಹೈನುಗಾರಿಕೆ,ಶಿಕ್ಷಣ,ರಸ್ತೆ,ತಡೆಗೋಡೆ,ಅಂತರ್ಜಲ ವೃದ್ದಿ,ಸ್ವಚ್ಚತೆ ಇತ್ಯಾದಿ ಗ್ರಾಮೀಣಾ ಸರ್ವಾಂಗೀಣ ಅಭಿವೃದ್ದಿಯನ್ನು ಕೈಗೊಂಡು ಸತತ ಮೂರು ವರ್ಷ ಒಂದರಿಂದ ಒಂದೂವರೆ ಕೋಟಿಯವರೆಗೆ ಆರ್ಥಿಕ ವೆಚ್ಚವನ್ನು ಭರಿಸಿ ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಗಳಿಸಿದ ಹಗ್ಗಳಿಕೆ ನಮ್ಮ ಗ್ರಾಮ ಪಂಚಾಯತಿಗೆ ಒದಗಿರುವುದು ಅಲ್ಲದೆ ಜನಸ್ನೇಹಿ ಆಡಳಿತ ನೀಡಲು ಸಹಾಕಾರಿಯಾಗಿರುವುದು ಮನರೇಗಾ ಯೋಜನೆ ಎಂದು ದೈರ್ಯದಿಂದ ಹೇಳಬಲ್ಲೆ ಎಂದು ಶೆಟ್ಟಿ ಹೇಳಿದ್ದಾರೆ.

ಇಂತಹ ಸಂಕಷ್ಟಕರ ಸಂದರ್ಭದಲ್ಲಿ ಮನರೇಗಾ ಯೋಜನೆಯ ಯು.ಪಿ.ಎ ಕಾಲದ ನಿಯಮಗಳನ್ನು ತೆಗೆದುಹಾಕಿ, ರಾಜ್ಯ–ಕೇಂದ್ರ ಪಾಲನ್ನು 60:40 ರೂಪದಲ್ಲಿ ವಿಧಿಸಿರುವುದು ಕೇಂದ್ರ ಸರ್ಕಾರದ ತಪ್ಪು ನಿರ್ಧಾರವಾಗಿದ್ದು, ಯಾವುದೇ ರಾಜ್ಯ ಸರ್ಕಾರಕ್ಕೆ ಇದನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಿಲ್ಲ. ಇದು ಯೋಜನೆಯನ್ನು ಪರೋಕ್ಷವಾಗಿ ಸ್ಥಗಿತಗೊಳಿಸುವ ತಂತ್ರವಾಗಿದ್ದು, ಇದರಿಂದ ಗ್ರಾಮ ಪಂಚಾಯತಿಗಳ ಅಸ್ತಿತ್ವಕ್ಕೇ ಅಪಾಯ ಎದುರಾಗಲಿದೆ ಎಂದು ಅವರು ಎಚ್ಚರಿಸಿದರು.

ರಾಜಕೀಯ ಭೇದಭಾವವಿಲ್ಲದೆ ಗ್ರಾಮ ಸರಕಾರವೆಂದೇ ಕರೆಯಲ್ಪಟ್ಟ ಗ್ರಾಮ ಪಂಚಾಯತಿಗಳ ಅಸ್ತಿತ್ವ ಉಳಿಸಿಕೊಳ್ಳುವ ಜೊತೆಗೆ ಭವಿಷ್ಯದಲ್ಲಿ ಚುನಾಯಿತ ಯಾವುದೇ ಜನಪ್ರತಿನಿದಿಗಳು ಆಡಳಿತ ನಡೆಸುವಾಗ ಜನರ ಆಶೋತ್ತರಗಳನ್ನು ಈಡೇರಿಸಬೇಕಾದಲ್ಲಿ ಈಗಲೇ ಎಚ್ಚರಗೊಂಡು ಜನಾಂದೋಲನ ರೀತಿಯಲ್ಲಿ ಇದರ ವಿರುದ್ದ ಸೆಟೆದು ನಿಲ್ಲಬೇಕಾದ ಅನಿವಾರ್ಯತೆ ಇದೆ. ಗ್ರಾಮ ಸ್ವರಾಜ್ ಹಿತಾಸಕ್ತಿಯನ್ನು ಕಾಪಾಡಬೇಕಾದರೆ ಮನರೇಗಾ ಯೋಜನೆಯೇ ಏಕೈಕ ಪರಿಹಾರ. ಯೋಜನೆಯ ಹೆಸರನ್ನು ಬದಲಾಯಿಸುವ ಕೇಂದ್ರದ ಚಿಂತನೆ ಮಹಾತ್ಮಾ ಗಾಂಧೀಜಿಯವರಿಗೆ ಮಾಡಿದ ಅವಮಾನವಾಗಿದ್ದು, ಗ್ರಾಮ ಸ್ವರಾಜ್ಯದ ಆಶಯಗಳನ್ನೇ ಹಾಳುಗೆಡವುವ ಕ್ರಮವಾಗಿದೆ ಎಂದು ಕುಳಾಲು ಸುಭಾಶ್ಚಂದ್ರ ಶೆಟ್ಟಿ ಖಂಡಿಸಿದ್ದಾರೆ

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಹನೀಫ್ ಬಗ್ಗುಮೂಲೆ ಅರ್ಜಿ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಷ್ಟ್ರೀಯ ಕಾಂಗ್ರೆಸ್‌ ಸಮಿತಿಯ ಸಾರಥ್ಯ ವಹಿಸಲು ಪಕ್ಷದ ಹಿರಿಯ, ನಿಷ್ಠಾವಂತ ಹಾಗೂ ನೇರ ನಡೆ-ನುಡಿಯ ಪ್ರಭಾವಿ ನಾಯಕ ಹನೀಫ್ ಬಗ್ಗುಮೂಲೆ ಅವರು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಪಕ್ಷ ಹಾಗೂ ಸಮಾಜಸೇವೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಮೂರು ದಶಕಗಳ ಸುದೀರ್ಘ ರಾಜಕೀಯ ಪಯಣ

ಬಂಟ್ವಾಳ ತಾಲೂಕು ಕುಳ ಗ್ರಾಮದ ಬಗ್ಗುಮೂಲೆ ನಿವಾಸಿಯಾಗಿರುವ ಹನೀಫ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ನಿರಂತರವಾಗಿ ಶ್ರಮಿಸಿದವರು. ಬಾಲ್ಯದಿಂದಲೇ ಸಾಮಾಜಿಕ ಕಳಕಳಿ ಬೆಳೆಸಿಕೊಂಡಿದ್ದ ಇವರು, ಪಕ್ಷದ ಧ್ವಜದಡಿಯಲ್ಲಿ ಉಚಿತ ಮೆಡಿಕಲ್ ಕ್ಯಾಂಪ್‌ಗಳು, ರಕ್ತದಾನ ಶಿಬಿರಗಳು, ಕ್ರೀಡಾ ಕೂಟಗಳು ಹಾಗೂ ಧಾರ್ಮಿಕ ಸಮಾರಂಭಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಜನಮಾನಸದಲ್ಲಿ ಆಪತ್ಬಾಂಧವನಾಗಿ ನೆಲೆಸಿದ್ದಾರೆ.

ಸಂಸ್ಥಾಪನಾ ಹೆಜ್ಜೆಗಳು ಮತ್ತು ವಹಿಸಿದ ಜವಾಬ್ದಾರಿಗಳು

ಇವರ ನಿಸ್ಪಕ್ಷಪಾತ ಸೇವೆ ಮತ್ತು ಸಂಘಟನಾ ಚತುರತೆಯನ್ನು ಗುರುತಿಸಿದ ಕಾಂಗ್ರೆಸ್ ಪಕ್ಷ, ಇವರಿಗೆ ವಿವಿಧ ಹಂತಗಳಲ್ಲಿ ಜವಾಬ್ದಾರಿಗಳನ್ನು ನೀಡಿ ಗೌರವಿಸಿದೆ:

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸೇವಾದಳ: ಅಧ್ಯಕ್ಷರಾಗಿ 3 ವರ್ಷಗಳ ಕಾಲ ಯಶಸ್ವಿ ಸೇವೆ.

ಜಿಲ್ಲಾ ಕಾಂಗ್ರೆಸ್ ಸೇವಾದಳ: ಸಂಘಟನಾ ಕಾರ್ಯದರ್ಶಿಯಾಗಿ ಪಕ್ಷದ ತಳಮಟ್ಟದ ಸಂಘಟನೆ.

ಕೆಪಿಸಿಸಿ (KPCC): ರಾಜ್ಯ ಮಟ್ಟದ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಶ್ರಮಿಕರ ಪರ ಧ್ವನಿ.

ರಾಷ್ಟ್ರೀಯ ರಾಜೀವ ಗಾಂಧಿ ಜ್ಯೋತಿಯಾತ್ರೆ ಸಮಿತಿ: ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ದೇಶಾದ್ಯಂತ ವ್ಯಾಪಕ ಕಾರ್ಯಾಚರಣೆ ಹಾಗೂ ಪಕ್ಷದ ಸಿದ್ಧಾಂತಗಳ ಪ್ರಚಾರ.

ಪ್ರಶಸ್ತಿ ಹಾಗೂ ಪುರಸ್ಕಾರ

ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಜನಸೇವೆ ಸಲ್ಲಿಸಿರುವ ಹನೀಫ್ ಬಗ್ಗುಮೂಲೆ ಅವರ ನಿರಂತರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ “ಗಡಿನಾಡ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸಲು ಮತ್ತು ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಲು ತಮ್ಮ ಅನುಭವ ಮತ್ತು ಬದ್ಧತೆ ಸಹಕಾರಿಯಾಗಲಿದೆ ಎಂಬ ವಿಶ್ವಾಸದೊಂದಿಗೆ ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ.

Continue Reading

Bantawala

ದಕ್ಷಿಣ ಕನ್ನಡ: ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ

Published

on

ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ರಾಯಿ ನಿವಾಸಿ ಜೀವನ್ ಪಿಂಟೊ (48) ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ಶನಿವಾರ ತಡರಾತ್ರಿ ಜೀವನ್ ಪಿಂಟೊ ಅವರು ತೋಡಿನ ಆಚೆಗಿರುವ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದರೂ, ಅವರು ನೀರಿಗೆ ಬಿದ್ದಿದ್ದಾರೋ ಅಥವಾ ಬೇರೆಡೆ ತೆರಳಿದ್ದಾರೋ ಎಂಬುದು ಅಧಿಕೃತವಾಗಿ ದೃಢಪಟ್ಟಿರಲಿಲ್ಲ.

ಸತತ ಶೋಧ ಕಾರ್ಯಾಚರಣೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ನದಿಯಲ್ಲಿ ಹರಿಯುತ್ತಿರುವ ಪ್ರಬಲ ನೀರಿನ ಸೆಳೆತದ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗುತಜ್ಞರು ಮತ್ತು ಗ್ರಾಮಸ್ಥರು ಕಳೆದ ಎರಡು ದಿನಗಳಿಂದ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.

ಸತತ ಕಾರ್ಯಾಚರಣೆಯ ಫಲವಾಗಿ ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮೃತದೇಹವನ್ನು ನದಿಯಿಂದ ಹೊರತೆಗೆದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಹಾಗೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

Continue Reading

Bantawala

ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್‌ ದಾಖಲು!

Published

on

ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ:

ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.

ಮಹಿಳೆಯ ಧೈರ್ಯ, ವೈರಲ್ ವೀಡಿಯೋ:

ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.

ಬಂಟ್ವಾಳ ಠಾಣೆಯಲ್ಲಿ ದೂರು:

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

Trending

Copyright © 2025 Deevatige

error: Content is protected !!