Connect with us

court

ಶಬರಿಮಲೆಗೆ ಮಹಿಳೆಯರ ಪ್ರವೇಶ: ಮತ್ತೆ ಸುಪ್ರೀಂನಲ್ಲಿ ಕಾನೂನು ಸಮರ ಆರಂಭ !

Published

on

ಕೇರಳದ ಶಬರಿಮಲೆ ದೇವಾಲಯವೂ ಸೇರಿದಂತೆ ದೇಶಾದ್ಯಂತ ಹಲವು ಧಾರ್ಮಿಕ ಸ್ಥಳಗಳಲ್ಲಿ ಮಹಿಳೆರಿಗೆ ಪ್ರವೇಶ ನಿರ್ಬಂಧ ಹಾಗೂ ತಾರತಮ್ಯಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
9 ಸದಸ್ಯರ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ಸುಪ್ರೀಂ ಕೋರ್ಟ್ ನಿಗದಿತ ಅವಧಿ ಒಳಗೆ ವಿಚಾರಣೆ ಪೂರ್ಣಗೊಳಿಸುವ ಗಡುವು ವಿಧಿಸಿಕೊಂಡಿದೆ.

ಕೇರಳದ ಪ್ರಸಿದ್ಧ ಶಬರಿಮಲೆ ಶ್ರೀ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶದ ವಿವಾದ ಮತ್ತೆ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಸಮರಕ್ಕೆ ಕಾರಣವಾಗಿದ್ದು, 2018ರಲ್ಲಿ ನೀಡಿದ್ದ ಐತಿಹಾಸಿಕ ತೀರ್ಪಿನ ಮರುಪರಿಶೀಲನೆಗಾಗಿ ಸಲ್ಲಿಸಲಾದ ಅರ್ಜಿಗಳು ಮತ್ತು ಸಂಬಂಧಿತ ಪ್ರಕರಣಗಳನ್ನು 9 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದ ಮುಂದೆ ಏಪ್ರಿಲ್ 7, 2026ರಿಂದ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ನಿರ್ಣಯವನ್ನು ಫೆಬ್ರವರಿ 16ರಂದು ಪ್ರಕಟಿಸಿದ್ದು, ವಿಚಾರಣೆಯನ್ನು ಏಪ್ರಿಲ್ 7ರಂದು ಬೆಳಿಗ್ಗೆ 10:30ಕ್ಕೆ ಆರಂಭಿಸಲು ಆದೇಶಿಸಿದೆ. ವಿಚಾರಣೆಯನ್ನು ಏಪ್ರಿಲ್ 22ರ ಒಳಗೆ ಮುಕ್ತಾಯಗೊಳಿಸುವ ಗುರಿಯನ್ನು ಕೋರ್ಟ್ ಹೊಂದಿದೆ.
ಏಪ್ರಿಲ್ 7 ರಂದು ಬೆಳಿಗ್ಗೆ 10.30 ಕ್ಕೆ ವಿಚಾರಣೆ ಆರಂಭವಾಗಲಿದೆ ಎಂದು ನ್ಯಾಯಾಲಯ ಸೋಮವಾರ ಬೆಳಿಗ್ಗೆ ತಿಳಿಸಿದೆ. ಹಿಂದಿನ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಏಪ್ರಿಲ್ 7 ರಿಂದ ಏಪ್ರಿಲ್ 9 ರವರೆಗೆ ವಿಚಾರಣೆ ನಡೆಸಲಾಗುವುದು ಮತ್ತು ಅದನ್ನು ವಿರೋಧಿಸುವ ಅರ್ಜಿಗಳನ್ನು ಏಪ್ರಿಲ್ 14 ರಿಂದ ಏಪ್ರಿಲ್ 16 ರವರೆಗೆ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಮರುಪ್ರತ್ಯಾರೋಪಣೆಗಳು ಯಾವುದಾದರೂ ಇದ್ದರೆ, ಏಪ್ರಿಲ್ 21 ರಂದು ವಿಚಾರಣೆಗೆ ಬರಲಿವೆ ಮತ್ತು ನಂತರ ಸಲ್ಲಿಕೆಗಳನ್ನು ಮುಕ್ತಾಯಗೊಳಿಸಲಾಗುತ್ತದೆ. ಎಲ್ಲಾ ವಕೀಲರು ಸಮಯ ವೇಳಾಪಟ್ಟಿಯನ್ನು ಪಾಲಿಸುವಂತೆ ಪೀಠ ಸೂಚನೆ ನೀಡಿದೆ ಮತ್ತು ಮಾರ್ಚ್ 14 ರಂದು ಅಥವಾ ಅದಕ್ಕೂ ಮೊದಲು ಲಿಖಿತ ಸಲ್ಲಿಕೆಗಳನ್ನು ಸಲ್ಲಿಸುವಂತೆ ಕೇಳಿದೆ.

ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಶಬರಿಮಲೆ ತೀರ್ಪಿನ ಪುನರ್ ಪರಿಶೀಲನೆಗಾಗಿ ಅರ್ಜಿಗಳನ್ನು ಬೆಂಬಲಿಸುವುದಾಗಿ ಹೇಳಿದರು. ಪೀಠದಿಂದ ನೇಮಿಸಲ್ಪಟ್ಟ ವಕೀಲ ಕೃಷ್ಣ ಕುಮಾರ್ ಸಿಂಗ್ ಅವರನ್ನು ಶಬರಿಮಲೆ ತೀರ್ಪಿನ ಪುನರ್ ಪರಿಶೀಲನೆಯನ್ನು ಬೆಂಬಲಿಸುವ ಪಕ್ಷಗಳ ನೋಡಲ್ ವಕೀಲರನ್ನಾಗಿ ಘೋಷಿಸಲಾಗಿದೆ.
ಪುನರ್ ಪರಿಶೀಲನೆಯನ್ನು ವಿರೋಧಿಸುವ ಪಕ್ಷಗಳ ನೋಡಲ್ ವಕೀಲರಾಗಿ ಶಾಶ್ವತಿ ಪರಿ ಅವರನ್ನು ನೇಮಕ ಮಾಡಲಾಯಿತು. “ಶಿವಂ ಸಿಂಗ್ ಅವರೊಂದಿಗೆ ಹಿರಿಯ ವಕೀಲ ಕೆ. ಪರಮೇಶ್ವರ್ ಅವರನ್ನು ಅಮಿಕಸ್ ಆಗಿ ನೇಮಿಸುವುದು ಸೂಕ್ತವೆಂದು ನಾವು ಪರಿಗಣಿಸುತ್ತೇವೆ. ಸಿಂಗ್ ಈ ನ್ಯಾಯಾಲಯದ ಮುಂದೆ ಎಲ್ಲಾ ಪಕ್ಷಗಳು ತೆಗೆದುಕೊಂಡ ನಿಲುವನ್ನು ಸಲ್ಲಿಸಬೇಕು.” 2019 ರಲ್ಲಿ ಸ್ಥಾಪಿಸಲಾದ ಒಂಬತ್ತು ನ್ಯಾಯಾಧೀಶರ ಹಿಂದಿನ ಪೀಠ ಅದರ ಎಂಟು ಸದಸ್ಯರು ನಿವೃತ್ತರಾದ ಕಾರಣ ಅವಧಿ ಮೀರಿತ್ತು. ಒಂಬತ್ತನೆಯವರು ನ್ಯಾಯಮೂರ್ತಿ ಸೂರ್ಯ ಕಾಂತ್, ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಮುಖ್ಯ ನ್ಯಾಯಾಧೀಶರಾದರು.
ಈ ಅರ್ಜಿಗಳನ್ನು ಮುಸ್ಲಿಂ ಮಹಿಳೆಯರ ಮಸೀದಿ ಪ್ರವೇಶ ಮತ್ತು ಪಾರ್ಸಿ ಅಲ್ಲದ ವ್ಯಕ್ತಿಯನ್ನು ವಿವಾಹವಾಗಿದ್ದರೆ ಪಾರ್ಸಿ ಮಹಿಳೆಯರ ಅಗ್ನಿ ದೇವಾಲಯ ಪ್ರವೇಶ ಹಾಗೂ ದಾವೂದಿ ಬೊಹ್ರಾ ಸಮುದಾಯದಲ್ಲಿ ಸ್ತ್ರೀ ಜನನಾಂಗ ಛೇದನದ ಪದ್ಧತಿಯ ಸಿಂಧುತ್ವಕ್ಕೆ ಸಂಬಂಧಿಸಿದ ಅರ್ಜಿಗಳ ಜೊತೆಗೆ ಪಟ್ಟಿ ಮಾಡಲಾಗಿದೆ.

Continue Reading
Advertisement

Belthangady

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ: ಎಸಿ ಗೆ ಸತತ ಮೂರನೇ ಬಾರಿ ಮುಖಭಂಗ!

Published

on

ಬೆಳ್ತಂಗಡಿ: ಸೌಜನ್ಯಾ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸುತ್ತಿರುವ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ದೊಡ್ಡ ಮಟ್ಟದ ಸಮಾಧಾನ ನೀಡಿದೆ. ಪುತ್ತೂರು ಸಹಾಯಕ ಕಮಿಷನರ್ (AC) ನೀಡಿದ್ದ ಮೂರನೇ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಾರ್ಚ್ 24 ರಂದು ತಡೆಯಾಜ್ಞೆ ನೀಡಿದೆ.

ಘಟನೆಯ ವಿವರ:
ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ (AC) ಸ್ಟೆಲ್ಲಾ ವರ್ಗೀಸ್ ಅವರು ಉಜಿರೆ ನಿವಾಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಈ ಗಡಿಪಾರು ಆದೇಶಕ್ಕೆ ತಡೆಯಾಜ್ಞೆ ನೀಡಿ ಮಹತ್ವದ ತೀರ್ಪು ಪ್ರಕಟಿಸಿದೆ.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಗಡಿಪಾರು ಆದೇಶಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿತಲ್ಲದೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ , ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಠಾಣೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜಾರಿಗೊಳಿಸಿ, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

ಸತತ ಮೂರನೇ ಬಾರಿ ಮುಖಭಂಗ:
ಗಮನಾರ್ಹ ಸಂಗತಿಯೆಂದರೆ, ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಎಸಿ ಸ್ಟೆಲ್ಲಾ ವರ್ಗೀಸ್ ಅವರು ಗಡಿಪಾರು ಆದೇಶ ಹೊರಡಿಸುತ್ತಿರುವುದು ಇದು ಮೂರನೇ ಬಾರಿ. ಈ ಹಿಂದಿನ ಎರಡು ಬಾರಿಯೂ ನ್ಯಾಯಾಲಯವು ಆ ಆದೇಶಗಳನ್ನು ವಜಾಗೊಳಿಸಿತ್ತು ಅಥವಾ ತಡೆ ನೀಡಿತ್ತು. ಈಗ ಮೂರನೇ ಬಾರಿಯೂ ಹೈಕೋರ್ಟ್ ತಡೆ ನೀಡಿರುವುದರಿಂದ ಸರ್ಕಾರಿ ಅಧಿಕಾರಿಗೆ ಕಾನೂನುಬದ್ಧವಾಗಿ ಸತತ ಮೂರನೇ ಬಾರಿ ಹಿನ್ನಡೆಯಾದಂತಾಗಿದೆ.

ಹೋರಾಟ ಮತ್ತು ಗಡಿಪಾರು ರಾಜಕೀಯ
ಧರ್ಮಸ್ಥಳದ ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ಮತ್ತು ನೈಜ ಆರೋಪಿಗಳ ಬಂಧನಕ್ಕಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರು ರಾಜ್ಯಾದ್ಯಂತ ಬೃಹತ್ ಹೋರಾಟ ಸಂಘಟಿಸುತ್ತಿದ್ದಾರೆ. ಈ ಹೋರಾಟವು ಜನಮನ್ನಣೆ ಗಳಿಸುತ್ತಿದ್ದಂತೆಯೇ, ಸಮಾಜದಲ್ಲಿ ಅಶಾಂತಿ ಉಂಟುಮಾಡುತ್ತಿದ್ದಾರೆ ಎಂಬ ಕಾರಣ ನೀಡಿ ಆಡಳಿತ ಯಂತ್ರವು ಅವರ ಮೇಲೆ ಗಡಿಪಾರು ಅಸ್ತ್ರವನ್ನು ಪ್ರಯೋಗಿಸಲು ಮುಂದಾಗಿತ್ತು. ಪ್ರತಿ ಬಾರಿಯೂ ಗಡಿಪಾರು ಆದೇಶ ಬಂದಾಗ ತಿಮರೋಡಿ ಅವರು ಇದು “ರಾಜಕೀಯ ಪ್ರೇರಿತ” ಮತ್ತು “ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ” ಎಂದು ಆರೋಪಿಸುತ್ತಾ ಬಂದಿದ್ದಾರೆ. ಹೈಕೋರ್ಟ್‌ನ ಈ ತಡೆಯಾಜ್ಞೆಯು ತಿಮರೋಡಿ ಬೆಂಬಲಿಗರಲ್ಲಿ ಹರ್ಷ ತಂದಿದ್ದು, ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂಬ ಸಂದೇಶ ರವಾನೆಯಾದಂತಾಗಿದೆ.

Continue Reading

court

ಗ್ರಾಮ ಪಂಚಾಯಿತಿ ಚುನಾವಣೆ ಮತ್ತಷ್ಟು ವಿಳಂಬ: ಹೈಕೋರ್ಟ್‌ಗೆ ಕಾಲಾವಕಾಶ ಕೇಳಿದ ಸರ್ಕಾರ

Published

on

ಬೆಂಗಳೂರು: ರಾಜ್ಯದ 5,950 ಗ್ರಾಮ ಪಂಚಾಯಿತಿಗಳ ಚುನಾವಣೆ ಮತ್ತಷ್ಟು ವಿಳಂಬವಾಗುವುದು ಬಹುತೇಕ ಖಚಿತವಾಗಿದೆ. ಚುನಾವಣೆ ನಡೆಸಲು ಅಗತ್ಯವಿರುವ ಮೀಸಲು ಪಟ್ಟಿ ಅಂತಿಮಗೊಳಿಸಲು ಕನಿಷ್ಠ ಮೂರು ತಿಂಗಳು ಕಾಲಾವಕಾಶ ಬೇಕೆಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮೌಖಿಕವಾಗಿ ತಿಳಿಸಿದೆ. ಇದರಿಂದಾಗಿ ಸದ್ಯಕ್ಕೆ ಚುನಾವಣೆ ನಡೆಯುವ ಲಕ್ಷಣಗಳು ಕಾಣುತ್ತಿಲ್ಲ.

ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ಪೀಠವು ಸರ್ಕಾರದ ವಸ್ತುಸ್ಥಿತಿ ವರದಿಯನ್ನು ದಾಖಲಿಸಿಕೊಂಡು ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಸದ್ಯ 96 ಸಾವಿರಕ್ಕೂ ಅಧಿಕ ಸದಸ್ಯರಿದ್ದು, ಹೊಸದಾಗಿ ಜನಸಂಖ್ಯೆಗೆ ಅನುಗುಣವಾಗಿ ಒಟ್ಟು ಸದಸ್ಯರ ಸಂಖ್ಯೆ ಗುರುತಿಸಲು ನಾಲ್ಕು ವಾರಗಳ ಸಮಯ ಬೇಕಾಗುತ್ತದೆ. ಅದಾದ ನಂತರ ಮೀಸಲು ಪ್ರಕ್ರಿಯೆ ಪೂರ್ಣಗೊಳಿಸಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲು ಕನಿಷ್ಠ 3 ತಿಂಗಳು ಬೇಕಾಗುತ್ತದೆ ಎಂದು ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ ಕೋರ್ಟ್‌ಗೆ ತಿಳಿಸಿದ್ದಾರೆ.

ಈಗಾಗಲೇ ಜನಗಣತಿ ಆಧಾರಿಸಿ ಪ್ರತಿ ಪಂಚಾಯಿತಿಗೆ ಎಷ್ಟು ಸದಸ್ಯರಿರಬೇಕೆಂದು ನಿರ್ಧರಿಸಲು ಕ್ಷೇತ್ರ ಮರುವಿಂಗಡಣಾ ಆಯೋಗಕ್ಕೆ ಸೂಚಿಸಲಾಗಿದ್ದು, 15 ದಿನಗಳಲ್ಲಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವಿಚಾರಕ್ಕೆ ಬಂದರೆ, 187 ಸಂಸ್ಥೆಗಳ ಪೈಕಿ 167 ಸಂಸ್ಥೆಗಳ ವಾರ್ಡ್‌ ಮರುವಿಂಗಡಣೆ ಮುಗಿದಿದ್ದು, 21 ಮಾತ್ರ ಬಾಕಿ ಇವೆ ಎಂದು ಸರ್ಕಾರ ವರದಿಯಲ್ಲಿ ವಿವರಿಸಿದೆ. ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿರುವುದರಿಂದ ಏಪ್ರಿಲ್ ಅಂತ್ಯದವರೆಗೆ ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಪ್ರಗತಿ ಕಂಡುಬರುವ ಸಾಧ್ಯತೆ ಇಲ್ಲ.

Continue Reading

Belthangady

ಸೌಜನ್ಯ ಕೊಲೆ ಪ್ರಕರಣ: ರಾಜ್ಯ ಸರ್ಕಾರ ಹಾಗೂ ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

Published

on

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇಂದು ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ನೀಡಿದೆ. ಈ ಮೂಲಕ ಪ್ರಕರಣದಲ್ಲಿ ಮತ್ತೆ ನ್ಯಾಯದ ಭರವಸೆ ಚಿಗುರಿದೆ.

ದಶಕಕ್ಕೂ ಹೆಚ್ಚು ಕಾಲ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಹತ್ವದ ತಿರುವು ಲಭಿಸಿದೆ. ಪ್ರಕರಣದ ಮರು ತನಿಖೆಗೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ಈ ಕುರಿತು ವಿವರಣೆ ನೀಡುವಂತೆ ಕರ್ನಾಟಕ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಹಿನ್ನೆಲೆ ಮತ್ತು ನ್ಯಾಯಾಲಯದ ನಡಾವಳಿ:
ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮರು ತನಿಖೆ ಕೋರಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿದಾರರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲರಾದ ಶೋಭಾ ಗುಪ್ತಾ ಅವರು ಪ್ರಕರಣದ ತನಿಖೆಯಲ್ಲಿ ನಡೆದಿರುವ ಲೋಪದೋಷಗಳನ್ನು ನ್ಯಾಯಾಧೀಶರ ಗಮನಕ್ಕೆ ತಂದರು.

ವಕೀಲರ ಪ್ರಮುಖ ವಾದಗಳು:
ಸ್ಥಳೀಯ ಪೊಲೀಸರು ಮತ್ತು ಸಿಬಿಐ ಎರಡೂ ಸಂಸ್ಥೆಗಳು ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುವಲ್ಲಿ ವಿಫಲವಾಗಿವೆ. ಸೌಜನ್ಯ ಅವರ ಶವ ಸಿಕ್ಕ ಸ್ಥಳದಲ್ಲಿ ಲಭ್ಯವಿದ್ದ ಮಹತ್ವದ ಸಾಕ್ಷ್ಯಗಳನ್ನು ಆಧರಿಸಿ ವೈಜ್ಞಾನಿಕ ತನಿಖೆ ನಡೆಸುವಲ್ಲಿ ತನಿಖಾಧಿಕಾರಿಗಳು ಎಡವಿದ್ದಾರೆ.
ಪ್ರಕರಣದಲ್ಲಿ ಸ್ಥಳೀಯವಾಗಿ ಹಲವರ ಮೇಲೆ ಬಲವಾದ ಅನುಮಾನಗಳಿದ್ದರೂ, ಸಿಬಿಐ ಅವರನ್ನು ಸಮರ್ಪಕವಾಗಿ ವಿಚಾರಣೆಗೆ ಒಳಪಡಿಸಿಲ್ಲ. ಆದ್ದರಿಂದ ಸತ್ಯಾಸತ್ಯತೆ ಹೊರಬರಲು ಸ್ವತಂತ್ರ ಮರು ತನಿಖೆಯ ಅಗತ್ಯವಿದೆ ಎಂದು ವಕೀಲರು ವಾದ ಮಂಡಿಸಿದರು.

ಸುಪ್ರೀಂ ಕೋರ್ಟ್‌ನ ಆದೇಶ:
ಈ ವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ವಿನೋದ್ ಚಂದ್ರನ್ ಅವರಿದ್ದ ದ್ವಿಸದಸ್ಯ ಪೀಠವು, ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಪ್ರತಿವಾದಿಗಳಾದ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಪ್ರತಿವಾದಿಗಳಿಂದ ವರದಿ ಬಂದ ನಂತರವಷ್ಟೇ ಮರು ತನಿಖೆಯನ್ನು ಯಾರು ನಡೆಸಬೇಕು ಮತ್ತು ಅದರ ಸ್ವರೂಪ ಹೇಗಿರಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ. ಅಲ್ಲದೆ, ಧರ್ಮಸ್ಥಳದ ಅಸಹಜ ಸಾವುಗಳ ತನಿಖೆಗಾಗಿ ರಾಜ್ಯ ಸರ್ಕಾರ ಈಗಾಗಲೇ ರಚಿಸಿರುವ ಎಸ್‌ಐಟಿ (SIT) ಬಗ್ಗೆಯೂ ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನ ಸೆಳೆದಿದ್ದು, ಅದರ ಮೂಲಕವೇ ಹೆಚ್ಚಿನ ತನಿಖೆ ನಡೆಸಲು ಅವಕಾಶವಿದೆ ಎಂಬ ಅಂಶವನ್ನು ಪ್ರಸ್ತಾಪಿಸಿದ್ದಾರೆ.

ಪ್ರಕರಣದ ಮರುನೋಟ:
2012ರ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಧರ್ಮಸ್ಥಳದ ಬಳಿ 17 ವರ್ಷದ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಮರುದಿನ ಆಕೆಯ ಮೃತದೇಹ ನೇತ್ರಾವತಿ ಸ್ನಾನಘಟ್ಟದ ಬಳಿಯ ಪೊದೆಯಲ್ಲಿ ಸಿಕ್ಕಿತ್ತು. ಅಂದಿನಿಂದ ಇಂದಿನವರೆಗೂ ಸೌಜನ್ಯ ಕುಟುಂಬ ಮತ್ತು ಮಹಿಳಾಪರ ಹೋರಾಟಗಾರರು ನಿರಂತರವಾಗಿ ಹೋರಾಟ ನಡೆಸುತ್ತಲೇ ಇದ್ದಾರೆ. ಕಳೆದೊಂದು ವರ್ಷದಿಂದ ಮಹಿಳಾಪರ ಹೋರಾಟಗಾರರು, ಲೇಖಕಿಯರು ‘ಕೊಂದವರು ಯಾರು?’ ಎಂಬ ಆಂದೋಲನ ಕಟ್ಟಿಕೊಂಡು ಸೌಜನ್ಯ ಮಾತ್ರವಲ್ಲದೆ ಧರ್ಮಸ್ಥಳ ಆಸುಪಾಸಿನಲ್ಲಿ ನಡೆದ ಮಹಿಳೆಯರ ಅಸಹಜ ಸಾವಿನ ತನಿಖೆಗೆ ಆಗ್ರಹಿಸಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ.ಈ ಘಟನೆ ಇಡೀ ರಾಜ್ಯಾದ್ಯಂತ ಜನಕ್ರೋಶಕ್ಕೆ ಕಾರಣವಾಗಿದೆ.

Continue Reading

Trending

Copyright © 2025 Deevatige