Connect with us

crime

ಕುಖ್ಯಾತ ರೌಡಿಶೀಟರ್ ಸಫ್ವಾನ್‌ ಹುಸೈನ್ ಸಿಸಿಬಿ ಪೊಲೀಸ್‌ ಬಲೆಗೆ 31 ಪ್ರಕರಣಗಳಲ್ಲಿ ಭಾಗಿಯಾಗಿ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ

Published

on

ಸುಮಾರು 31 ಪ್ರಕರಣಗಳಲ್ಲಿ ಭಾಗಿಯಾಗಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕುಖ್ಯಾತ ರೌಡಿಶೀಟರ್ ಸಫ್ವಾನ್‌ ಹುಸೈನ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ.ಈ ಮೂಲಕ ಹಲವಾರು ವರ್ಷಗಳಿಂದ ಕಾರ್ಯಾಂಗಕ್ಕೆ ಸವಾಲಾಗಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ ಕಾನೂನಿನ ಕುಣಿಕೆಯೊಳಗೆ ಬಂಧಿಯಾಗಿದ್ದಾನೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಕೊಲೆ, ನಾಲ್ಕು ಕೊಲೆ ಯತ್ನ, ಗ್ಯಾಂಗ್ ರೇಪ್, ಐದು ದರೋಡೆ, ಅಪಹರಣ, ಸುಲಿಗೆ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ ಸರಗಳ್ಳತನ, ಅಲ್ಲೇ ಜೈಲಿನಲ್ಲಿ ಸಹ ಕೈದಿಗಳ ಮೇಲೆ ಹಲ್ಲೆ ಅಕ್ರಮ ಕೂಟ ಸೇರಿ ಹಲ್ಲೆ ಕೊಲೆ ಬೆದರಿಕೆ ಕರ್ತವ್ಯಕ್ಕೆ ಅಡ್ಡಿ ದರೋಡೆಗೆ ತಯಾರಿ ಮತ್ತು ಸಂಚು ಮುಂತಾದ ಅಪರಾಧಗಳಿಗೆ ಸಂಬಂಧಿಸಿದ ಸುಮಾರು 31 ಪ್ರಕರಣಗಳಲ್ಲಿ ಭಾಗಿಯಾಗಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ತಾಲೂಕು ಹಳೆಯಂಗಡಿ ಗ್ರಾಮದ ಕೊಪ್ಪಳ ನಿವಾಸಿ ಅಮ್ಮಬ್ಬ ಅವರ ಮಗ ಸಫ್ವಾನ್‌ ಹುಸೈನ್ ದಸ್ತಗಿರಿ ಮಾಡಲಾಗಿದೆ ‌


ಈತನ ವಿರುದ್ಧ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2008ರಲ್ಲಿ ದಾಖಲಾಗಿದ್ದ ಪ್ರವೀಣ್ ಎಂಬವರ ಅಪಹರಣ ದರೋಡೆ ಮತ್ತು ಕೊಲೆ ಪ್ರಕರಣದಲ್ಲಿ ದಿನಾಂಕ 28 220 ರಂದು ಮಾನ್ಯ ಹೈಕೋರ್ಟ್ ನಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುತ್ತಾನೆ, ಅಲ್ಲದೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ 2008ರಲ್ಲಿ ದರೋಡೆ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯದಿಂದ ಮೂರು ವರ್ಷ ಶಿಕ್ಷೆಗೆ ಒಳಗಾಗಿರುತ್ತಾನೆ. ಈತನ ವಿರುದ್ಧ 13 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿ ಬಾಕಿ ಇದ್ದು, ಮಾನ್ಯ ನ್ಯಾಯಾಲಯದಿಂದ ದಸ್ತಗಿರಿ ವಾರಂಟ್ ಗಳನ್ನು ಹೊರಡಿಸಲಾಗಿರುತ್ತದೆ ಐದು ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯವು ಎಲ್ ಪಿ ಸಿ ಎಂದು ಘೋಷಿಸಿದೆ.

2017 ಇಸವಿಯಲ್ಲಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನು ತನ್ನ ಸಹಚಾರರೊಂದಿಗೆ ಸೇರಿಕೊಂಡು ಲೆಪ್ಪಿ ಸಪ್ವಾನ್ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆಸಿ ಕೊಲೆ ಮಾಡಿ ಆಗುಂಬೆ ಘಾಟಿಯಲ್ಲಿ ಎಸೆದ ಪ್ರಕರಣದಲ್ಲಿ ನೇರಭಾಗಿಯಾಗಿ ಬಳಿಕ ದಸ್ತಗಿರಿಗೆ ಸಿಗದೆ ತಲೆ ಮರೆಸಿಕೊಂಡಿದ್ದನು. ಬಳಿಕ ಆಂಧ್ರ ಪ್ರದೇಶದ ರಾಯ್ ಚೋಟಿ ಪ್ರದೇಶದಲ್ಲಿ ತನ್ನ ಹೆಸರನ್ನು ಉಮರ್ ಮೊಹಮ್ಮದ್ ನಾಸಿರ್ ಎಂದು ಬದಲಿಸಿ, ನಕಲಿ ಹೆಸರಿನಲ್ಲಿ ಆಧಾರ್ ಕಾರ್ಡ್ ಪಾಸ್ಪೋರ್ಟ್ ಮಾಡಿಸಿಕೊಂಡು 2018 ರಿಂದ ವಿದೇಶಕ್ಕೆ ಪರಾರಿಯಾಗಿ ತಲೆಮರೆಸಿಕೊಂಡಿದ್ದನು. ವಿದೇಶಗಳಲ್ಲಿನ ಮಂಗಳೂರು ಮೂಲದ ವ್ಯಾಪಾರಸ್ಥರುಗಳಿಗೆ ಕೂಡ ತೊಂದರೆ ಮಾಡಿದ ಬಗ್ಗೆ ದೂರುಗಳು ಬಂದಿರುತ್ತದೆ.

ಆರೋಪಿ ಸಫ್ವಾನ್‌ ಹುಸೈನ್‌ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಆಂಧ್ರಪ್ರದೇಶ ರಾಯಚೋಟಿಯಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮುಲ್ಕಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು ಆರೋಪಿ ಸಫ್ವಾನ್ ಹುಸೈನ್ ಗೆ ತಲೆಮರೆರಸಿಕೊಳ್ಳಲು, ನಕಲಿ ದಾಖಲೆ, ಪಾಸ್ಪೋರ್ಟ್ ತಯಾರಿಸಲು ಸಹಕರಿಸಿದ ಮತ್ತು ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪತ್ತೆ ಮಾಡಿ ತನಿಖೆಗೆ ಒಳಪಡಿಸಲಾಗುವುದು ಹಾಗೂ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪೊಲೀಸ್‌ ವರಿಷ್ಠರು ತಿಳಿಸಿದ್ದಾರೆ.

Continue Reading
Advertisement

Belthangady

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಬೆಳ್ತಂಗಡಿಯಲ್ಲಿ ಸಿಐಡಿ ತನಿಖೆ ಆರಂಭ

Published

on

ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಅತ್ಯಾಚಾರ ಹಾಗೂ ಸುಲಿಗೆ ಆರೋಪದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಚುರುಕುಗೊಳಿಸಿದೆ. ಇಂದು ಸಿಐಡಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಆಗಮಿಸಿ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸುವ ಮೂಲಕ ಅಧಿಕೃತವಾಗಿ ತನಿಖೆ ಆರಂಭಿಸಿದೆ.

ಪ್ರಕರಣದ ಹಿನ್ನೆಲೆ:
ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ಪ್ರಾಂಶುಪಾಲರೊಬ್ಬರು ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2020 ರಿಂದ 2023ರ ಅವಧಿಯಲ್ಲಿ ಜಮೀನು ವಿವಾದವೊಂದರ ವಿಚಾರಣೆಯ ನೆಪದಲ್ಲಿ ತನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಕೇಸ್ ಮರುಚಾಲನೆ ಮಾಡುವ ಬೆದರಿಕೆ ಹಾಕಿ ಸುಮಾರು 16 ಲಕ್ಷ ರೂ. ನಗದು, 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮನೆ ನಿರ್ಮಾಣಕ್ಕಾಗಿ ತೇಗದ ಮರದ ದಿಮ್ಮಿಗಳನ್ನು ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.

ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸೂಚನೆಯಂತೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಈಗಾಗಲೇ ಸಂದೇಶ್ ಪಿ.ಜಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಮಾರ್ಚ್‌ 25ರಂದು ವೇಣೂರು ಪೊಲೀಸ್‌ ಠಾಣೆಯಿಂದ ಬೆಂಗಳೂರು ಸಿಐಡಿ ಕಚೇರಿಗೆ ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸಿದ್ದು, ಸಿಐಡಿ ಡಿವೈಎಸ್‌ಪಿ ನೇತೃತ್ವದ ತಂಡವು ಮಾರ್ಚ್‌ 31ರಂದು ಸಂಜೆ ನಾರಾವಿ ಐಬಿಗೆ ಆಗಮಿಸಿದೆ. ಇಂದು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಸಿಐಡಿ ತಂಡವು ಸಂತ್ರಸ್ತೆಯ ಹೇಳಿಕೆ ಪಡೆಯುವುದು, ಸ್ಥಳಗಳ ಪರಿಶೀಲನೆ ಹಾಗೂ ಸಾಕ್ಷ್ಯಾಧಾರಗಳ ಸಂಗ್ರಹಣೆಯ ಮೇಲೆ ತನಿಖೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಸಂತ್ರಸ್ತರು ಇದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಸಲಿದೆ.

Continue Reading

accident

ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು; ಚಾಲಕ, ನಿರ್ವಾಹಕನ ವಿರುದ್ಧ ಕೇಸ್ ದಾಖಲು

Published

on

ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ: ಮಾರ್ಚ್ 31ರಂದು ಬೆಳಗ್ಗೆ ಕಳಿಯ ಗ್ರಾಮದ ನಿವಾಸಿಗಳಾದ ಚರಿಷ್ಮಾ (17) ಮತ್ತು ಚದ್ಮಕಾ (15) ಎಂಬ ಸಹೋದರಿಯರು ಎಂದಿನಂತೆ ಕಾಲೇಜಿಗೆ ಹೋಗಲು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಕಳಿಯದಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿತ್ತು. ಗೇರುಕಟ್ಟೆ ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಬಾಗಿಲು ದಿಢೀರನೆ ತೆರೆದುಕೊಂಡಿದ್ದು, ಬಾಗಿಲ ಬಳಿಯಿದ್ದ ಇಬ್ಬರೂ ವಿದ್ಯಾರ್ಥಿನಿಯರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.

ರಸ್ತೆಗೆ ಬಿದ್ದ ಪರಿಣಾಮ ಇಬ್ಬರೂ ಸಹೋದರಿಯರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಜಾಗರೂಕತೆಯ ಆರೋಪ: ಬಸ್ ಚಾಲಕ ದಯಾನಂದ ಅವರು ವಾಹನವನ್ನು ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಮತ್ತು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯ ಲೋಪವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೆಕ್ಷನ್ 281: ಅಜಾಗರೂಕ ಚಾಲನೆ. ಸೆಕ್ಷನ್ 125: ಜೀವಕ್ಕೆ ಅಪಾಯ ತರುವಂತಹ ನಿರ್ಲಕ್ಷ್ಯದ ಕೃತ್ಯ.ಸೆಕ್ಷನ್ 125(a): ನಿರ್ಲಕ್ಷ್ಯದಿಂದ ಗಾಯ ಉಂಟುಮಾಡುವುದು.ಸೆಕ್ಷನ್‌ಗಳ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ:

ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತೆಯ ಕೊರತೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

crime

ಪೊಲೀಸ್ ಭೇಟೆ: ದೇವಸ್ಥಾನದ ಕಳ್ಳ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

Published

on

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜಪೆ ಮತ್ತು ಉರ್ವಾ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೇವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ್ದ ಅಂತರರಾಜ್ಯ ಕಳ್ಳ ಹಾಗೂ ಕಳೆದ 9 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಂಜಾರು ದೇವಸ್ಥಾನದ ಹುಂಡಿ ಕಳವು: ತಮಿಳುನಾಡು ಮೂಲದ ಆರೋಪಿ ಅರೆಸ್ಟ್
ಮಾರ್ಚ್ 3ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು, ಮೂರು ಕಾಣಿಕೆ ಹುಂಡಿಗಳಿಂದ ಸುಮಾರು ರೂ. 25,000/- ಹಣವನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಬಜಪೆ ಪೊಲೀಸರು ಮಾರ್ಚ್ 31ರಂದು ಅಂತರರಾಜ್ಯ ಕಳ್ಳ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಎಂಬಾತನನ್ನು ಬಂಧಿಸಿದ್ದಾರೆ.
ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿಯಾದ ಈತ, ರೈಲಿನಲ್ಲಿ ಬಂದು ಕಳ್ಳತನ ನಡೆಸಿ ತಮಿಳುನಾಡಿಗೆ ಪರಾರಿಯಾಗುತ್ತಿದ್ದ. ಈತ ಉಡುಪಿಯ ಬ್ರಹ್ಮಾವರ ಠಾಣೆಯ ಕಳವು ಪ್ರಕರಣ ಹಾಗೂ ಪಣಂಬೂರು ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆ ಪ್ರದೇಶದಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲೂ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಬಜಪೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ಈ ಕಾರ್ಯಾಚರಣೆ ನಡೆಸಿದ್ದಾರೆ.

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮುಂಬೈನಲ್ಲಿ ಸೆರೆ
ಮತ್ತೊಂದು ಪ್ರಕರಣದಲ್ಲಿ, ದರೋಡೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್.ಪಿ.ಸಿ (LPC) ವಾರಂಟ್ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಶೋಕ ನಗರದ ನಿವಾಸಿ ಸುಹಾನ್ @ ಸೋನು (33) ಬಂಧಿತ ಆರೋಪಿ.
ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು. ಮಾರ್ಚ್ 29ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಬೀಡುಬಿಟ್ಟಿದ್ದ ಆರೋಪಿಯನ್ನು ಉರ್ವಾ ಎಎಸ್ಐ ಲಕ್ಷ್ಮಣ್ ಮತ್ತು ತಂಡ ಪತ್ತೆಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ. ಈತನ ಮೇಲೆ ಉರ್ವಾ ಮತ್ತು ಮಂಗಳೂರು ಉತ್ತರ ಠಾಣೆಗಳಲ್ಲಿ ದರೋಡೆ ಸಂಚು ಹಾಗೂ ಹಲ್ಲೆಗೆ ಸಂಬಂಧಿಸಿದಂತೆ ಮೂರು ಪ್ರಮುಖ ಪ್ರಕರಣಗಳು ದಾಖಲಾಗಿವೆ.

ಬಂಧಿತ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸರ ಈ ಚುರುಕಿನ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

Trending

Copyright © 2025 Deevatige