Connect with us

Article

ಕಟುಕರ ಕೈಸೇರಿ ಬಚಾವಾದ ಹಾಲು ಕೊಡುವ ಹಸುಗಳು..ವಿಟ್ಲ ಪೊಲೀಸರ ಸಹಕಾರದಲ್ಲಿ ದೈಗೋಳಿ ಕಾಮಧೇನು ಗೋಶಾಲೆಯಲ್ಲಿ ಮರು ಜನ್ಮ ಪಡೆದ ಗೋವುಗಳು.

Published

on

ಕರಾವಳಿಯಲ್ಲಂತೂ ಅಕ್ರಮ ಗೋಸಾಗಾಟ ರಾಜಕೀಯ ಬೆಳವಣಿಗೆಗೆ ಪೌಷ್ಟಿಕಾಂಶವೆಂದೇ ಹೇಳಬೇಕು. ಅಕ್ರಮ ದನ ಸಾಗಾಟವನ್ನು ತಡೆಹಿಡಿದು ಕಾನೂನಾತ್ಮಕವಾಗಿ ಅಕ್ರಮ ಸಾಗಾಟಗಾರನ್ನು ಪೊಲೀಸರಿಗೊಪ್ಪಿಸುವ ಮಂದಿ ಕೆಲವರಾದರೆ, ಅಕ್ರಮ ಗೋಸಾಗಾಟವನ್ನು ತಡೆಹಿಡಿದು ಸಾಗಾಟಗಾರರೊಡನೆ ಡೀಲು ಕುದುರಿಸಿ ಹಣ ಪಡೆದು ಗೋವು ಸಾಗಾಟಕ್ಕೆ ದಾರಿ ಮಾಡಿಕೊಡುವ ಗೋಪ್ರೇಮಿಗಳು ಕತ್ತಲಿನಲ್ಲಿ ಅಗಾಗ ಸಿಕ್ಕಿ ಬೀಳುತ್ತಲೇ ಇರುತ್ತಾರೆ. ಅಕ್ರಮ ಗೋ ಸಾಗಾಟವನ್ನು ತಡೆಹಿಡಿದು ಯಾವಾಗ ಪೊಲೀಸರ ವಶಕ್ಕೆ ಸಿಕ್ಕಿತೋ ಈ ಗೋವುಗಳನ್ನು ಏನು ಮಾಡುವುದು ಎಂಬಲ್ಲಿಗೆ ಪೊಲೀಸರು ತಲೆಕೆರೆದು ಕೊಂಡಾಗ ಗೋಪ್ರೇಮಿಗಳ ಫೋನುಗಳು ಪೊಲೀಸರ ಕಿವಿ ತಟ್ಟುತ್ತದೆ. ನಮಗೆ ಗೋವುಗಳನ್ನು ಕೊಡಿ ನಾವು ಮನೆಯಲ್ಲಿ ಆರಾಮವಾಗಿ ಸಾಕುತ್ತೇವೆ ಎಂದು..ಮತ್ತೆ ಅದು ಹೋಗುವುದು ಕಟುಕರ ಕೈಗೆ ಎಂಬುವುದು ಪೊಲೀಸರಿಗೂ ಗೊತ್ತು.! ಅದಕ್ಕಾಗಿ ಅಧಿಕೃತ ಗೋಶಾಲೆಗಳ ಕದ ಬಡಿಯುವುದು ಪೊಲೀಸರ ಸಾಹಸವೇ ಸರಿ. ಚುನಾವಣಾ ಸಂದರ್ಭದಲ್ಲಿ ಗೋ ರಕ್ಷಣೆಯ ಹೆಸರಲ್ಲಿ ಮತ ಬೇಡುವ ಬಿಜೆಪಿ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಗ್ರಾಮಕ್ಕೊಂದು ಗೋಶಾಲೆ ನಿರ್ಮಾಣ ಮಾಡುವ ವಾಗ್ದಾನ ನೀಡಿತ್ತು. ಆದರೆ ಅಧಿಕಾರ ದಕ್ಕಿದ ಹನ್ನೆರಡು ವರ್ಷಗಳಲ್ಲಿ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿದ್ದ ಭರವಸೆ ಕಸದ ತೊಟ್ಟಿ ಸೇರಿಕೊಂಡಿದೆ. ಗೋವುಗಳು ಭಕ್ಷಕರ ಹೊಟ್ಟೆ ಸೇರಲು ದಾರಿ ಸುಗಮವಾಗಿದೆ.

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಮಂಡ್ಯ ಮೂಲದ ಹಿಂದೂ ಯುವಕರಿಬ್ಬರು ಸಾಲೆತ್ತೂರಿನ ಶಾಫಿ ಎಂಬಾತನಿಗೆ ನಕಲಿ ದಾಖಲೆ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಗೋವುಗಳನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಗೋಸಾಗಾಟ ತಡೆಯಲು ಸಂಘಟನೆಗಳ ಕಾರ್ಯಕರ್ತರು ರೆಡಿಯಾಗಿದ್ದಾರೆಯೇ ವಿನಹ ಆ ಬಳಿಕ ಗೋವುಗಳಿಗೆ ಯಾರು ಗತಿ ಎಂಬುದನ್ನು ಈವರೆಗೂ ಯಾವುದೇ ಸಂಘಟನೆಗಳಾಗಲೀ.. ಗೋರಕ್ಷಣೆ ಬಗ್ಗೆ ವೇದಿಕೆಯಲ್ಲಿ ಮೈಕ್ ಹಿಡಿದು ಬೊಬ್ಬೆ ಹೊಡೆಯುವ ರಾಜಕೀಯ ಪಕ್ಷದ ಮುಖಂಡರಾಗಲೀ ಯೋಚಿಸುತ್ತೂ ಇಲ್ಲ..ಸಹಕಾರ ನೀಡುತ್ತಲೂ ಇಲ್ಲ ಎಂಬುದು ನೂರರಷ್ಟು ಸತ್ಯ.

ನೋಡಲಾಗುತ್ತಿಲ್ಲ ಮೂಕ ಪ್ರಾಣಿಗಳ ವೇದನೆ.
ಮೂರು ದಿನಗಳ ಹಿಂದೆ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ರಸ್ತೆಯ ಕರೈ ಎಂಬಲ್ಲಿ ಪತ್ತೆ ಹಚ್ಚಿದ ಗೋವುಗಳ ಪರಿಸ್ಥಿತಿಯೂ ಇದೇ ಆಗಿದೆ. ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ಎರಡು ಗೋವುಗಳು ಸಾಕಷ್ಟು ಪ್ರಮಾಣದಲ್ಲಿ ದೈಹಿಕವಾಗಿ ಗಾಯಗೊಂಡಿತ್ತು‌. ಪೊಲೀಸರು ವಶಕ್ಕೆ ಪಡೆದ ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲು ಸಾಕಷ್ಟು ಸಮಯಾವಕಾಶ ಬೇಕಾಗುತ್ತಿದೆ.
ರಸ್ತೆಯಲ್ಲಿ ತಡೆಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ ಬಳಿಕ ಗೋಪ್ರೇಮಿ ಕಾರ್ಯಕರ್ತರ ಜವಾಬ್ದಾರಿ ಮುಗಿಯಿತೇ.? ಗೋವುಗಳಿಗೆ ನೀರು, ಆಹಾರ ನೀಡುವುದು ಪೊಲೀಸರ ಜವಾಬ್ದಾರಿಯೇ.? ಪೊಲೀಸ್ ಠಾಣೆಗಳಲ್ಲಿ ಹುಲ್ಲು, ಹಿಂಡಿ ಸೇರಿದಂತೆ ಇನ್ನಿತರ ಪಶುಗಳ ಆಹಾರ ದಾಸ್ತಾನು ಇದೆಯೇ.? ಕಾನೂನು ಪ್ರಕ್ರಿಯೆ ಮುಗಿಯುವ ತನಕ ಗೋವುಗಳನ್ನು ಕಟ್ಟಿಹಾಕಲು ಪೊಲೀಸ್ ಠಾಣೆಯಲ್ಲಿ ಹಟ್ಟಿ ವ್ಯವಸ್ಥೆ ಇದೆಯೇ.? ಇದೆಲ್ಲವನ್ನೂ ಮಾಡಬೇಕಾದವರು ಯಾರು ಎಂಬ ಬಗ್ಗೆ ಈವರೆಗೂ ಯಾರೊಬ್ಬರೂ ಚಿಂತಿಸದಿರುವುದು ಗೋಪ್ರೇಮಿಗಳ ನಕಲಿ ಹಿಂದುತ್ವ ಎಂಬುದನ್ನು ಬಿಡಿಸಿ ಹೇಳಬೇಕೇ.?

ಗೋವುಗಳ ಪಡೆಯಲು ಗೋಶಾಲೆಗಳ ನಕಾರ..
ಪೊಲೀಸರು ವಶಕ್ಕೆ ಪಡೆದ ಗೋವುಗಳನ್ನು ಪಡೆಯಲು ಯಾವುದೇ ಖಾಸಗಿ ಗೋಶಾಲೆಗಳ ವ್ಯವಸ್ಥಾಪಕರು ಮುಂದೆ ಬರುತ್ತಿಲ್ಲ. ಗೋಶಾಲೆಗಳಿಗೆ ಯಾವುದೇ ಸರಕಾರ ಈವರೆಗೂ ಪುಡಿಗಾಸೂ ನೀಡುತ್ತಿಲ್ಲ. ಗೋಶಾಲೆ ನಡೆಸುವವರೂ ಅವುಗಳ ಪಾಲನೆ ಮಾಡಲು ಅನಿವಾರ್ಯವಾಗಿ ಭಿಕ್ಷೆ ಬೇಡುವ ಪರಿಸ್ಥಿತಿಗೆ ಬಂದಿದ್ದಾರೆ. ಅಕ್ರಮ ಗೋಸಾಗಾಟ ತಡೆಯುವ ಸಂಘಟನೆಗಳು, ಗೋಪ್ರೇಮಿ ರಾಜಕೀಯ ಪುಢಾರಿಗಳು ತಮ್ಮ ತಮ್ಮ ವ್ಯಾಪ್ತಿಯ ಗೋಶಾಲೆಗಳ ಬಗ್ಗೆ ಸ್ಪಂದಿಸುವುದು ಬಿಡಿ ಅತ್ತ ಕಡೆ ತಲೆ ಕೂಡ ಹಾಕುತ್ತಿಲ್ಲ ಎಂಬುದು ನೂರರಷ್ಟು ಸತ್ಯ. ಪ್ರತಿಯೊಂದು ಗೋಶಾಲೆಗಳಲ್ಲೂ ಸಾಕಷ್ಟು ಪ್ರಮಾಣದಲ್ಲಿ ಗೋವುಗಳು ತುಂಬಿಹೋಗಿದ್ದು ಅವುಗಳ ಪಾಲನೆಗಾಗಿ ಪ್ರತಿನಿತ್ಯ ಸಾವಿರಾರು ರೂಪಾಯಿ ಖರ್ಚಾಗುತ್ತಿದೆ. ಈ ಬಗ್ಗೆ ಯಾರೊಬ್ಬರೂ ಸಹಕಾರ ನೀಡುತ್ತಿಲ್ಲ ಎಂಬುದೇ ಗೋಶಾಲೆಗಳು ಗೋವುಗಳ ಪಡೆಯಲು ನಿರಾಕರಿಸಲು ಮುಖ್ಯ ಕಾರಣವಾಗಿದೆ.

ಗ್ರಾಮ ಪಂ, ಪ.ಪಂಚಾಯತ್ ಗೋಶಾಲೆ ನಿರ್ಮಿಸಲಿ..
ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ಸೇರಿದಂತೆ ಸ್ಥಳೀಯ ಆಡಳಿತ ಸಂಸ್ಥೆಗಳು ಇನ್ನಾದರೂ ತಮ್ಮ ವ್ಯಾಪ್ತಿಯಲ್ಲಿ ಗೋಶಾಲೆ ನಿರ್ಮಿಸಲು ಜನಪ್ರತಿನಿಧಿಗಳು ಒತ್ತಾಯಿಸಬೇಕು. ತಮ್ಮ ತಮ್ಮ ವ್ಯಾಪ್ತಿಯಲ್ಲಿ ಇಂತಹ ಸಂದರ್ಭದಲ್ಲಿ ಸಿಕ್ಕಿದ ಗೋವುಗಳನ್ನು ಕಾನೂನು ಪ್ರಕ್ರಿಯೆ ಮುಗಿದ ಬಳಿಕ ತಮ್ಮ ಗೋಶಾಲೆಗಳಲ್ಲಿ ಸಲಹುವಂತಾಗಬೇಕು. ಇಲ್ಲವಾದರೆ ಗೋವುಗಳು ಪತ್ತೆಯಾದ ತಕ್ಷಣ ಖಾಸಗಿ ವ್ಯಕ್ತಿಗಳು ತಮಗೆ ಸಾಕಲು ನೀಡುವಂತೆ ದುಂಬಾಲು ಬೀಳುತ್ತಿದ್ದಾರೆ. ಸಾಕುವ ನೆಪದಲ್ಲಿ ಠಾಣೆಯಿಂದ ಪಡೆಯುವ ಖಾಸಗಿ ವ್ಯಕ್ತಿಗಳು ಒಂದೆರಡು ದಿನ ಮನೆಯಲ್ಲಿರಿಸಿ ಮತ್ತೆ ಕುಟುಕರಿಗೆ ಸಾವಿರಾರು ರೂಪಾಯಿಗಳಿಗೆ ನೀಡುವ ಮೂಲಕ ದಂಧೆ ನಡೆಸುತ್ತಿದ್ದಾರೆ.

ಅನಾಥವಾದ ಗೋವುಗಳು.
ಸಾಲೆತ್ತೂರು ಕರೈ ಬಳಿ ಅಕ್ರಮ ಗೋಸಾಗಾಟ ಪ್ರಕರಣದಲ್ಲಿ ವಶಕ್ಕೆ ಪಡೆದ ಎರಡು ದೊಡ್ಡ ಗಾತ್ರದ ಹಾಲು ಕರೆಯುವ ಹಸುಗಳು ಮೂರು ದಿನಗಳಿಂದ ವಿಟ್ಲ ಠಾಣೆಯಲ್ಲಿ ಆಶ್ರಯ ಪಡೆದಿತ್ತು. ವಿಟ್ಲ ಪರಿಸರದ ಗೋಶಾಲೆಗಳು ಸ್ಥಳಾವಕಾಶ ಮತ್ತು ಆರ್ಥಿಕ ಸಮಸ್ಯೆಯ ಕಾರಣದಿಂದಾಗಿ ಗೋವುಗಳ ಪಡೆಯಲು ನಿರಾಕರಿಸಿದ್ದವು. ಈ ಮಧ್ಯೆ ಮೂರ್ನಾಲ್ಕು ಖಾಸಗಿ ವ್ಯಕ್ತಿಗಳು ತಮಗೆ ಸಾಕಲು ಬೇಕೆಂದು ಹೇಳುತ್ತಾ ಗೋವುಗಳ ಪಡೆಯಲು ಕಸರತ್ತು ನಡೆಸಿದ್ದರು. ಆದರೆ ಕಾನೂನು ಚೌಕಟ್ಟಿನಲ್ಲಿ ಖಾಸಗಿ ವ್ಯಕ್ತಿಗಳಿಗೆ ಗೋವುಗಳನ್ನು ನೀಡುವಂತಿಲ್ಲ. ಅದರಿಂದಾಗಿ ನಕಲಿ ಗೋಪ್ರೇಮಿಗಳ ಕಸರತ್ತು ವಿಫಲವಾಗಿದೆ.

ಗೋವುಗಳಿಗೆ ಮರು ಜನ್ಮ ನೀಡಿದ ದೈಗೋಳಿ ಸೇವಾಶ್ರಮ..
ಹಲವು ವರ್ಷಗಳಿಂದ ನೂರಾರು ಅನಾಥ ಬಡ ಜೀವಗಳಿಗೆ, ಮಾನಸಿಕ ಸ್ಥಿಮಿತ ಕಳೆದುಕೊಂಡು ಬೀದಿ ಬೀದಿ ಅಲೆದಾಡುತ್ತಿದ್ದ ಅದೆಷ್ಟೋ ಜೀವಗಳ ಪಾಲಿಗೆ ಮಂಜೇಶ್ವರ ತಾಲೂಕಿನ ದೈಗೋಳಿಯ ಡಾ.ಉದಯಕುಮಾರ್-ಶಾರದಮ್ಮ ದಂಪತಿಗಳ ನೇತೃತ್ವದ ಶ್ರೀಸಾಯಿ ನಿಕೇತನ ಸೇವಾಶ್ರಮ ಮರು ಜನ್ಮ ನೀಡುತ್ತಿದೆ. ಇದರ ಜೊತೆಗೆ ಅಲ್ಲಿನ ಕಾಮಧೇನು ಗೋಶಾಲೆಯಲ್ಲಿ ಈಗಾಗಲೇ ಐವತ್ತಕ್ಕೂ ಹೆಚ್ಚು ಗೋವುಗಳು ಆಶ್ರಯ ಪಡೆದಿವೆ. ಅಲ್ಲೂ ಸ್ಥಳಾವಕಾಶ ದ ಕೊರತೆ ಎದ್ದು ಕಾಣುತ್ತಿದೆ. ಆದರೆ ಗಾಯಗೊಂಡ ಗೋವುಗಳ ಅಸಹಾಯಕ ಪರಿಸ್ಥಿತಿಯನ್ನು ಮನಗಂಡು ಆಶ್ರಯ ನೀಡಲು ವೈದ್ಯ ದಂಪತಿಗಳು ಮುಂದೆ ಬಂದಿರುವುದು ತಮ್ಮ ಹೃದಯವಂತಿಕೆಗೆ ಸಾಕ್ಷಿಯಾಗಿದೆ. ಪತ್ರಕರ್ತ ವಿ.ಟಿ.ಪ್ರಸಾದ್ ಅವರ ಬೇಡಿಕೆಗೆ ಸ್ಪಂದಿಸಿದ ದೈಗೋಳಿ ಸೇವಾಶ್ರಮದ ವೈದ್ಯ ದಂಪತಿಗಳು ತಮ್ಮ ಕಾಮಧೇನು ಗೋಶಾಲೆಗೆ ವಿಟ್ಲ ಪೊಲೀಸರ ಸಹಕಾರದಲ್ಲಿ ಕರೆದೊಯ್ದ ಎರಡು ಗೋವುಗಳನ್ನು ದಾಖಲಿಸುವ ಮೂಲಕ ಮರು ಜನ್ಮ ನೀಡಿದ್ದಾರೆ.

ಇನ್ನಾದರೂ ಗೋಸಾಗಾಟ ತಡೆಯುವ ಗೋಪ್ರೇಮಿಗಳು ಆ ಬಳಿಕ ಗೋವುಗಳ ಮುಂದಿನ ಜೀವನದ ಬಗ್ಗೆ ಸ್ಪಂದಿಸುವ ಹೃದಯವಂತಿಕೆಯಲ್ಲಿ ಅಸಲಿ ಗೋಪ್ರೇಮಿಗಳಾಗಿ ಸಮಾಜದಲ್ಲಿ ಬದುಕಲಿ ಎಂಬುದು ಹಾರೈಕೆಯಾಗಿದೆ.

ವಿ.ಟಿ.ಪ್ರಸಾದ್‌ ಹಿರಿಯ ಪತ್ರಕರ್ತರು

ಈ ವೀಡಿಯೋ ನೋಡಿ Watch the video

ಕಟುಕರ ಕೈಯಿಂದ ಬಚಾವಾದ ಗೋವುಗಳಿಗೆ ದೈಗೋಳಿ ಕಾಮಧೇನು ಗೋಶಾಲೆಯಲ್ಲಿ ಮರುಜನ್ಮ

ಈ ನ್ಯೂಸನ್ನೂ ಓದಿ

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Article

ಆಕಾಶದ ಕಾಣುತ್ತಿದೆ ಅಚ್ಚರಿ: ಚಂದ್ರನ ಪಕ್ಕ‌ ಇಂದು ಮಿನುಗುತ್ತಿರುವ ‘ಬೆಳ್ಳಿ ಚುಕ್ಕೆ’ ಶುಕ್ರ ಗ್ರಹದ ರಹಸ್ಯ!

Published

on

ಆಕಾಶದಲ್ಲಿ ಚಂದ್ರನ ಸನಿಹದಲ್ಲಿ ಅತಿ ಹೆಚ್ಚು ಪ್ರಕಾಶಮಾನವಾಗಿ ಮಿನುಗುತ್ತಿರುವುದು ಯಾವುದೇ ನಕ್ಷತ್ರವಲ್ಲ, ಬದಲಾಗಿ ಸೌರವ್ಯೂಹದ ಅತ್ಯಂತ ಪ್ರಕಾಶಮಾನವಾದ ಶುಕ್ರ ಗ್ರಹ (Venus). ಸಂಜೆಯ ಪಶ್ಚಿಮ ದಿಗಂತದಲ್ಲಿ ಬಾಲಚಂದ್ರ ಹಾಗೂ ಈ ಬೆಳ್ಳಿ ಚುಕ್ಕೆಯು ಪರಸ್ಪರ ಅತ್ಯಂತ ಹತ್ತಿರದಲ್ಲಿ ಗೋಚರಿಸುತ್ತಿರುವುದು ಎಲ್ಲೆಡೆ ಭಾರಿ ಕುತೂಹಲ ಮೂಡಿಸಿದೆ.

ಇದು ನಕ್ಷತ್ರವೇಕಲ್ಲ? ಶುಕ್ರ ಗ್ರಹದ ವಿಶೇಷತೆ

ಸ್ವಂತ ಬೆಳಕಿಲ್ಲದಿದ್ದರೂ ಕಾಂತಿ: ಸಾಮಾನ್ಯ ನಕ್ಷತ್ರಗಳು ತಮ್ಮ ಸ್ವಂತ ಬೆಳಕಿನಿಂದ ಮಿನುಗುತ್ತವೆ. ಆದರೆ ಶುಕ್ರ ಗ್ರಹಕ್ಕೆ ಸ್ವಂತ ಬೆಳಕಿಲ್ಲ. ಇದು ಸೂರ್ಯನ ಬೆಳಕನ್ನು ಅತ್ಯಧಿಕ ಪ್ರಮಾಣದಲ್ಲಿ ಪ್ರತಿಫಲಿಸುವುದರಿಂದ ರಾತ್ರಿ ಆಕಾಶದಲ್ಲಿ ಚಂದ್ರ ಬಿಟ್ಟರೆ ಅತಿ ಹೆಚ್ಚು ಕಾಂತಿಯುತವಾಗಿ ಕಾಣಿಸುತ್ತದೆ. ಈ ಕಾರಣಕ್ಕಾಗಿಯೇ ಇದನ್ನು ‘ಸಂಜೆ ನಕ್ಷತ್ರ’ ಅಥವಾ ‘ಬೆಳ್ಳಿ ಚುಕ್ಕೆ’ ಎಂದು ಕರೆಯಲಾಗುತ್ತದೆ.

ದಟ್ಟ ವಾತಾವರಣ: ಶುಕ್ರ ಗ್ರಹವು ಸೂರ್ಯನಿಗೆ ಹತ್ತಿರವಿರುವ ಗ್ರಹವಾಗಿದ್ದು, ಇದರ ದಟ್ಟವಾದ ವಾತಾವರಣವು ಸೂರ್ಯನ ಬೆಳಕನ್ನು ಬಲವಾಗಿ ಪ್ರತಿಫಲಿಸುತ್ತದೆ.

ಸಂಯೋಗ (Conjunction) ಮತ್ತು ಚಂದ್ರ ಮರೆಮಾಚುವಿಕೆ (Lunar Occultation)

ಗ್ರಹ-ಚಂದ್ರ ಯುತಿ: ಖಗೋಳಶಾಸ್ತ್ರದ ಪ್ರಕಾರ, ಭೂಮಿ, ಚಂದ್ರ ಮತ್ತು ಶುಕ್ರ ಗ್ರಹಗಳು ತಮ್ಮ ಕಕ್ಷೆಯಲ್ಲಿ ಸುತ್ತುತ್ತಾ ನಿರ್ದಿಷ್ಟ ಸಾಪೇಕ್ಷ ಸ್ಥಾನಕ್ಕೆ ಬಂದಾಗ ಒಂದೇ ನೇರ ಸಾಲಿನಲ್ಲಿ (Conjunction) ಅತಿ ಹತ್ತಿರದಲ್ಲಿ ಕಾಣಿಸಿಕೊಳ್ಳುತ್ತವೆ. ಭೂಮಿಯಿಂದ ನೋಡುವಾಗ ಈ ಎರಡೂ ಆಕಾಶಕಾಯಗಳು ಅಕ್ಕಪಕ್ಕದಲ್ಲಿ ಇದ್ದಂತೆ ಭಾಸವಾಗುತ್ತವೆ.

ಚಂದ್ರ ಮರೆಮಾಚುವಿಕೆ: ಭಾರತದ ಕೆಲ ಭಾಗಗಳಲ್ಲಿ ಚಂದ್ರನು ಶುಕ್ರ ಗ್ರಹದ ಮುಂಭಾಗದಲ್ಲೇ ಹಾದುಹೋಗುವ ಅಪರೂಪದ ‘ಚಂದ್ರ ಮರೆಮಾಚುವಿಕೆ’ (Lunar Occultation) ವಿದ್ಯಮಾನವೂ ಜರಗಿದೆ. ಅಂದರೆ ಕೆಲಕಾಲ ಶುಕ್ರ ಗ್ರಹವು ಚಂದ್ರನ ಹಿಂದೆ ಮರೆಯಾಗಿ, ನಂತರ ಆಚೆ ಬಂದಿದೆ. ಇದು ಬರಿಗಣ್ಣಿಗೂ ಅತ್ಯಂತ ಆಕರ್ಷಕವಾಗಿ ಗೋಚರಿಸುವ ದೃಶ್ಯವಾಗಿದೆ.

ಚೌತಿ ಚಂದ್ರನ ನಂಬಿಕೆ ಮತ್ತು ವೈಜ್ಞಾನಿಕ ಸತ್ಯ

ಪೌರಾಣಿಕ ಹಿನ್ನೆಲೆ: ಭಾದ್ರಪದ ಮಾಸದ ಶುಕ್ಲ ಪಕ್ಷದ ಚೌತಿಯ (ಗಣೇಶ ಚತುರ್ಥಿ) ದಿನ ಚಂದ್ರನನ್ನು ನೋಡಿದರೆ ಕಳಂಕ ಅಥವಾ ಅಪವಾದ ಬರುತ್ತದೆ (ಮಣಿಭರಣ ಕಳಂಕ) ಎಂಬುದು ಜನರಲ್ಲಿ ಶತಶತಮಾನಗಳಿಂದ ರೂಢಿಯಲ್ಲಿರುವ ನಂಬಿಕೆಯಾಗಿದೆ.

ವೈಜ್ಞಾನಿಕ ಸತ್ಯ: ಖಗೋಳ ವಿಜ್ಞಾನದ ದೃಷ್ಟಿಯಿಂದ ಚಂದ್ರನನ್ನು ನೋಡುವುದರಿಂದ ಯಾವುದೇ ಶಾಪ, ಅಪವಾದ ಅಥವಾ ಕೆಟ್ಟ ಪರಿಣಾಮಗಳು ಸಂಭವಿಸುವುದಿಲ್ಲ. ಇದು ಕೇವಲ ನೈಸರ್ಗಿಕ ಉಪಗ್ರಹವಾಗಿದ್ದು, ಭೂಮಿಯ ಸುತ್ತ ನಿರಂತರವಾಗಿ ಸುತ್ತುತ್ತದೆ. ಚತುರ್ಥಿಯ ದಿನ ಚಂದ್ರನು ಭೂಮಿಗೆ ಮತ್ತು ಸೂರ್ಯನಿಗೆ ಇರುವ ಸಾಪೇಕ್ಷ ಸ್ಥಾನದಿಂದಾಗಿ ತೆಳುವಾದ ಕಮಾನು ಅಥವಾ ಅರ್ಧಚಂದ್ರಾಕಾರದಲ್ಲಿ ಗೋಚರಿಸುತ್ತಾನೆ.

ವೀಕ್ಷಣೆ ಹೇಗೆ?

ಅಮಾವಾಸ್ಯೆಯ ನಂತರದ ಆರಂಭಿಕ ದಿನಗಳಲ್ಲಿ (ಬಾಲಚಂದ್ರನಿದ್ದಾಗ) ಪಶ್ಚಿಮ ಆಕಾಶದಲ್ಲಿ ಸಂಜೆಯ ಹೊತ್ತು ಈ ಅದ್ಭುತ ದೃಶ್ಯವು ಬರಿಗಣ್ಣಿಗೆ ಸ್ಪಷ್ಟವಾಗಿ ಗೋಚರಿಸುತ್ತದೆ. ಇದೇ ಕಾರಣದಿಂದ ಜನರು ಇದನ್ನು ಮೊಬೈಲ್ ಹಾಗೂ ಕ್ಯಾಮೆರಾಗಳಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

Continue Reading

Article

ಸರ್ವರಲ್ಲೂ ಸಮಭಾವದ ಪ್ರತೀಕ ಗಣೇಶೋತ್ಸವ: ಹಬ್ಬಗಳು ಒಗ್ಗಟ್ಟಿನ ಸೇತುವೆಯಾಗಲಿ

Published

on

✍️ ಜ್ಯೋತಿಪ್ರಕಾಶ್‌ ಪುಣಚ, ಪ್ರಧಾನ ಸಂಪಾದಕರು, ದೀವಟಿಗೆ ಡಿಜಿಟಲ್‌ ಮೀಡಿಯಾ-9448441282

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧ್ರಾಮಿಕ ಆಚರಣೆಗಳಲ್ಲ, ಅವು ಮನುಕುಲವನ್ನು ಬೆಸೆಯುವ ಭಾವನಾತ್ಮಕ ಕೊಂಡಿಗಳು. ಅದರಲ್ಲಿಯೂ ಗಣೇಶ ಚತುರ್ಥಿಯು ವಿಘ್ನಗಳನ್ನು ನಿವಾರಿಸಿ, ಬುದ್ಧಿವಂತಿಕೆ ಹಾಗೂ ಸಮೃದ್ಧಿಯನ್ನು ತರುವ ಹಬ್ಬವಾಗಿ ಮಾತ್ರವಲ್ಲದೆ, ಸಮಾಜದಲ್ಲಿ ಸೌಹಾರ್ದತೆ ಮತ್ತು ಐಕ್ಯತೆಯನ್ನು ಸಾರುವ ಮಹತ್ವದ ಸಂದರ್ಭವಾಗಿದೆ.

ಪ್ರಕೃತಿಯ ವಿಸ್ಮಯವನ್ನು ಗಮನಿಸಿದರೆ ನಮಗೆ ದೊಡ್ಡ ಪಾಠ ಸಿಗುತ್ತದೆ. ಸೂರ್ಯನ ಬೆಳಕು, ಚಂದ್ರನ ತಂಪಾದ ಬೆಳಕು, ಬೀಸುವ ಗಾಳಿ ಮತ್ತು ಹರಿಯುವ ನದಿಗಳು ಎಂದಿಗೂ ಜಾತಿ, ಮತ, ಧರ್ಮ ಅಥವಾ ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ. ಪ್ರಕೃತಿಯು ಇಡೀ ಮಾನವ ಕುಲವನ್ನು ತನ್ನ ಮಕ್ಕಳಂತೆ ಸಮಾನವಾಗಿ ಕಾಣುತ್ತದೆ. ಅದೇ ರೀತಿ, ನಮ್ಮ ಹಬ್ಬಗಳ ಆಚರಣೆಯೂ ಕೂಡ ಭೇದಭಾವಗಳನ್ನು ಮರೆತು ಎಲ್ಲರನ್ನು ಅಪ್ಪಿಕೊಳ್ಳುವಂತಾಗಬೇಕು.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವಕ್ಕೆ ಮುನ್ನುಡಿ ಬರೆದಾಗ, ಅದರ ಮುಖ್ಯ ಉದ್ದೇಶವೇ ಜಾತಿ-ಮತಗಳ ಗಡಿಯನ್ನು ಮೀರಿ ಇಡೀ ಸಮಾಜವನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವುದಾಗಿತ್ತು. ಆದರೆ ಇಂದಿನ ದಿನಗಳಲ್ಲಿ ಹಬ್ಬಗಳು ಕೇವಲ ಆಚರಣೆಗಳಿಗೆ ಸೀಮಿತವಾಗದೆ, ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಾಮರಸ್ಯವನ್ನು ಬಿತ್ತುವ ಮಾಧ್ಯಮಗಳಾಗಬೇಕಿದೆ.

ಪ್ರತಿಯೊಬ್ಬರಿಗೂ ಅವರವರ ಧರ್ಮ, ನಂಬಿಕೆಗಳು ಮತ್ತು ಆಚರಣೆಗಳು ಶ್ರೇಷ್ಠವಾಗಿರುವುದು ಸಹಜ ಮತ್ತು ನೈಸರ್ಗಿಕ. ಆದರೆ, ತನ್ನ ಧರ್ಮದಷ್ಟೇ ಇತರರ ಧರ್ಮವನ್ನೂ ಗೌರವಿಸುವುದೇ ನಿಜವಾದ ಮಾನವತೆಯ ಪ್ರತೀಕ. ದ್ವೇಷ ಅಥವಾ ಅಸೂಯೆಗಾಗಿ ಒಗ್ಗೂಡುವುದಕ್ಕಿಂತ, ಸೌಹಾರ್ದತೆ ಮತ್ತು ಮಾನವೀಯತೆಗಾಗಿ ಒಂದಾಗುವುದೇ ಹಬ್ಬಗಳ ಅತಿ ದೊಡ್ಡ ಸಂದೇಶ.

ಈ ಗಣೇಶ ಚತುರ್ಥಿಯಂದು ವಿಘ್ನಹರ್ತನನ್ನು ಆರಾಧಿಸುವಾಗ, ನಮ್ಮ ಮನಸ್ಸಿನಲ್ಲಿರುವ ಅಹಂಕಾರ, ತಾರತಮ್ಯ ಮತ್ತು ದ್ವೇಷದ ಭಾವನೆಗಳನ್ನು ವಿಸರ್ಜಿಸೋಣ. ಪ್ರಕೃತಿಯಂತೆ ವಿಶಾಲವಾದ ಹೃದಯವನ್ನು ರೂಢಿಸಿಕೊಂಡು, ಎಲ್ಲರೊಂದಿಗೆ ಬೆರೆತು ಬಾಳುವ ಸಂಕಲ್ಪ ಮಾಡೋಣ. ಹಬ್ಬಗಳು ನಮ್ಮನ್ನು ವಿಭಜಿಸದೆ, ಸೌಹಾರ್ದತೆಯ ಬಂಧದಲ್ಲಿ ಮತ್ತಷ್ಟು ಗಟ್ಟಿಯಾಗಿ ಬೆಸೆಯಲಿ.

ಸರ್ವರಿಗೂ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು!

Continue Reading

Article

ಚಿತ್ರದಲ್ಲಿ ತಾಯಿಯನ್ನು ಹುಡುಕಿದ ಕರು: ಪ್ರಕೃತಿಯ ಮಮತೆ ಮತ್ತು ಮಾನವನ ಕಠೋರತೆಗೆ ಹಿಡಿದ ಕನ್ನಡಿ

Published

on

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಒಂದು ಸಣ್ಣ ವಿಡಿಯೋ ಪ್ರತಿಯೊಬ್ಬರ ಕಣ್ಣಂಚಲ್ಲಿ ನೀರು ತರಿಸುವಂತಿದೆ. ತಾಯಿಯ ಪ್ರೀತಿ, ಮಮತೆ ಮತ್ತು ಅಪ್ಪುಗೆಗಾಗಿ ಒಂದು ಜೀವ ಎಷ್ಟು ತವಕಿಸುತ್ತದೆ ಎಂಬುದಕ್ಕೆ ಈ ಸನ್ನಿವೇಶ ಸಾಕ್ಷಿಯಾಗಿದೆ.

ರಸ್ತೆಯ ಬದಿಯಲ್ಲಿ ನಿಂತಿದ್ದ ಹಾಲಿನ ಡೈರಿಯ ಲಾರಿಯೊಂದರ ಹಿಂಭಾಗದಲ್ಲಿ ಹಸುವಿನ ದೊಡ್ಡ ಚಿತ್ರವಿತ್ತು (ಪೋಸ್ಟರ್). ಹಾದಿಯಲ್ಲಿ ಅನಾಥವಾಗಿ ಅಲೆಯುತ್ತಿದ್ದ ಸಣ್ಣ ಕರುವೊಂದು ಆ ಚಿತ್ರವನ್ನು ಕಂಡ ತಕ್ಷಣ, ಅದು ತನ್ನದೇ ಹೆತ್ತ ತಾಯಿ ಎಂದು ಭಾವಿಸಿದೆ. ಓಡೋಡಿ ಬಂದು “ಅಂಬಾ…” ಎಂದು ಕರೆದಿದೆ. ಚಿತ್ರದಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದಾಗ, ತಾಯಿಯ ಬಳಿಗೆ ಹೋಗಲು ಹಂಬಲಿಸಿ ಲಾರಿಯ ಹಿಂಭಾಗಕ್ಕೆ ತನ್ನ ಮುಂಗಾಲುಗಳನ್ನಿಟ್ಟು ನಿಂತಿದೆ. ಹಸುವಿನ ಚಿತ್ರದಲ್ಲಿದ್ದ ಕೆಚ್ಚಲಿಗೆ ಬಾಯಿ ಹಾಕಿ ಹಾಲು ಕುಡಿಯಲು ನಿರಂತರ ಪ್ರಯತ್ನ ನಡೆಸಿದೆ.

ಆದರೆ, ಅದು ಕೇವಲ ನಿರ್ಜೀವ ಪೋಸ್ಟರ್ ಎಂಬ ಸತ್ಯ ಆ ಮುಗ್ಧ ಕರುವಿಗೆ ತಿಳಿಯಲಿಲ್ಲ. “ತಾಯಿ ನನ್ನನ್ನು ಏಕೆ ಹತ್ತಿರಕ್ಕೆ ಕರೆದುಕೊಳ್ಳುತ್ತಿಲ್ಲ, ಏಕೆ ಹಾಲು ನೀಡುತ್ತಿಲ್ಲ?” ಎಂದು ಅದು ನಿರಾಶೆಯಿಂದ ಗೋಗರೆಯುವ ದೃಶ್ಯ ಪ್ರತಿಯೊಬ್ಬರ ಕರುಳನ್ನು ಹಿಂಡುವಂತಿದೆ.

ಹೈನುಗಾರಿಕೆ ಮತ್ತು ನಮ್ಮ ನೈತಿಕತೆ:

ಈ ಸನ್ನಿವೇಶವು ಕೇವಲ ಒಂದು ವೈರಲ್ ವಿಡಿಯೋ ಅಲ್ಲ; ಬದಲಿಗೆ ಪ್ರಸ್ತುತ ಸಮಾಜದಲ್ಲಿ ಸಾಗುತ್ತಿರುವ ಹೈನುಗಾರಿಕೆ ಉದ್ಯಮದ ಕಠೋರ ನೈಜತೆಗೆ ಹಿಡಿದ ಕನ್ನಡಿ. ಪ್ರತಿಯೊಂದು ಪ್ರಾಣಿ-ಪಕ್ಷಿಗೂ ತಾಯಿಯ ಮಮತೆ ಅತ್ಯಗತ್ಯ. ಆದರೆ ಮನುಷ್ಯ ತನ್ನ ಸ್ವಾರ್ಥ ಮತ್ತು ಲಾಭಕ್ಕಾಗಿ ಕರು ಕುಡಿಯಬೇಕಾದ ಹಾಲನ್ನು ಸಂಪೂರ್ಣವಾಗಿ ಹಿಂಡಿ ಮಾರಾಟ ಮಾಡುತ್ತಿದ್ದಾನೆ.

ಅದರಲ್ಲೂ ವಿಶೇಷವಾಗಿ ಗಂಡು ಕರು ಹುಟ್ಟಿದರೆ, ಹಾಲು ನೀಡಲು ಸಾಧ್ಯವಿಲ್ಲವೆಂಬ ಕಾರಣಕ್ಕೆ ಅದನ್ನು ಬೀದಿಗೆ ತಳ್ಳುವುದು ಅಥವಾ ಅನಾಥವಾಗಿ ಬಿಟ್ಟುಬಿಡುವುದು ಸಮಾಜದಲ್ಲಿ ಸಾಮಾನ್ಯವಾಗಿದೆ. ತಾಯಿಯ ಹಾಲಿನಿಂದಲೂ, ತಾಯಿಯ ಪ್ರೀತಿಯಿಂದಲೂ ವಂಚಿತವಾದ ಇಂತಹ ಮುಗ್ಧ ಜೀವಿಗಳು ರಸ್ತೆ ರಸ್ತೆಗಳಲ್ಲಿ ಅಲೆಯುತ್ತಾ, ನಿರ್ಜೀವ ಚಿತ್ರಗಳಲ್ಲೂ ತಮ್ಮ ತಾಯಿಯನ್ನು ಹುಡುಕುವ ಪರಿಸ್ಥಿತಿ ಬಂದೊದಗಿರುವುದು ಅತ್ಯಂತ ಶೋಚನೀಯ.

ಈ ವಿಡಿಯೋ ನಮಗೆಲ್ಲರಿಗೂ ಒಂದು ಪ್ರಶ್ನೆಯನ್ನು ಎಸೆದಿದೆ — ಮನುಷ್ಯನ ಸ್ವಾರ್ಥಕ್ಕಾಗಿ ಮೂಕ ಪ್ರಾಣಿಗಳ ಕರುಳ ಬಳ್ಳಿಯ ಬಂಧವನ್ನು ಹೀಗೆ ತುಂಡರಿಸುವುದು ಎಷ್ಟು ಸರಿ? ಪ್ರಾಣಿಗಳ ಮೇಲಿನ ದಯೆ ಮತ್ತು ಕರುಣೆ ಕೇವಲ ಮಾತಿಗೆ ಸೀಮಿತವಾಗದೇ ಕಾರ್ಯಾಚರಣೆಗೆ ಬರಬೇಕಿದೆ

Continue Reading

Trending

Copyright © 2025 Deevatige

error: Content is protected !!