Connect with us

Uncategorized

ಮನೆಗೆ ಬೀಗ ಹಾಕಿ ಊರಿಗೆ ಹೋಗಿದ್ದ ಅರಣ್ಯಾಧಿಕಾರಿಯ ಮನೆಯನ್ನೇ ದೋಚಿದ ಖದೀಮರು..ಕೋಟೆಕಾರು ಉಪವಲಯ ಅರಣ್ಯಾಧಿಕಾರಿಗಳ ಮನೆ ಕಳ್ಳತನ..

Published

on

ಮನೆಗೆ ಬೀಗ ಹಾಕಿ ಊರಿಗೆ ಹೋಗಿದ್ದ ಅರಣ್ಯಾಧಿಕಾರಿಗಳು ಮರಳಿ ಬಂದಾಗ ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕ್, ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ಬ್ಯಾಂಕಿನಿಂದ ಸಾಲ ಪಡೆದು ತಂದಿಟ್ಟಿದ್ದ ಹತ್ತೂವರೆ ಲಕ್ಷ ನಗದು ಹಣ ಚಾಲಾಕಿ ಕಳ್ಳರ ಪಾಲಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉಳ್ಳಾಲ ಅಂಬಿಕಾ ರಸ್ತೆಯಲ್ಲಿರುವ ಬಾಡಿಗೆ ಮನೆ ನಿವಾಸಿ ಕೋಟೆಕಾರು ಉಪವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಮನೆಯಲ್ಲಿ ಕಳ್ಳರು ಕರಾಮತ್ತು ನಡೆಸಿದ್ದಾರೆ.

ಮೆಹಬೂಬ್ ಸಾಬ್ ತನ್ನ ಪತ್ನಿ ಮತ್ತು ಪುಟ್ಟ ಮಗುವಿನೊಂದಿಗೆ ಅಂಬಿಕಾ ರೋಡ್ ನ ಬಾಡಿಗೆ ಮನೆಯಲ್ಲಿ ಕಳೆದ ಆರು ತಿಂಗಳಿಂದ ವಾಸವಿದ್ದರು.

ಕಳೆದ ಶುಕ್ರವಾರ ಮಧ್ಯಾಹ್ನ ಮೆಹಬೂಬ್ ಅವರು ಕುಟುಂಬದೊಂದಿಗೆ ತನ್ನ ಹುಟ್ಟೂರು ಕೊಪ್ಪಳಕ್ಕೆ ತೆರಳಿದ್ದರು. ಇಂದು ಬೆಳಗ್ಗೆ ಊರಿಂದ ಮರಳಿ ಬಂದಾಗ ಕಳ್ಳತನ ನಡೆದಿರುವುದು ತಿಳಿದು ಬಂದಿದೆ.
ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಹಾಲ್ ಮತ್ತು ಎರಡು ಕೋಣೆಯೊಳಗಿನ ಕಪಾಟುಗಳನ್ನು ಜಾಲಾಡಿದ್ದಾರೆ. ಲಾಕರುಗಳಲ್ಲಿದ್ದ 181ಗ್ರಾಂ ಚಿನ್ನಾಭರಣ, ಪುಟ್ಟ ಮಗುವಿನ ಬೆಳ್ಳಿಯ ಆಭರಣಗಳು ಹಾಗೂ ಮೆಹಬೂಬ್ ಅವರು ಕೆಲದಿನಗಳ ಹಿಂದಷ್ಟೇ ಬ್ಯಾಂಕಿನಿಂದ ಸಾಲ ಪಡೆದಿದ್ದ ಹತ್ತು ಲಕ್ಷ ಐದು ಸಾವಿರ ರೂಪಾಯಿ ನಗದು ಹಣವನ್ನು ಕಳ್ಳರು ದೋಚಿದ ಬಗ್ಗೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

ಬಂಟ್ವಾಳದ ಏಮಾಜೆ ಸರ್ಕಾರಿ ಶಾಲೆ: ಗ್ರಾಮೀಣ ಶಿಕ್ಷಣ ರಂಗದ ವಿಶಿಷ್ಟ ಯಶೋಗಾಥೆ

Published

on

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದಲ್ಲಿರುವ ಏಮಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಇಂದು ಕೇವಲ ಒಂದು ಶಿಕ್ಷಣ ಸಂಸ್ಥೆಯಷ್ಟೇ ಅಲ್ಲ, ಬದಲಿಗೆ ರಾಜ್ಯದ ಇಡೀ ಸರ್ಕಾರಿ ಶಾಲಾ ವ್ಯವಸ್ಥೆಗೆ ದಾರಿದೀಪವಾಗಿರುವ ಒಂದು ಅದ್ಭುತ ಮಾದರಿಯಾಗಿದೆ. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳೆಂದರೆ ಮೂಲಸೌಕರ್ಯಗಳ ಕೊರತೆ ಮತ್ತು ಮಕ್ಕಳ ಸಂಖ್ಯೆ ಇಳಿಕೆ ಎಂಬ ನಕಾರಾತ್ಮಕ ಧೋರಣೆಯನ್ನು ಈ ಶಾಲೆ ತನ್ನ ಸೃಜನಶೀಲ ಹೆಜ್ಜೆಗಳಿಂದ ಸುಳ್ಳಾಗಿಸಿದೆ.

ಶಾಲೆಯ ಪ್ರಮುಖ ಮೈಲುಗಲ್ಲುಗಳು ಮತ್ತು ವಿಶೇಷತೆಗಳು

ಭದ್ರವಾದ ಬುನಾದಿ: 1982-83ರಲ್ಲಿ ಸ್ಥಾಪನೆಗೊಂಡ ಈ ಶಾಲೆ, ಇಂದು ಎಲ್‌ಕೆಜಿಯಿಂದ (LKG) 5ನೇ ತರಗತಿಯವರೆಗೆ ಒಟ್ಟು 104 ವಿದ್ಯಾರ್ಥಿಗಳನ್ನು ಒಳಗೊಂಡು ಹೆಮ್ಮೆಯಿಂದ ಬೆಳೆದು ನಿಂತಿದೆ.

ಗುಣಮಟ್ಟದ ಬೋಧನೆ: ಇಲ್ಲಿ 2 ಜನ ಸಮರ್ಪಿತ ಸರ್ಕಾರಿ ಶಿಕ್ಷಕರು ಹಾಗೂ 3 ಜನ ಗೌರವ ಶಿಕ್ಷಕಿಯರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ.

ಉಚಿತ ಆಟೋ ಸಾರಿಗೆ ಸೇವೆ: ದೂರದ ಊರುಗಳಿಂದ ಬರುವ ಪುಟಾಣಿ ಮಕ್ಕಳ ಅನುಕೂಲಕ್ಕಾಗಿ 2013-14ನೇ ಸಾಲಿನಿಂದಲೇ ಸ್ವಂತ ಶಾಲಾ ಆಟೋ ಮೂಲಕ ಸಂಪೂರ್ಣ ಉಚಿತ ಸಾರಿಗೆ ವ್ಯವ ಕಲ್ಪಿಸಲಾಗಿದೆ. ಇದು ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಕೃಷಿ ಮತ್ತು ಪರಿಸರ ಪಾಠ: ಶಾಲೆಯ ಹೆಸರಿನಲ್ಲಿ 2 ಎಕರೆ ಕೃಷಿ ಜಮೀನಿದ್ದು, ನೂರಕ್ಕೂ ಅಧಿಕ ತೆಂಗಿನ ಮರಗಳು, ಔಷಧೀಯ ಗಿಡಗಳು, ಹಣ್ಣು-ಹಂಪಲು ಮತ್ತು ತರಕಾರಿಗಳನ್ನು ಬೆಳೆಸಲಾಗಿದೆ. ಇದು ಮಕ್ಕಳಿಗೆ ಪ್ರಾಯೋಗಿಕ ಕೃಷಿ ಜ್ಞಾನ ನೀಡುತ್ತದೆ.

ತಂತ್ರಜ್ಞಾನ ಮತ್ತು ನಾವೀನ್ಯತೆ: ಇನ್ಫೋಸಿಸ್ ಸಂಸ್ಥೆಯ ಕೊಡುಗೆಯಾದ ಕಂಪ್ಯೂಟರ್‌ಗಳ ಮೂಲಕ 1ನೇ ತರಗತಿಯಿಂದಲೇ ಗಣಕಯಂತ್ರ ಶಿಕ್ಷಣ ನೀಡಲಾಗುತ್ತಿದೆ. ಜತೆಗೆ ಮಳೆ ಕೊಯ್ಲು, ಇಂಗು ಗುಂಡಿ ಮತ್ತು ಎರೆಹುಳ ಗೊಬ್ಬರ ಘಟಕಗಳನ್ನು ಅಳವಡಿಸಲಾಗಿದೆ.

ಪ್ರಶಸ್ತಿ ಹಾಗೂ ಗೌರವಗಳ ಗರಿ

ಶಾಲೆ ಮತ್ತು ಸಮಿತಿಯ ನಿರಂತರ ಪರಿಶ್ರಮಕ್ಕೆ ಸರಕಾರ ಹಾಗೂ ಪ್ರತಿಷ್ಠಿತ ಸಂಸ್ಥೆಗಳಿಂದ ಹಲವು ಪ್ರಮುಖ ಪ್ರಶಸ್ತಿಗಳು ಒಲಿದುಬಂದಿವೆ:

  1. ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ: ಮುಖ್ಯ ಶಿಕ್ಷಕಿ ಶ್ರೀಮತಿ ತ್ರಿವೇಣಿ ಅವರಿಗೆ 2019-20ರಲ್ಲಿ ಲಭಿಸಿದೆ.
  2. ರಾಜ್ಯ ಮಟ್ಟದ ಉತ್ತಮ SDMC ಪ್ರಶಸ್ತಿ: ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗೆ 2024-25ರಲ್ಲಿ ಸಂದಿದೆ.
  3. ಹಸಿರು ನೈರ್ಮಲ್ಯ ಶಾಲಾ ಪ್ರಶಸ್ತಿ: 2024ರಲ್ಲಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್‌ನಿಂದ ಇದು ಲಭಿಸಿದೆ.

ಮುಂದಿನ ಕನಸುಗಳು ಮತ್ತು ದಾನಿಗಳ ಸಹಕಾರದ ಅಪೇಕ್ಷೆ

ಹಳೆ ವಿದ್ಯಾರ್ಥಿ ಸಂಘ, ಎಸ್‌ಡಿಎಂಸಿ (SDMC), ಪೋಷಕರು ಹಾಗೂ ನೇರಳಕಟ್ಟೆ ಸಹಕಾರಿ ಸಂಘದ ಜಂಟಿ ಸಹಕಾರದಿಂದ ಮುನ್ನಡೆಯುತ್ತಿರುವ ಈ ಶಾಲೆಗೆ ಪ್ರಸ್ತುತ ಕೆಲವು ತುರ್ತು ಅವಶ್ಯಕತೆಗಳಿವೆ. ಮಕ್ಕಳ ಸುರಕ್ಷಿತ ಪ್ರಯಾಣಕ್ಕಾಗಿ ಒಂದು ಶಾಲಾ ವಾಹನ ಹಾಗೂ ಶಾಲೆಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಒಂದು ಸುಸಜ್ಜಿತ ಸಭಾಂಗಣದ (Auditorium) ಕೊರತೆ ಇದೆ.

ಗ್ರಾಮೀಣ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ಈ ಮಾದರಿ ಶಾಲೆಗೆ ಸಹೃದಯಿ ದಾನಿಗಳು ಹಾಗೂ ವಿದ್ಯಾಭಿಮಾನಿಗಳು ಕೈಜೋಡಿಸಿ, ಮತ್ತಷ್ಟು ಎತ್ತರಕ್ಕೆ ಬೆಳೆಯಲು ಸಹಕರಿಸಬೇಕಾಗಿ ವಿನಂತಿ.

Continue Reading

arrest

ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.

ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರು ಮತ್ತು ಬಂಧನ:

ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.

ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

arrest

ಕರಿಕೆ: ಕೇರಳ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಓರ್ವನ ಬಂಧನ, 40 ಕೆಜಿ ಮಾಂಸ ವಶ

Published

on

ಕರಿಕೆ ಸಮೀಪದ ಕೇರಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಕರಿಕೆ ತೋಟಮ್ ನಿವಾಸಿ ಸಿದ್ದು (35) ಬಂಧಿತ ಆರೋಪಿ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.

ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಸರಗೋಡು ವಲಯದ ಅರಣ್ಯ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ. ಹಾಗೂ ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿತ್ತು

Continue Reading

Trending

Copyright © 2025 Deevatige

error: Content is protected !!