Connect with us

DEATH

ಪತ್ನಿಯ ಕಿರುಕುಳಕ್ಕೆ ಮಗ ಬಲಿ: ಸುದೀಪ್ ರೈ ತಂದೆ ದಾಮೋದರ ರೈ ಗಂಭೀರ ಆರೋಪ

Published

on

ಬೆಳ್ತಂಗಡಿ ತಾಲೂಕಿನ ನೆಲ್ಯಾಡಿ ನಿವಾಸಿ ಸುದೀಪ್ ರೈ ಅವರ ಸಾವಿಗೆ ಅವರ ಪತ್ನಿಯೇ ಕಾರಣ ಎಂದು ಸುದೀಪ್ ಅವರ ತಂದೆ ದಾಮೋದರ ರೈ ನೆಲ್ಯಾಡಿ ಗಂಭೀರವಾಗಿ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಕಳ ಬಂಗ್ಲೆಗುಡ್ಡೆಯ ಸೌಮ್ಯಾ ಶೆಟ್ಟಿ ಎಂಬಾಕೆ ನೀಡಿದ ಮಾನಸಿಕ ಕಿರುಕುಳವೇ ತನ್ನ ಮಗನ ಸಾವಿಗೆ ನೇರ ಕಾರಣವಾಗಿದ್ದು, ಆಕೆಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಫೇಸ್‌ಬುಕ್ ಪರಿಚಯ, ರಿಜಿಸ್ಟರ್ ಮದುವೆ:
ದಾಮೋದರ ರೈ ಅವರು ಘಟನೆಯ ಹಿನ್ನೆಲೆಯನ್ನು ವಿವರಿಸುತ್ತಾ, “ನನ್ನ ಮಗ ಸುದೀಪ್ ರಿಯಲ್ ಎಸ್ಟೇಟ್ ಮತ್ತು ಸೋಲಾರ್ ಪ್ಯಾನಲ್ ಅಳವಡಿಸುವ ಕೆಲಸ ಮಾಡುತ್ತಿದ್ದ. ಆತನಿಗೆ ಸೌಮ್ಯಾ ಶೆಟ್ಟಿ ಎಂಬಾಕೆಯ ಪರಿಚಯ ಫೇಸ್‌ಬುಕ್ ಮೂಲಕವಾಗಿತ್ತು. ಮದುವೆ ಪ್ರಸ್ತಾಪ ಬಂದಾಗ ನಾವು ಅವರ ಮನೆಗೆ ಹೋಗಿದ್ದೆವು ಮತ್ತು ಅವರು ನಮ್ಮ ಮನೆಗೆ ಬಂದಿದ್ದರು. ಫೆಬ್ರವರಿ 16ರಂದು ನಾವು ಅವರ ಮನೆಗೆ ಭೇಟಿ ನೀಡಿ ಬಂದ ಬಳಿಕ, ‘ಸದ್ಯಕ್ಕೆ ಮದುವೆ ಅರ್ಜೆಂಟ್ ಬೇಡ, ಯೋಚಿಸಿ ನಿರ್ಧಾರ ಮಾಡೋಣ’ ಎಂದು ಹೇಳಿದ್ದೆವು. ಆದರೆ ನಮಗೆ ತಿಳಿಯದಂತೆ ಮರುದಿನವೇ ಅಂದರೆ ಫೆಬ್ರವರಿ 17ರಂದು ಅವರಿಬ್ಬರು ಪುತ್ತೂರಿನ ನೋಂದಣಿ ಕಚೇರಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದಾರೆ ಎಂಬ ವಿಷಯ ಈಗ ತಿಳಿದುಬಂದಿದೆ,” ಎಂದು ತಿಳಿಸಿದರು.

ಸಾರ್ವಜನಿಕವಾಗಿ ಅವಮಾನ ಮತ್ತು ಕಿರುಕುಳ:
ಮದುವೆಯ ನಂತರ ಸುದೀಪ್ ಉಜಿರೆಯಲ್ಲಿರುವ ಮಾವನ ಮನೆಯಲ್ಲಿ ವಾಸವಿದ್ದ ಎನ್ನಲಾಗಿದೆ. ಮಾರ್ಚ್ 16ರಂದು ನೆಲ್ಯಾಡಿಗೆ ಬಂದಿದ್ದ ಸೌಮ್ಯಾ, ಸುದೀಪ್ ಮತ್ತು ಅವರ ಪೋಷಕರ ಎದುರೇ ರಂಪಾಟ ಮಾಡಿದ್ದಾಳೆ. “ಫೋನ್ ತೆಗೆದಿಲ್ಲ ಎಂಬ ಕಾರಣಕ್ಕೆ ನೆಲ್ಯಾಡಿ ಪೇಟೆಯಲ್ಲಿ ಎಲ್ಲರ ಎದುರೇ ಅಸಭ್ಯವಾಗಿ ಬೈದು ನಮಗೆ ತೀವ್ರ ಅವಮಾನ ಮಾಡಿದ್ದಾಳೆ. ಆನಂತರ ಸುದೀಪ್ ಆಕೆಯ ಜೊತೆಗೇ ಹೋಗಿದ್ದ,” ಎಂದು ತಂದೆ ಅಳಲು ತೋಡಿಕೊಂಡಿದ್ದಾರೆ.

ಸಾವಿನ ಬಗ್ಗೆ ಅನುಮಾನ:
ಸೌಮ್ಯಾ ಜೊತೆಗೆ ಹೋದ ಎರಡು ದಿನಗಳಲ್ಲೇ ಸುದೀಪ್ ಅವರಿಗೆ ಆರೋಗ್ಯ ಸರಿ ಇಲ್ಲ ಎಂದು ಕಾರ್ಕಳದ ನಿಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರಂಭದಲ್ಲಿ ಇದು ಡೆಂಗ್ಯೂ ಜ್ವರ ಎಂದು ಹೇಳಲಾಗುತ್ತಿತ್ತು. ಆದರೆ ಈ ಸಾವಿನ ಹಿಂದೆ ಪತ್ನಿಯ ಕಿರುಕುಳ ಮತ್ತು ಸಂಚಿದೆ ಎಂದು ಕುಟುಂಬಸ್ಥರು ಶಂಕಿಸಿದ್ದಾರೆ. ನೆಲ್ಯಾಡಿಯ ಸುದೀಪ್ ರೈ ಸಾವಿನ ಪ್ರಕರಣವು ಈಗ ಹನಿಟ್ರಾಪ್ ಮತ್ತು ಸರಣಿ ಮದುವೆ ವಂಚನೆಯ ಆಯಾಮವನ್ನು ಪಡೆದುಕೊಂಡಿದೆ. ಆರೋಪಿ ಸೌಮ್ಯಾ ಶೆಟ್ಟಿ ಕೇವಲ ಸುದೀಪ್‌ಗೆ ಮಾತ್ರವಲ್ಲದೆ, ಈ ಹಿಂದೆ ಹಲವು ಪುರುಷರಿಗೆ ಮದುವೆಯ ಆಮಿಷವೊಡ್ಡಿ ವಂಚಿಸಿರುವ ಗಂಭೀರ ವಿಚಾರಗಳು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗವಾಗಿವೆ.

ಹನಿಟ್ರಾಪ್ ಗ್ಯಾಂಗ್ ಕಾರ್ಯನಿರ್ವಹಿಸುತ್ತಿದೆಯೇ?
ಸುದೀಪ್ ಅವರ ಪೋಷಕರು ಸೌಮ್ಯಾ ಶೆಟ್ಟಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, “ಆಕೆ ನಾಟಕ ತಂಡದಲ್ಲಿ ಕಲಾವಿದೆಯಾಗಿದ್ದು, ಮೇಕಪ್ ಆರ್ಟಿಸ್ಟ್ ಕೂಡ ಆಗಿದ್ದಾಳೆ. ಹಣಕ್ಕಾಗಿ ಮದುವೆಯಾಗುವ ಭರವಸೆ ನೀಡಿ ಹಲವರನ್ನು ನಂಬಿಸಿ ಮೋಸ ಮಾಡಿದ್ದಾಳೆ. ಈಕೆಯ ಹಿಂದೆ ಹನಿಟ್ರಾಪ್ ಗ್ಯಾಂಗ್ ಇರುವ ಶಂಕೆ ಇದೆ,” ಎಂದು ಕಣ್ಣೀರು ಹಾಕಿದ್ದಾರೆ. ಮಗನ ಸಾವಿಗೆ ನ್ಯಾಯ ಸಿಗಲೇಬೇಕು ಎಂದು ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಮತ್ತೊಬ್ಬ ಸಂತ್ರಸ್ತ ಕಲಾವಿದನ ಅಳಲು:
ಇದೇ ವೇಳೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ನಾಟಕ ಕಲಾವಿದ ಮೂಲ್ಕಿಯ ವೇಣುಗೋಪಾಲ ಶೆಟ್ಟಿ ಅವರು ಸೌಮ್ಯಾ ಶೆಟ್ಟಿಯಿಂದ ತಮಗಾದ ಕಹಿ ಅನುಭವವನ್ನು ಬಿಚ್ಚಿಟ್ಟಿದ್ದಾರೆ. “ಆಕೆ ನನ್ನನ್ನೂ ಮದುವೆಯಾಗುತ್ತೇನೆಂದು ಹೇಳಿ ವಿಚಿತ್ರವಾಗಿ ಹಿಂಸೆ ಕೊಟ್ಟಿದ್ದಾಳೆ. ಮದುವೆ ಫಿಕ್ಸ್ ಆಗಿದ್ದನ್ನು ನಾನು ಸ್ಟೇಟಸ್ ಹಾಕಿದಾಗ ಹಲವರು ಫೋನ್ ಮಾಡಿ ಆಕೆ ಸರಿಯಿಲ್ಲ ಎಂದು ಎಚ್ಚರಿಸಿದ್ದರು. ಸ್ವತಃ ಆಕೆಯ ಮನೆಯವರೇ ಆಕೆಯನ್ನು ಹೊರಗೆ ಹಾಕಿದ್ದರು,” ಎಂದು ತಿಳಿಸಿದರು.

ವೇಣುಗೋಪಾಲ ಶೆಟ್ಟಿ ಅವರು ಹೇಳುವಂತೆ, ಸೌಮ್ಯಾ ಈ ಹಿಂದೆ ಕನಿಷ್ಠ ಇಬ್ಬರನ್ನು ಮದುವೆಯಾಗಿ ವಂಚಿಸಿದ್ದಾಳೆ. “2024ರ ಡಿಸೆಂಬರ್ ಬಳಿಕ ಆಕೆಯ ಚರಿತ್ರೆ ತಿಳಿದು ನಾನು ಮದುವೆ ಪ್ರಸ್ತಾಪ ಕೈಬಿಟ್ಟಿದ್ದೆ. ಕೊನೆಗೆ ಆಕೆ ನನ್ನ ವಿರುದ್ಧವೇ ಪೊಲೀಸ್ ದೂರು ನೀಡಿದ್ದಳು. ಈಗ ಸುದೀಪ್ ರೈ ಅವರಂತಹ ಅಮಾಯಕ ಆಕೆಯ ಕಿರುಕುಳಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ,” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಪುರುಷರಿಗೂ ಇರಲಿ ಸಾಂತ್ವನ ಕೇಂದ್ರ:
ಸೌಮ್ಯಾ ಶೆಟ್ಟಿಯ ವಂಚನಾ ಜಾಲದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ವೇಣು ಶೆಟ್ಟಿ, ಕಾನೂನಿನ ದುರುಪಯೋಗದ ಬಗ್ಗೆ ಮಾತನಾಡಿದರು. “ಕಾನೂನು ಮಹಿಳೆಯರ ಪರವಾಗಿದೆ, ಅವರು ಸುಳ್ಳು ದೂರು ಕೊಟ್ಟರೂ ಪೊಲೀಸರು ನಮ್ಮನ್ನು ಎಳೆದೊಯ್ಯುತ್ತಾರೆ. ಆದರೆ ಅನ್ಯಾಯಕ್ಕೊಳಗಾದ ಪುರುಷರಿಗಾಗಿ ಯಾವುದೇ ಕಾನೂನಿಲ್ಲ. ಮಹಿಳಾ ಆಯೋಗದ ಮಾದರಿಯಲ್ಲೇ ಪುರುಷರಿಗೂ ಸಾಂತ್ವನ ಕೇಂದ್ರಗಳು ಇರಬೇಕು. ಈ ರೀತಿ ಅನ್ಯಾಯಕ್ಕೊಳಗಾದ ನಮಗೆ ನ್ಯಾಯ ಕೊಡುವವರು ಯಾರು?” ಎಂದು ಅವರು ಪ್ರಶ್ನಿಸಿದ್ದಾರೆ.

ಪೊಲೀಸ್ ತನಿಖೆಗೆ ಆಗ್ರಹ:
ಸೌಮ್ಯಾ ಶೆಟ್ಟಿ ಮದುವೆಯ ಹೆಸರಿನಲ್ಲಿ ಹಣ ವಸೂಲಿ ಮಾಡುವ ಉದ್ದೇಶ ಹೊಂದಿದ್ದಳೇ? ಈಕೆಯ ಹಿಂದೆ ಯಾರಿದ್ದಾರೆ? ಮತ್ತು ಸುದೀಪ್ ರೈ ಸಾವಿನಲ್ಲಿ ಈಕೆಯ ಪಾತ್ರವೇನು? ಎಂಬ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಮತ್ತು ಸಂತ್ರಸ್ತರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

ದಕ್ಷಿಣ ಕನ್ನಡ: ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ

Published

on

ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ರಾಯಿ ನಿವಾಸಿ ಜೀವನ್ ಪಿಂಟೊ (48) ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ಶನಿವಾರ ತಡರಾತ್ರಿ ಜೀವನ್ ಪಿಂಟೊ ಅವರು ತೋಡಿನ ಆಚೆಗಿರುವ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದರೂ, ಅವರು ನೀರಿಗೆ ಬಿದ್ದಿದ್ದಾರೋ ಅಥವಾ ಬೇರೆಡೆ ತೆರಳಿದ್ದಾರೋ ಎಂಬುದು ಅಧಿಕೃತವಾಗಿ ದೃಢಪಟ್ಟಿರಲಿಲ್ಲ.

ಸತತ ಶೋಧ ಕಾರ್ಯಾಚರಣೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ನದಿಯಲ್ಲಿ ಹರಿಯುತ್ತಿರುವ ಪ್ರಬಲ ನೀರಿನ ಸೆಳೆತದ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗುತಜ್ಞರು ಮತ್ತು ಗ್ರಾಮಸ್ಥರು ಕಳೆದ ಎರಡು ದಿನಗಳಿಂದ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.

ಸತತ ಕಾರ್ಯಾಚರಣೆಯ ಫಲವಾಗಿ ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮೃತದೇಹವನ್ನು ನದಿಯಿಂದ ಹೊರತೆಗೆದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಹಾಗೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

Continue Reading

accident

ಉಚ್ಚಿಲ: ಜಿಒಎಸ್ ಆಫ್ ಮಾಡದೆ ಟ್ರಾನ್ಸ್‌ಫಾರ್ಮರ್ ಏರಿದ ಮೆಸ್ಕಾಂ ಲೈನ್‌ಮ್ಯಾನ್ ವಿದ್ಯುತ್ ಆಘಾತದಿಂದ ಸಾವು

Published

on

ಉಳ್ಳಾಲ: ಜಿಒಎಸ್ (ಗ್ರೂಪ್ ಆಪರೇಟೆಡ್ ಸ್ವಿಚ್) ಆಫ್ ಮಾಡದೆ ವಿದ್ಯುತ್ ಟ್ರಾನ್ಸ್‌ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್‌ಮ್ಯಾನ್‌ ಒಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ದುರಂತ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಅಂಬಿಕಾರೋಡ್ ಪಿಲಾರು ನಿವಾಸಿ ಶೇಖ್ ಝುಮೀರ್ (49) ಮೃತಪಟ್ಟ ದುರದೃಷ್ಟಕರ ವ್ಯಕ್ತಿ.

ಘಟನೆಯ ವಿವರ:

ಉಚ್ಚಿಲ ನಯಾಪಟ್ಟಣದ ಟ್ರಾನ್ಸ್‌ಫಾರ್ಮರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಬಗ್ಗೆ ಮೆಸ್ಕಾಂಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಶೇಖ್ ಝುಮೀರ್ ಹಾಗೂ ಅವರ ಸಹೋದ್ಯೋಗಿ ಸಂಗಪ್ಪ ಎಂಬುವರು ಇಂದು ಬೆಳಿಗ್ಗೆ ಸ್ಥಳಕ್ಕೆ ತೆರಳಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು.

ಜಿಒಎಸ್ (GOS) ಆಫ್ ಆಗಿದೆ ಎಂದು ತಪ್ಪಾಗಿ ಗ್ರಹಿಸಿದ ಝುಮೀರ್, ಟ್ರಾನ್ಸ್‌ಫಾರ್ಮರ್ ಏರಿದ್ದಾರೆ. ಈ ವೇಳೆ ತೀವ್ರ ವಿದ್ಯುತ್ ಆಘಾತಕ್ಕೊಳಗಾಗಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತೀವ್ರ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ಮೃತ ಝುಮೀರ್ ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Continue Reading

DEATH

ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ – ವಾರೀಸುದಾರರ ಪತ್ತೆಗೆ ಪೋಲಿಸ್ ಮನವಿ

Published

on

ಉಪ್ಪಿನಂಗಡಿ: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಎಂಬಲ್ಲಿ ಹರಿಯುವ ನೇತ್ರಾವತಿ ನದಿಯ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ.

ಆಗಸ್ಟ್ 02, 2026ರಂದು ಮಧ್ಯಾಹ್ನ ಸುಮಾರು 03:00 ಗಂಟೆಯ ವೇಳೆಗೆ ನದಿ ದಡದಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು ಮೃತದೇಹವನ್ನು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರ ಮನವಿ:

ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಿಂದ ಪ್ರಕಟಣೆ ಹೊರಡಿಸಲಾಗಿದ್ದು, ಸಾರ್ವಜನಿಕರಲ್ಲಿ ಈ ಕೆಳಗಿನಂತೆ ಕೋರಲಾಗಿದೆ:

ಇತರ ಪೊಲೀಸ್ ಠಾಣೆಗಳಿಗೆ: ಯಾವುದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಗಂಡಸು ಕಾಣೆಯಾದ ಬಗ್ಗೆ ದೂರು ದಾಖಲಾಗಿದ್ದಲ್ಲಿ ತಕ್ಷಣವೇ ಉಪ್ಪಿನಂಗಡಿ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ.

ಸಾರ್ವಜನಿಕರಿಗೆ/ವಾರೀಸುದಾರರಿಗೆ: ಯಾರಾದರೂ ವ್ಯಕ್ತಿ ನಾಪತ್ತೆಯಾಗಿದ್ದು, ಮೃತರ ವಾರೀಸುದಾರರು ಅಥವಾ ಗುರುತು ತಿಳಿದವರು ಇದ್ದಲ್ಲಿ ತಕ್ಷಣವೇ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ವಿನಂತಿಸಲಾಗಿದೆ.

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಉಪ್ಪಿನಂಗಡಿ ಪೊಲೀಸ್ ಠಾಣೆ: 9480805362

Continue Reading

Trending

Copyright © 2025 Deevatige

error: Content is protected !!