Connect with us

Belthangady

ಇನ್ಸ್‌ಪೆಕ್ಟರ್ ಸಂದೇಶ್‌ಗೆ ಹೈಕೋರ್ಟ್ ಶಾಕ್: ಪ್ರಕರಣ ರದ್ದು ಕೋರಿದ್ದ ಅರ್ಜಿ ವಜಾ, ತನಿಖೆಗೆ ಗ್ರೀನ್ ಸಿಗ್ನಲ್

Published

on

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಹಣದ ವಹಿವಾಟಿನ ಆರೋಪ ಎದುರಿಸುತ್ತಿರುವ ಮೂಡಬಿದ್ರೆಯ ಅಮಾನತುಗೊಂಡ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರಿಗೆ ಹೈಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ನ್ಯಾಯಾಲಯದ ಪ್ರಮುಖ ನಡಾವಳಿಗಳು : ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಇನ್ಸ್‌ಪೆಕ್ಟರ್ ಪಿ.ಜಿ. ಸಂದೇಶ್, ಉಡುಪಿಯ ಸ್ಮಿತಾ ಪೂರ್ಣಿಮಾ ಆರ್. ಮಲ್ಯ ಮತ್ತು ಮಂಗಳೂರಿನ ಸುನೀತಾ ಲೋಬೋ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಮಹತ್ವದ ಆದೇಶವನ್ನು ನೀಡಿದೆ. ಸಂದೇಶ್ ಅವರೊಂದಿಗೆ ಇತರ ಇಬ್ಬರು ಅರ್ಜಿದಾರರು ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ನ್ಯಾಯಾಧೀಶರು, ಆರೋಪಿ ಇನ್ಸ್‌ಪೆಕ್ಟರ್ ವಿರುದ್ಧ ತನಿಖೆ ಮುಂದುವರಿಸಲು ‘ಗ್ರೀನ್ ಸಿಗ್ನಲ್’ ನೀಡಿದ್ದಾರೆ “ಒಂದು ವೇಳೆ ಅರ್ಜಿದಾರರ ವಿರುದ್ಧ ದೋಷಾರೋಪ ಪಟ್ಟಿ (Charge sheet) ಸಲ್ಲಿಕೆಯಾದರೆ, ಅದನ್ನು ಇದೇ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ” ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಟುವಾದ ಶಬ್ದಗಳಲ್ಲಿ ಎಚ್ಚರಿಕೆ ನೀಡಿರುವ ನ್ಯಾಯಾಲಯ, “ಒಬ್ಬ ಪೊಲೀಸ್ ಅಧಿಕಾರಿಯಾಗಿ ಈ ರೀತಿ ವರ್ತಿಸುವುದು ಸರಿಯಲ್ಲ” ಎಂದು ಹೇಳಿದೆ. ಶಾಲೆಯೊಂದರ ಮುಖ್ಯ ಶಿಕ್ಷಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಪಿ.ಜಿ. ಸಂದೇಶ್ ಅವರಿಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಹಣದ ವಹಿವಾಟಿನ ಬಗ್ಗೆ ತನಿಖೆಗೆ ಸೂಚನೆ: ಪ್ರಕರಣದ ವಿಚಾರಣೆಯ ವೇಳೆ ಪೀಠವು ಮಹತ್ವದ ವೀಕ್ಷಣೆ ಮಾಡಿದ್ದು, “ಸಂತ್ರಸ್ತೆಯರೊಂದಿಗೆ ಹಣದ ವಹಿವಾಟು ನಡೆದಿರುವ ಸಾಧ್ಯತೆಗಳಿದ್ದರೆ, ಆ ಬಗ್ಗೆಯೂ ಸಮಗ್ರವಾಗಿ ತನಿಖೆಯಾಗಲಿ” ಎಂದು ತಿಳಿಸಿದೆ. ಈ ಆದೇಶವು ಪ್ರಸ್ತುತ ಸಿಐಡಿ (CID) ತನಿಖೆ ಎದುರಿಸುತ್ತಿರುವ ಸಂದೇಶ್‌ ಅವರಿಗೆ ದೊಡ್ಡ ಸಂಕಷ್ಟ ತಂದೊಡ್ಡಿದೆ.

ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್ ಪಿ.ಜಿ. ವಿರುದ್ಧ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿತ್ತು. ಪ್ರಸ್ತುತ ಈ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದ್ದು, ಹೈಕೋರ್ಟ್‌ನ ಈ ಇತ್ತೀಚಿನ ಆದೇಶವು ತನಿಖಾ ತಂಡಕ್ಕೆ ಮತ್ತಷ್ಟು ಬಲ ನೀಡಿದಂತಾಗಿದೆ.


Continue Reading
Advertisement

Bantawala

ಬಡವರ ಮರಣಶಾಸನವಾದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ತೀರ್ಮಾನ: ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆ

Published

on

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ (MoU) ಮಾಡಿಕೊಳ್ಳುವ ಮೂಲಕ ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣ ಮಾಡಲು ಹೊರಟಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರದ ಈ ನಡೆ ಬಡಜನರ ಪಾಲಿಗೆ ಮರಣಶಾಸನವಾಗಿದೆ ಎಂದು ಸಮಿತಿಯ ಬೆಳ್ತಂಗಡಿ ಸಂಚಾಲಕರಾದ ಶೇಖರ್ ಎಲ್. ಅವರು ಕಿಡಿಕಾರಿದ್ದಾರೆ.

ಆರೋಗ್ಯ ಇಲಾಖೆಯ ಇತ್ತೀಚಿನ ಆದೇಶದಂತೆ, ಬಂಟ್ವಾಳ ತಾಲ್ಲೂಕು ಆಸ್ಪತ್ರೆಯನ್ನು ಎ.ಜೆ ವೈದ್ಯಕೀಯ ಕಾಲೇಜಿನೊಂದಿಗೆ, ವಿಟ್ಲ ಆರೋಗ್ಯ ಕೇಂದ್ರವನ್ನು ಯನೋಪೋಯಾ ಸಂಸ್ಥೆಯೊಂದಿಗೆ ಹಾಗೂ ಬೆಳ್ತಂಗಡಿ ಮತ್ತು ಮೂಡಬಿದ್ರೆ ಕೇಂದ್ರಗಳನ್ನು ಆಳ್ವಾಸ್‌ ಹೆಲ್ತ್ ಸೆಂಟರ್‌ನೊಂದಿಗೆ ಒಂದು ವರ್ಷದ ಅವಧಿಗೆ ಒಪ್ಪಂದ ಮಾಡಿಕೊಳ್ಳಲು ಅನುಮೋದನೆ ನೀಡಲಾಗಿದೆ.

ಬಡರೋಗಿಗಳ ಸುಲಿಗೆಗೆ ದಾರಿ:

ಜನಸಾಮಾನ್ಯರಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿದ್ದ ಸರ್ಕಾರಿ ಆಸ್ಪತ್ರೆಗಳು ಬಡವರ ಪಾಲಿಗೆ ವರದಾನವಾಗಿದ್ದವು. ಆದರೆ ಈಗ ಏಕಾಏಕಿ ಖಾಸಗಿ ಸಂಸ್ಥೆಗಳೊಂದಿಗೆ ಕರಾರು ಮಾಡಿಕೊಳ್ಳುವ ಮೂಲಕ ಸರ್ಕಾರಿ ಆಸ್ಪತ್ರೆಗಳನ್ನು ಬಡಜನರ ಸುಲಿಗೆ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಬಡರೋಗಿಗಳನ್ನು ಖಾಸಗಿ ಸಂಸ್ಥೆಗಳ ಪ್ರಯೋಗಶಾಲೆಯಲ್ಲಿ ಗುರಾಣಿಯಂತೆ ಬಳಸಿಕೊಳ್ಳಲು ಈ ಮೂಲಕ ಅವಕಾಶ ಮಾಡಿಕೊಡಲಾಗಿದೆ. ಇದು ಸರ್ಕಾರದ ಅವಿವೇಕತನದ ತೀರ್ಮಾನವಾಗಿದ್ದು, ಸಂವಿಧಾನಬದ್ಧವಾಗಿ ಉಚಿತ ಆರೋಗ್ಯ ಸೇವೆ ನೀಡಲು ತನಗೆ ಸಾಧ್ಯವಿಲ್ಲ ಎಂಬುದನ್ನು ಸರ್ಕಾರ ಒಪ್ಪಿಕೊಂಡಂತಾಗಿದೆ ಎಂದು ಶೇಖರ್ ಎಲ್. ಟೀಕಿಸಿದ್ದಾರೆ.

ಖಾಸಗಿ ಸಂಸ್ಥೆಗಳ ಹಿತಾಸಕ್ತಿ ರಕ್ಷಣೆ:

ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಮಂಜೂರುಗೊಳಿಸಿ ಖಾಸಗಿ ಮೆಡಿಕಲ್ ಕಾಲೇಜ್‌ಗಳ ಕೆಂಗಣ್ಣಿಗೆ ಗುರಿಯಾಗಿದ್ದ ಸರ್ಕಾರ, ಈಗ ಅವರನ್ನು ಸಂತೋಷಪಡಿಸಲು ಜಿಲ್ಲೆಯ ಬಡಜನರನ್ನು ಬಲಿಕೊಡುತ್ತಿದೆ. ಸರ್ಕಾರಿ ಆಸ್ಪತ್ರೆಗಳನ್ನೇ ಖಾಸಗಿಯವರಿಗೆ ಮಾರಲು ಹೊರಟಿರುವ ಈ ಕ್ರಮವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸಮಿತಿ ಎಚ್ಚರಿಸಿದೆ.

ಹೋರಾಟದ ಎಚ್ಚರಿಕೆ:

ಯಾವುದೇ ಕಾರಣಕ್ಕೂ ಬಡವರ ಜೀವನದಲ್ಲಿ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ. ಒಂದು ವೇಳೆ ಸರ್ಕಾರ ಈ ಒಪ್ಪಂದದಿಂದ ತಕ್ಷಣ ಹಿಂದೆ ಸರಿಯದಿದ್ದರೆ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಆರೋಗ್ಯ ಸಚಿವರು ಜಿಲ್ಲೆಯಲ್ಲಿ ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ, ಘೇರಾವ್ ಹಾಕಲಾಗುವುದು ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸಂಚಾಲಕ ಶೇಖರ್ ಎಲ್. ಅವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಸರಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಮುನೀರ್ ಕಾಟಿಪಳ್ಳ ತೀವ್ರ ವಿರೋಧ
ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಒಪ್ಪಿಸುವ ಸರಕಾರದ ತೀರ್ಮಾನವನ್ನು ‘ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ’ಯ ಸಂಚಾಲಕ ಮುನೀರ್ ಕಾಟಿಪಳ್ಳ ಕಟುವಾಗಿ ಟೀಕಿಸಿದ್ದಾರೆ.
ಬೆಳ್ತಂಗಡಿ, ಮೂಡಬಿದ್ರೆ, ವಿಟ್ಲ ಹಾಗೂ ಬಂಟ್ವಾಳ ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ಆದೇಶವು ಜಿಲ್ಲೆಯ ಮಟ್ಟಿಗೆ ಒಂದು ‘ಕರಾಳ ಆದೇಶ’ವಾಗಿದೆ. ಈಗಾಗಲೆ ವೆನ್ಲಾಕ್ ಜಿಲ್ಲಾಸ್ಪತ್ರೆ ಮಣಿಪಾಲ್ ಗುಂಪಿಗೂ, ಉಳ್ಳಾಲ ಸಮುದಾಯ ಆಸ್ಪತ್ರೆ ಯೆನಪೋಯ ಗುಂಪಿಗೂ ಹಸ್ತಾಂತರಗೊಂಡಿದೆ. ರಾಜ್ಶ ಸರಕಾರದ ಈ ತೀರ್ಮಾನ ಖಾಸಗಿ ಆಸ್ಪತ್ರೆಗಳ ಸುಲಿಗೆ ನೀತಿಯಿಂದ ಕಂಗೆಟ್ಟಿರುವ ಜನಸಾಮಾನ್ಯರ ಸಂಕಟಗಳನ್ನು ಮತ್ತಷ್ಟು ತೀವ್ರಗೊಳಿಸಿದೆ. ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ತೆರಳುವವರು ಇನ್ನು ಮುಂದೆ ಗುಣಮಟ್ಟದ ಚಿಕಿತ್ಸೆ ನಿರೀಕ್ಷಿಸುವಂತಿಲ್ಲ
ಜನಸಾಮಾನ್ಯರ ಆರೋಗ್ಯ ಈಗ ಪೂರ್ಣಪ್ರಮಾಣದಲ್ಲಿ ವ್ಯಾಪಾರದ ಸರಕಾಗುತ್ತಿದೆ. ಸರಕಾರಿ ಆಸ್ಪತ್ರೆಗೆ ಬರುವ ಬಡವರು ಕೇವಲ ಖಾಸಗಿ ಮೆಡಿಕಲ್ ವಿದ್ಯಾರ್ಥಿಗಳ ‘ಕಲಿಕಾ ಸಾಧನ’ವಾಗುವ ಭೀತಿ ಎದುರಾಗಿದೆ. ಆಡಳಿತಾರೂಢ ಸರಕಾರದ ಈ ಜನವಿರೋಧಿ ನೀತಿಯ ವಿರುದ್ಧ ವಿರೋಧ ಪಕ್ಷದ ಶಾಸಕರೂ ಸೊಲ್ಲೆತ್ತುತ್ತಿಲ್ಲ. ಇವರೆಲ್ಲರೂ ಖಾಸಗಿ ಮೆಡಿಕಲ್ ಲಾಬಿಯ ಪರವಾಗಿದ್ದಾರೆ. ಆರೋಗ್ಯ ಕ್ಷೇತ್ರವನ್ನು ಸಂಪೂರ್ಣವಾಗಿ ನಾಶಪಡಿಸುವ ಈ ನಿರ್ಧಾರವನ್ನು ಸರಕಾರ ತಕ್ಷಣ ಹಿಂಪಡೆಯಬೇಕು. ಈ ಕುರಿತು ಜಿಲ್ಲೆಯಾದ್ಯಂತ ಬೃಹತ್ ಜನಹೋರಾಟ ಸಂಘಟಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ

,

Continue Reading

Belthangady

ಯೂಟ್ಯೂಬರ್ ಸಮೀರ್ ಗೆ ಹೈಕೋರ್ಟ್ ರಿಲೀಫ್: ಕ್ರಿಮಿನಲ್ ಪ್ರಕರಣಕ್ಕೆ ಮಧ್ಯಂತರ ತಡೆ

Published

on

ಧರ್ಮಸ್ಥಳದ ಅಸಹಜ ಸಾವಿನ ಬಗ್ಗೆ ಕೃತಕ ಬುದ್ಧಿಮತ್ತೆ ಬಳಸಿ ಕಾಲ್ಪನಿಕ ವಿಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್ ಎಂ.ಡಿ.ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಸಮೀರ್ ಸಲ್ಲಿಸಿದ್ದರು.

ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಕುರಿತು ವಿಡಿಯೋ ಹಂಚಿಕೊಂಡಿದ್ದ ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಮೇಲ್ನೋಟಕ್ಕೆ ಬಲವಾದ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ಶವಗಳನ್ನು ಹೂಳಲಾಗುತ್ತಿದೆ ಎಂಬ ಗಂಭೀರ ಆರೋಪಗಳನ್ನು ಒಳಗೊಂಡ ವಿಡಿಯೋವೊಂದನ್ನು ಸಮೀರ್ ಮೊಹಮ್ಮದ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ದೇವಸ್ಥಾನದ ಘನತೆಗೆ ಧಕ್ಕೆ ತರುವಂತಿದೆ. ವಿವಿಧ ಗುಂಪುಗಳ ನಡುವೆ ದ್ವೇಷ ಬಿತ್ತುವ ಪ್ರಯತ್ನ (ಸೆಕ್ಷನ್ 153A) ನಡೆಸಲಾಗಿದೆ. ಸಾರ್ವಜನಿಕ ಶಾಂತಿ ಕದಡುವ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ನ್ಯಾಯಾಲಯದಲ್ಲಿ ನಡೆದ ವಾದ-ಪ್ರತಿವಾದ
ಸಮೀರ್ ಮೊಹಮ್ಮದ್ ಪರ ವಕೀಲರು ನ್ಯಾಯಪೀಠದ ಮುಂದೆ ಅರ್ಜಿದಾರರು ಕೇವಲ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿರುವ ವಿಷಯದ ಬಗ್ಗೆ ವಿಡಿಯೋ ಮಾಡಿದ್ದಾರೆ. ಇದರಲ್ಲಿ ಯಾವುದೇ ಸಮುದಾಯಗಳ ನಡುವೆ ದ್ವೇಷ ಉಂಟುಮಾಡುವ ಉದ್ದೇಶವಿಲ್ಲ. ಇದು ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿದೆ ಎಂದು ಬಲವಾದ ವಾದ ಮಂಡಿಸಿದರು. ವಿಚಾರಣೆ ವೇಳೆ ಸಮೀರ್ ಪರ ವಕೀಲರು, “ಯೂಟ್ಯೂಬ್‌ನಲ್ಲಿ ವಿಡಿಯೋ ಹಾಕಿದ್ದಕ್ಕೆ ಪೊಲೀಸರು ಸಾರ್ವಜನಿಕ ಶಾಂತಿ ಭಂಗದ ನೆಪದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ” ಎಂದು ವಾದಿಸಿದರು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಮಾರ್ಮಿಕವಾಗಿ ಪ್ರತಿಕ್ರಿಯಿಸಿ, “ಯಾರ ನೆಮ್ಮದಿ ಹಾಳು ಮಾಡಿದ್ದೀರಿ ಎಂದು ನಮಗೆ ತಿಳಿದಿದೆ. ಅದು ಕೇವಲ ಸಾರ್ವಜನಿಕರ ನೆಮ್ಮದಿ ಮಾತ್ರವಲ್ಲ” ಎಂದು ನಗುತ್ತಲೇ ನುಡಿದರು.

ಹೈಕೋರ್ಟ್ ನೀಡಿದ ಮಹತ್ವದ ಆದೇಶ
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಅರ್ಜಿದಾರರ ವಿರುದ್ಧ ಮೇಲ್ನೋಟಕ್ಕೆ ಯಾವುದೇ ಗಂಭೀರ ಪುರಾವೆಗಳಿಲ್ಲ. ಯಾವುದೇ ನಿರ್ದಿಷ್ಟ ಸಮುದಾಯಗಳ ನಡುವೆ ದ್ವೇಷ ಅಥವಾ ಸಂಘರ್ಷಕ್ಕೆ ಪ್ರಚೋದನೆ ನೀಡಿದ ಅಂಶಗಳು ಈ ವಿಡಿಯೋದಲ್ಲಿ ಕಂಡುಬರುತ್ತಿಲ್ಲ. ಎಂಬ ಅಂಶಗಳನ್ನು ಗಮನಿಸಿ ಅರ್ಜಿದಾರರ ವಿರುದ್ಧದ ಮುಂದಿನ ತನಿಖೆ ಮತ್ತು ಎಲ್ಲಾ ಕಾನೂನು ಕ್ರಮಗಳಿಗೆ ನ್ಯಾಯಾಲಯ ತಡೆ ನೀಡಿದೆ.

ನ್ಯಾಯಾಲಯವು ಈ ಕುರಿತು ರಾಜ್ಯ ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಮುಂದೂಡಿದೆ. ಹೈಕೋರ್ಟ್‌ನ ಈ ತೀರ್ಪು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವವರು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರ ಧ್ವನಿ ಎತ್ತುವವರಿಗೆ ದೊಡ್ಡ ಸಮಾಧಾನ ತಂದಿದೆ.

Continue Reading

Belthangady

ಶಿಕ್ಷಕಿ ಮೇಲೆ ಅತ್ಯಾಚಾರ ಆರೋಪ: ಕೇಸ್ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್; ಮೂಡುಬಿದಿರೆ ಮಾಜಿ ಇನ್ಸ್‌ಪೆಕ್ಟರ್‌ಗೆ ಬಂಧನದ ಭೀತಿ

Published

on

ದೂರು ನೀಡಲು ಬಂದ ಮಹಿಳೆಗೆ ರಕ್ಷಣೆ ನೀಡಬೇಕಾದ ಅಧಿಕಾರಿಯೇ ಭಕ್ಷಕನಾದರೇ ಏನಾಗುತ್ತದೆ ಎಂಬುದಕ್ಕೆ ಮೂಡುಬಿದಿರೆಯ ಅಮಾನತುಗೊಂಡ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಪ್ರಕರಣವೇ ಸಾಕ್ಷಿ. ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ಈ ‘ಕಾಮಪುರಾಣ’ದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಆರೋಪಿ ಅಧಿಕಾರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಶಿಕ್ಷಕಿಯೊಬ್ಬರ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಂದೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಕಿಡಿಹೊತ್ತಿಸಿದೆ.

“ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು ಅಧಿಕಾರದ ದುರುಪಯೋಗವಲ್ಲವೇ? ಇಂತಹ ಸಂದರ್ಭದಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗದೆ ಇನ್ನೇನು ದಾಖಲಾಗಲು ಸಾಧ್ಯ?” ಎಂದು ನ್ಯಾಯಪೀಠವು ಖಾರವಾಗಿ ಪ್ರಶ್ನಿಸಿದೆ.

ವಿಚಾರಣೆ ವೇಳೆ ಸಂದೇಶ್ ಪರ ವಕೀಲರು ವಾದ ಮಂಡಿಸಿ, “ಇದು ಇಬ್ಬರ ನಡುವಿನ ಒಪ್ಪಿತ ಸಂಬಂಧವಾಗಿತ್ತು, ಅತ್ಯಾಚಾರ ಆರೋಪಕ್ಕೆ ಯಾವುದೇ ಆಧಾರಗಳಿಲ್ಲ” ಎಂದು ಸಮರ್ಥಿಸಿಕೊಳ್ಳಲು ಯತ್ನಿಸಿದರು. ಆದರೆ, ಈ ವಾದವನ್ನು ಒಪ್ಪದ ನ್ಯಾಯಾಲಯವು ಮಧ್ಯಂತರ ತಡೆ ನೀಡಲು ಸಾರಾಸಗಟಾಗಿ ನಿರಾಕರಿಸಿತು.

ಹೈಕೋರ್ಟ್ ಬಂಧನದ ವಿರುದ್ಧ ಯಾವುದೇ ಮಧ್ಯಂತರ ರಕ್ಷಣೆ ನೀಡದ ಕಾರಣ, ಸಿಐಡಿ ಪೊಲೀಸರು ಯಾವುದೇ ಕ್ಷಣದಲ್ಲಿ ಸಂದೇಶ್‌ರನ್ನು ಬಂಧಿಸುವ ಸಾಧ್ಯತೆಯಿದೆ. ಈಗಾಗಲೇ ಸಿಐಡಿ ಈ ಪ್ರಕರಣದ ಆಳವಾದ ತನಿಖೆ ನಡೆಸುತ್ತಿದ್ದು, ದಿನಕ್ಕೊಂದು ಹೊಸ ಸ್ಫೋಟಕ ಮಾಹಿತಿ ಹೊರಬರುತ್ತಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಲಾಗಿದ್ದು, ಅಂದು ಇನ್ಸ್‌ಪೆಕ್ಟರ್ ಭವಿಷ್ಯ ನಿರ್ಧಾರವಾಗಲಿದೆ.

ರಕ್ಷಕನೇ ಭಕ್ಷಕನಾದ ಈ ಪ್ರಕರಣವು ಪೊಲೀಸ್ ಇಲಾಖೆಗೆ ಕಪ್ಪು ಚುಕ್ಕೆಯಾಗಿದ್ದು, ಹೈಕೋರ್ಟ್‌ನ ಇಂದಿನ ನಿಲುವು ಸಂತ್ರಸ್ತ ಮಹಿಳೆಗೆ ನ್ಯಾಯ ಸಿಗುವ ಭರವಸೆಯನ್ನು ಮೂಡಿಸಿದೆ.

Continue Reading

Trending

Copyright © 2025 Deevatige