Connect with us

accident

ಅಜ್ಜ ಪುತ್ತಾಕನ ಕಣ್ಮುಂದೆಯೇ ವಿದ್ಯುತ್ ತಂತಿ ತಗುಲಿ ಮೊಮ್ಮಗ ದಾರುಣ ಸಾವು; ಹೆದ್ದಾರಿ ಇಲಾಖೆಯ ನಿರ್ಲಕ್ಷ್ಯಕ್ಕೆ ಬಲಿಯಾಯಿತೇ ಎಳೆಯ ಜೀವ?

Published

on

ಬಂಟ್ವಾಳ: ತೆಂಗಿನಕಾಯಿ ಕೀಳಲೆಂದು ದೋಂಟಿ ಹಿಡಿದು ತೋಟಕ್ಕಿಳಿದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೋರ್ವ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸುಟ್ಟು ಕರಕಲಾದ ಘೋರ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.

ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್‌ನ ಬಾಡಿಗೆ ಮನೆಯಲ್ಲಿ ವಾಸವಿರುವ ಮಹಮ್ಮದ್ ಶರೀಫ್ ಅವರ ಪುತ್ರ, ಪುತ್ತೂರು ಮೌಂಟೇನ್ ವ್ಯೂ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಹೀರ್ (15) ಮೃತಪಟ್ಟ ದುರ್ದೈವಿ. ಪರೀಕ್ಷೆ ಮುಗಿಸಿ ರಜೆಯಲ್ಲಿದ್ದ ಬಾಲಕ ಇಂದು ಬೆಳಿಗ್ಗೆ ತನ್ನ ಅಜ್ಜ ಪುತ್ತಾಕ (ಮಾಯಬ್ಬ) ಅವರ ಮನೆಗೆ ಬಂದಿದ್ದ ಸಂದರ್ಭ ಈ ದುರಂತ ನಡೆದಿದೆ.

ಘಟನೆಯ ವಿವರ:

ಅಜ್ಜ ಪುತ್ತಾಕ ಅವರು ತನ್ನ ಮನೆಯ ಮುಂಭಾಗದಲ್ಲಿರುವ ‌ ಬಂಟ್ವಾಳದ ಅಬ್ಬಾಸ್ ಎಂಬವರ ಜಮೀನಿನಲ್ಲಿ ತೆಂಗಿನಕಾಯಿ ಕೀಳಲು ಕೂಲಿಯಾಳನ್ನು ಕರೆತರುವಂತೆ ಮೊಮ್ಮಗ ಶಹೀರ್‌ಗೆ ತಿಳಿಸಿದ್ದರು. ಅಜ್ಜನ ಮಾತಿನಂತೆ ಕೂಲಿಯಾಳನ್ನು ಕರೆತಂದ ಶಹೀರ್, ಉತ್ಸಾಹದಿಂದ ತಾನೂ ಕಾಯಿ ಕೀಳಲು ನೆರವಾಗಲೆಂದು ನೆರೆಮನೆಯಿಂದ ವಿದ್ಯುತ್ ಪ್ರವಾಹಕ ದೋಂಟಿಯನ್ನು (Iron/Conducting Rod) ಹಿಡಿದುಕೊಂಡು ಜಮೀನಿಗೆ ಹೋಗಿದ್ದಾನೆ. ಕೂಲಿಯಾಳು ಮರ ಹತ್ತುತ್ತಿರುವಾಗಲೇ, ಶಹೀರ್ ಸಣ್ಣ ಮರವೊಂದರಿಂದ ಕಾಯಿ ಕೀಳಲು ದೋಂಟಿ ಎತ್ತಿದ್ದಾನೆ. ಈ ವೇಳೆ ಮರದ ತೀರಾ ಸಮೀಪದಲ್ಲೇ ಹಾದುಹೋಗಿದ್ದ ಹೈಟೆನ್ಷನ್ (HT) ವಿದ್ಯುತ್ ಲೈನ್‌ಗೆ ದೋಂಟಿ ಸ್ಪರ್ಶಿಸಿದೆ. ತಕ್ಷಣವೇ ತೀವ್ರಗತಿಯ ವಿದ್ಯುತ್ ಆಘಾತಕ್ಕೊಳಗಾದ ಬಾಲಕನ ದೇಹವು ದೋಂಟಿ ಹಿಡಿತದೊಂದಿಗೆ ಸ್ಥಳದಲ್ಲೇ ಸುಟ್ಟು ಕರಟಿಹೋಗಿದೆ.

ಸ್ಥಳೀಯ ಸಮಾಜ ಸೇವಕ ಇಕ್ಬಾಲ್ ಮತ್ತು ಇತರರು ಇತರರು ತಕ್ಷಣ ಧಾವಿಸಿ, ಮತ್ತಷ್ಟು ಕರಟುತ್ತಿದ್ದ ಮೃತದೇಹವನ್ನು ರಕ್ಷಿಸಿದ್ದಾರೆ. ಬಳಿಕ ಆಸ್ಪತ್ರೆಯ ಪ್ರಕ್ರಿಯೆಗಳನ್ನು ಮುಗಿಸಿ, ಗಡಿಯಾರಕ್ಕೆ ತಂದು ಸಾರ್ವಜನಿಕ ವೀಕ್ಷಣೆಯ ಬಳಿಕ ಮೃತದೇಹವನ್ನು ದಫನ ಸಂಸ್ಕಾರಕ್ಕಾಗಿ ಅವರ ತಂದೆಯ ಜಮಾತ್‌ ಇರುವ ಮೂಲ ನಿವಾಸವಾದ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ನೀರಕಟ್ಟೆಗೆ ಕೊಂಡೊಯ್ಯಲಾಗಿದೆ.

ಇಲಾಖೆಗಳ ನಿರ್ಲಕ್ಷ್ಯಕ್ಕೆ ಆಕ್ರೋಶ:

ಈ ಸಾವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಮೆಸ್ಕಾಂ ಇಲಾಖೆಯ ಬೇಜವಾಬ್ದಾರಿಯೇ ನೇರ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹೆದ್ದಾರಿ ಕಾಮಗಾರಿಯ ವೇಳೆ ತೆಗೆದ ಮಣ್ಣನ್ನು ಈ ಭಾಗದಲ್ಲಿ ಸುರಿಯಲಾಗಿತ್ತು. ಇದರಿಂದಾಗಿ ನೆಲದ ಮಟ್ಟ ಏರಿಕೆಯಾಗಿ, ಬಹಳ ಎತ್ತರದಲ್ಲಿದ್ದ ಅಪಾಯಕಾರಿ ಹೈಟೆನ್ಷನ್ ತಂತಿಗಳು (H T Line ) ಈಗ ತೀರಾ ಹತ್ತಿರಕ್ಕೆ ಬಂದಿವೆ. ಈ ಬಗ್ಗೆ ಅಪಾಯವನ್ನು ಅರಿತ ಸ್ಥಳೀಯರು ಅಪಾಯಕಾರಿ ಹೈಟೆನ್ಷನ್ ತಂತಿಗಳು ಹಾದುಹೋಗುವ ಕಂಬವನ್ನು ನಿಯಮಾನುಸಾರವಾಗಿ ಏರಿಸಬೇಕು ಅಂದರೆ ಎತ್ತರದ ಕಂಬವನ್ನು ಹಾಕಬೇಕು ಎಂದು ಅದೆಷ್ಟೋ ಬಾರಿ ಕೇಳಿ ಕೊಂಡಿದ್ದಾರೆ. ಹೆದ್ದಾರಿ ಏರಿಸಿರುವುದರಿಂದ ತಂತಿಗಳು ಕೆಳಗೆ ಬಂದಿವೆ, ಹೆದ್ದಾರಿ ಪ್ರಾಧಿಕಾರದವರು ಆ ಕೆಲಸವನ್ನು ಮಾಡಬೇಕು ಎಂದು ಕರೆಂಟ್ ಇಲಾಖೆಯವರು ಶಾಕ್‌ ನೀಡಿದರೆ ವಿದ್ಯುತ್‌ ಇಲಾಖೆಯ ಕಾರ್ಯ ನಿರ್ವಹಣೆ ನಮಗೆ ಬರುವುದಿಲ್ಲ ಎಂಬುವುದು ಹೆದ್ದಾರಿ ದೊಡ್ಡವರ ವಾದ . ಅಂತೂ ಇಂತೂ ಹಲವು ಬಾರಿ ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇಲಾಖೆಗಳ ಈ ‘ಕಣ್ಣುಮುಚ್ಚಾಲೆ’ ಆಟಕ್ಕೆ ಇಂದು ಅಮಾಯಕ ವಿದ್ಯಾರ್ಥಿ ಬಲಿಯಾಗಿದ್ದಾನೆ.

ಪುತ್ತಾಕ ಕುಟುಂಬಕ್ಕೆ ಆಘಾತದ ಮೇಲೆ ಆಘಾತ:

ಗಡಿಯಾರ ಪುತ್ತಾಕ ಅವರು ಹೆದ್ದಾರಿಯಲ್ಲಿ ನಡೆಯುವ ಅಪಘಾತಗಳ ಸಂದರ್ಭದಲ್ಲಿ ಜೀವದ ಹಂಗು ತೊರೆದು ರಕ್ಷಣಾ ಕಾರ್ಯ ನಡೆಸುವ ಹೆಸರಾಂತ ಸಮಾಜ ಸೇವಕ. ಆದರೆ ವಿಧಿಯ ಆಟ ಮಾತ್ರ ಕ್ರೂರವಾಗಿದೆ. 13 ವರ್ಷಗಳ ಹಿಂದೆ ಪೇರಮೊಗರು ಎಂಬಲ್ಲಿ ನಡೆದ ಲಾರಿ ಅಪಘಾತದಲ್ಲಿ ಪುತ್ತಾಕ ಅವರು ತಮ್ಮ ಇಬ್ಬರು ಪುತ್ರರಾದ ಆಶಿಕ್ ಮತ್ತು ಶಫೀಕ್ ಅವರನ್ನು ಕಳೆದುಕೊಂಡಿದ್ದರು. ಅಂದು ಅಪಘಾತದ ಜಾಗದಿಂದ ಮಕ್ಕಳ ಶವವನ್ನು ಹೊರತೆಗೆದಿದ್ದ ಅಜ್ಜ, ಇಂದು ತನ್ನ ಕಣ್ಮುಂದೆಯೇ ತನ್ನ ಪ್ರೀತಿಯ ಮೊಮ್ಮಗ ವಿದ್ಯುತ್ ಆಘಾತಕ್ಕೆ ಬಲಿಯಾದುದನ್ನು ಕಂಡು ಕಂಗಾಲಾಗಿದ್ದಾರೆ. ಪತ್ನಿ ಕೂಡ ಕಳೆದ ಹಲವು ವರ್ಷಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಈ ಕುಟುಂಬಕ್ಕೆ ದುಃಖದ ಮೇಲೆ ದುಃಖ ಮಳೆಗರೆದಂತಾಗಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಕಾರಿನ ಮೇಲೆ ಕಾಡಾನೆ ದಾಳಿ: ಚಾಲಕನ ಸಮಯಪ್ರಜ್ಞೆಯಿಂದ ಪಾರಾದ ಕುಟುಂಬ!

Published

on

ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ದೋಲನಮನೆ ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ರಸ್ತೆಯಲ್ಲಿ ಎದುರಾದ ಕಾಡಾನೆಯೊಂದು ಕಾರಿನ ಮೇಲೆ ದಾಳಿ ನಡೆಸಿದೆ. ಆದರೆ, ಚಾಲಕನ ಅತ್ಯಂತ ಸಮಯಪ್ರಜ್ಞೆಯಿಂದಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಘಟನೆಯ ವಿವರ:

ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಮಹಮ್ಮದ್ ಜಾಹಿದ್ ಎಂಬವರು ತಮ್ಮ ತಾಯಿ, ಅಕ್ಕ ಹಾಗೂ ಅವರ ಮಕ್ಕಳೊಂದಿಗೆ ಸೋಮವಾರ ಮಧ್ಯರಾತ್ರಿ ವೇಳೆ ಕಾರಿನಲ್ಲಿ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಈ ವೇಳೆ ದೋಲನಮನೆ ಗ್ರಾಮದ ಬಳಿ ದಿಢೀರನೆ ಪ್ರತ್ಯಕ್ಷಗೊಂಡ ಕಾಡಾನೆಯೊಂದು ಕಾರಿನ ಮೇಲೆ ದಾಳಿ ನಡೆಸಿದೆ.

ದಾಳಿಯ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ಜಖಂಗೊಂಡಿದೆ. ಇದರಿಂದ ಭಯಭೀತರಾದ ಕಾರಿನಲ್ಲಿದ್ದ ತಾಯಿ, ಅಕ್ಕ ಹಾಗೂ ಮಕ್ಕಳು ಗಟ್ಟಿಯಾಗಿ ಕಿರುಚಾಡತೊಡಗಿದ್ದಾರೆ. ಜನರು ಕಿರುಚಾಡಿದರೂ ಜಾಗದಿಂದ ಕದಲದ ಕಾಡಾನೆ, ಕಾರಿನ ಬಳಿಯೇ ಕೆಲಕಾಲ ನಿಂತು ಆತಂಕ ಸೃಷ್ಟಿಸಿತ್ತು.

ಚಾಲಕನ ಸಮಯಪ್ರಜ್ಞೆ – ಪಾರಾದ ಕುಟುಂಬ:

ಈ ಆತಂಕದ ಕ್ಷಣದಲ್ಲೂ ಧೈರ್ಯ ಗೆಡದ ಚಾಲಕ ಮಹಮ್ಮದ್ ಜಾಹಿದ್, ತಕ್ಷಣವೇ ಕಾರಿನ ಪಾರ್ಕಿಂಗ್ (ಹ್ಯಾಜಾರ್ಡ್) ಲೈಟ್‌ಗಳನ್ನು ಆನ್ ಮಾಡಿದ್ದಾರೆ. ಪಾರ್ಕಿಂಗ್ ಲೈಟ್‌ನ ಬೆಳಕನ್ನು ಕಂಡ ಕಾಡಾನೆ ಹೆದರಿ ಕಾರಿನಿಂದ ಸ್ವಲ್ಪ ದೂರ ಹೋಗಿ ನಿಂತಿದೆ.

ತಕ್ಷಣವೇ ಎಚ್ಚೆತ್ತ ಜಾಹಿದ್, ಆನೆ ಕಾರ್ಯಪಡೆಗೆ (ಇಟಿಎಫ್ – Elephant Task Force) ಕರೆ ಮಾಡಿ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕಾಗಮಿಸಿದ ಇಟಿಎಫ್ ಸಿಬ್ಬಂದಿ, ಪಟಾಕಿ ಸಿಡಿಸಿ ಕಾಡಾನೆಯನ್ನು ಯಶಸ್ವಿಯಾಗಿ ಅರಣ್ಯಕ್ಕೆ ಅಟ್ಟಿದ್ದಾರೆ.

ಕಾಡಾನೆ ಹಾವಳಿ ಪ್ರದೇಶಗಳಲ್ಲಿ ಪ್ರಯಾಣಿಸುವಿರಾ? ಈ ಸುರಕ್ಷತಾ ಕ್ರಮಗಳು ತಿಳಿದಿರಲಿ!

ಕರ್ನಾಟಕ ಅರಣ್ಯ ಇಲಾಖೆ ಹಾಗೂ ತುರ್ತು ಸೇವೆಗಳು ಸಾರ್ವಜನಿಕರ ರಕ್ಷಣೆಗಾಗಿ ಒದಗಿಸಿರುವ ಪ್ರಮುಖ ಸಹಾಯವಾಣಿ ಸಂಖ್ಯೆಗಳು ಮತ್ತು ಪಾಲಿಸಬೇಕಾದ ಸುರಕ್ಷತಾ ನಿಯಮಗಳು ಇಲ್ಲಿವೆ:

1. ತುರ್ತು ಸಹಾಯವಾಣಿ ಸಂಖ್ಯೆಗಳು (Emergency Helplines)

ಕಾಡಾನೆ ದಾಳಿ ಅಥವಾ ವನ್ಯಜೀವಿಗಳ ತುರ್ತು ಸಂದರ್ಭ ಎದುರಾದಾಗ ತಕ್ಷಣ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ:

  • ರಾಷ್ಟ್ರೀಯ ತುರ್ತು ಸಹಾಯವಾಣಿ: 112 (ಪೊಲೀಸ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಏಕೀಕೃತ ಸಂಖ್ಯೆ)
  • ಅರಣ್ಯ ಇಲಾಖೆಯ 24×7 ಸಹಾಯವಾಣಿ: 1926 (ಅರಣ್ಯ ಸಂಬಂಧಿ ದೂರುಗಳಿಗೆ ರಾಷ್ಟ್ರವ್ಯಾಪಿ ಸಂಖ್ಯೆ)
  • ಹಾಸನ ಜಿಲ್ಲಾ ಅರಣ್ಯ ಕಚೇರಿ (Hassan Circle): 08172-240163
  • ಪೊಲೀಸ್ ಇಲಾಖೆ: 100
  • ಆಂಬ್ಯುಲೆನ್ಸ್ ಸೇವೆ: 108

2. ವಾಹನ ಚಾಲನೆ ಮಾಡುವಾಗ ವಹಿಸಬೇಕಾದ ಮುನ್ನೆಚ್ಚರಿಕೆಗಳು

ವೇಗದ ಮಿತಿ ಇರಲಿ: ಆನೆಗಳು ಸಂಚರಿಸುವ ವಲಯಗಳಲ್ಲಿ (Elephant Corridors) ವಾಹನದ ವೇಗ ಯಾವಾಗಲೂ ಕಡಿಮೆ ಇರಲಿ. ಇದರಿಂದ ಹಠಾತ್ ಆನೆ ಎದುರಾದರೆ ವಾಹನ ನಿಲ್ಲಿಸಲು ಸಾಧ್ಯವಾಗುತ್ತದೆ.

  • ಹಾರ್ನ್ ಮಾಡಬೇಡಿ: ಕಾಡಾನೆಗಳು ಎದುರಾದಾಗ ಯಾವುದೇ ಕಾರಣಕ್ಕೂ ಜೋರಾಗಿ ಹಾರ್ನ್ ಮಾಡಬೇಡಿ. ಹಾರ್ನ್ ಸದ್ದು ಆನೆಗಳನ್ನು ಕೆರಳಿಸಿ, ವಾಹನದ ಮೇಲೆ ದಾಳಿ ಮಾಡಲು ಪ್ರೇರೇಪಿಸುತ್ತದೆ.
  • ಲೈಟ್‌ಗಳ ಬಳಕೆಯ ವಿವೇಕ: ರಾತ್ರಿ ವೇಳೆ ಆನೆಗಳು ಕಂಡರೆ ಹೈ-ಬೀಮ್ (High Beam) ಹೆಡ್‌ಲೈಟ್‌ಗಳನ್ನು ನೇರವಾಗಿ ಆನೆಯ ಕಣ್ಣಿಗೆ ಬೀಳುವಂತೆ ಹಾಕಬೇಡಿ. ಹಠಾತ್ ಬೆಳಕಿನಿಂದ ಅವು ಹೆದರಿ ದಾಳಿ ಮಾಡಬಹುದು. ಡಿಮ್ಮರ್ ಅಥವಾ ಈ ಘಟನೆಯಲ್ಲಿ ಚಾಲಕ ಮಾಡಿದಂತೆ ಪಾರ್ಕಿಂಗ್/ಹ್ಯಾಜಾರ್ಡ್ ಲೈಟ್‌ಗಳನ್ನು ಬಳಸಿ.
  • ವಾಹನದಿಂದ ಇಳಿಯಬೇಡಿ: ಆನೆಗಳನ್ನು ಹತ್ತಿರದಿಂದ ನೋಡಲು ಅಥವಾ ಮೊಬೈಲ್‌ನಲ್ಲಿ ಫೋಟೋ/ಸೆಲ್ಫಿ ತೆಗೆಯಲು ವಾಹನದಿಂದ ಕೆಳಗಿಳಿಯುವ ಸಾಹಸ ಮಾಡಲೇಬೇಡಿ.
  • ಸುರಕ್ಷಿತ ಅಂತರ ಕಾಯ್ದುಕೊಳ್ಳಿ: ಆನೆಗಳು ರಸ್ತೆ ದಾಟುತ್ತಿದ್ದರೆ ಅಥವಾ ರಸ್ತೆ ಬದಿಯಲ್ಲಿದ್ದರೆ ಕನಿಷ್ಠ 50-100 ಮೀಟರ್ ದೂರದಲ್ಲೇ ವಾಹನ ನಿಲ್ಲಿಸಿ. ಇಂಜಿನ್ ಆಫ್ ಮಾಡಿ ಶಾಂತವಾಗಿ ಅವುಗಳಿಗೆ ರಸ್ತೆ ದಾಟಲು ದಾರಿ ಮಾಡಿಕೊಡಿ.
Continue Reading

accident

ಉಚ್ಚಿಲ: ಜಿಒಎಸ್ ಆಫ್ ಮಾಡದೆ ಟ್ರಾನ್ಸ್‌ಫಾರ್ಮರ್ ಏರಿದ ಮೆಸ್ಕಾಂ ಲೈನ್‌ಮ್ಯಾನ್ ವಿದ್ಯುತ್ ಆಘಾತದಿಂದ ಸಾವು

Published

on

ಉಳ್ಳಾಲ: ಜಿಒಎಸ್ (ಗ್ರೂಪ್ ಆಪರೇಟೆಡ್ ಸ್ವಿಚ್) ಆಫ್ ಮಾಡದೆ ವಿದ್ಯುತ್ ಟ್ರಾನ್ಸ್‌ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್‌ಮ್ಯಾನ್‌ ಒಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ದುರಂತ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಅಂಬಿಕಾರೋಡ್ ಪಿಲಾರು ನಿವಾಸಿ ಶೇಖ್ ಝುಮೀರ್ (49) ಮೃತಪಟ್ಟ ದುರದೃಷ್ಟಕರ ವ್ಯಕ್ತಿ.

ಘಟನೆಯ ವಿವರ:

ಉಚ್ಚಿಲ ನಯಾಪಟ್ಟಣದ ಟ್ರಾನ್ಸ್‌ಫಾರ್ಮರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಬಗ್ಗೆ ಮೆಸ್ಕಾಂಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಶೇಖ್ ಝುಮೀರ್ ಹಾಗೂ ಅವರ ಸಹೋದ್ಯೋಗಿ ಸಂಗಪ್ಪ ಎಂಬುವರು ಇಂದು ಬೆಳಿಗ್ಗೆ ಸ್ಥಳಕ್ಕೆ ತೆರಳಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು.

ಜಿಒಎಸ್ (GOS) ಆಫ್ ಆಗಿದೆ ಎಂದು ತಪ್ಪಾಗಿ ಗ್ರಹಿಸಿದ ಝುಮೀರ್, ಟ್ರಾನ್ಸ್‌ಫಾರ್ಮರ್ ಏರಿದ್ದಾರೆ. ಈ ವೇಳೆ ತೀವ್ರ ವಿದ್ಯುತ್ ಆಘಾತಕ್ಕೊಳಗಾಗಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತೀವ್ರ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ಮೃತ ಝುಮೀರ್ ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Continue Reading

accident

ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ: ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದಾರುಣ ಸಾವು

Published

on

ಉಡುಪಿ: ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಹಾಗೂ ನೈವೇದ್ಯ ಹೋಟೆಲ್ ಸಮೀಪ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ, ಬಿಜೆಪಿ ಹಾಗೂ ಹಿಂದೂ ಮುಖಂಡ ಮಂಜುನಾಥ್ ಕೊಳ ಅವರ ಪತ್ನಿ ಲಕ್ಷ್ಮೀ ಮಂಜುನಾಥ್ ಕೊಳ (37) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ವಿವರ:

ಶನಿವಾರ ಬೆಳಿಗ್ಗೆ ಕಡಿಯಾಲಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಲಕ್ಷ್ಮೀ ಮಂಜುನಾಥ್ ಅವರು, ಬಳಿಕ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಮನೆಗೆ ಮರಳಲು ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗಿ ರಸ್ತೆ ದಾಟುತ್ತಿದ್ದ ವೇಳೆ, ವೇಗವಾಗಿ ಬಂದ ಖಾಸಗಿ ಬಸ್‌ ಒಂದಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಸ್ಥಳದಲ್ಲೇ ಕೊನೆಯುಸಿರು:

ಬಸ್ ಡಿಕ್ಕಿಯಾದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಲಕ್ಷ್ಮೀ ಮಂಜುನಾಥ್ ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಪೊಲೀಸ್ ತನಿಖೆ:

ಘಟನೆ ನಡೆದ ತಕ್ಷಣವೇ ಉಡುಪಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ

Continue Reading

Trending

Copyright © 2025 Deevatige

error: Content is protected !!