Connect with us

Article

ತುಳುನಾಡಿನ ಇತಿಹಾಸದ ಹೆಮ್ಮೆಯ ಸಂಕೇತ ವಿಟ್ಲದ ‘ಕೋಟಿ ಕೆರೆ’ಗೆ ಜೀರ್ಣೋದ್ಧಾರದ ಕಾಯಕಲ್ಪ: ಸಾರ್ವಜನಿಕರ ಸಹಕಾರಕ್ಕೆ “ಕೋಟಿಕೆರೆ ಅಭಿವೃದ್ಧಿ ಬಳಗ”ಮನವಿ

Published

on

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಐತಿಹಾಸಿಕ ಪಟ್ಟಣವಾದ ವಿಟ್ಲದ ಹೆಮ್ಮೆಯ ಸಂಕೇತ, ತುಳುನಾಡಿನ ವೀರ ಹಾಗೂ ರಾಜವಂಶದ ಇತಿಹಾಸದೊಂದಿಗೆ ನಿಕಟ ಸಂಬಂಧ ಹೊಂದಿರುವ ಇತಿಹಾಸ ಪ್ರಸಿದ್ಧ ‘ಕೋಟಿ ಕೆರೆ’ ಇಂದು ಅಳಿವಿನ ಅಂಚಿಗೆ ಬಂದು ತಲುಪಿದ್ದು, ಯಾವ ಕ್ಷಣದಲ್ಲಾದರೂ ಜರಿದು ಮುಚ್ಚಿಹೋಗುವ ಭೀತಿಯಲ್ಲಿರುವ ಈ ಕೆರೆಯನ್ನು ಉಳಿಸಿಕೊಳ್ಳಲು ವಿಟ್ಲದ ಸಾರ್ವಜನಿಕರು ಹಾಗೂ ಕೊಡುಗೈ ದಾನಿಗಳು ಇದೀಗ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ.

ಕೆರೆಯ ಜೀರ್ಣೋದ್ಧಾರದ ಸಂಕಲ್ಪಕ್ಕಾಗಿ ವಿಟ್ಲ ಅರಮನೆಯವರ ಮುಂದಾಳುತ್ವದಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿವೆ. ಕಳೆದ ವಾರದಿಂದ ಇಲ್ಲಿ ನಿರಂತರವಾಗಿ ಕಾರ್ಮಿಕರಿಂದ ಜರಿದು ಬಿದ್ದ ತಡೆಗೋಡೆಗಳನ್ನು ಸರಿಪಡಿಸುವ ಕೆಲಸಗಳು ಮತ್ತು ಜೊತೆಯಾಗಿ ಶ್ರಮದಾನದ ಮೂಲಕವೂ ಕೆಲಸಗಳು ನಡೆಯುತ್ತಲಿವೆ.

ಕೋಟಿ ಕೆರೆಗೆ ಶಾಶ್ವತವಾದ ಕಾಯಕಲ್ಪವನ್ನು ನೀಡಲು ಸಂಕಲ್ಪತೊಟ್ಟ ವರ್ತಕರ ಸಂಘದ ಕ್ಲಿಫರ್ಡ್ ವೇಗಸ್ ಮತ್ತು ಕೊಡುಗೈ ದಾನಿ ಪ್ರಿಯಾ ಬಾಬಣ್ಣ ಅವರ ನೇತೃತ್ವದಲ್ಲಿ ವಿಟ್ಲದ ಆಪತ್ಬಾಂಧವ ಮುರಳಿ, ಅನೂಪ್ ಲಸ್ರಾದೊ, ಜಯರಾಮ ಕಡಂಬು, ಮಾಜಿ ಯೋಧರಾದ ದಯಾನಂದ ನೇತ್ರಕೆರೆ, ವೆಂಕಟರಮಣ ಭಟ್, ಫಿನಿಕ್ಸ್‌ ಕಂಪ್ಯೂಟರಿನ ಜೋಯ್‌ ಪುಡ್ತಾದೊ, ಪತ್ರಕರ್ತ ವಿಟಿ ಪ್ರಸಾದ್ ಹಾಗೂ ಚಂದ್ರ ಇದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕೋಟಿ ಕೆರೆಯ ಹತ್ತಿರದ ಮನೆಯವರು ಕತ್ತಿ , ಹಾರೆ ಇನ್ನಿತರ ಪರಿಕರಗಳನ್ನು ಕೊಟ್ಟು ಸಹಕರಿಸುತ್ತಿದ್ದಾರೆ. ಕೆರೆಯ ಸುತ್ತು ಚಾಚಿಕೊಂಡಿರುವ ಮರಗಳ ತೆರವು, ನೀರು ಕೆಸರನ್ನು ಮೇಲಕ್ಕೆತ್ತುವ , ತಡೆಗೋಡೆ ನಿರ್ಮಿಸುವ ಹಾಗೂ ಕೆರೆಯನ್ನು ಶುಚಿಗೊಳಿಸುವ ಕೆಲಸಗಳು ಭರದಿಂದ ಸಾಗುತ್ತಿವೆ. ಪ್ರತಿಯೊಬ್ಬರೂ ಬಂದು ಭಾಗವಹಿಸಲೇ ಬೇಕಾದ, ನೋಡಲೇ ಬೇಕಾದ ಕೆಲಸ ಕಾರ್ಯಗಳು ನಡೆಯುತ್ತಿದ್ದು, ಈ ಕೆಲಸ ಕಾರ್ಯಗಳ ಜವಾಬ್ದಾರಿ ಹೊತ್ತವರಿಗೆ ಪ್ರತಿಯೊಬ್ಬರ ಸಹಕಾರದ ಅಗತ್ಯವಿದೆ.

ಉಸಿರು ಬಿಗಿದು ನಿಂತ ಕೆರೆ: ಸುಮಾರು ಹತ್ತು ವರ್ಷಗಳ ಹಿಂದೆ ಈ ಕೆರೆ ಅಳಿವಿನ ಅಂಚಿನಲ್ಲಿದ್ದಾಗ ವಿಟ್ಲದ ಉದ್ಯಮಿ ಬಾಬು ಕೊಪ್ಪಳ ಅವರು ವೈಯಕ್ತಿಕ ಮುತುವರ್ಜಿ ವಹಿಸಿ ಜರಿದು ಹೋಗಿದ್ದ 20 ಮೀಟರ್ ಭಾಗವನ್ನು ದುರಸ್ತಿ ಮಾಡಿಸಿದ್ದರು. ಆದರೆ ಸೂಕ್ತ ನಿರ್ವಹಣೆಯಿಲ್ಲದೆ ಈಗ ಕೆರೆಯ ನಾಲ್ಕೂ ಬದಿಯ ಕಲ್ಲುಗಳು ಜರಿದು ನೀರು ಪಾಲಾಗಿದ್ದು, ಕಟ್ಟಿದ ಕಲ್ಲು ಮತ್ತು ಮಣ್ಣು ಜರಿದು ಬಿದ್ದು ಕೆರೆಯೊಳಗೆ ತುಂಬಿ ಹೋಗಿದೆ. ಕೆರೆ ಸದ್ಯ ಉಸಿರು ಬಿಗಿದು ಹಿಡಿದು ನಿಂತಂತಿದೆ. ಇಲ್ಲಿನ ಸ್ಥಳೀಯ ವಿದ್ಯಾರ್ಥಿಗಳು, ಈಜುಗಾರರು ಕಳೆದ ಏಳೆಂಟು ದಶಕಗಳ ಹಿಂದಿನಿಂದಲೇ ಈಜು ಸ್ಪರ್ಧೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವುದಕ್ಕೆ ಈ ಕೋಟಿ ಕೆರೆಯೇ ಸಾಕ್ಷಿಯಾಗಿದೆ. ಆ ಕಾರಣವಾಗಿಯೇ ಈ ಕೆರೆ ಮಾತ್ರ ವಿಟ್ಲದ ನಮ್ಮೆಲ್ಲರ ಹೆಮ್ಮೆಯ ಮತ್ತು ಸ್ವಾಭಿಮಾನದ ಸಂಕೇತವಾಗಿ ಇಂದಿಗೂ ಉಳಿದುಕೊಂಡಿದೆ. ಅದರ ಅಭಿವೃದ್ಧಿ ನಮ್ಮೆಲ್ಲರ ಸಂಕಲ್ಪವಾಗಬೇಕಿದೆ.

ಗ್ರಾಮೀಣ ಈಜುಪಟುಗಳ ನರ್ಸರಿ! ಆಧುನಿಕ ಇತಿಹಾಸದಲ್ಲಿ ಈ ಕೆರೆಯು ಕೇವಲ ನೀರಿನ ಮೂಲವಾಗಿ ಉಳಿಯದೆ, ಗ್ರಾಮೀಣ ಭಾಗದ ಅದ್ಭುತ ಕ್ರೀಡಾ ತರಬೇತಿ ಕೇಂದ್ರವಾಗಿ ಮಾರ್ಪಟ್ಟಿತ್ತು. ಅನೇಕ ಮಂದಿ ಈಜು ತರಬೇತುದಾರರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಈ ಕೆರೆಯಲ್ಲಿ ಸಾವಿರಾರು ಗ್ರಾಮೀಣ ಯುವಕರಿಗೆ ಉಚಿತವಾಗಿ ಈಜು ಕಲಿಸಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಈಜುಪಟುಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ.

ಸಹಕಾರಕ್ಕೆ ಸಮಿತಿ ವಿನಂತಿ: ಇತಿಹಾಸ ಪ್ರಸಿದ್ಧ ಈ ಕೆರೆಗೆ ಬಂದೊದಗಿರುವ ದುಸ್ಥಿತಿಯನ್ನು ಕಂಡು ಮರುಗಿದ ವಿಟ್ಲದ ಕೆಲವು ಕೊಡುಗೈ ದಾನಿಗಳು, ದೈನಂದಿನ ಈಜುಗಾರರು, ಪೋಷಕರು, ವಿಟ್ಲದ ಕಲಾರಾಧಕರು ಹಾಗೂ ಕೋಟಿಕೆರೆಯ ಅಭಿಮಾನಿಗಳು ಸೇರಿಕೊಂಡು ಇದನ್ನು ಸ್ವಾವಲಂಬನೆಯಿಂದ ಉಳಿಸಿಕೊಳ್ಳುವ ಯೋಚನೆ ಮತ್ತು ಯೋಜನೆ ಹಾಕಿಕೊಂಡಿದ್ದಾರೆ. ತನು, ಮನ, ಧನದ ಮೂಲಕ ಇದರ ಅಭಿವೃದ್ಧಿಯ ಸಂಕಲ್ಪಕ್ಕಾಗಿ ಪಣ ತೊಟ್ಟಿದ್ದಾರೆ.

ಮುಂದಿನ ಪೀಳಿಗೆಗೆ ಇತಿಹಾಸ ಹಾಗೂ ಪರಿಸರವನ್ನು ಉಳಿಸುವ ಈ ಪವಿತ್ರ ಕಾರ್ಯಕ್ಕೆ ವಿಟ್ಲ ಮತ್ತು ಸುತ್ತಮುತ್ತಲಿನ ಪ್ರತಿಯೊಬ್ಬ ಸಾರ್ವಜನಿಕರು, ಅಭಿಮಾನಿಗಳು ಬಂದು ತಮ್ಮ ಸಹಕಾರವನ್ನು ನೀಡಬೇಕಾಗಿದೆ. ಇದು ಕೇವಲ ತನು-ಮನದಿಂದ ಆಗುವ ಕೆಲಸವಲ್ಲ, ಇದರ ಜೊತೆಗೆ ಧನ ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಆದುದರಿಂದ ನಮ್ಮ ಊರಿನ ಈ ಸುಂದರ ಕೋಟಿ ಕೆರೆಗೆ ಹೊಸ ಜೀವ ಕಳೆ ನೀಡಲು ಉದಾರ ಮನಸ್ಸಿನಿಂದ ಎಲ್ಲರೂ ಧನಸಹಾಯ ಹಾಗೂ ಶ್ರಮದಾನದ ಮೂಲಕ ಸಹಕರಿಸಬೇಕಾಗಿ “ಕೋಟಿಕೆರೆ ಅಭಿವೃದ್ಧಿ ಬಳಗ” ವಿನಂತಿಸಿದ್ದು, ಸಹಕರಿಸುತ್ತಿರುವ ಎಲ್ಲರಿಗೂ ಕೃತಜ್ಞತೆಯನ್ನು ಹೇಳಿದೆ. ಈ ಅಭಿವೃದ್ಧಿ ಬಳಗ ಒಂದು ವಾಟ್ಸಾಪ್‌ ಗ್ರೂಫನ್ನು ರಚಿಸಿಕೊಂಡಿದ್ದು, ಇನ್ನಷ್ಟು ಮಾಹಿತಿಗಳು, ದಿನಂಪ್ರತಿಯ ಕೆಲಸಕಾರ್ಯಗಳ ವಿವರಗಳು ಅದರಲ್ಲಿ ಹಾಕಲಾಗುತ್ತಿದ್ದು, ಗ್ರೂಪನ್ನು ಸೇರಲು ಕೆಳಗೆ ಲಿಂಕನ್ನು ನೀಡಲಾಗಿದೆ.

ಕೋಟಿಕೆರೆ ಅಭಿವೃದ್ಧಿ ಬಳಗ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

https://chat.whatsapp.com/FfKDbO1gjcF4g11qZIgTzT





ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Article

ಆಕಾಶದ ಕಾಣುತ್ತಿದೆ ಅಚ್ಚರಿ: ಚಂದ್ರನ ಪಕ್ಕ‌ ಇಂದು ಮಿನುಗುತ್ತಿರುವ ‘ಬೆಳ್ಳಿ ಚುಕ್ಕೆ’ ಶುಕ್ರ ಗ್ರಹದ ರಹಸ್ಯ!

Published

on

ಆಕಾಶದಲ್ಲಿ ಚಂದ್ರನ ಸನಿಹದಲ್ಲಿ ಅತಿ ಹೆಚ್ಚು ಪ್ರಕಾಶಮಾನವಾಗಿ ಮಿನುಗುತ್ತಿರುವುದು ಯಾವುದೇ ನಕ್ಷತ್ರವಲ್ಲ, ಬದಲಾಗಿ ಸೌರವ್ಯೂಹದ ಅತ್ಯಂತ ಪ್ರಕಾಶಮಾನವಾದ ಶುಕ್ರ ಗ್ರಹ (Venus). ಸಂಜೆಯ ಪಶ್ಚಿಮ ದಿಗಂತದಲ್ಲಿ ಬಾಲಚಂದ್ರ ಹಾಗೂ ಈ ಬೆಳ್ಳಿ ಚುಕ್ಕೆಯು ಪರಸ್ಪರ ಅತ್ಯಂತ ಹತ್ತಿರದಲ್ಲಿ ಗೋಚರಿಸುತ್ತಿರುವುದು ಎಲ್ಲೆಡೆ ಭಾರಿ ಕುತೂಹಲ ಮೂಡಿಸಿದೆ.

ಇದು ನಕ್ಷತ್ರವೇಕಲ್ಲ? ಶುಕ್ರ ಗ್ರಹದ ವಿಶೇಷತೆ

ಸ್ವಂತ ಬೆಳಕಿಲ್ಲದಿದ್ದರೂ ಕಾಂತಿ: ಸಾಮಾನ್ಯ ನಕ್ಷತ್ರಗಳು ತಮ್ಮ ಸ್ವಂತ ಬೆಳಕಿನಿಂದ ಮಿನುಗುತ್ತವೆ. ಆದರೆ ಶುಕ್ರ ಗ್ರಹಕ್ಕೆ ಸ್ವಂತ ಬೆಳಕಿಲ್ಲ. ಇದು ಸೂರ್ಯನ ಬೆಳಕನ್ನು ಅತ್ಯಧಿಕ ಪ್ರಮಾಣದಲ್ಲಿ ಪ್ರತಿಫಲಿಸುವುದರಿಂದ ರಾತ್ರಿ ಆಕಾಶದಲ್ಲಿ ಚಂದ್ರ ಬಿಟ್ಟರೆ ಅತಿ ಹೆಚ್ಚು ಕಾಂತಿಯುತವಾಗಿ ಕಾಣಿಸುತ್ತದೆ. ಈ ಕಾರಣಕ್ಕಾಗಿಯೇ ಇದನ್ನು ‘ಸಂಜೆ ನಕ್ಷತ್ರ’ ಅಥವಾ ‘ಬೆಳ್ಳಿ ಚುಕ್ಕೆ’ ಎಂದು ಕರೆಯಲಾಗುತ್ತದೆ.

ದಟ್ಟ ವಾತಾವರಣ: ಶುಕ್ರ ಗ್ರಹವು ಸೂರ್ಯನಿಗೆ ಹತ್ತಿರವಿರುವ ಗ್ರಹವಾಗಿದ್ದು, ಇದರ ದಟ್ಟವಾದ ವಾತಾವರಣವು ಸೂರ್ಯನ ಬೆಳಕನ್ನು ಬಲವಾಗಿ ಪ್ರತಿಫಲಿಸುತ್ತದೆ.

ಸಂಯೋಗ (Conjunction) ಮತ್ತು ಚಂದ್ರ ಮರೆಮಾಚುವಿಕೆ (Lunar Occultation)

ಗ್ರಹ-ಚಂದ್ರ ಯುತಿ: ಖಗೋಳಶಾಸ್ತ್ರದ ಪ್ರಕಾರ, ಭೂಮಿ, ಚಂದ್ರ ಮತ್ತು ಶುಕ್ರ ಗ್ರಹಗಳು ತಮ್ಮ ಕಕ್ಷೆಯಲ್ಲಿ ಸುತ್ತುತ್ತಾ ನಿರ್ದಿಷ್ಟ ಸಾಪೇಕ್ಷ ಸ್ಥಾನಕ್ಕೆ ಬಂದಾಗ ಒಂದೇ ನೇರ ಸಾಲಿನಲ್ಲಿ (Conjunction) ಅತಿ ಹತ್ತಿರದಲ್ಲಿ ಕಾಣಿಸಿಕೊಳ್ಳುತ್ತವೆ. ಭೂಮಿಯಿಂದ ನೋಡುವಾಗ ಈ ಎರಡೂ ಆಕಾಶಕಾಯಗಳು ಅಕ್ಕಪಕ್ಕದಲ್ಲಿ ಇದ್ದಂತೆ ಭಾಸವಾಗುತ್ತವೆ.

ಚಂದ್ರ ಮರೆಮಾಚುವಿಕೆ: ಭಾರತದ ಕೆಲ ಭಾಗಗಳಲ್ಲಿ ಚಂದ್ರನು ಶುಕ್ರ ಗ್ರಹದ ಮುಂಭಾಗದಲ್ಲೇ ಹಾದುಹೋಗುವ ಅಪರೂಪದ ‘ಚಂದ್ರ ಮರೆಮಾಚುವಿಕೆ’ (Lunar Occultation) ವಿದ್ಯಮಾನವೂ ಜರಗಿದೆ. ಅಂದರೆ ಕೆಲಕಾಲ ಶುಕ್ರ ಗ್ರಹವು ಚಂದ್ರನ ಹಿಂದೆ ಮರೆಯಾಗಿ, ನಂತರ ಆಚೆ ಬಂದಿದೆ. ಇದು ಬರಿಗಣ್ಣಿಗೂ ಅತ್ಯಂತ ಆಕರ್ಷಕವಾಗಿ ಗೋಚರಿಸುವ ದೃಶ್ಯವಾಗಿದೆ.

ಚೌತಿ ಚಂದ್ರನ ನಂಬಿಕೆ ಮತ್ತು ವೈಜ್ಞಾನಿಕ ಸತ್ಯ

ಪೌರಾಣಿಕ ಹಿನ್ನೆಲೆ: ಭಾದ್ರಪದ ಮಾಸದ ಶುಕ್ಲ ಪಕ್ಷದ ಚೌತಿಯ (ಗಣೇಶ ಚತುರ್ಥಿ) ದಿನ ಚಂದ್ರನನ್ನು ನೋಡಿದರೆ ಕಳಂಕ ಅಥವಾ ಅಪವಾದ ಬರುತ್ತದೆ (ಮಣಿಭರಣ ಕಳಂಕ) ಎಂಬುದು ಜನರಲ್ಲಿ ಶತಶತಮಾನಗಳಿಂದ ರೂಢಿಯಲ್ಲಿರುವ ನಂಬಿಕೆಯಾಗಿದೆ.

ವೈಜ್ಞಾನಿಕ ಸತ್ಯ: ಖಗೋಳ ವಿಜ್ಞಾನದ ದೃಷ್ಟಿಯಿಂದ ಚಂದ್ರನನ್ನು ನೋಡುವುದರಿಂದ ಯಾವುದೇ ಶಾಪ, ಅಪವಾದ ಅಥವಾ ಕೆಟ್ಟ ಪರಿಣಾಮಗಳು ಸಂಭವಿಸುವುದಿಲ್ಲ. ಇದು ಕೇವಲ ನೈಸರ್ಗಿಕ ಉಪಗ್ರಹವಾಗಿದ್ದು, ಭೂಮಿಯ ಸುತ್ತ ನಿರಂತರವಾಗಿ ಸುತ್ತುತ್ತದೆ. ಚತುರ್ಥಿಯ ದಿನ ಚಂದ್ರನು ಭೂಮಿಗೆ ಮತ್ತು ಸೂರ್ಯನಿಗೆ ಇರುವ ಸಾಪೇಕ್ಷ ಸ್ಥಾನದಿಂದಾಗಿ ತೆಳುವಾದ ಕಮಾನು ಅಥವಾ ಅರ್ಧಚಂದ್ರಾಕಾರದಲ್ಲಿ ಗೋಚರಿಸುತ್ತಾನೆ.

ವೀಕ್ಷಣೆ ಹೇಗೆ?

ಅಮಾವಾಸ್ಯೆಯ ನಂತರದ ಆರಂಭಿಕ ದಿನಗಳಲ್ಲಿ (ಬಾಲಚಂದ್ರನಿದ್ದಾಗ) ಪಶ್ಚಿಮ ಆಕಾಶದಲ್ಲಿ ಸಂಜೆಯ ಹೊತ್ತು ಈ ಅದ್ಭುತ ದೃಶ್ಯವು ಬರಿಗಣ್ಣಿಗೆ ಸ್ಪಷ್ಟವಾಗಿ ಗೋಚರಿಸುತ್ತದೆ. ಇದೇ ಕಾರಣದಿಂದ ಜನರು ಇದನ್ನು ಮೊಬೈಲ್ ಹಾಗೂ ಕ್ಯಾಮೆರಾಗಳಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

Continue Reading

Article

ಸರ್ವರಲ್ಲೂ ಸಮಭಾವದ ಪ್ರತೀಕ ಗಣೇಶೋತ್ಸವ: ಹಬ್ಬಗಳು ಒಗ್ಗಟ್ಟಿನ ಸೇತುವೆಯಾಗಲಿ

Published

on

✍️ ಜ್ಯೋತಿಪ್ರಕಾಶ್‌ ಪುಣಚ, ಪ್ರಧಾನ ಸಂಪಾದಕರು, ದೀವಟಿಗೆ ಡಿಜಿಟಲ್‌ ಮೀಡಿಯಾ-9448441282

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧ್ರಾಮಿಕ ಆಚರಣೆಗಳಲ್ಲ, ಅವು ಮನುಕುಲವನ್ನು ಬೆಸೆಯುವ ಭಾವನಾತ್ಮಕ ಕೊಂಡಿಗಳು. ಅದರಲ್ಲಿಯೂ ಗಣೇಶ ಚತುರ್ಥಿಯು ವಿಘ್ನಗಳನ್ನು ನಿವಾರಿಸಿ, ಬುದ್ಧಿವಂತಿಕೆ ಹಾಗೂ ಸಮೃದ್ಧಿಯನ್ನು ತರುವ ಹಬ್ಬವಾಗಿ ಮಾತ್ರವಲ್ಲದೆ, ಸಮಾಜದಲ್ಲಿ ಸೌಹಾರ್ದತೆ ಮತ್ತು ಐಕ್ಯತೆಯನ್ನು ಸಾರುವ ಮಹತ್ವದ ಸಂದರ್ಭವಾಗಿದೆ.

ಪ್ರಕೃತಿಯ ವಿಸ್ಮಯವನ್ನು ಗಮನಿಸಿದರೆ ನಮಗೆ ದೊಡ್ಡ ಪಾಠ ಸಿಗುತ್ತದೆ. ಸೂರ್ಯನ ಬೆಳಕು, ಚಂದ್ರನ ತಂಪಾದ ಬೆಳಕು, ಬೀಸುವ ಗಾಳಿ ಮತ್ತು ಹರಿಯುವ ನದಿಗಳು ಎಂದಿಗೂ ಜಾತಿ, ಮತ, ಧರ್ಮ ಅಥವಾ ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ. ಪ್ರಕೃತಿಯು ಇಡೀ ಮಾನವ ಕುಲವನ್ನು ತನ್ನ ಮಕ್ಕಳಂತೆ ಸಮಾನವಾಗಿ ಕಾಣುತ್ತದೆ. ಅದೇ ರೀತಿ, ನಮ್ಮ ಹಬ್ಬಗಳ ಆಚರಣೆಯೂ ಕೂಡ ಭೇದಭಾವಗಳನ್ನು ಮರೆತು ಎಲ್ಲರನ್ನು ಅಪ್ಪಿಕೊಳ್ಳುವಂತಾಗಬೇಕು.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವಕ್ಕೆ ಮುನ್ನುಡಿ ಬರೆದಾಗ, ಅದರ ಮುಖ್ಯ ಉದ್ದೇಶವೇ ಜಾತಿ-ಮತಗಳ ಗಡಿಯನ್ನು ಮೀರಿ ಇಡೀ ಸಮಾಜವನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವುದಾಗಿತ್ತು. ಆದರೆ ಇಂದಿನ ದಿನಗಳಲ್ಲಿ ಹಬ್ಬಗಳು ಕೇವಲ ಆಚರಣೆಗಳಿಗೆ ಸೀಮಿತವಾಗದೆ, ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಾಮರಸ್ಯವನ್ನು ಬಿತ್ತುವ ಮಾಧ್ಯಮಗಳಾಗಬೇಕಿದೆ.

ಪ್ರತಿಯೊಬ್ಬರಿಗೂ ಅವರವರ ಧರ್ಮ, ನಂಬಿಕೆಗಳು ಮತ್ತು ಆಚರಣೆಗಳು ಶ್ರೇಷ್ಠವಾಗಿರುವುದು ಸಹಜ ಮತ್ತು ನೈಸರ್ಗಿಕ. ಆದರೆ, ತನ್ನ ಧರ್ಮದಷ್ಟೇ ಇತರರ ಧರ್ಮವನ್ನೂ ಗೌರವಿಸುವುದೇ ನಿಜವಾದ ಮಾನವತೆಯ ಪ್ರತೀಕ. ದ್ವೇಷ ಅಥವಾ ಅಸೂಯೆಗಾಗಿ ಒಗ್ಗೂಡುವುದಕ್ಕಿಂತ, ಸೌಹಾರ್ದತೆ ಮತ್ತು ಮಾನವೀಯತೆಗಾಗಿ ಒಂದಾಗುವುದೇ ಹಬ್ಬಗಳ ಅತಿ ದೊಡ್ಡ ಸಂದೇಶ.

ಈ ಗಣೇಶ ಚತುರ್ಥಿಯಂದು ವಿಘ್ನಹರ್ತನನ್ನು ಆರಾಧಿಸುವಾಗ, ನಮ್ಮ ಮನಸ್ಸಿನಲ್ಲಿರುವ ಅಹಂಕಾರ, ತಾರತಮ್ಯ ಮತ್ತು ದ್ವೇಷದ ಭಾವನೆಗಳನ್ನು ವಿಸರ್ಜಿಸೋಣ. ಪ್ರಕೃತಿಯಂತೆ ವಿಶಾಲವಾದ ಹೃದಯವನ್ನು ರೂಢಿಸಿಕೊಂಡು, ಎಲ್ಲರೊಂದಿಗೆ ಬೆರೆತು ಬಾಳುವ ಸಂಕಲ್ಪ ಮಾಡೋಣ. ಹಬ್ಬಗಳು ನಮ್ಮನ್ನು ವಿಭಜಿಸದೆ, ಸೌಹಾರ್ದತೆಯ ಬಂಧದಲ್ಲಿ ಮತ್ತಷ್ಟು ಗಟ್ಟಿಯಾಗಿ ಬೆಸೆಯಲಿ.

ಸರ್ವರಿಗೂ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು!

Continue Reading

Article

ಚಿತ್ರದಲ್ಲಿ ತಾಯಿಯನ್ನು ಹುಡುಕಿದ ಕರು: ಪ್ರಕೃತಿಯ ಮಮತೆ ಮತ್ತು ಮಾನವನ ಕಠೋರತೆಗೆ ಹಿಡಿದ ಕನ್ನಡಿ

Published

on

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಒಂದು ಸಣ್ಣ ವಿಡಿಯೋ ಪ್ರತಿಯೊಬ್ಬರ ಕಣ್ಣಂಚಲ್ಲಿ ನೀರು ತರಿಸುವಂತಿದೆ. ತಾಯಿಯ ಪ್ರೀತಿ, ಮಮತೆ ಮತ್ತು ಅಪ್ಪುಗೆಗಾಗಿ ಒಂದು ಜೀವ ಎಷ್ಟು ತವಕಿಸುತ್ತದೆ ಎಂಬುದಕ್ಕೆ ಈ ಸನ್ನಿವೇಶ ಸಾಕ್ಷಿಯಾಗಿದೆ.

ರಸ್ತೆಯ ಬದಿಯಲ್ಲಿ ನಿಂತಿದ್ದ ಹಾಲಿನ ಡೈರಿಯ ಲಾರಿಯೊಂದರ ಹಿಂಭಾಗದಲ್ಲಿ ಹಸುವಿನ ದೊಡ್ಡ ಚಿತ್ರವಿತ್ತು (ಪೋಸ್ಟರ್). ಹಾದಿಯಲ್ಲಿ ಅನಾಥವಾಗಿ ಅಲೆಯುತ್ತಿದ್ದ ಸಣ್ಣ ಕರುವೊಂದು ಆ ಚಿತ್ರವನ್ನು ಕಂಡ ತಕ್ಷಣ, ಅದು ತನ್ನದೇ ಹೆತ್ತ ತಾಯಿ ಎಂದು ಭಾವಿಸಿದೆ. ಓಡೋಡಿ ಬಂದು “ಅಂಬಾ…” ಎಂದು ಕರೆದಿದೆ. ಚಿತ್ರದಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದಾಗ, ತಾಯಿಯ ಬಳಿಗೆ ಹೋಗಲು ಹಂಬಲಿಸಿ ಲಾರಿಯ ಹಿಂಭಾಗಕ್ಕೆ ತನ್ನ ಮುಂಗಾಲುಗಳನ್ನಿಟ್ಟು ನಿಂತಿದೆ. ಹಸುವಿನ ಚಿತ್ರದಲ್ಲಿದ್ದ ಕೆಚ್ಚಲಿಗೆ ಬಾಯಿ ಹಾಕಿ ಹಾಲು ಕುಡಿಯಲು ನಿರಂತರ ಪ್ರಯತ್ನ ನಡೆಸಿದೆ.

ಆದರೆ, ಅದು ಕೇವಲ ನಿರ್ಜೀವ ಪೋಸ್ಟರ್ ಎಂಬ ಸತ್ಯ ಆ ಮುಗ್ಧ ಕರುವಿಗೆ ತಿಳಿಯಲಿಲ್ಲ. “ತಾಯಿ ನನ್ನನ್ನು ಏಕೆ ಹತ್ತಿರಕ್ಕೆ ಕರೆದುಕೊಳ್ಳುತ್ತಿಲ್ಲ, ಏಕೆ ಹಾಲು ನೀಡುತ್ತಿಲ್ಲ?” ಎಂದು ಅದು ನಿರಾಶೆಯಿಂದ ಗೋಗರೆಯುವ ದೃಶ್ಯ ಪ್ರತಿಯೊಬ್ಬರ ಕರುಳನ್ನು ಹಿಂಡುವಂತಿದೆ.

ಹೈನುಗಾರಿಕೆ ಮತ್ತು ನಮ್ಮ ನೈತಿಕತೆ:

ಈ ಸನ್ನಿವೇಶವು ಕೇವಲ ಒಂದು ವೈರಲ್ ವಿಡಿಯೋ ಅಲ್ಲ; ಬದಲಿಗೆ ಪ್ರಸ್ತುತ ಸಮಾಜದಲ್ಲಿ ಸಾಗುತ್ತಿರುವ ಹೈನುಗಾರಿಕೆ ಉದ್ಯಮದ ಕಠೋರ ನೈಜತೆಗೆ ಹಿಡಿದ ಕನ್ನಡಿ. ಪ್ರತಿಯೊಂದು ಪ್ರಾಣಿ-ಪಕ್ಷಿಗೂ ತಾಯಿಯ ಮಮತೆ ಅತ್ಯಗತ್ಯ. ಆದರೆ ಮನುಷ್ಯ ತನ್ನ ಸ್ವಾರ್ಥ ಮತ್ತು ಲಾಭಕ್ಕಾಗಿ ಕರು ಕುಡಿಯಬೇಕಾದ ಹಾಲನ್ನು ಸಂಪೂರ್ಣವಾಗಿ ಹಿಂಡಿ ಮಾರಾಟ ಮಾಡುತ್ತಿದ್ದಾನೆ.

ಅದರಲ್ಲೂ ವಿಶೇಷವಾಗಿ ಗಂಡು ಕರು ಹುಟ್ಟಿದರೆ, ಹಾಲು ನೀಡಲು ಸಾಧ್ಯವಿಲ್ಲವೆಂಬ ಕಾರಣಕ್ಕೆ ಅದನ್ನು ಬೀದಿಗೆ ತಳ್ಳುವುದು ಅಥವಾ ಅನಾಥವಾಗಿ ಬಿಟ್ಟುಬಿಡುವುದು ಸಮಾಜದಲ್ಲಿ ಸಾಮಾನ್ಯವಾಗಿದೆ. ತಾಯಿಯ ಹಾಲಿನಿಂದಲೂ, ತಾಯಿಯ ಪ್ರೀತಿಯಿಂದಲೂ ವಂಚಿತವಾದ ಇಂತಹ ಮುಗ್ಧ ಜೀವಿಗಳು ರಸ್ತೆ ರಸ್ತೆಗಳಲ್ಲಿ ಅಲೆಯುತ್ತಾ, ನಿರ್ಜೀವ ಚಿತ್ರಗಳಲ್ಲೂ ತಮ್ಮ ತಾಯಿಯನ್ನು ಹುಡುಕುವ ಪರಿಸ್ಥಿತಿ ಬಂದೊದಗಿರುವುದು ಅತ್ಯಂತ ಶೋಚನೀಯ.

ಈ ವಿಡಿಯೋ ನಮಗೆಲ್ಲರಿಗೂ ಒಂದು ಪ್ರಶ್ನೆಯನ್ನು ಎಸೆದಿದೆ — ಮನುಷ್ಯನ ಸ್ವಾರ್ಥಕ್ಕಾಗಿ ಮೂಕ ಪ್ರಾಣಿಗಳ ಕರುಳ ಬಳ್ಳಿಯ ಬಂಧವನ್ನು ಹೀಗೆ ತುಂಡರಿಸುವುದು ಎಷ್ಟು ಸರಿ? ಪ್ರಾಣಿಗಳ ಮೇಲಿನ ದಯೆ ಮತ್ತು ಕರುಣೆ ಕೇವಲ ಮಾತಿಗೆ ಸೀಮಿತವಾಗದೇ ಕಾರ್ಯಾಚರಣೆಗೆ ಬರಬೇಕಿದೆ

Continue Reading

Trending

Copyright © 2025 Deevatige

error: Content is protected !!