Connect with us

Politics

ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗೌರವಯುತ ರಾಜೀನಾಮೆ; ಕುರ್ಚಿ ಕದನಕ್ಕೆ ತೆರೆ!

Published

on

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಹಲವು ತಿಂಗಳುಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆಗೆ ಕೊನೆಗೂ ಅಧಿಕೃತ ತೆರೆ ಬಿದ್ದಿದೆ. ಹೈಕಮಾಂಡ್ ಸೂಚನೆಯನ್ನು ಅತ್ಯಂತ ಗೌರವಯುತವಾಗಿ ಪಾಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 28) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆಗೂ ಮುನ್ನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಸಚಿವರೊಂದಿಗೆ ಸಿದ್ದರಾಮಯ್ಯ ಅವರು ಉಪಾಹಾರ ಸಭೆ ನಡೆಸಿದರು. ಈ ಸಭೆಯಲ್ಲಿ ತಾವೂ ರಾಜೀನಾಮೆ ನೀಡುತ್ತಿರುವುದಾಗಿ ಪ್ರಕಟಿಸಿ, ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬ ಅಧಿಕೃತ ಮಾಹಿತಿಯನ್ನು ಸಹೋದ್ಯೋಗಿಗಳಿಗೆ ತಿಳಿಸಿದರು.

ಭಾವನಾತ್ಮಕ ಕ್ಷಣಗಳು ಹಾಗೂ ಜಂಟಿ ಪ್ರದರ್ಶನ: ರಾಜೀನಾಮೆ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಅಪ್ಪಿಕೊಂಡು ಒಗ್ಗಟ್ಟು ಪ್ರದರ್ಶಿಸಿದರು. ಇದೇ ವೇಳೆ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದರು. ನಂತರ ಸಚಿವರಾದ ಬೈರತಿ ಸುರೇಶ್, ಕೆ.ಜೆ. ಜಾರ್ಜ್, ಜಿ. ಪರಮೇಶ್ವರ್ ಸೇರಿದಂತೆ ಹಲವು ಹಿರಿಯ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ ಅವರು, ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಸದ್ಯ ನಗರದಲ್ಲಿ ಇಲ್ಲದ ಕಾರಣ ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಹೇಳಿದ್ದೇನು? ರಾಜೀನಾಮೆ ನೀಡಿದ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಅತ್ಯಂತ ಭಾವನಾತ್ಮಕವಾಗಿ ಮಾತನಾಡಿದ ಸಿದ್ದರಾಮಯ್ಯ:

“ನನ್ನ 50 ವರ್ಷಗಳ ರಾಜಕೀಯ ಜೀವನ ಒಂದು ತೆರೆದ ಪುಸ್ತಕ. ನಾನು ಎಂದಿಗೂ ಹಣದ ಬೆನ್ನತ್ತಲಿಲ್ಲ, ಆಸ್ತಿ ಮಾಡಲು ಬಯಸಲಿಲ್ಲ. ಹೈಕಮಾಂಡ್ ಸೂಚನೆಗೆ ಗೌರವ ನೀಡಿ ಮುಂದಿನ ಮುಖ್ಯಮಂತ್ರಿಗಳಿಗೆ ದಾರಿ ಮಾಡಿಕೊಡಲು ರಾಜೀನಾಮೆ ನೀಡಿದ್ದೇನೆ.”

“ನಮ್ಮ ಸರ್ಕಾರ ಚುನಾವಣೆ ವೇಳೆ ನೀಡಿದ್ದ 550 ಭರವಸೆಗಳಲ್ಲಿ ಈಗಾಗಲೇ 300 ಭರವಸೆಗಳನ್ನು ಹಾಗೂ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಕೊಟ್ಟ ಮಾತಿನಿಂದ ನಾನು ಎಂದಿಗೂ ಹಿಂದೆ ಸರಿದಿಲ್ಲ.”

ಕಾಂಗ್ರೆಸ್ ಹೈಕಮಾಂಡ್ ನನಗೆ ರಾಜ್ಯಸಭೆಗೆ ಪ್ರವೇಶಿಸುವಂತೆ ಆಫರ್ ನೀಡಿತ್ತು, ಆದರೆ ನಾನು ಅದನ್ನು ನಿರಾಕರಿಸಿದ್ದೇನೆ. ನಾನು ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದರು.

ಮುಂದಿನ ನಡೆ ಏನು? ಕಾಂಗ್ರೆಸ್ ಹೈಕಮಾಂಡ್ ಸೂತ್ರದ ಪ್ರಕಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೊಸ ಸಚಿವ ಸಂಪುಟ ರಚನೆ ಹಾಗೂ ನೂತನ ಶಾಸಕಾಂಗ ಪಕ್ಷದ ಸಭೆಯ ಕುರಿತು ಚರ್ಚಿಸಲು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಂದು ಸಂಜೆ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿದ್ದಾರೆ. ಶೀಘ್ರದಲ್ಲೇ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಕಾರ್ಯಕ್ರಮದ ದಿನಾಂಕ ಪ್ರಕಟವಾಗಲಿದೆ.


ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

CONGRESS

ಸಚಿವ ಸ್ಥಾನ ಸಿಗದ್ದಕ್ಕೆ ಕಾಂಗ್ರೆಸ್‌ನಲ್ಲಿ ತೀವ್ರ ಬಂಡಾಯ: ಶಾಸಕ ಸ್ಥಾನಕ್ಕೆ ಬೇಳೂರು ಗೋಪಾಲಕೃಷ್ಣ, ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

Published

on

ಬೆಂಗಳೂರು: ರಾಜ್ಯದಲ್ಲಿ ನೂತನ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬೆಂಕಿ ಭುಗಿಲೆದ್ದಿದೆ. ಬಯಸಿದ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಇಬ್ಬರು ಹಿರಿಯ ಶಾಸಕರಾದ ಸಾಗರ ಕ್ಷೇತ್ರದ ಬೇಳೂರು ಗೋಪಾಲಕೃಷ್ಣ ಹಾಗೂ ಇಂಡಿ ಕ್ಷೇತ್ರದ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ನನಗೆ ಅನ್ಯಾಯವಾಗಿದೆ, ಉದ್ದೇಶಪೂರ್ವಕವಾಗಿ ಕಡೆಗಣಿಸಿದ್ದಾರೆ: ಬೇಳೂರು ಗೋಪಾಲಕೃಷ್ಣ ಆಕ್ರೋಶ

ಸಚಿವ ಸ್ಥಾನ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ, “ಸಂಪುಟ ವಿಸ್ತರಣೆ ಹೆಸರಿನಲ್ಲಿ ನನಗೆ ತೀವ್ರ ಅನ್ಯಾಯವಾಗಿದೆ. ಕೊನೆಯ ಕ್ಷಣದವರೆಗೂ ಪಟ್ಟಿಯಲ್ಲಿದ್ದ ನನ್ನ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ” ಎಂದು ಕಳವಳ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗಾಡ್‌ಫಾದರ್ ಹಾಗೂ ಪ್ರಭಾವ ಇರುವವರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗುತ್ತಿದೆ. ನಿಷ್ಠಾವಂತ ಶಾಸಕರಿಗೆ ಅನ್ಯಾಯವಾಗುತ್ತಿದ್ದು, ಇದನ್ನು ಸಹಿಸಿಕೊಂಡು ಮುಂದುವರಿಯಲು ಸಾಧ್ಯವಿಲ್ಲ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ತಳೆದಿದ್ದೇನೆ” ಎಂದು ತಿಳಿಸಿರುವ ಅವರು, ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಮೂರು ಬಾರಿ ಶಾಸಕರಾಗಿದ್ದರೂ ಕೈತಪ್ಪಿದ ಸಚಿವ ಸ್ಥಾನ: ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ಇತ್ತ ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಮೂರು ಬಾರಿಯ ಶಾಸಕ ಯಶವಂತರಾಯಗೌಡ ಪಾಟೀಲ್ ಅವರೂ ಸಹ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷಕ್ಕಾಗಿ ಸತತವಾಗಿ ಶ್ರಮಿಸಿದರೂ ಹಾಗೂ ಹಿರಿಯ ಶಾಸಕರಾಗಿದ್ದರೂ ತಮಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡದಿರುವುದು ಅವರ ಬೆಂಬಲಿಗರು ಮತ್ತು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.

ಸರ್ಕಾರಕ್ಕೆ ಹೆಚ್ಚಿದ ರಾಜಕೀಯ ಬಿಸಿ

ಸಂಪುಟ ವಿಸ್ತರಣೆಯ ಬೆನ್ನಲ್ಲೇ ಒಂದೇ ಬಾರಿಗೆ ಇಬ್ಬರು ಪ್ರಮುಖ ಶಾಸಕರು ರಾಜೀನಾಮೆ ನಿರ್ಧಾರ ಕೈಗೊಂಡಿರುವುದು ಕಾಂಗ್ರೆಸ್ ಸರ್ಕಾರ ಹಾಗೂ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಅಸಮಾಧಾನಿತ ಶಾಸಕರು ಒಗ್ಗೂಡುತ್ತಿರುವ ಸುಳಿವು ಸಿಗುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಮುಂದಿನ ನಡೆ ಕುತೂಹಲ ಮೂಡಿಸಿದೆ.

Continue Reading

Kadaba

ನೂಜಿಬಾಳ್ತಿಲ: ಬಾಲೆಮಾರು-ಕುರ್ನೂಜಿಯಲ್ಲಿ ಮಳೆಗಾಲದಲ್ಲಿ ಹೊಳೆದಾಟಲು ಪರದಾಟ; ಸೇತುವೆ ನಿರ್ಮಾಣಕ್ಕೆ ಭರವಸೆ ನೀಡಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ

Published

on

ಕಡಬ: ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಿಂದ ಇಚ್ಲಂಪಾಡಿ ಸಂಪರ್ಕಿಸುವ ರಸ್ತೆಯ ಬಾಲೆಮಾರು-ಕುರ್ನೂಜಿ ಎಂಬಲ್ಲಿ ಹರಿಯುವ ಹೊಳೆ ದಾಟಲು ಗ್ರಾಮಸ್ಥರು ಮಳೆಗಾಲದಲ್ಲಿ ತೀವ್ರ ಪರದಾಟ ನಡೆಸುತ್ತಿದ್ದಾರೆ. ಇಲ್ಲಿನ ಗ್ರಾಮಸ್ಥರ ದಶಕಗಳ ಸಂಕಷ್ಟವನ್ನು ಆಲಿಸಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ರಾಮಕುಂಜ ಅವರು ಆಃ 2ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೇತುವೆ ನಿರ್ಮಾಣಕ್ಕೆ ಸರಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ತೆಪ್ಪವೇ ಆಸರೆ: ಗ್ರಾಮಸ್ಥರ ಮುಗಿಯದ ಸಂಕಷ್ಟ!

ಬೇಸಿಗೆ ಕಾಲದಲ್ಲಿ ಗ್ರಾಮಸ್ಥರೇ ಸ್ವತಃ ಪಾಲ (ಕಾಲುಸಂಕ) ರಚಿಸಿಕೊಂಡು ಹೊಳೆ ದಾಟುತ್ತಾರೆ. ಆದರೆ ಮಳೆಗಾಲದಲ್ಲಿ ಗುಂಡ್ಯ ಹೊಳೆಯು ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾದಾಗ, ಈ ಹೊಳೆಯಲ್ಲೂ ನೀರು ಆವರಿಸಿ ಪಾಲ ಮುಳುಗಡೆಯಾಗುತ್ತದೆ. ಇದರಿಂದ ಸುತ್ತಮುತ್ತಲಿನ ಸಂಪರ್ಕ ಸಂಪೂರ್ಣ ಕಡಿತಗೊಳ್ಳುತ್ತದೆ.

ತೆಪ್ಪವೇ ಆಸರೆ: ಪಾಲ ಮುಳುಗಡೆಯಾದಾಗ ಅಪಾಯಕಾರಿ ರೀತಿಯಲ್ಲಿ ತೆಪ್ಪವನ್ನೇ ಬಳಸಿಕೊಂಡು ಗ್ರಾಮಸ್ಥರು ಹೊಳೆ ದಾಟಬೇಕಾದ ದುಸ್ಥಿತಿ ಇದೆ.

ಸಾಕಷ್ಟು ಕುಟುಂಬಗಳಿಗೆ ತೊಂದರೆ: ಈ ಭಾಗದಲ್ಲಿ 25ಕ್ಕೂ ಹೆಚ್ಚು ಮನೆಗಳಿದ್ದು, ದಿನನಿತ್ಯ ಶಾಲಾ-ಕಾಲೇಜು ಮಕ್ಕಳು ಹಾಗೂ ಗ್ರಾಮಸ್ಥರು ಪ್ರಾಣ ಕೈಯಲ್ಲಿ ಹಿಡಿದುಕೊಂಡು ಈ ಹೊಳೆ ದಾಟಿಯೇ ತಮ್ಮ ದೈನಂದಿನ ಕೆಲಸಗಳಿಗೆ ತೆರಳಬೇಕಾಗಿದೆ.

ಹಲವು ವರ್ಷಗಳ ಬೇಡಿಕೆ: ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕೆಂದು ಗ್ರಾಮಸ್ಥರು ಹಲವು ವರ್ಷಗಳಿಂದ ಮನವಿ ಮಾಡುತ್ತಲೇ ಬಂದಿದ್ದಾರೆ. ಭರವಸೆಗಳು ಸಿಕ್ಕಿವೆಯೇ ಹೊರತು ಸೇತುವೆ ಭಾಗ್ಯ ಮಾತ್ರ ಇಂದಿಗೂ ಸಿಕ್ಕಿಲ್ಲ ಎಂಬುದು ಸ್ಥಳೀಯರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಸ್ಥಳಕ್ಕೆ ಜಿ.ಕೃಷ್ಣಪ್ಪ ಭೇಟಿ, ಪರಿಶೀಲನೆ

ಇಲ್ಲಿನ ಪರಿಸ್ಥಿತಿಯ ಬಗ್ಗೆ ಸ್ಥಳೀಯರು ಕಾಂಗ್ರೆಸ್ ಮುಖಂಡ ಕರುಣಾಕರ ಗೌಡ ದೊಡ್ಡಉರ್ಕ ಅವರ ಗಮನಕ್ಕೆ ತಂದಿದ್ದರು. ವಿಷಯ ತಿಳಿದ ಜಿ.ಕೃಷ್ಣಪ್ಪ ರಾಮಕುಂಜ ಅವರು ಕರುಣಾಕರ ಗೌಡ ಅವರೊಂದಿಗೆ ಬಾಲೆಮಾರು-ಕುರ್ನೂಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪಿಡಬ್ಲ್ಯುಡಿ ಇಂಜಿನಿಯರ್‌ಗೆ ಸೂಚನೆ:

ಸ್ಥಳೀಯರೊಂದಿಗೆ ಸಂಕಷ್ಟ ಆಲಿಸಿದ ಜಿ.ಕೃಷ್ಣಪ್ಪ ಅವರು, ಸೇತುವೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಅಲ್ಲದೆ, ಸ್ಥಳದಿಂದಲೇ ಲೋಕೋಪಯೋಗಿ ಇಲಾಖೆಯ (PWD) ಇಂಜಿನಿಯರ್ ಅವರಿಗೆ ದೂರವಾಣಿ ಕರೆ ಮಾಡಿ, ತಕ್ಷಣವೇ ಸೇತುವೆ ನಿರ್ಮಾಣಕ್ಕೆ ಅಂದಾಜುಪಟ್ಟಿ (Estimate) ತಯಾರಿಸುವಂತೆ ಸೂಚನೆ ನೀಡಿದರು.

ಭೇಟಿ ವೇಳೆಯಲ್ಲಿದ್ದ ಪ್ರಮುಖರು

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಶೀನಪ್ಪ ಗೌಡ ಕುರ್ನೂಜಿ, ಶೇಖರ ಗೌಡ ಬಾಲೆಮಾರು, ಧನಂಜಯ ಗೌಡ ಬಳ್ಳೇರಿ, ಪ್ರಮೋದ್ ಗೌಡ ಬಳ್ಳೇರಿ, ಚಂದ್ರಶೇಖರ ಗೌಡ ಬಳ್ಳೇರಿ, ಚೇತನ್ ಬಳ್ಳೇರಿ, ಬಾಲಕೃಷ್ಣ ಬಳ್ಳೇರಿ, ಬಾಲಕ್ಕ ಕುರ್ನೂಜಿ, ನಳಿನಿ ಕುರ್ನೂಜಿ, ರಾಮಕ್ಕ ಬಾಲೆಮಾರು, ದೇಜಪ್ಪ ಗೌಡ ಬಾಲೆಮಾರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

Politics

ನರಿಮೊಗರು ಗ್ರಾ.ಪಂ ಎದುರು ‘ಪುತ್ತಿಲ ಪರಿವಾರ’ ಬೃಹತ್ ಪ್ರತಿಭಟನೆ: 15 ದಿನಗಳಲ್ಲಿ ರಸ್ತೆ ದುರಸ್ತಿ ಭರವಸೆ

Published

on

ಪುತ್ತೂರು: ಪುರಷರಕಟ್ಟೆ–ಶಾಂತಿಗೋಡು ಸಂಪರ್ಕ ರಸ್ತೆಯ ದುಸ್ಥಿತಿಯನ್ನು ಖಂಡಿಸಿ ಹಾಗೂ ತಕ್ಷಣ ರಸ್ತೆ ದುರಸ್ತಿಗೆ ಆಗ್ರಹಿಸಿ ನರಿಮೊಗರು ಗ್ರಾಮ ಪಂಚಾಯಿತಿ ಕಚೇರಿ ಎದುರು ಗುರುವಾರ ‘ಪುತ್ತಿಲ ಪರಿವಾರ’ದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಅಧಿಕಾರಿಗಳು 15 ದಿನಗಳ ಒಳಗೆ ಕಾಮಗಾರಿ ಪೂರ್ಣಗೊಳಿಸುವ ಲಿಖಿತ/ಮೌಖಿಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.

ಪುರಷರಕಟ್ಟೆ–ಶಾಂತಿಗೋಡು ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಸುಮಾರು ಒಂದು ಕಿಲೋಮೀಟರ್‌ ವ್ಯಾಪ್ತಿಯಲ್ಲಿ ವಾಹನ ಸಂಚಾರ ತೀವ್ರ ದುಸ್ತರವಾಗಿದೆ. ಇದರಿಂದಾಗಿ ಸ್ಥಳೀಯರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ದಿನನಿತ್ಯ ಪರದಾಡುವಂತಾಗಿದೆ. ರಸ್ತೆ ಸರಿಪಡಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಹಿಂದೆ ಗ್ರಾ.ಪಂ ಕಾರ್ಯದರ್ಶಿ ಎರಡು ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ನೀಡಿದ್ದ ಭರವಸೆಯೂ ಹುಸಿಯಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪುತ್ತಿಲ ಪರಿವಾರದ ಕಾರ್ಯಕರ್ತರು ಮತ್ತೆ ಬೀದಿಗಿಳಿದು ಧರಣಿ ನಡೆಸಿದರು.

ಅಧಿಕಾರಿಗಳು ನೆಪ ಹೇಳುವುದು ಬಿಡಲಿ: ಅರುಣ್ ಕುಮಾರ್ ಪುತ್ತಿಲ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, “ಅಧಿಕಾರಿಗಳು ಅನುದಾನದ ಕೊರತೆಯನ್ನು ನೆಪವಾಗಿ ಹೇಳಿ ಜಾರಿಕೊಳ್ಳುವುದು ಸರಿಯಲ್ಲ. ಸಾರ್ವಜನಿಕರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ ಅಗತ್ಯ ಕಾಮಗಾರಿ ನಡೆಸುವುದು ಅಧಿಕಾರಿಗಳ ಪ್ರಥಮ ಕರ್ತವ್ಯ” ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.

ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟದ ಮಾಜಿ ನಿರ್ದೇಶಕ ನಾರಾಯಣ ಪ್ರಕಾಶ್ ಮಾತನಾಡಿ, “ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಈ ಭಾಗಕ್ಕೆ ಸಮರ್ಪಕ ರಸ್ತೆ ಹಾಗೂ ಬಸ್‌ ಸೌಲಭ್ಯ ಸಿಕ್ಕಿಲ್ಲದಿರುವುದು ದುರಂತ. ಅಧಿಕಾರಿಗಳು ಅಹಂಕಾರ ಬಿಟ್ಟು ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸಬೇಕು. ಕೊಟ್ಟ ಭರವಸೆಯಂತೆ 15 ದಿನಗಳೊಳಗೆ ಕಾಮಗಾರಿ ಆರಂಭವಾಗದಿದ್ದರೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಉಗ್ರ ರೀತಿಯ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಸಿದರು.

15 ದಿನಗಳಲ್ಲಿ ಕಾಮಗಾರಿ ಪೂರ್ಣ: ತಾಪಂ ಇಒ ಭರವಸೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯಿತಿ ಇಒ ನವೀನ್ ಭಂಡಾರಿ, “ಚರಂಡಿ ದುರಸ್ತಿ ಕಾಮಗಾರಿಯನ್ನು ತಕ್ಷಣವೇ ಆರಂಭಿಸಲಾಗುವುದು. ರಸ್ತೆ ದುರಸ್ತಿಯನ್ನು ಮುಂದಿನ 15 ದಿನಗಳ ಒಳಗೆ ಪೂರ್ಣಗೊಳಿಸಲಾಗುವುದು. ಸದ್ಯ ಚರಂಡಿ ಕಾಮಗಾರಿಗಾಗಿ ಗ್ರಾಮ ಪಂಚಾಯಿತಿ ಅನುದಾನದಿಂದ ₹20 ಸಾವಿರ ಮೀಸಲಿರಿಸಲಾಗಿದೆ” ಎಂದು ಸ್ಪಷ್ಟನೆ ನೀಡಿದರು. ಅಧಿಕಾರಿಗಳ ಸ್ಪಂದನೆಯ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಪುತ್ತಿಲ ಪರಿವಾರದ ನೂರಾರು ಕಾರ್ಯಕರ್ತರು, ಸ್ಥಳೀಯ ನಿವಾಸಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Continue Reading

Trending

Copyright © 2025 Deevatige

error: Content is protected !!