Connect with us

Bantawala

ಪಂಚಾಯತ್ ರಾಜ್ ಸಂಸ್ಥೆಗಳ ಆರ್ಥಿಕ ದುರ್ಬಲೀಕರಣ: ಕೇಂದ್ರ ಸರಕಾರದ ವಿರುದ್ಧ ಬಂಟ್ವಾಳದಲ್ಲಿ ನಾಳೆ ಬೃಹತ್ ಪ್ರತಿಭಟನೆ

Published

on

ಬಂಟ್ವಾಳ: ಕೇಂದ್ರ ಸರಕಾರವು ಪಂಚಾಯತ್ ರಾಜ್ ಸ್ಥಳೀಯ ಸಂಸ್ಥೆಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸುತ್ತಿರುವ ನೀತಿ ಹಾಗೂ ವಿವಿಧ ಜನವಿರೋಧಿ ವೈಫಲ್ಯಗಳನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ನಾಳೆ (ಮೇ 30) ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಹಕಾರದೊಂದಿಗೆ ಈ ಪ್ರತಿಭಟನೆಯನ್ನು ಆಯೋಜಿಸಲಾಗಿದೆ.

ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಬಿ. ರಮನಾಥ ರೈ ಅವರ ಮಾರ್ಗದರ್ಶನದಲ್ಲಿ ದಿನಾಂಕ 30/05/2026ರ ಶನಿವಾರ ಬೆಳಿಗ್ಗೆ 10:30ಕ್ಕೆ ಬಂಟ್ವಾಳ ತಾಲೂಕು ಆಡಳಿತ ಕಛೇರಿ ಎದುರುಗಡೆ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ರಮನಾಥ ರೈ ಅವರ ಆಕ್ರೋಶ ಮತ್ತು ಮನವಿ: ಪ್ರತಿಭಟನೆಯ ಕುರಿತು ವೀಡಿಯೊ ಸಂದೇಶ ನೀಡಿರುವ ಮಾಜಿ ಸಚಿವ ಬಿ. ರಮನಾಥ ರೈ ಅವರು, “ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಕನಸಿನ ಕಾರ್ಯಕ್ರಮವಾಗಿದ್ದ ಪಂಚಾಯತ್ ರಾಜ್ ವ್ಯವಸ್ಥೆಗೆ ನರಸಿಂಹರಾವ್ ಸರಕಾರದ ಅವಧಿಯಲ್ಲಿ 73 ಮತ್ತು 74ನೇ ತಿದ್ದುಪಡಿ ತರುವ ಮೂಲಕ ಹೆಚ್ಚಿನ ಶಕ್ತಿ ತುಂಬಲಾಗಿತ್ತು. ಗ್ರಾಮೀಣ ಭಾಗದ ರಸ್ತೆ, ಕುಡಿಯುವ ನೀರು, ಶಿಕ್ಷಣ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ನೇರವಾಗಿ ಪಂಚಾಯತ್ ರಾಜ್ ವ್ಯಾಪ್ತಿಗೆ ಬರುವಂತೆ ಮಾಡಲಾಗಿತ್ತು. ಎಸ್.ಎಂ. ಕೃಷ್ಣ ಅವರ ಸರಕಾರದ ಅವಧಿಯಲ್ಲೂ ಬೇಲೂರು ಘೋಷಣೆ ಮಾಡುವ ಮೂಲಕ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನೇಕ ಅಧಿಕಾರಗಳನ್ನು ನೀಡಲಾಗಿತ್ತು. ಆದರೆ ಇತ್ತೀಚಿನ ದಿವಸಗಳಲ್ಲಿ ಕೇಂದ್ರ ಸರಕಾರವು ಪಂಚಾಯತ್ ರಾಜ್ ವ್ಯವಸ್ಥೆಗೆ ಶಕ್ತಿ ಕೊಡುವ ಬದಲು ಅದನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಆಡಳಿತ ನೀತಿಯ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ನಾಳೆ ಶನಿವಾರ ಬೆಳಿಗ್ಗೆ 10:30ಕ್ಕೆ ಬಿಸಿ ರೋಡ್‌ನ ತಾಲೂಕು ಆಫೀಸ್ ಎದುರು ಪ್ರತಿಭಟನೆ ನಡೆಯಲಿದ್ದು, ಸಾರ್ವಜನಿಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಅವರು ಮನವಿ ಮಾಡಿದ್ದಾರೆ.

ಪ್ರತಿಭಟನೆಯ ಪ್ರಮುಖ ಕಾರಣಗಳು: 2025-26ನೇ ಸಾಲಿನ 15ನೇ ಹಣಕಾಸು ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಿಡುಗಡೆ ಮಾಡದಿರುವುದು, ಉದ್ಯೋಗ ಖಾತರಿ ಯೋಜನೆಗೆ ಕಡಿವಾಣ ಹಾಕಿ ಗ್ರಾಮೀಣ ಜನರನ್ನು ಉದ್ಯೋಗ ವಂಚಿತರನ್ನಾಗಿಸಿರುವುದು, ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ನಿರಂತರ ಬೆಲೆ ಏರಿಕೆ ಸೇರಿದಂತೆ ಕೇಂದ್ರ ಸರಕಾರದ ವಿವಿಧ ವೈಫಲ್ಯಗಳನ್ನು ಖಂಡಿಸಿ ಈ ಹೋರಾಟ ರೂಪಿಸಲಾಗಿದೆ.

ಮುಖ್ಯ ಭಾಷಣಕಾರರು: ಈ ಬೃಹತ್ ಪ್ರತಿಭಟನೆಯಲ್ಲಿ ಮುಖ್ಯ ಭಾಷಣಕಾರರಾಗಿ ಖ್ಯಾತ ವಾಗ್ಮಿ ಹಾಗೂ ಕೆ.ಪಿ.ಸಿ.ಸಿ ವಕ್ತಾರ ಸುದೀರ್ ಕುಮಾರ್ ಮರೊಳ್ಳಿ ಭಾಗವಹಿಸಲಿದ್ದಾರೆ. ಕೇಂದ್ರ ಸರಕಾರದ ಆಡಳಿತ ವೈಫಲ್ಯಗಳು, ಸ್ಥಳೀಯ ಸಂಸ್ಥೆಗಳ ಹಕ್ಕುಗಳಿಗೆ ಆಗುತ್ತಿರುವ ಧಕ್ಕೆ ಹಾಗೂ ಗ್ರಾಮೀಣ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅವರು ಸಮಗ್ರವಾಗಿ ಮಾತನಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಜಿಲ್ಲಾ ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೊಯಿಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಹನೀಫ್ ಬಗ್ಗುಮೂಲೆ ಅರ್ಜಿ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಷ್ಟ್ರೀಯ ಕಾಂಗ್ರೆಸ್‌ ಸಮಿತಿಯ ಸಾರಥ್ಯ ವಹಿಸಲು ಪಕ್ಷದ ಹಿರಿಯ, ನಿಷ್ಠಾವಂತ ಹಾಗೂ ನೇರ ನಡೆ-ನುಡಿಯ ಪ್ರಭಾವಿ ನಾಯಕ ಹನೀಫ್ ಬಗ್ಗುಮೂಲೆ ಅವರು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಪಕ್ಷ ಹಾಗೂ ಸಮಾಜಸೇವೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಮೂರು ದಶಕಗಳ ಸುದೀರ್ಘ ರಾಜಕೀಯ ಪಯಣ

ಬಂಟ್ವಾಳ ತಾಲೂಕು ಕುಳ ಗ್ರಾಮದ ಬಗ್ಗುಮೂಲೆ ನಿವಾಸಿಯಾಗಿರುವ ಹನೀಫ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ನಿರಂತರವಾಗಿ ಶ್ರಮಿಸಿದವರು. ಬಾಲ್ಯದಿಂದಲೇ ಸಾಮಾಜಿಕ ಕಳಕಳಿ ಬೆಳೆಸಿಕೊಂಡಿದ್ದ ಇವರು, ಪಕ್ಷದ ಧ್ವಜದಡಿಯಲ್ಲಿ ಉಚಿತ ಮೆಡಿಕಲ್ ಕ್ಯಾಂಪ್‌ಗಳು, ರಕ್ತದಾನ ಶಿಬಿರಗಳು, ಕ್ರೀಡಾ ಕೂಟಗಳು ಹಾಗೂ ಧಾರ್ಮಿಕ ಸಮಾರಂಭಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಜನಮಾನಸದಲ್ಲಿ ಆಪತ್ಬಾಂಧವನಾಗಿ ನೆಲೆಸಿದ್ದಾರೆ.

ಸಂಸ್ಥಾಪನಾ ಹೆಜ್ಜೆಗಳು ಮತ್ತು ವಹಿಸಿದ ಜವಾಬ್ದಾರಿಗಳು

ಇವರ ನಿಸ್ಪಕ್ಷಪಾತ ಸೇವೆ ಮತ್ತು ಸಂಘಟನಾ ಚತುರತೆಯನ್ನು ಗುರುತಿಸಿದ ಕಾಂಗ್ರೆಸ್ ಪಕ್ಷ, ಇವರಿಗೆ ವಿವಿಧ ಹಂತಗಳಲ್ಲಿ ಜವಾಬ್ದಾರಿಗಳನ್ನು ನೀಡಿ ಗೌರವಿಸಿದೆ:

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸೇವಾದಳ: ಅಧ್ಯಕ್ಷರಾಗಿ 3 ವರ್ಷಗಳ ಕಾಲ ಯಶಸ್ವಿ ಸೇವೆ.

ಜಿಲ್ಲಾ ಕಾಂಗ್ರೆಸ್ ಸೇವಾದಳ: ಸಂಘಟನಾ ಕಾರ್ಯದರ್ಶಿಯಾಗಿ ಪಕ್ಷದ ತಳಮಟ್ಟದ ಸಂಘಟನೆ.

ಕೆಪಿಸಿಸಿ (KPCC): ರಾಜ್ಯ ಮಟ್ಟದ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಶ್ರಮಿಕರ ಪರ ಧ್ವನಿ.

ರಾಷ್ಟ್ರೀಯ ರಾಜೀವ ಗಾಂಧಿ ಜ್ಯೋತಿಯಾತ್ರೆ ಸಮಿತಿ: ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ದೇಶಾದ್ಯಂತ ವ್ಯಾಪಕ ಕಾರ್ಯಾಚರಣೆ ಹಾಗೂ ಪಕ್ಷದ ಸಿದ್ಧಾಂತಗಳ ಪ್ರಚಾರ.

ಪ್ರಶಸ್ತಿ ಹಾಗೂ ಪುರಸ್ಕಾರ

ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಜನಸೇವೆ ಸಲ್ಲಿಸಿರುವ ಹನೀಫ್ ಬಗ್ಗುಮೂಲೆ ಅವರ ನಿರಂತರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ “ಗಡಿನಾಡ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸಲು ಮತ್ತು ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಲು ತಮ್ಮ ಅನುಭವ ಮತ್ತು ಬದ್ಧತೆ ಸಹಕಾರಿಯಾಗಲಿದೆ ಎಂಬ ವಿಶ್ವಾಸದೊಂದಿಗೆ ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ.

Continue Reading

Bantawala

ದಕ್ಷಿಣ ಕನ್ನಡ: ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ

Published

on

ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ರಾಯಿ ನಿವಾಸಿ ಜೀವನ್ ಪಿಂಟೊ (48) ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ಶನಿವಾರ ತಡರಾತ್ರಿ ಜೀವನ್ ಪಿಂಟೊ ಅವರು ತೋಡಿನ ಆಚೆಗಿರುವ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದರೂ, ಅವರು ನೀರಿಗೆ ಬಿದ್ದಿದ್ದಾರೋ ಅಥವಾ ಬೇರೆಡೆ ತೆರಳಿದ್ದಾರೋ ಎಂಬುದು ಅಧಿಕೃತವಾಗಿ ದೃಢಪಟ್ಟಿರಲಿಲ್ಲ.

ಸತತ ಶೋಧ ಕಾರ್ಯಾಚರಣೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ನದಿಯಲ್ಲಿ ಹರಿಯುತ್ತಿರುವ ಪ್ರಬಲ ನೀರಿನ ಸೆಳೆತದ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗುತಜ್ಞರು ಮತ್ತು ಗ್ರಾಮಸ್ಥರು ಕಳೆದ ಎರಡು ದಿನಗಳಿಂದ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.

ಸತತ ಕಾರ್ಯಾಚರಣೆಯ ಫಲವಾಗಿ ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮೃತದೇಹವನ್ನು ನದಿಯಿಂದ ಹೊರತೆಗೆದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಹಾಗೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

Continue Reading

Bantawala

ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್‌ ದಾಖಲು!

Published

on

ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ:

ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.

ಮಹಿಳೆಯ ಧೈರ್ಯ, ವೈರಲ್ ವೀಡಿಯೋ:

ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.

ಬಂಟ್ವಾಳ ಠಾಣೆಯಲ್ಲಿ ದೂರು:

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

Trending

Copyright © 2025 Deevatige

error: Content is protected !!