Politics
ದ್ವೇಷ ಭಾಷಣ ಹಾಗೂ ಡ್ರಗ್ಸ್ ಮಾಫಿಯಾ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರ ವ್ಯಾಪ್ತಿಯಲ್ಲಿ ಬರುವ ಆರು ಕಮೀಷನರೇಟ್ಗಳ ಸ್ಥಿತಿಗತಿಗಳ ಕುರಿತು ಚರ್ಚಿಸಿ, ಸಾಂವಿಧಾನಿಕ ಚೌಕಟ್ಟನ್ನು ಮೀರುವ ವ್ಯಕ್ತಿ ಮತ್ತು ಪ್ರಕರಣಗಳ ವಿರುದ್ಧ ಯಾವುದೇ ರಾಜಿ ಇಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಶನಿವಾರ ನಗರದ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ ಸೇರಿದಂತೆ ಇಲಾಖೆಯ ಎಲ್ಲಾ ಹಿರಿಯ ಐಪಿಎಸ್ ಅಧಿಕಾರಿಗಳೊಂದಿಗೆ ಗೃಹ ಇಲಾಖೆಯ ಕುರಿತು ಮಾಹಿತಿ ವಿನಿಮಯದ ಔಪಚಾರಿಕ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ದಿನಕ್ಕೆ 3 ಯೂನಿಟ್ಗಳ ಪರಿಶೀಲನೆ: ಈ ಮಹತ್ವದ ಸಭೆಯಲ್ಲಿ ರಾಜ್ಯದ ಅಪರಾಧ ಪ್ರಕರಣಗಳು, ಸಿಬ್ಬಂದಿ ನೇಮಕಾತಿ, ಕಾನೂನು ಸುವ್ಯವಸ್ಥೆ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಮುಂತಾದ ಪ್ರಮುಖ ವಿಷಯಗಳ ಕುರಿತಂತೆ ವಿಸ್ತೃತ ಚರ್ಚೆ ನಡೆಸಲಾಯಿತು. ಕಮೀಷನರೇಟ್ ವ್ಯಾಪ್ತಿಯಲ್ಲಿರುವ ಒಟ್ಟು 16 ಯೂನಿಟ್ಗಳ ಸ್ಥಿತಿಗತಿಗಳ ಕುರಿತು ಪ್ರತಿದಿನ 3 ಯೂನಿಟ್ಗಳ ವಸ್ತುಸ್ಥಿತಿ ಪರಿಶೀಲನೆ ಮಾಡಿ ತಮಗೆ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಗೃಹ ಸಚಿವರು ಇದೇ ವೇಳೆ ನಿರ್ದೇಶನ ನೀಡಿದರು.
ಹಿಂದಿನ ಕಾರ್ಯಕ್ರಮಗಳ ಮುಂದುವರಿಕೆ: “ನನಗೆ ಗೃಹ ಇಲಾಖೆಯಂತಹ ದೊಡ್ಡ ಜವಾಬ್ದಾರಿಯನ್ನು ವಹಿಸಲಾಗಿದೆ. ಹೀಗಾಗಿ ಪೊಲೀಸ್ ಇಲಾಖೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತಿದ್ದೇನೆ. ಹಿಂದಿನ ಗೃಹ ಸಚಿವರಾಗಿದ್ದ ಡಾ. ಜಿ. ಪರಮೇಶ್ವರ್ ಅವರು ಕೈಗೊಂಡಿದ್ದ ಕಾರ್ಯಕ್ರಮಗಳು ಯಾವುವು? ಮತ್ತು ಅವುಗಳನ್ನು ಹೇಗೆ ಮುಂದಿವರೆಸಬೇಕು ಎಂಬುದರ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ” ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ದ್ವೇಷ ಭಾಷಣ ಹಾಗೂ ಡ್ರಗ್ಸ್ ಮಾಫಿಯಾ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಮಾದಕ ವಸ್ತುಗಳ (ಡ್ರಗ್ಸ್) ಮಾಫಿಯಾ ತಡೆ, ಮಹಿಳೆಯರ ಸುರಕ್ಷತೆ ಹಾಗೂ ಸಂಚಾರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಕೆಲವು ಮಹತ್ವದ ಸಲಹೆ ಹಾಗೂ ಸೂಚನೆಗಳನ್ನು ನೀಡಲಾಗಿದೆ ಎಂದು ಸಚಿವರು ತಿಳಿಸಿದರು. “ಕಾನೂನು ಎಲ್ಲರಿಗೂ ಒಂದೇ. ಯಾರೇ ಇದ್ದರೂ ಕಾನೂನಿನ ಚೌಕಟ್ಟು ಮೀರಿದರೆ ಕ್ರಮ ಕೈಗೊಳ್ಳುವುದು ನಿಶ್ಚಿತ. ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹುಟ್ಟಿಸುವ ರೀತಿ ಭಾಷಣ ಮಾಡಿದರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಸರ್ಕಾರಕ್ಕೆ ಮುಜುಗರವಾಗುವಂತಹ ನಡವಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಅವರು ಖಡಕ್ ಎಚ್ಚರಿಕೆ ನೀಡಿದರು.
ರೌಡಿ ನಿಗ್ರಹ ಪಡೆ ರಚನೆಗೆ ನೀಲನಕ್ಷೆ ಸಿದ್ಧ: ರಾಜ್ಯದಲ್ಲಿ ರೌಡಿಸಂಗೆ ಬ್ರೇಕ್ ಹಾಕಲು ತಾಲೂಕು ಮಟ್ಟದಲ್ಲಿ ‘ರೌಡಿ ನಿಗ್ರಹ ಪಡೆ’ ರಚಿಸುವ ಸಂಬಂಧ ಈಗಾಗಲೇ ನೀಲನಕ್ಷೆಯನ್ನು ಸಿದ್ಧಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಸಂಪೂರ್ಣ ವಿವರಗಳನ್ನು ನೀಡುವುದಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿದರು



CONGRESS
ಸಚಿವ ಸ್ಥಾನ ಸಿಗದ್ದಕ್ಕೆ ಕಾಂಗ್ರೆಸ್ನಲ್ಲಿ ತೀವ್ರ ಬಂಡಾಯ: ಶಾಸಕ ಸ್ಥಾನಕ್ಕೆ ಬೇಳೂರು ಗೋಪಾಲಕೃಷ್ಣ, ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!
ಬೆಂಗಳೂರು: ರಾಜ್ಯದಲ್ಲಿ ನೂತನ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬೆಂಕಿ ಭುಗಿಲೆದ್ದಿದೆ. ಬಯಸಿದ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಇಬ್ಬರು ಹಿರಿಯ ಶಾಸಕರಾದ ಸಾಗರ ಕ್ಷೇತ್ರದ ಬೇಳೂರು ಗೋಪಾಲಕೃಷ್ಣ ಹಾಗೂ ಇಂಡಿ ಕ್ಷೇತ್ರದ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ನನಗೆ ಅನ್ಯಾಯವಾಗಿದೆ, ಉದ್ದೇಶಪೂರ್ವಕವಾಗಿ ಕಡೆಗಣಿಸಿದ್ದಾರೆ: ಬೇಳೂರು ಗೋಪಾಲಕೃಷ್ಣ ಆಕ್ರೋಶ
ಸಚಿವ ಸ್ಥಾನ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ, “ಸಂಪುಟ ವಿಸ್ತರಣೆ ಹೆಸರಿನಲ್ಲಿ ನನಗೆ ತೀವ್ರ ಅನ್ಯಾಯವಾಗಿದೆ. ಕೊನೆಯ ಕ್ಷಣದವರೆಗೂ ಪಟ್ಟಿಯಲ್ಲಿದ್ದ ನನ್ನ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ” ಎಂದು ಕಳವಳ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಗಾಡ್ಫಾದರ್ ಹಾಗೂ ಪ್ರಭಾವ ಇರುವವರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗುತ್ತಿದೆ. ನಿಷ್ಠಾವಂತ ಶಾಸಕರಿಗೆ ಅನ್ಯಾಯವಾಗುತ್ತಿದ್ದು, ಇದನ್ನು ಸಹಿಸಿಕೊಂಡು ಮುಂದುವರಿಯಲು ಸಾಧ್ಯವಿಲ್ಲ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ತಳೆದಿದ್ದೇನೆ” ಎಂದು ತಿಳಿಸಿರುವ ಅವರು, ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಮೂರು ಬಾರಿ ಶಾಸಕರಾಗಿದ್ದರೂ ಕೈತಪ್ಪಿದ ಸಚಿವ ಸ್ಥಾನ: ಯಶವಂತರಾಯಗೌಡ ಪಾಟೀಲ್ ರಾಜೀನಾಮೆ
ಇತ್ತ ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಮೂರು ಬಾರಿಯ ಶಾಸಕ ಯಶವಂತರಾಯಗೌಡ ಪಾಟೀಲ್ ಅವರೂ ಸಹ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷಕ್ಕಾಗಿ ಸತತವಾಗಿ ಶ್ರಮಿಸಿದರೂ ಹಾಗೂ ಹಿರಿಯ ಶಾಸಕರಾಗಿದ್ದರೂ ತಮಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡದಿರುವುದು ಅವರ ಬೆಂಬಲಿಗರು ಮತ್ತು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.
ಸರ್ಕಾರಕ್ಕೆ ಹೆಚ್ಚಿದ ರಾಜಕೀಯ ಬಿಸಿ
ಸಂಪುಟ ವಿಸ್ತರಣೆಯ ಬೆನ್ನಲ್ಲೇ ಒಂದೇ ಬಾರಿಗೆ ಇಬ್ಬರು ಪ್ರಮುಖ ಶಾಸಕರು ರಾಜೀನಾಮೆ ನಿರ್ಧಾರ ಕೈಗೊಂಡಿರುವುದು ಕಾಂಗ್ರೆಸ್ ಸರ್ಕಾರ ಹಾಗೂ ಹೈಕಮಾಂಡ್ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಅಸಮಾಧಾನಿತ ಶಾಸಕರು ಒಗ್ಗೂಡುತ್ತಿರುವ ಸುಳಿವು ಸಿಗುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಮುಂದಿನ ನಡೆ ಕುತೂಹಲ ಮೂಡಿಸಿದೆ.

Kadaba
ನೂಜಿಬಾಳ್ತಿಲ: ಬಾಲೆಮಾರು-ಕುರ್ನೂಜಿಯಲ್ಲಿ ಮಳೆಗಾಲದಲ್ಲಿ ಹೊಳೆದಾಟಲು ಪರದಾಟ; ಸೇತುವೆ ನಿರ್ಮಾಣಕ್ಕೆ ಭರವಸೆ ನೀಡಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ
ಕಡಬ: ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಿಂದ ಇಚ್ಲಂಪಾಡಿ ಸಂಪರ್ಕಿಸುವ ರಸ್ತೆಯ ಬಾಲೆಮಾರು-ಕುರ್ನೂಜಿ ಎಂಬಲ್ಲಿ ಹರಿಯುವ ಹೊಳೆ ದಾಟಲು ಗ್ರಾಮಸ್ಥರು ಮಳೆಗಾಲದಲ್ಲಿ ತೀವ್ರ ಪರದಾಟ ನಡೆಸುತ್ತಿದ್ದಾರೆ. ಇಲ್ಲಿನ ಗ್ರಾಮಸ್ಥರ ದಶಕಗಳ ಸಂಕಷ್ಟವನ್ನು ಆಲಿಸಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ರಾಮಕುಂಜ ಅವರು ಆಃ 2ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೇತುವೆ ನಿರ್ಮಾಣಕ್ಕೆ ಸರಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ತೆಪ್ಪವೇ ಆಸರೆ: ಗ್ರಾಮಸ್ಥರ ಮುಗಿಯದ ಸಂಕಷ್ಟ!
ಬೇಸಿಗೆ ಕಾಲದಲ್ಲಿ ಗ್ರಾಮಸ್ಥರೇ ಸ್ವತಃ ಪಾಲ (ಕಾಲುಸಂಕ) ರಚಿಸಿಕೊಂಡು ಹೊಳೆ ದಾಟುತ್ತಾರೆ. ಆದರೆ ಮಳೆಗಾಲದಲ್ಲಿ ಗುಂಡ್ಯ ಹೊಳೆಯು ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾದಾಗ, ಈ ಹೊಳೆಯಲ್ಲೂ ನೀರು ಆವರಿಸಿ ಪಾಲ ಮುಳುಗಡೆಯಾಗುತ್ತದೆ. ಇದರಿಂದ ಸುತ್ತಮುತ್ತಲಿನ ಸಂಪರ್ಕ ಸಂಪೂರ್ಣ ಕಡಿತಗೊಳ್ಳುತ್ತದೆ.
ತೆಪ್ಪವೇ ಆಸರೆ: ಪಾಲ ಮುಳುಗಡೆಯಾದಾಗ ಅಪಾಯಕಾರಿ ರೀತಿಯಲ್ಲಿ ತೆಪ್ಪವನ್ನೇ ಬಳಸಿಕೊಂಡು ಗ್ರಾಮಸ್ಥರು ಹೊಳೆ ದಾಟಬೇಕಾದ ದುಸ್ಥಿತಿ ಇದೆ.

ಸಾಕಷ್ಟು ಕುಟುಂಬಗಳಿಗೆ ತೊಂದರೆ: ಈ ಭಾಗದಲ್ಲಿ 25ಕ್ಕೂ ಹೆಚ್ಚು ಮನೆಗಳಿದ್ದು, ದಿನನಿತ್ಯ ಶಾಲಾ-ಕಾಲೇಜು ಮಕ್ಕಳು ಹಾಗೂ ಗ್ರಾಮಸ್ಥರು ಪ್ರಾಣ ಕೈಯಲ್ಲಿ ಹಿಡಿದುಕೊಂಡು ಈ ಹೊಳೆ ದಾಟಿಯೇ ತಮ್ಮ ದೈನಂದಿನ ಕೆಲಸಗಳಿಗೆ ತೆರಳಬೇಕಾಗಿದೆ.
ಹಲವು ವರ್ಷಗಳ ಬೇಡಿಕೆ: ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕೆಂದು ಗ್ರಾಮಸ್ಥರು ಹಲವು ವರ್ಷಗಳಿಂದ ಮನವಿ ಮಾಡುತ್ತಲೇ ಬಂದಿದ್ದಾರೆ. ಭರವಸೆಗಳು ಸಿಕ್ಕಿವೆಯೇ ಹೊರತು ಸೇತುವೆ ಭಾಗ್ಯ ಮಾತ್ರ ಇಂದಿಗೂ ಸಿಕ್ಕಿಲ್ಲ ಎಂಬುದು ಸ್ಥಳೀಯರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಸ್ಥಳಕ್ಕೆ ಜಿ.ಕೃಷ್ಣಪ್ಪ ಭೇಟಿ, ಪರಿಶೀಲನೆ
ಇಲ್ಲಿನ ಪರಿಸ್ಥಿತಿಯ ಬಗ್ಗೆ ಸ್ಥಳೀಯರು ಕಾಂಗ್ರೆಸ್ ಮುಖಂಡ ಕರುಣಾಕರ ಗೌಡ ದೊಡ್ಡಉರ್ಕ ಅವರ ಗಮನಕ್ಕೆ ತಂದಿದ್ದರು. ವಿಷಯ ತಿಳಿದ ಜಿ.ಕೃಷ್ಣಪ್ಪ ರಾಮಕುಂಜ ಅವರು ಕರುಣಾಕರ ಗೌಡ ಅವರೊಂದಿಗೆ ಬಾಲೆಮಾರು-ಕುರ್ನೂಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪಿಡಬ್ಲ್ಯುಡಿ ಇಂಜಿನಿಯರ್ಗೆ ಸೂಚನೆ:
ಸ್ಥಳೀಯರೊಂದಿಗೆ ಸಂಕಷ್ಟ ಆಲಿಸಿದ ಜಿ.ಕೃಷ್ಣಪ್ಪ ಅವರು, ಸೇತುವೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಅಲ್ಲದೆ, ಸ್ಥಳದಿಂದಲೇ ಲೋಕೋಪಯೋಗಿ ಇಲಾಖೆಯ (PWD) ಇಂಜಿನಿಯರ್ ಅವರಿಗೆ ದೂರವಾಣಿ ಕರೆ ಮಾಡಿ, ತಕ್ಷಣವೇ ಸೇತುವೆ ನಿರ್ಮಾಣಕ್ಕೆ ಅಂದಾಜುಪಟ್ಟಿ (Estimate) ತಯಾರಿಸುವಂತೆ ಸೂಚನೆ ನೀಡಿದರು.
ಭೇಟಿ ವೇಳೆಯಲ್ಲಿದ್ದ ಪ್ರಮುಖರು
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಶೀನಪ್ಪ ಗೌಡ ಕುರ್ನೂಜಿ, ಶೇಖರ ಗೌಡ ಬಾಲೆಮಾರು, ಧನಂಜಯ ಗೌಡ ಬಳ್ಳೇರಿ, ಪ್ರಮೋದ್ ಗೌಡ ಬಳ್ಳೇರಿ, ಚಂದ್ರಶೇಖರ ಗೌಡ ಬಳ್ಳೇರಿ, ಚೇತನ್ ಬಳ್ಳೇರಿ, ಬಾಲಕೃಷ್ಣ ಬಳ್ಳೇರಿ, ಬಾಲಕ್ಕ ಕುರ್ನೂಜಿ, ನಳಿನಿ ಕುರ್ನೂಜಿ, ರಾಮಕ್ಕ ಬಾಲೆಮಾರು, ದೇಜಪ್ಪ ಗೌಡ ಬಾಲೆಮಾರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Politics
ನರಿಮೊಗರು ಗ್ರಾ.ಪಂ ಎದುರು ‘ಪುತ್ತಿಲ ಪರಿವಾರ’ ಬೃಹತ್ ಪ್ರತಿಭಟನೆ: 15 ದಿನಗಳಲ್ಲಿ ರಸ್ತೆ ದುರಸ್ತಿ ಭರವಸೆ
ಪುತ್ತೂರು: ಪುರಷರಕಟ್ಟೆ–ಶಾಂತಿಗೋಡು ಸಂಪರ್ಕ ರಸ್ತೆಯ ದುಸ್ಥಿತಿಯನ್ನು ಖಂಡಿಸಿ ಹಾಗೂ ತಕ್ಷಣ ರಸ್ತೆ ದುರಸ್ತಿಗೆ ಆಗ್ರಹಿಸಿ ನರಿಮೊಗರು ಗ್ರಾಮ ಪಂಚಾಯಿತಿ ಕಚೇರಿ ಎದುರು ಗುರುವಾರ ‘ಪುತ್ತಿಲ ಪರಿವಾರ’ದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಅಧಿಕಾರಿಗಳು 15 ದಿನಗಳ ಒಳಗೆ ಕಾಮಗಾರಿ ಪೂರ್ಣಗೊಳಿಸುವ ಲಿಖಿತ/ಮೌಖಿಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.
ಪುರಷರಕಟ್ಟೆ–ಶಾಂತಿಗೋಡು ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಸುಮಾರು ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಹನ ಸಂಚಾರ ತೀವ್ರ ದುಸ್ತರವಾಗಿದೆ. ಇದರಿಂದಾಗಿ ಸ್ಥಳೀಯರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ದಿನನಿತ್ಯ ಪರದಾಡುವಂತಾಗಿದೆ. ರಸ್ತೆ ಸರಿಪಡಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಹಿಂದೆ ಗ್ರಾ.ಪಂ ಕಾರ್ಯದರ್ಶಿ ಎರಡು ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ನೀಡಿದ್ದ ಭರವಸೆಯೂ ಹುಸಿಯಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪುತ್ತಿಲ ಪರಿವಾರದ ಕಾರ್ಯಕರ್ತರು ಮತ್ತೆ ಬೀದಿಗಿಳಿದು ಧರಣಿ ನಡೆಸಿದರು.
ಅಧಿಕಾರಿಗಳು ನೆಪ ಹೇಳುವುದು ಬಿಡಲಿ: ಅರುಣ್ ಕುಮಾರ್ ಪುತ್ತಿಲ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, “ಅಧಿಕಾರಿಗಳು ಅನುದಾನದ ಕೊರತೆಯನ್ನು ನೆಪವಾಗಿ ಹೇಳಿ ಜಾರಿಕೊಳ್ಳುವುದು ಸರಿಯಲ್ಲ. ಸಾರ್ವಜನಿಕರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ ಅಗತ್ಯ ಕಾಮಗಾರಿ ನಡೆಸುವುದು ಅಧಿಕಾರಿಗಳ ಪ್ರಥಮ ಕರ್ತವ್ಯ” ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.
ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟದ ಮಾಜಿ ನಿರ್ದೇಶಕ ನಾರಾಯಣ ಪ್ರಕಾಶ್ ಮಾತನಾಡಿ, “ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಈ ಭಾಗಕ್ಕೆ ಸಮರ್ಪಕ ರಸ್ತೆ ಹಾಗೂ ಬಸ್ ಸೌಲಭ್ಯ ಸಿಕ್ಕಿಲ್ಲದಿರುವುದು ದುರಂತ. ಅಧಿಕಾರಿಗಳು ಅಹಂಕಾರ ಬಿಟ್ಟು ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸಬೇಕು. ಕೊಟ್ಟ ಭರವಸೆಯಂತೆ 15 ದಿನಗಳೊಳಗೆ ಕಾಮಗಾರಿ ಆರಂಭವಾಗದಿದ್ದರೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಉಗ್ರ ರೀತಿಯ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಸಿದರು.
15 ದಿನಗಳಲ್ಲಿ ಕಾಮಗಾರಿ ಪೂರ್ಣ: ತಾಪಂ ಇಒ ಭರವಸೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯಿತಿ ಇಒ ನವೀನ್ ಭಂಡಾರಿ, “ಚರಂಡಿ ದುರಸ್ತಿ ಕಾಮಗಾರಿಯನ್ನು ತಕ್ಷಣವೇ ಆರಂಭಿಸಲಾಗುವುದು. ರಸ್ತೆ ದುರಸ್ತಿಯನ್ನು ಮುಂದಿನ 15 ದಿನಗಳ ಒಳಗೆ ಪೂರ್ಣಗೊಳಿಸಲಾಗುವುದು. ಸದ್ಯ ಚರಂಡಿ ಕಾಮಗಾರಿಗಾಗಿ ಗ್ರಾಮ ಪಂಚಾಯಿತಿ ಅನುದಾನದಿಂದ ₹20 ಸಾವಿರ ಮೀಸಲಿರಿಸಲಾಗಿದೆ” ಎಂದು ಸ್ಪಷ್ಟನೆ ನೀಡಿದರು. ಅಧಿಕಾರಿಗಳ ಸ್ಪಂದನೆಯ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ಪುತ್ತಿಲ ಪರಿವಾರದ ನೂರಾರು ಕಾರ್ಯಕರ್ತರು, ಸ್ಥಳೀಯ ನಿವಾಸಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
