arrest
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪೊಲೀಸ್ ಹೈ ಅಲರ್ಟ್: ಮುಕ್ಕದಲ್ಲಿ 8 ಮಂದಿ ಬಂಧನ ಬೆನ್ನಲ್ಲೇ ಕಾರ್ಯಾಚರಣೆ ತೀವ್ರ; ಉರ್ವ ಪೊಲೀಸರಿಂದ ಮೂವರ ವಶಕ್ಕೆ
ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆ ಸೋಮವಾರದಿಂದ (ಜುಲೈ 13) ಅತ್ಯಂತ ವ್ಯಾಪಕ ಹಾಗೂ ತೀವ್ರವಾದ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಿದೆ.
ಮುಕ್ಕದಲ್ಲಿ 8 ಮಂದಿ ಬಂಧನ: ನಗರದಾದ್ಯಂತ ಅಲರ್ಟ್
ಕಳೆದ ವಾರ ಸುರತ್ಕಲ್ನ ಮುಕ್ಕದಲ್ಲಿ ಎಂಟು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದರು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು, ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳಿಗೂ ತಮ್ಮ ವ್ಯಾಪ್ತಿಯಲ್ಲಿ ತಪಾಸಣೆ ಮತ್ತು ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಕುಂಟಿಕಾನದಲ್ಲಿ ಮೂವರ ವಶಕ್ಕೆ; ಕೋಡಿಕಲ್ನಲ್ಲಿ ತಪಾಸಣೆ
ಕಮಿಷನರ್ ಅವರ ನಿರ್ದೇಶನದ ಮೇರೆಗೆ ನಗರದಾದ್ಯಂತ ಪೊಲೀಸರು ಸೋಮವಾರದಿಂದಲೇ ಧಾವಿಸಿ ಶೋಧ ನಡೆಸುತ್ತಿದ್ದಾರೆ:
ಕುಂಟಿಕಾನದಲ್ಲಿ ಮೂವರ ವಶಕ್ಕೆ: ಉರ್ವಾ ಠಾಣೆಯ ಪೊಲೀಸರು ಕುಂಟಿಕಾನದ ನಿರ್ಮಾಣ ಹಂತದ ಕಟ್ಟಡವೊಂದರ ಮೇಲೆ ದಾಳಿ ನಡೆಸಿ, ಅಲ್ಲಿ ಕೆಲಸ ಮಾಡುತ್ತಿದ್ದ ಮೂವರು ಶಂಕಿತ ಬಾಂಗ್ಲಾ ಪ್ರಜೆಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಇವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ಕೋಡಿಕಲ್ನಲ್ಲಿ ದಾಖಲೆ ಪರಿಶೀಲನೆ: ಇದೇ ವೇಳೆ ಕೋಡಿಕಲ್ನ ನಿರ್ಮಾಣ ಹಂತದ ಮತ್ತೊಂದು ಕಟ್ಟಡದಲ್ಲೂ ಶಂಕಿತ ಬಾಂಗ್ಲಾ ಪ್ರಜೆಗಳು ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ಅವರ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ವಿಶ್ವ ಹಿಂದೂ ಪರಿಷತ್ ಸ್ವಾಗತ ಮತ್ತು ಬೆಂಬಲ
ಪೊಲೀಸರು ಕೈಗೊಂಡಿರುವ ಈ ಕ್ಷಿಪ್ರ ತನಿಖೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ವಿಶ್ವ ಹಿಂದೂ ಪರಿಷತ್ (ವಿಹಿಂಪ) ಮುಕ್ತಕಂಠದಿಂದ ಶ್ಲಾಘಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಅಡಗಿರುವ ಅಕ್ರಮ ಬಾಂಗ್ಲಾ ಪ್ರಜೆಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಲು ವಿಶ್ವ ಹಿಂದೂ ಪರಿಷತ್ ಸದಾ ಸಿದ್ಧವಿದೆ ಎಂದು ವಿಹಿಂಪ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪುವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿಯುದ್ದಕ್ಕೂ ತಪಾಸಣೆಗೆ ವಿಹಿಂಪ ಆಗ್ರಹ
“ಕರಾವಳಿ ಭಾಗದಲ್ಲಿ ಕಾನೂನು ಬಾಹಿರವಾಗಿ ಬಾಂಗ್ಲಾ ಪ್ರಜೆಗಳು ನುಸುಳಿ ಕಾರ್ಯಾಚರಿಸುತ್ತಿರುವುದು ರಾಷ್ಟ್ರೀಯ ಭದ್ರತೆ ಮತ್ತು ಸ್ಥಳೀಯರ ಹಿತಾಸಕ್ತಿಗೆ ಧಕ್ಕೆ ತರುವ ಗಂಭೀರ ವಿಷಯವಾಗಿದೆ. ಅಕ್ರಮ ನುಸುಳುಕೋರರ ಜಾಲ ಕೇವಲ ಮಂಗಳೂರು ನಗರಕ್ಕೆ ಸೀಮಿತವಾಗಿಲ್ಲ. ಇಡೀ ಕರಾವಳಿ ಭಾಗದಲ್ಲಿ ಹರಡುವ ಸಾಧ್ಯತೆ ಇರುವುದರಿಂದ ಪಶ್ಚಿಮ ವಲಯದ ಐಜಿಪಿ ಅವರು ತಕ್ಷಣ ಮಧ್ಯಪ್ರವೇಶಿಸಬೇಕು.” — ಶರಣ್ ಕುಮಾರ್ ಪಂಪುವೆಲ್, ಸಹ ಕಾರ್ಯದರ್ಶಿ, ವಿಹಿಂಪ ದಕ್ಷಿಣ ಪ್ರಾಂತ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಎಲ್ಲಾ ಪೊಲೀಸ್ ಠಾಣೆಗಳಿಗೂ ಮಂಗಳೂರು ಮಾದರಿಯಲ್ಲೇ ತಪಾಸಣೆ ಮತ್ತು ಕಾರ್ಯಾಚರಣೆಯ ಆದೇಶ ಹೊರಡಿಸಬೇಕೆಂದು ವಿಹಿಂಪ ಒತ್ತಾಯಿಸಿದೆ.
ಸಾರ್ವಜನಿಕರಲ್ಲಿ ಪೊಲೀಸರ ಕಳಕಳಿಯ ಮನವಿ
ಅಕ್ರಮ ವಲಸಿಗರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಸಾರ್ವಜನಿಕರ ಸಹಭಾಗಿತ್ವವೂ ಮುಖ್ಯವಾಗಿದೆ. ಸಾರ್ವಜನಿಕರು ತಮ್ಮ ಸುತ್ತಮುತ್ತಲ ಪ್ರದೇಶಗಳಲ್ಲಿ ಅಥವಾ ನಿರ್ಮಾಣ ಹಂತದ ಕಟ್ಟಡಗಳಲ್ಲಿ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ, ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ
arrest
6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ
ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಬಜಾಲ್ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.
ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.
ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
arrest
ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.
ಘಟನೆ ವಿವರ:
ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.
ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರು ಮತ್ತು ಬಂಧನ:
ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.
ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.
arrest
ಕರಿಕೆ: ಕೇರಳ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಓರ್ವನ ಬಂಧನ, 40 ಕೆಜಿ ಮಾಂಸ ವಶ
ಕರಿಕೆ ಸಮೀಪದ ಕೇರಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕರಿಕೆ ತೋಟಮ್ ನಿವಾಸಿ ಸಿದ್ದು (35) ಬಂಧಿತ ಆರೋಪಿ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.
ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಸರಗೋಡು ವಲಯದ ಅರಣ್ಯ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ. ಹಾಗೂ ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿತ್ತು
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
