Connect with us

judgement

12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಪ್ರಮುಖ ಆರೋಪಿ ಸತೀಶ್ ಬೈಕಂಪಾಡಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ!

Published

on

ಮಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ಬೊಲೆರೋ ವಾಹನದಿಂದ ಡಿಕ್ಕಿ ಹೊಡೆಸಿ, ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದ ಗಂಗಾಧರ ಪಾಂಗಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಪ್ರಮುಖ ಆರೋಪಿ ಸತೀಶ್ ಬೈಕಂಪಾಡಿ ಸೇರಿದಂತೆ ನಾಲ್ವರು ದೋಷಿಗಳಿಗೆ ಜೀವಾವಧಿ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಧೀಶರಾದ ಶ್ರೀ ಜಗದೀಶ್ ವಿ.ಎನ್. ಅವರು ಆದೇಶಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಅಪಘಾತವಲ್ಲ, ಪೂರ್ವನಿಯೋಜಿತ ಕೊಲೆ!

2014ರ ಮೇ 15 ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೀನಕಳಿಯ ಗಣೇಶ್ ಶಿಪ್ಪಿಂಗ್ ಗೋಡೌನ್ ಬಳಿಯ ಡಾಂಬಾರು ರಸ್ತೆಯಲ್ಲಿ ಮೀನಕಳಿಯ ನಿವಾಸಿ ಗಂಗಾಧರ ಪಾಂಗಾಳ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ, ಹಿಂಬಾಲಿಸಿ ಬಂದ ಬೊಲೆರೋ ವಾಹನವೊಂದು ಅವರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ಗಂಗಾಧರ ಪಾಂಗಾಳ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಆರಂಭದಲ್ಲಿ ಇದನ್ನು ರಸ್ತೆ ಅಪಘಾತವೆಂದು ಬಿಂಬಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆದರೆ, ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಇದು ಅಪಘಾತವಲ್ಲ, ಬದಲಿಗೆ ಕೃತ್ಯ ಎಸಗಲು ರೂಪಿಸಿದ ಪೂರ್ವನಿಯೋಜಿತ ಕೊಲೆ ಎಂಬ ಆಘಾತಕಾರಿ ಸತ್ಯ ಬೆಳಕಿಗೆ ಬಂದಿತ್ತು.

ಕೊಲೆಗೆ ಕಾರಣವೇನು?

1ನೇ ಆರೋಪಿ ಸತೀಶ್ ಬೈಕಂಪಾಡಿಯನ್ನು ‘ಬೈಕಂಪಾಡಿ ಮೊಗವೀರ ಮಹಾಸಭಾ’ದ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿತ್ತು. ಈ ಅಮಾನತಿಗೆ ಮೃತ ಗಂಗಾಧರ ಪಾಂಗಾಳ ಅವರೇ ಮೂಲ ಕಾರಣವೆಂದು ಭಾವಿಸಿದ ಆರೋಪಿಗಳು, ಅವರ ಮೇಲೆ ತೀವ್ರ ದ್ವೇಷ ಬೆಳೆಸಿಕೊಂಡಿದ್ದರು. ಈ ಹಳೆ ದ್ವೇಷ ತೀರಿಸಿಕೊಳ್ಳಲು ಒಳಸಂಚು ರೂಪಿಸಿದ ಆರೋಪಿಗಳು, ಗಂಗಾಧರ ಅವರನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಬಂದು ಬೊಲೆರೋ ವಾಹನದಿಂದ ಡಿಕ್ಕಿ ಹೊಡೆಸಿದ್ದರು. ಗಂಗಾಧರ ಅವರು ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡ ನಂತರ ಆರೋಪಿಗಳು ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದರು.

ಶಿಕ್ಷೆಗೆ ಗುರಿಯಾದ ದೋಷಿಗಳು:

ಈ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ನಾಲ್ವರು ಆರೋಪಿಗಳ ವಿವರ ಹೀಗಿದೆ:

  1. ಸತೀಶ್ ಬೈಕಂಪಾಡಿ (57 ವರ್ಷ) – ಎ-1 ಆರೋಪಿ (ಮೀನಕಳಿಯ ನಿವಾಸಿ)
  2. ಪುಷ್ಪರಾಜ್ (47 ವರ್ಷ) – ಎ-2 ಆರೋಪಿ (ಶಿವಳ್ಳಿ ಗ್ರಾಮ, ಉಡುಪಿ)
  3. ಹರೀಶ್ ಬೈಕಂಪಾಡಿ (61 ವರ್ಷ) – ಎ-3 ಆರೋಪಿ (ಮೀನಕಳಿಯ ನಿವಾಸಿ)
  4. ಭಾಸ್ಕರ್ ಬೈಕಂಪಾಡಿ (63 ವರ್ಷ) – ಎ-4 ಆರೋಪಿ (ಮೀನಕಳಿಯ ನಿವಾಸಿ)

(ಟಿಪ್ಪಣಿ: ಆರೋಪಿಗಳಾದ ಸತೀಶ್, ಹರೀಶ್ ಮತ್ತು ಭಾಸ್ಕರ್ ಬೈಕಂಪಾಡಿ ಅವರು ಸ್ವಂತ ಸಹೋದರರಾಗಿದ್ದಾರೆ.)

ನ್ಯಾಯಾಲಯ ವಿಧಿಸಿದ ಶಿಕ್ಷೆ ಮತ್ತು ದಂಡದ ವಿವರ:

ಐಪಿಸಿ ಕಲಂ 302, 120, 109 r/w 34 ಅಡಿ: ನಾಲ್ಕೂ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹15,000 ದಂಡ ವಿಧಿಸಲಾಗಿದೆ. (ದಂಡ ಪಾವತಿಸಲು ತಪ್ಪಿದ್ದಲ್ಲಿ 1 ವರ್ಷ ಹೆಚ್ಚುವರಿ ಸಾದಾ ಶಿಕ್ಷೆ).

ಐಪಿಸಿ ಕಲಂ 201 (ಸಾಕ್ಷ್ಯ ನಾಶ) r/w 34 ಅಡಿ: ಎಲ್ಲಾ ಆರೋಪಿಗಳಿಗೆ 2 ವರ್ಷ ಸಾದಾ ಶಿಕ್ಷೆ ಮತ್ತು ತಲಾ ₹1,000 ದಂಡ ವಿಧಿಸಲಾಗಿದೆ. (ದಂಡ ಪಾವತಿಸಲು ತಪ್ಪಿದರೆ 1 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ).

ಮೃತನ ಮಗಳಿಗೆ ಪರಿಹಾರ: ಆರೋಪಿಗಳಿಂದ ವಸೂಲಿ ಮಾಡಲಾಗುವ ಒಟ್ಟು ₹66,000 ದಂಡದ ಮೊತ್ತದಲ್ಲಿ, ₹50,000 ಹಣವನ್ನು ಮೃತ ಗಂಗಾಧರ ಪಾಂಗಾಳ ಅವರ ಮಗಳಿಗೆ ಪರಿಹಾರವಾಗಿ ನೀಡಲು ಹಾಗೂ ಉಳಿದ ₹16,000 ಹಣವನ್ನು ಸರ್ಕಾರಕ್ಕೆ ಪಾವತಿಸಲು ನ್ಯಾಯಾಲಯ ಆದೇಶಿಸಿದೆ.

ವಾಹನಗಳು ಜಪ್ತಿ – ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ಕೃತ್ಯ ಎಸಗಲು ಮತ್ತು ಸಂಚು ರೂಪಿಸಲು ಬಳಸಲಾಗಿದ್ದ ಆರೋಪಿಗಳಿಗೆ ಸೇರಿದ ಬೊಲೆರೋ, ರೀಡ್ಝ್ ಹಾಗೂ ಮಾರುತಿ ಕಾರುಗಳನ್ನು ವಶಕ್ಕೆ ಪಡೆದು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯ ನಿರ್ದೇಶಿಸಿದೆ. ನ್ಯಾಯಾಲಯದ ಆದೇಶದಂತೆ ನಾಲ್ಕೂ ಜನ ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತನಿಖಾ ತಂಡ ಮತ್ತು ಸರ್ಕಾರಿ ಅಭಿಯೋಜಕರು:

ಪಣಂಬೂರು ಪೊಲೀಸ್ ಠಾಣೆಯ അന്നಿನ ಇನ್‌ಸ್ಪೆಕ್ಟರ್‌ಗಳಾದ ಎನ್.ಆರ್. ಮುಕ್ರಿ, ಭಾಸ್ಕರ್ ರೈ ಹಾಗೂ ರವೀಶ್ ನಾಯಕ್ ಅವರು ಪ್ರಕರಣದ ಭಾಗಶಃ ತನಿಖೆ ನಡೆಸಿದ್ದರು. ತನಿಖಾಧಿಕಾರಿ ಲೋಕೇಶ್ ಎ.ಸಿ. ಅವರು ತನಿಖೆಯನ್ನು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ (ಚಾರ್ಜ್‌ಶೀಟ್) ಸಲ್ಲಿಸಿದ್ದರು.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಜ್ಯೋತಿ ಪ್ರಮೋದ ನಾಯಕ್ ಅವರು ಪ್ರಬಲವಾಗಿ ವಾದ ಮಂಡಿಸಿ, ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

ಬಂಟ್ವಾಳ: ಪೋಕ್ಸೋ ಪ್ರಕರಣ ಸಾಬೀತು – ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ವಾಸ ಹಾಗೂ ದಂಡ ವಿಧಿಸಿ ನ್ಯಾಯಾಲಯ ಆದೇಶ

Published

on

ಮಂಗಳೂರು: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಗಂಭೀರ ಸ್ವರೂಪದ ಪೋಕ್ಸೋ ಪ್ರಕರಣದಲ್ಲಿ ಆರೋಪಿಯ ಮೇಲಿನ ಅಪರಾಧ ಸಾಬೀತಾಗಿದ್ದು, ಮಂಗಳೂರಿನ ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (FTSC-2) ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ವಾಸ ಮತ್ತು ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ಶಿಕ್ಷೆಗೊಳಗಾದ ಅಪರಾಧಿ. ಈ ಪ್ರಕರಣದಲ್ಲಿ ಒಟ್ಟು ಮೂವರ ವಿರುದ್ಧ ಆರೋಪವಿದ್ದು, ಪ್ರಮುಖ ಆರೋಪಿಯ ದೋಷವು ನ್ಯಾಯಾಲಯದಲ್ಲಿ ಸಾಬೀತಾಗಿದೆ.

ಪ್ರಕರಣದ ಹಿನ್ನೆಲೆ ಮತ್ತು ತನಿಖೆ:

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಧಿಸೂಚನೆ ಸಂಖ್ಯೆ 141/2025 ರ ಅಡಿಯಲ್ಲಿ ಪೋಕ್ಸೋ ಕಾಯ್ದೆ-2012ರ ಕಲಂ: 4, 6, 8, 12, 19(1)(b), 21 ಹಾಗೂ BNS-2023ರ ಕಲಂ: 64(2)(f), 75 r/w 3(5) ಅಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಗಂಭೀರತೆಯನ್ನು ಅರಿತುಕೊಂಡ ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಹಾಗೂ ತನಿಖಾಧಿಕಾರಿ ಅನಂತ ಪದ್ಮನಾಭ ಅವರು ಕೂಲಂಕಷವಾಗಿ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು.

ನ್ಯಾಯಾಲಯದ ತೀರ್ಪು:

ಮಂಗಳೂರಿನ ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ (FTSC-2) ನಡೆದ ವಿಚಾರಣೆಯ ಸಂದರ್ಭದಲ್ಲಿ, ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಸಹನಾದೇವಿ ಬೋಳೂರು ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿ, ಸಾಕ್ಷಿಗಳನ್ನು ಸಾಬೀತುಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ಮಾನ್ಯ ನ್ಯಾಯಾಧೀಶರಾದ ಶ್ರೀ ಮಾನು ಕೆ.ಎಸ್. ಅವರು, ಆರೋಪಿ ಅಬ್ದುಲ್ ಲತಿಫ್‌ನ ಕೃತ್ಯವು ಸಾಬೀತಾಗಿರುವ ಹಿನ್ನೆಲೆಯಲ್ಲಿ ದಿನಾಂಕ 19.09.2026 ರಂದು ಈ ಕೆಳಗಿನ ಶಿಕ್ಷೆಯನ್ನು ಪ್ರಕಟಿಸಿ ಆದೇಶಿಸಿದ್ದಾರೆ:

  • ಕಾರಾಗೃಹ ವಾಸ: 20 ವರ್ಷಗಳ ಕಠಿಣ ಕಾರಾಗೃಹ ವಾಸ.
  • ದಂಡದ ಮೊತ್ತ: ರೂ. 80,000/- (ಎಂಭತ್ತು ಸಾವಿರ ರೂಪಾಯಿಗಳು).

ತ್ವರಿತ ತನಿಖೆ ಮತ್ತು ಸಮರ್ಥ ವಾದ ಮಂಡನೆಯ ಮೂಲಕ ಅಪರಾಧಿಗೆ ತಕ್ಕ ಶಿಕ್ಷೆ ದೊರೆಯುವಂತೆ ಮಾಡಿದ ತನಿಖಾಧಿಕಾರಿಗಳು ಹಾಗೂ ಸರ್ಕಾರಿ ಅಭಿಯೋಜಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

Continue Reading

court

ಎಸ್‌ಪಿಗಳಿಗೆ ಗಡಿಪಾರು ಅಧಿಕಾರವಿಲ್ಲ: ರಾಜ್ಯ ಸರ್ಕಾರದ ಸುತ್ತೋಲೆ ರದ್ದುಗೊಳಿಸಿದ ಹೈಕೋರ್ಟ್

Published

on

ಬೆಂಗಳೂರು: ಕರ್ನಾಟಕ ಪೊಲೀಸ್ ಕಾಯ್ದೆಯಡಿ ವ್ಯಕ್ತಿಗಳನ್ನು ಗಡಿಪಾರು ಮಾಡುವ ಅಧಿಕಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್‌ಪಿ) ವಹಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಉಚ್ಚ ನ್ಯಾಯಾಲಯ ತಡೆ ನೀಡಿದ್ದು, ಸರ್ಕಾರದ ಅಧಿಸೂಚನೆಯನ್ನು ರದ್ದುಪಡಿಸಿದೆ.

ಪ್ರಕರಣದ ಹಿನ್ನೆಲೆ:

2025ರ ನವೆಂಬರ್ 18ರಂದು ರಾಜ್ಯ ಸರ್ಕಾರವು ಎಸ್‌ಪಿಗಳಿಗೆ ಗಡಿಪಾರು ಅಧಿಕಾರ ನೀಡಿ ಸುತ್ತೋಲೆ ಹೊರಡಿಸಿತ್ತು. ಈ ಅಧಿಸೂಚನೆಯನ್ನಾಧರಿಸಿ ಬೆಳಗಾವಿ ಎಸ್‌ಪಿ ಅವರು 2026ರ ಏಪ್ರಿಲ್ 28ರಂದು ನಿಪ್ಪಾಣಿ ತಾಲೂಕಿನ ಚಂದ್ರಕಾಂತ ಶಂಕರ ವಡ್ಡರ್ ಎಂಬುವವರನ್ನು ಗಡಿಪಾರು ಮಾಡಿ ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಚಂದ್ರಕಾಂತ ಅವರು ಹೈಕೋರ್ಟ್ ಧಾರವಾಡ ಪೀಠದ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಈ ಪ್ರಮುಖ ತೀರ್ಪು ನೀಡಿದೆ.

ಹೈಕೋರ್ಟ್ ನೀಡಿದ ಪ್ರಮುಖ ಸ್ಪಷ್ಟನೆಗಳು:

ಕಾಯ್ದೆ ಮೀರಲು ಬಾರದು: ಪೊಲೀಸ್ ಕಾಯ್ದೆಯಲ್ಲಿ ಉಲ್ಲೇಖಿಸಲಾಗಿರುವ ನಿರ್ದಿಷ್ಟ ಪ್ರಾಧಿಕಾರಗಳನ್ನು ಹೊರತುಪಡಿಸಿ, ಕೇವಲ ಕಾರ್ಯಾಂಗದ ಆದೇಶ/ಸುತ್ತೋಲೆಯ ಮೂಲಕ ಎಸ್‌ಪಿಗಳಿಗೆ ಗಡಿಪಾರು ಮಾಡುವ ಅಧಿಕಾರ ವರ್ಗಾಯಿಸಲು ಕಾನೂನಿನಲ್ಲಿ ಅವಕಾಶವಿಲ್ಲ.

ಗೆಜೆಟ್ ಪ್ರಕಟಣೆಯಿಲ್ಲ: ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಅಧಿಕೃತ ರಾಜ್ಯ ಗೆಜೆಟ್‌ನಲ್ಲಿ ಪ್ರಕಟಿಸಿರಲಿಲ್ಲ. ಕಾಯ್ದೆಯ ಪ್ರಕಾರ ಗೆಜೆಟ್‌ನಲ್ಲಿ ಪ್ರಕಟಗೊಳ್ಳದ ಯಾವುದೇ ಅಧಿಸೂಚನೆಗೆ ಕಾನೂನು ಮಾನ್ಯತೆ ಇರುವುದಿಲ್ಲ. ಹೀಗಾಗಿ ಬೆಳಗಾವಿ ಎಸ್‌ಪಿ ಹೊರಡಿಸಿದ್ದ ಗಡಿಪಾರು ಆದೇಶಕ್ಕೆ ಯಾವುದೇ ಸಿಂಧುತ್ವವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಕಾನೂನಾತ್ಮಕವಾಗಿ ಗಡಿಪಾರು ಅಧಿಕಾರ ಯಾರಿಗಿದೆ?

ನ್ಯಾಯಾಲಯದ ಸ್ಪಷ್ಟನೆ ಪ್ರಕಾರ, ಪೊಲೀಸ್ ಕಾಯ್ದೆಯಡಿ ಗಡಿಪಾರು ಆದೇಶ ಹೊರಡಿಸಲು ಈ ಕೆಳಗಿನ ಅಧಿಕಾರಿಗಳಿಗೆ ಮಾತ್ರ ಶಾಸನಬದ್ಧ ಅಧಿಕಾರವಿರುತ್ತದೆ:

ಕಮಿಷನರೇಟ್ ವ್ಯಾಪ್ತಿ: ಬೆಂಗಳೂರು ನಗರ ಸೇರಿದಂತೆ ಪೊಲೀಸ್ ಕಮಿಷನರೇಟ್ ಒಳಪಡುವ ಪ್ರದೇಶಗಳಲ್ಲಿ ಪೋಲಿಸ್ ಕಮಿಷನರ್‌ಗೆ ಮಾತ್ರ ಅಧಿಕಾರವಿರುತ್ತದೆ.

ಇತರ ಜಿಲ್ಲಾ ವ್ಯಾಪ್ತಿ: ಕಮಿಷನರೇಟ್ ಹೊರತಾದ ಪ್ರದೇಶಗಳಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು (ಡಿಸಿ) ಹಾಗೂ ಉಪ ವಿಭಾಗಾಧಿಕಾರಿಗಳಿಗೆ (ಎಸಿ) ಮಾತ್ರ ಗಡಿಪಾರು ಮಾಡುವ ಅಧಿಕಾರವಿದೆ.

    Continue Reading

    BJP

    ಮಹಿಳಾ ಪಿಎಸ್‌ಐ ಕಪಾಳಕ್ಕೆ ಹೊಡೆದ ಬಿಜೆಪಿ ಶಾಸಕನ ಪುತ್ರಿ ಐಶ್ವರ್ಯಗೆ ನಿರೀಕ್ಷಣಾ ಜಾಮೀನು ವಜಾ

    Published

    on

    ಶ್ರೀರಂಗಪಟ್ಟಣ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಎದುರಿಸುತ್ತಿರುವ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶ್ರೀರಂಗಪಟ್ಟಣದ ಸ್ಥಳೀಯ ನ್ಯಾಯಾಲಯ ವಜಾಗೊಳಿಸಿದೆ.

    ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಅಹಲ್ಯಾದೇವಿ ದೇವಾಲಯದಲ್ಲಿ ಭೀಮನ ಅಮಾವಾಸ್ಯೆ ಅಂಗವಾಗಿ ಭದ್ರತಾ ಕರ್ತವ್ಯದಲ್ಲಿದ್ದ ಮಂಡ್ಯ ಮಹಿಳಾ ಪೊಲೀಸ್ ಠಾಣೆಯ ಎಸ್‌ಐ ಸವಿತಾ ಬಿ. ಪಾಟೀಲ್ ಅವರ ಮೇಲೆ ಈ ಹಲ್ಲೆ ನಡೆದಿತ್ತು. ಈ ಸಂಬಂಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಶ್ವರ್ಯ ವಿರುದ್ಧ ದೂರು ದಾಖಲಾಗಿತ್ತು. ಬಂಧನದ ಭೀತಿಯಲ್ಲಿದ್ದ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸದ್ಯ ನ್ಯಾಯಾಲಯ ತಿರಸ್ಕರಿಸಿದೆ.

    ಘಟನೆಯ ಹಿನ್ನೆಲೆ:

    ಭೀಮನ ಅಮಾವಾಸ್ಯೆಯಂದು ದೇವಾಲಯಕ್ಕೆ ಭಕ್ತರ ದಂಡೇ ಹರಿದುಬಂದಿದ್ದರಿಂದ ಎಸ್‌ಐ ಸವಿತಾ ಪಾಟೀಲ್ ಭದ್ರತಾ ಕರ್ತವ್ಯದಲ್ಲಿದ್ದರು. ಸಂಜೆ ಸುಮಾರು 4 ಗಂಟೆಗೆ ದೇಗುಲಕ್ಕೆ ಆಗಮಿಸಿದ ಐಶ್ವರ್ಯ, ಗರ್ಭಗುಡಿಗೆ ನೇರವಾಗಿ ಪ್ರವೇಶ ನೀಡುವಂತೆ ಕೋರಿದ್ದರು. ಆದರೆ ಸಾಲಿನಲ್ಲಿ ಸಾಲುಗಟ್ಟಿ ನಿಂತಿದ್ದ ಭಕ್ತರಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅಧಿಕಾರಿ ಸವಿತಾ ನೇರ ದರ್ಶನಕ್ಕೆ ನಿರಾಕರಿಸಿದ್ದರು.

    ಇದರಿಂದ ಕುಪಿತಗೊಂಡ ಐಶ್ವರ್ಯ, “ನಾನು ಪೊಲಿಟಿಕಲ್ ಲೀಡರ್ ಮಗಳು, ಡಿವೈಎಸ್‌ಪಿ ಹೆಂಡತಿ. ನನ್ನನ್ನೇ ಕಾಯಿಸುತ್ತೀಯಾ?” ಎಂದು ಏರುಧ್ವನಿಯಲ್ಲಿ ಗದರಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಮವಸ್ತ್ರದಲ್ಲಿದ್ದ ಮಹಿಳಾ ಅಧಿಕಾರಿಯ ಕಪಾಳಕ್ಕೆ ಹೊಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಬಹಿರಂಗ ಕ್ಷಮೆಯಾಚಿಸಿದ್ದ ಶಾಸಕ ಸುರೇಶ್ ಗೌಡ:

    ಪುತ್ರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ, ಶಾಸಕ ಬಿ. ಸುರೇಶ್ ಗೌಡ ಅವರು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದರು. “ನನ್ನ ಮಗಳು ಸಣ್ಣ ಮಕ್ಕಳೊಂದಿಗೆ ದೇವಾಲಯಕ್ಕೆ ತೆರಳಿದ್ದಾಗ ಮಾತಿಗೆ ಮಾತು ಬೆಳೆದು ಈ ಘಟನೆ ನಡೆದಿದೆ. ಸಾರ್ವಜನಿಕ ಜೀವನದಲ್ಲಿರುವ ನಾವು ಹೀಗೆ ವರ್ತಿಸಬಾರದಿತ್ತು. ಮಗಳ ತಪ್ಪಿಗೆ ನಾನೇ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ” ಎಂದು ಅವರು ಹೇಳಿಕೆ ನೀಡಿದ್ದರು.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐಶ್ವರ್ಯ ಅವರನ್ನು ವಿಚಾರಣೆಗೊಳಪಡಿಸಿದ್ದರೂ ಬಂಧಿಸಿರಲಿಲ್ಲ. ಇದೀಗ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವುದರಿಂದ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ.

    Continue Reading

    Trending

    Copyright © 2025 Deevatige

    error: Content is protected !!