drugs
ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ.
ಮಂಗಳೂರಿನಲ್ಲಿ ಮಾದಕ ವಸ್ತುಗಳ ವೈಜ್ಞಾನಿಕ ವಿಲೇವಾರಿ
ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ವಿವಿಧ ಪ್ರಮುಖ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಸುಮಾರು ₹82 ಕೋಟಿ ಮೌಲ್ಯದ ಭಾರಿ ಪ್ರಮಾಣದ ಮಾದಕ ವಸ್ತುಗಳನ್ನು ಬುಧವಾರ ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ಸುಟ್ಟು ನಾಶಪಡಿಸಲಾಯಿತು.
ನ್ಯಾಯಾಲಯದ ಅನುಮತಿಯೊಂದಿಗೆ ಮುಲ್ಕಿಯ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿರುವ ‘ರಾಮ್ಕಿ ಎನರ್ಜಿ ಅಂಡ್ ಎನ್ವಿರಾನ್ಮೆಂಟ್ ಲಿಮಿಟೆಡ್’ (Ramky Energy and Environment Ltd.) ಸಂಸ್ಥೆಯ ಆವರಣದಲ್ಲಿ ‘ಡ್ರಗ್ ಡಿಸ್ಪೋಸಲ್ ಸಮಿತಿ’ಯ (Drug Disposal Committee) ನೇರ ಸಮ್ಮುಖದಲ್ಲಿ ಈ ವಿಲೇವಾರಿ ಪ್ರಕ್ರಿಯೆ ನಡೆಯಿತು.

16 ಠಾಣೆಗಳು, 59 ಪ್ರಕರಣಗಳ ಸರಕು ನಾಶ:
ನಗರ ಪೊಲೀಸ್ ವ್ಯಾಪ್ತಿಯ 16 ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 59 ಎನ್ಡಿಪಿಎಸ್ (NDPS) ಪ್ರಕರಣಗಳಿಗೆ ಸಂಬಂಧಿಸಿದಂತೆ ಜಪ್ತಿ ಮಾಡಲಾಗಿದ್ದ ವಿವಿಧ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ಸುಟ್ಟು ವಿಲೇವಾರಿ ಮಾಡಲಾಗಿದೆ. ನಾಶಪಡಿಸಲಾದ ವಸ್ತುಗಳ ವಿವರ ಹೀಗಿದೆ:
- ಗಾಂಜಾ: 450 ಕೆ.ಜಿ.
- ಎಂ.ಡಿ.ಎಂ.ಎ. (MDMA): 43 ಕೆ.ಜಿ. 260 ಗ್ರಾಂ.
- ಹೈಡ್ರೋ ವೀಡ್ ಗಾಂಜಾ: 880 ಗ್ರಾಂ.
- ಭಾಂಗ್: 1 ಕೆ.ಜಿ. 200 ಗ್ರಾಂ.
- ಚರಸ್: 80 ಗ್ರಾಂ.

ಪ್ರಮುಖ ಪ್ರಕರಣಗಳ ಜಪ್ತಿಗಳು:
ನಾಶಪಡಿಸಲಾದ ವಸ್ತುಗಳಲ್ಲಿ ಅತ್ಯಂತ ದೊಡ್ಡ ಮೊತ್ತದ ಜಪ್ತಿ ಎಂದರೆ, 2024ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದ ₹75 ಕೋಟಿ ಮೌಲ್ಯದ 37 ಕೆ.ಜಿ. ಎಂ.ಡಿ.ಎಂ.ಎ.. ಇದರೊಂದಿಗೆ 2025ರಲ್ಲಿ ಮುಲ್ಕಿ ಠಾಣೆಯಲ್ಲಿ ವಶಪಡಿಸಿಕೊಂಡಿದ್ದ ₹4.47 ಕೋಟಿ ಮೌಲ್ಯದ 4 ಕೆ.ಜಿ. ಎಂ.ಡಿ.ಎಂ.ಎ., ಕೊಣಾಜೆ ಠಾಣೆಯ ₹20 ಲಕ್ಷ ಮೌಲ್ಯದ 106 ಕೆ.ಜಿ. ಗಾಂಜಾ ಹಾಗೂ ಮೂಡಬಿದ್ರೆ ಠಾಣೆಯ ₹36 ಲಕ್ಷ ಮೌಲ್ಯದ 111 ಕೆ.ಜಿ. ಗಾಂಜಾ ಪ್ರಮುಖವಾಗಿವೆ.
2026ರ ಸಾಲಿನಲ್ಲಿ ತೀವ್ರಗೊಂಡ ಕಾರ್ಯಾಚರಣೆ:
ಚಾಲ್ತಿ ಸಾಲಿನಲ್ಲಿಯೂ ಡ್ರಗ್ಸ್ ವಿರುದ್ಧ ಮಂಗಳೂರು ನಗರ ಪೊಲೀಸರು ಸಮರ ಮುಂದುವರಿಸಿದ್ದು, ಇದುವರೆಗೆ 87 ಎನ್ಡಿಪಿಎಸ್ ಪ್ರಕರಣಗಳನ್ನು ದಾಖಲಿಸಿಕೊಂಡು 157 ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಗಳ ವೇಳೆ ₹8.18 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು (148 ಕೆ.ಜಿ. ಗಾಂಜಾ, 7 ಕೆ.ಜಿ. MDMA, 1.7 ಕೆ.ಜಿ. ಹೈಡ್ರೋ ವೀಡ್) ಜಪ್ತಿ ಮಾಡಲಾಗಿದೆ. ಅಲ್ಲದೆ, ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 463 ಮಂದಿಯ ವಿರುದ್ಧ 356 ಪ್ರಕರಣಗಳನ್ನು ದಾಖಲಿಸಲಾಗಿದೆ.

ಸಾರ್ವಜನಿಕರಿಗೆ ಮಾಹಿತಿ ನೀಡಲು ಕರೆ:
ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಮಾರಾಟ, ಸಾಗಾಟ ಅಥವಾ ಬಳಕೆಯ ಕುರಿತು ಯಾವುದೇ ಸುಳಿವು ಸಿಕ್ಕಲ್ಲಿ ಇಲಾಖೆ ಸೃಜಿಸಿರುವ ಕ್ಯೂಆರ್ (QR) ಕೋಡ್ ಮೂಲಕ, ತುರ್ತು ಸಂಖ್ಯೆ 112 ಅಥವಾ 9480802321 ಗೆ ಮಾಹಿತಿ ನೀಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ವಿನಂತಿಸಿದ್ದಾರೆ.
crime
ಮಣಿಪಾಲ: ಬಾರ್, ಪಬ್ಗಳ ಮೇಲೆ ಪೊಲೀಸರ ಮಿಂಚಿನ ದಾಳಿ; ಮದ್ಯ ಸೇವಿಸುತ್ತಿದ್ದ 64 ಯುವಕರು, 23 ಯುವತಿಯರು
ಮಣಿಪಾಲ: 21 ವರ್ಷದೊಳಗಿನವರಿಗೆ ಅಕ್ರಮವಾಗಿ ಮದ್ಯ ಹಾಗೂ ಹುಕ್ಕಾ ಪೂರೈಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪ್ರಮುಖ ಬಾರ್ ಮತ್ತು ಪಬ್ಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಮದ್ಯ ಸೇವನೆಯಲ್ಲಿ ತೊಡಗಿದ್ದ 64 ಯುವಕರು, 23 ಯುವತಿಯರು ಹಾಗೂ ಒಬ್ಬ ಅಪ್ರಾಪ್ತ ಬಾಲಕ ಸೇರಿದಂತೆ ಒಟ್ಟು 87 ಮಂದಿ ಸಿಕ್ಕಿಬಿದ್ದಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಅವರ ನಿರ್ದೇಶನದಂತೆ, ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಈ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಯಿತು. ಕಾರ್ಯಾಚರಣೆಗಾಗಿ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನೊಳಗೊಂಡ 6 ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು.
ದಾಳಿಗೊಳಗಾದ ಬಾರ್ ಮತ್ತು ಪಬ್ಗಳು:
ಪೊಲೀಸರು ಮಣಿಪಾಲ ವ್ಯಾಪ್ತಿಯ ಒಟ್ಟು ಆರು ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು:
- ಎಕ್ಸ್ಟಸಿ 7ನೇ ಹೆವೆನ್ ಪಬ್, ಮಣಿಪಾಲ್
- ಸಾಯಿ ಸಾಗರ್ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
- ಡೌನ್ ದಿ ರೋಡ್ ಬಾರ್ ಮತ್ತು ರೆಸ್ಟೋರೆಂಟ್, ಮಣಿಪಾಲ್
- ಡೆಕ್ಸ್ಟರ್ ಬಾರ್ ಮತ್ತು ರೆಸ್ಟೋರೆಂಟ್
- ಡೀ ಟೀ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
- ಜನನಿ ಬಾರ್ ಮತ್ತು ರೆಸ್ಟೋರೆಂಟ್ (ಎಡ್ಜ್ ಬಾರ್ ಮತ್ತು ರೆಸ್ಟೋರೆಂಟ್), ಈಶ್ವರ್ ನಗರ
ಕಾನೂನು ಉಲ್ಲಂಘನೆ ಮತ್ತು ಪ್ರಕರಣ ದಾಖಲು:
ಕರ್ನಾಟಕ ಅಬಕಾರಿ ಪರವಾನಗಿ ನಿಯಮಗಳ 10(1)(ಇ), ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 36(1)(ಬಿ) ಹಾಗೂ ತಂಬಾಕು ಉತ್ಪನ್ನಗಳ ನಿಯಂತ್ರಣ (COTPA) ಕಾಯ್ದೆಯನ್ನು ಉಲ್ಲಂಘಿಸಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕ-ಯುವತಿಯರಿಗೆ ಮದ್ಯ ಹಾಗೂ ಹುಕ್ಕಾ ಮಾರಾಟ ಮಾಡುತ್ತಿದ್ದದ್ದು ತಪಾಸಣೆ ವೇಳೆ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ, ನಿಯಮ ಉಲ್ಲಂಘಿಸಿದ ಆಯಾ ಪಬ್ ಮತ್ತು ಬಾರ್ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ (ಮ್ಯಾನೇಜರ್) ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ 6 ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.
ಪೊಲೀಸರ ಎಚ್ಚರಿಕೆ:
“21 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ, ಮದ್ಯ/ಹುಕ್ಕಾ ಪೂರೈಸುವ ಅಥವಾ ಅಬಕಾರಿ ಕಾಯ್ದೆ ಹಾಗೂ COTPA ಕಾಯ್ದೆಗಳನ್ನು ಉಲ್ಲಂಘಿಸುವ ಬಾರ್ ಮತ್ತು ರೆಸ್ಟೋರೆಂಟ್ಗಳ ವಿರುದ್ಧ ಮುಂಬರುವ ದಿನಗಳಲ್ಲೂ ಇಂತಹುದೇ ಕಠಿಣ ಕಾನೂನು ಕ್ರಮಗಳು ಮುಂದುವರಿಯಲಿವೆ.” ಎಂದು ಪೊಲೀಸರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
Belthangady
ಬೆಳ್ತಂಗಡಿ ಆಂಬುಲೆನ್ಸ್ ಚಾಲಕ ಡ್ರಗ್ಸ್ ದಂಧೆಯಲ್ಲಿ ಭಾಗಿ: 5.5 ಕೋಟಿ ರೂ. ಮೌಲ್ಯದ MDMA ಪ್ರಕರಣದಲ್ಲಿ ‘ಜಲೀಲ್ ಬಾಬಾ’ ಪರಾರಿ
ಬಾಗಲಕೋಟೆ/ಮಂಗಳೂರು: ಕರಾವಳಿ ಹಾಗೂ ಸುತ್ತಮುತ್ತಲ ಜಿಲ್ಲೆಗಳನ್ನು ಬೆಚ್ಚಿಬೀಳಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತು ಜಪ್ತಿ ಪ್ರಕರಣಕ್ಕೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ತನಿಖೆ ತೀವ್ರಗೊಳಿಸಿರುವ ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು, ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಜಲೀಲ್ ಅಲಿಯಾಸ್ ಬಾಬಾ (42) ಎಂಬಾತನನ್ನು ಪ್ರಮುಖ ಆರೋಪಿಯನ್ನಾಗಿ ಸೇರ್ಪಡೆಗೊಳಿಸಿದ್ದಾರೆ.
ಈ ಕುರಿತು CCB ಪೊಲೀಸರು ಮಂಗಳೂರಿನ ಪ್ರಿನ್ಸಿಪಲ್ ಸೆಷನ್ಸ್ ನ್ಯಾಯಾಲಯಕ್ಕೆ ಹೆಚ್ಚುವರಿ ವರದಿ ಸಲ್ಲಿಸಿದ್ದು, ಆರೋಪಿ ಜಲೀಲ್ ಬಾಬಾ ದಸ್ತಗಿರಿಗೆ ಬಾಕಿ ಇದ್ದಾನೆ ಎಂದು ಉಲ್ಲೇಖಿಸಿದ್ದಾರೆ.
ಪ್ರಕರಣದ ಹಿನ್ನೆಲೆ ಮತ್ತು ಕಾರ್ಯಾಚರಣೆ
ಆರಂಭದಲ್ಲಿ CCB ಪೊಲೀಸರು ಮಂಗಳೂರಿನ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯೊಂದರ ಮೇಲೆ ದಾಳಿ ನಡೆಸಿ, ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬಾತನಿಂದ 1.50 ಲಕ್ಷ ರೂ. ಮೌಲ್ಯದ 15.17 ಗ್ರಾಂ MDMA ವಶಪಡಿಸಿಕೊಂಡಿದ್ದರು. ಈತನ ವಿಚಾರಣೆ ವೇಳೆ ಮಾದಕ ವಸ್ತು ಪೂರೈಕೆಯ ಬೃಹತ್ ಜಾಲದ ಸುಳಿವು ಲಭಿಸಿತ್ತು.
ಇದರ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ ಪೊಲೀಸರು ಜುಲೈ 15 ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ‘ರಾಯಲ್ ಇನ್’ ಲಾಡ್ಜ್ ಮೇಲೆ ಮಿಂಚಿನ ದಾಳಿ ನಡೆಸಿದರು. ಅಲ್ಲಿ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿ, ಅವರಿಂದ ಅಂದಾಜು 5.5 ಕೋಟಿ ರೂಪಾಯಿ ಮೌಲ್ಯದ 5 ಕೆಜಿ 196 ಗ್ರಾಂ MDMA, ಕಾರು, ಬ್ಯಾಗ್ ಹಾಗೂ ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಿದ್ದರು.
ಈಗಾಗಲೇ ಬಂಧನಕ್ಕೊಳಗಾದ ಆರೋಪಿಗಳು:
- ಮೊಹಮ್ಮದ್ ಅಲ್ತಾಫ್ (28), ಇಂದಬೆಟ್ಟು ಗ್ರಾಮ, ಬೆಳ್ತಂಗಡಿ (ಈತನ ವಿರುದ್ಧ 2024ರಲ್ಲಿ ಕೊಣಾಜೆ ಹಾಗೂ 2026ರಲ್ಲಿ ಉರ್ವ ಠಾಣೆಯಲ್ಲಿ ಡ್ರಗ್ಸ್ ಪ್ರಕರಣಗಳಿವೆ)
- ಮೊಹಮ್ಮದ್ ಮುಸ್ತಫಾ (28), ಹಳೇಪೇಟೆ, ಉಜಿರೆ
- ಅಲ್ತಾಫ್, ದೇವನಾರಿ, ಇಂದಬೆಟ್ಟು ಗ್ರಾಮ
- ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು
ಆಂಬುಲೆನ್ಸ್ನಲ್ಲೇ ಡ್ರಗ್ಸ್ ಸಪ್ಲೈ: ವಿದ್ಯಾರ್ಥಿಗಳು, ವೈದ್ಯರೇ ಟಾರ್ಗೆಟ್!
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ದೆಹಲಿಯಿಂದ ಕಾರಿನಲ್ಲಿ MDMA ಖರೀದಿಸಿ ಬೆಂಗಳೂರಿಗೆ ತರುತ್ತಿದ್ದರು. ಅಲ್ಲಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತಿದ್ದರು.
ಬಂಧಿತ ಆರೋಪಿಗಳ ವಿಚಾರಣೆ ವೇಳೆ ಜಲೀಲ್ ಬಾಬಾ ಪಾತ್ರ ಬಹಿರಂಗವಾಗಿದೆ. ಈತ ಮಾದಕ ವಸ್ತು ತರಲು ತನ್ನ ಆಂಬುಲೆನ್ಸ್ ವಾಹನವನ್ನು ಬಾಡಿಗೆಗೆ ನೀಡುತ್ತಿದ್ದನೆನ್ನಲಾಗಿದೆ. ಅಷ್ಟೇ ಅಲ್ಲದೆ, ಸರಬರಾಜಾದ ಸರಕನ್ನು ಆಂಬುಲೆನ್ಸ್ನಲ್ಲೇ ಸಾಗಿಸಿ ಜಿಲ್ಲೆಯ ವಿದ್ಯಾರ್ಥಿಗಳು, ಯುವಕರು ಹಾಗೂ ವೈದ್ಯರನ್ನು ಕೇಂದ್ರೀಕರಿಸಿ ಮಾರಾಟ ಮಾಡುತ್ತಿದ್ದ ಪ್ರಮುಖ ಸೂತ್ರಧಾರ ಈತ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 6 ದಿನಗಳಿಂದ ತಲೆಮರೆಸಿಕೊಂಡ ಜಲೀಲ್ ಬಾಬಾ
ಪ್ರಕರಣದಲ್ಲಿ ಹೆಸರು ಸೇರ್ಪಡೆಯಾಗುತ್ತಿದ್ದಂತೆಯೇ ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಕಳೆದ 6 ದಿನಗಳಿಂದ ತಲೆಮರೆಸಿಕೊಂಡಿದ್ದಾನೆ. ತನ್ನ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ತುರ್ತು ಆಂಬುಲೆನ್ಸ್ ಕರೆಗಳಿಗೂ ಸಿಗುತ್ತಿಲ್ಲ.
ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು (SP) ಹಾಗೂ ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರ ಮಾರ್ಗದರ್ಶನದಲ್ಲಿ ಪ್ರತ್ಯೇಕ ತಂಡ ರಚಿಸಲಾಗಿದ್ದು, ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ.
CCB ಪೊಲೀಸರಿಂದ ಗಂಭೀರ ಎಚ್ಚರಿಕೆ
ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ CCB ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿ ಜಲೀಲ್ @ ಬಾಬಾಗೆ ಯಾವುದೇ ರೀತಿಯಲ್ಲಿ ಆಶ್ರಯ ನೀಡಿದರೆ, ನೆರವು ನೀಡಿದರೆ ಅಥವಾ ಮಾಹಿತಿ ಬಚ್ಚಿಟ್ಟರೆ ಅಂತಹವರ ವಿರುದ್ಧವೂ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
arrest
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ- 5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ.
“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿ ಅವರುಗಳ ವಶದಿಂದ ಬೃಹತ್ ಪ್ರಮಾಣದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಪ್ರಕರಣದ ವಿವರ
ದಿನಾಂಕ: 25-06-2026 ರಂದು ಮಂಗಳೂರು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಬಳಿಯ ಮನೆಯೊಂದರಲ್ಲಿ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾದಕ ವಸ್ತುವನ್ನು ಹೊಂದಿದ್ದ ಅಣ್ಣಪ್ಪ ಸ್ವಾಮಿ @ ಮನು ಎಂಬಾತನನ್ನು ದಸ್ತಗಿರಿ ಮಾಡಿ ಆತನ ವಶದಿಂದ 1,50,000/- ರೂ. ಮೌಲ್ಯದ 15.17 ಗ್ರಾಂ ಮಾದಕ ವಸ್ತು ಎಂಡಿಎಂಎ ನ್ನು ಸ್ವಾಧೀನಪಡಿಸಿಕೊಂಡು ಆತನ ವಿರುದ್ಧ ಮಂಗಳೂರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು.
ಈ ಪ್ರಕರಣದಲ್ಲಿ ಆರೋಪಿಗೆ ಮಾದಕ ವಸ್ತುವನ್ನು ಪೂರೈಕೆ ಮಾಡಿರುವ ಡ್ರಗ್ಸ್ ಪೆಡ್ಲರ್ ಗಳನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯನ್ನು ಮುಂದುವರಿಸಿ, ಡ್ರಗ್ ಪೆಡ್ಲರ್ ಗಳ ಮಾಹಿತಿ ಸಂಗ್ರಹಿಸಿ ಮಾದಕ ವಸ್ತುವನ್ನು ಪೂರೈಕೆ ಮಾಡುವ ವ್ಯಕ್ತಿಯು ದೆಹಲಿಯಿಂದ ಮಾದಕವಸ್ತು ಖರೀದಿಸಿಕೊಂಡು ಬೆಂಗಳೂರಿಗೆ ಹೋಗುತ್ತಿರುವಾಗ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ದಿನಾಂಕ 15-07-2026 ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಎಂಬಲ್ಲಿಗೆ ದಾಳಿ ನಡೆಸಿ ಮಾದಕ ವಸ್ತುವನ್ನು ಹೊಂದಿದ್ದ ಆರೋಪಿಗಳಾದ;

ಮೊಹಮ್ಮದ್ ಅಲ್ಫಾಜ್, ಪ್ರಾಯ 28 ವರ್ಷ, ತಂದೆ; ಉಮರ್ ಫಾರೂಕ್, ವಿಳಾಸ: ಅಮೀಷಾ ಮಂಜಿಲ್, ಇಂಡಬೆಟ್ಟು ಗ್ರಾಮ, ಬೆಳ್ತಂಗಡಿ ತಾಲ್ಲೂಕು, ಬಂಗಾಡಿ, ಬಂಗಾಡಿ ಅಂಚೆ, ಇಂಡಬೆಟ್ಟು, ದಕ್ಷಿಣ ಕನ್ನಡ ಜಿಲ್ಲೆ
ಮೊಹಮ್ಮದ್ ಮುಸ್ತಾಫಾ, ಪ್ರಾಯ 28 ವರ್ಷ, ತಂದೆ; ಮೊಹಮ್ಮದ್ ಹನೀಫ್, ವಿಳಾಸ: ವಿವೇಕಾನಂದ ನಗರ, ಲಾಯಿಲಾ ಗ್ರಾಮ, ಹಳೆಪೇಟೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆ
ಎಂಬುವವರನ್ನು ಪತ್ತೆ ಹಚ್ಚಿ, ಅವರುಗಳ ವಶದಿಂದ ಒಟ್ಟು 5 ಕೋಟಿ 20 ಲಕ್ಷ ರೂ. ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ, ಬ್ಯಾಗ್ ಮತ್ತು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಮೊಹಮ್ಮದ್ ಅಲ್ಫಾಜ್ ಎಂಬಾತನ ವಿರುದ್ದ ಈ ಹಿಂದೆ 2024 ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಾಗೂ 2026 ರಲ್ಲಿ ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಎಮ್.ಡಿ.ಎಮ್.ಎ ಮಾರಾಟ ಮಾಡಿದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ.

ಆರೋಪಿತರು ಕಾರಿನ ಮೂಲಕ ದೆಹಲಿಯಿಂದ ಮಾದಕವಸ್ತುವನ್ನು ಖರೀದಿಸಿಕೊಂಡು, ಬೆಂಗಳೂರು ನಗರವನ್ನು ಕೇಂದ್ರವಾಗಿಸಿಕೊಂಡು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಾಗೂ ಕೇರಳ ರಾಜ್ಯದ ಇತರೆ ಕಡೆಗಳಿಗೆ ಮಾದಕ ವಸ್ತುವನ್ನು ಪೂರೈಕೆ ಮಾಡುತ್ತಿರುವುದು ತನಿಖೆಯಿಂದ ತಿಳಿದುಬಂದಿರುತ್ತದೆ. ಈ ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯುವುದು.
ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
