Connect with us

Dakshina Kannada

ದ.ಕ. ಜಿಲ್ಲೆಯಲ್ಲಿ ಇನ್‌ಫ್ಲುಯೆಂಜಾ ಆತಂಕ: 87 ಪ್ರಕರಣ ದೃಢ, ಮಂಗಳೂರಿನಲ್ಲೇ 60 ಕೇಸ್

Published

on

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್‌ಫ್ಲುಯೆಂಜಾ (ಋತುಮಾನದ ಜ್ವರ) ಭೀತಿ ಎದುರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 87 ಪ್ರಕರಣಗಳು ದೃಢಪಟ್ಟಿವೆ. ಅದರಲ್ಲಿಯೂ ಮಂಗಳೂರು ನಗರದಲ್ಲೇ ಅತಿ ಹೆಚ್ಚು ಅಂದರೆ 60 ಪ್ರಕರಣಗಳು ದಾಖಲಾಗಿರುವುದು ಆತಂಕ ಮೂಡಿಸಿದೆ.

ಬಾಡದ ಬಿಸಿಲು ಹಾಗೂ ಮಳೆಯ ಅಸ್ಥಿರ ವಾತಾವರಣದ ವೈಪರೀತ್ಯದಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು, ರಾಜ್ಯದಲ್ಲಿ ಈಗಾಗಲೇ 4,000ಕ್ಕೂ ಅಧಿಕ ಎಚ್1ಎನ್1 ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯಲ್ಲೂ 300ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಇದಕ್ಕೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ತುಸು ನಿಯಂತ್ರಣದಲ್ಲಿದ್ದರೂ, ತಾಲೂಕುವಾರು ಪ್ರಕರಣಗಳು ಆತಂಕ ಹುಟ್ಟಿಸುವಂತಿವೆ.

ತಾಲೂಕುವಾರು ಪ್ರಕರಣಗಳ ವಿವರ:

  • ಮಂಗಳೂರು: 60
  • ಬಂಟ್ವಾಳ: 14
  • ಪುತ್ತೂರು: 7
  • ಬೆಳ್ತಂಗಡಿ: 5
  • ಸುಳ್ಯ: 1

ಸಾಮಾನ್ಯವಾಗಿ ‘ಫ್ಲೂ’ ಎಂದೇ ಕರೆಯಲ್ಪಡುವ ಈ ಋತುಮಾನದ ಜ್ವರವು ವೈರಸ್‌ನಿಂದ ಹರಡುವ ಸಾಂಕ್ರಾಮಿಕ ಕಾಯಿಲೆಯಾಗಿದೆ. ಇದು ಪ್ರತಿವರ್ಷ ಜನವರಿಯಿಂದ ಮಾರ್ಚ್ ಹಾಗೂ ಜುಲೈನಿಂದ ಸೆಪ್ಟೆಂಬರ್‌ ಅವಧಿಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ.

ಶಾಲೆಗಳ ಮೇಲೆ ವಿಶೇಷ ನಿಗಾ: ರೋಗನಿರೋಧಕ ಶಕ್ತಿ ಕಡಿಮೆ ಇರುವ ಕಾರಣ ಮಕ್ಕಳಿಗೆ ಈ ಜ್ವರ ಬೇಗನೆ ತಗುಲುವ ಸಾಧ್ಯತೆಯಿದೆ. ಮಕ್ಕಳಲ್ಲಿ ಸತತ ಜ್ವರ ಅಥವಾ ಚಳಿ ಕಂಡುಬಂದ ಕೂಡಲೇ ಪೋಷಕರು ವೈದ್ಯರನ್ನು ಸಂಪರ್ಕಿಸಬೇಕು. ಜ್ವರ ಸಂಪೂರ್ಣವಾಗಿ ಗುಣಮುಖವಾಗುವವರೆಗೆ ಅಂಥ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ಶಾಲಾ-ಕಾಲೇಜು ಹಾಗೂ ವಸತಿ ನಿಲಯಗಳಲ್ಲಿ ವಿಶೇಷ ನಿಗಾ ವಹಿಸುವಂತೆ ಆರೋಗ್ಯ ಇಲಾಖೆಯು ಶಿಕ್ಷಣ ಇಲಾಖೆಗೆ ಪತ್ರ ಬರೆದಿದೆ.

ಜಿಲ್ಲೆಯಲ್ಲಿ ಐಎಲ್‌ಐ (ಇನ್‌ಫ್ಲುಯೆಂಜಾ ಲೈಕ್ ಇಲ್ನೆಸ್) ಮತ್ತು ಸಾರಿ (ತೀವ್ರ ಉಸಿರಾಟದ ಸೋಂಕು) ಪ್ರಕರಣಗಳ ಮೇಲೂ ಹದ್ದಿನ ಕಣ್ಣಿಡಲಾಗಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ರೋಗಿಗಳ ಪಟ್ಟಿ ಸಿದ್ಧಪಡಿಸುತ್ತಿದ್ದು, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಸೂಕ್ತ ಜಾಗೃತಿ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಆರೋಗ್ಯಾಧಿಕಾರಿಗಳ ಮಾತು: “ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ, ಆದರೆ ಮುನ್ನೆಚ್ಚರಿಕೆ ವಹಿಸುವುದು ಕಡ್ಡಾಯ. ಆರೋಗ್ಯ ಇಲಾಖೆಯಿಂದ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದ್ದು, ಆಸ್ಪತ್ರೆಗಳಲ್ಲಿ ಸಾಕಷ್ಟು ಔಷಧ ದಾಸ್ತಾನು ಲಭ್ಯವಿದೆ” ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಸ್ಪಷ್ಟಪಡಿಸಿದ್ದಾರೆ.

ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು:

  • ರೋಗ ಲಕ್ಷಣಗಳಿರುವ ವ್ಯಕ್ತಿಗಳೊಂದಿಗೆ ಕೈಕುಲುಕುವುದನ್ನು ತಪ್ಪಿಸಿ.
  • ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳುವುದನ್ನು ಆದಷ್ಟುAvoiding ಮಾಡಿ.
  • ಬಳಸಿದ ಕರವಸ್ತ್ರ ಅಥವಾ ನ್ಯಾಪ್‌ಕಿನ್‌ಗಳನ್ನು ಮರುಬಳಕೆ ಮಾಡಬೇಡಿ.
  • ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಮತ್ತು ಹಿರಿಯರು ಹೆಚ್ಚಿನ ಜಾಗರೂಕತೆ ವಹಿಸಿ.
  • ಸೀನುವಾಗ ಅಥವಾ ಕೆಮ್ಮುವಾಗ ಬಾಯಿ ಹಾಗೂ ಮೂಗಿಗೆ ಕರವಸ್ತ್ರ ಅಡ್ಡವಿಟ್ಟುಕೊಳ್ಳಿ.
  • ಸಾಬೂನು ಮತ್ತು ಬಳಸಿ ಕೈಗಳನ್ನು ಆಗಾಗ್ಗೆ ಸ್ವಚ್ಛವಾಗಿ ತೊಳೆದುಕೊಳ್ಳಿ.
  • ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ.
  • ಕಣ್ಣು, ಮೂಗು ಮತ್ತು ಬಾಯಿಯನ್ನು ಪದೇ ಪದೇ ಕೈಯಿಂದ ಮುಟ್ಟಿಕೊಳ್ಳಬೇಡಿ.
  • ಎರಡರಿಂದ ಮೂರು ದಿನ ಕಳೆದರೂ ಜ್ವರ ಕಡಿಮೆSಆದರೆ ನಿರ್ಲಕ್ಷಿಸದೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ.
  • ವೈದ್ಯರ ಸಲಹೆಯಿಲ್ಲದೆ ಯಾವುದೇ ಸ್ವಯಂ ಔಷಧೋಪಚಾರ (ಮೆಡಿಕಲ್ ಸ್ಟೋರ್‌ಗಳಲ್ಲಿ ಮಾತ್ರೆ ಪಡೆದು ನುಂಗುವುದು) ಮಾಡಿಕೊಳ್ಳಬೇಡಿ
ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

CONGRESS

ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ

Published

on

ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್‌ಗೆ ಸೂಚನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್‌ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

award

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ

Published

on

ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.

ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.

ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.

Continue Reading

CONGRESS

ಮಂಗಳೂರು ಸಚಿವ ಸಂಪುಟ ಸಭೆ: ವಿವಿಧ ಸಂಘಟನೆಗಳ ಪ್ರತಿಭಟನೆ ಮತ್ತು ಬಿಗಿ ಭದ್ರತೆ

Published

on

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶುಕ್ರವಾರ (ಸೆಪ್ಟೆಂಬರ್ 18) ಆಯೋಜಿಸಲಾದ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರು ಆಗಮಿಸಿದ ವೇಳೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದವು. ಅಬ್ದುಲ್ ರಹೀಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವೆಂದು ಆರೋಪಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಮಂಗಳೂರಿನ ರಾವ್ & ರಾವ್ ಸರ್ಕಲ್ ಬಳಿ ಕಪ್ಪುಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಅದೇ ರೀತಿ, ಜೈಲ್ ಜಾಮರ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಕೀಲರನ್ನು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟ ಸಿ.ಪಿ.ಐ.ಎಂ. ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ತುಳು ಸಂಘಟನೆಯವರು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ‌ ಸಹೋದ್ಯೋಗಿಗಳೊಂದಿಗೆ ಕದ್ರಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಡೀಲ್‌ನಲ್ಲಿರುವ ಪ್ರಜ್ಞಾಸೌಧದ ಎರಡನೇ ಮಹಡಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು 33 ಮಂದಿ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಆಯಾ ಸಭಾಂಗಣದಲ್ಲೇ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಿಗದಿತ ಸಮಯಕ್ಕಿಂತ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Continue Reading

Trending

Copyright © 2025 Deevatige

error: Content is protected !!