Connect with us

Belthangady

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು – ಕಾರ್ಮಿಕರ ಮೇಲೆ ಅನುಮಾನ

Published

on

ಬೆಳ್ತಂಗಡಿ: ಮನೆಯವರು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಸುಮಾರು 15.82 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಆಲಂದಿಲದಲ್ಲಿ ನಡೆದಿದೆ.

ಆಲಂದಿಲ ನಿವಾಸಿ ನೌಫಾಲ್ ಬಿ.ಎಂ. (34) ಎಂಬವರು ಈ ಬಗ್ಗೆ ದೂರು ನೀಡಿದ್ದಾರೆ.

ಘಟನೆಯ ವಿವರ:
ಅವರು ನೀಡಿದ ದೂರಿನಂತೆ ಸೆ. 13 ರಂದು ಮಧ್ಯಾಹ್ನ ಸುಮಾರು 1.45ಕ್ಕೆ ಪತ್ನಿ, ಮಕ್ಕಳು ಹಾಗೂ ತಾಯಿಯನ್ನು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಗುರುವಾಯನಕೆರೆಗೆ ಕಳುಹಿಸಿದ ಬಳಿಕ ನೌಫಾಲ್ ಕೂಡ ಮನೆಗೆ ಬೀಗ ಹಾಕಿ ತರಕಾರಿ ವ್ಯಾಪಾರದ ಕೆಲಸಕ್ಕಾಗಿ ಬೆಳ್ತಂಗಡಿಗೆ ತೆರಳಿದ್ದರು.

ಸೆ.14 ರಂದು ಫಾಲ್ಸ್ ಸೀಲಿಂಗ್ ವೈರಿಂಗ್ ಕೆಲಸಕ್ಕಾಗಿ ಕಾರ್ಮಿಕರನ್ನು ಮನೆಗೆ ಕರೆಸಲಾಗಿತ್ತು. ಮದ್ದಡ್ಕದ ಫಾರೂಕ್ ಎಂಬವರು ಕುದ್ರಡ್ಕದ ಅಶ್ರಫ್ ಹಾಗೂ ಶಿರ್ಲಾಲಿನ ಸುಲೈಮಾನ್ ಅವರನ್ನು ಕರೆದುಕೊಂಡು ಬಂದು ಮನೆಯಲ್ಲಿ ಕೆಲಸ ಮಾಡಿದ್ದರು. ಈ ವೇಳೆ ನೌಫಾಲ್ ಅವರ ತಮ್ಮ ಮಹಮ್ಮದ್ ನೌಷಾದ್ ಮನೆಯಲ್ಲಿದ್ದರು.

ಅದೇ ದಿನ ರಾತ್ರಿ ಸುಮಾರು 8.30ಕ್ಕೆ ನೌಫಾಲ್ ಕುಟುಂಬದೊಂದಿಗೆ ಮನೆಗೆ ವಾಪಸ್ ಬಂದಾಗ, ಬೆಡ್‌ರೂಂನ ಗೋದ್ರೇಜ್‌ನಲ್ಲಿ ಇಟ್ಟಿದ್ದ ಚಿನ್ನದ ಬಾಕ್ಸ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.

ಪರಿಶೀಲನೆ ನಡೆಸಿದಾಗ 32 ಗ್ರಾಂ ಮತ್ತು 26 ಗ್ರಾಂ ತೂಕದ ಎರಡು ಚಿನ್ನದ ಸರಗಳು, ಮಗುವಿನ ಚಿನ್ನದ ಸರ, ಕಾಲುಚೈನು, ಬ್ರೇಸ್ಲೆಟ್ ಸೇರಿದಂತೆ 15 ಲಕ್ಷ 82 ಸಾವಿರ ರೂ. ಮೌಲ್ಯದ ಒಟ್ಟು 113 ಗ್ರಾಂ ತೂಕದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವಾಗಿರುವುದು ಬೆಳಕಿಗೆ ಬಂದಿದೆ.

ಇದಲ್ಲದೆ ನೌಫಾಲ್ ಅವರ ತಾಯಿಯ ಗೋದ್ರೇಜ್‌ನಲ್ಲಿದ್ದ ಒಟ್ಟು 7 ಗ್ರಾಂ ತೂಕದ ಮೂರು ಉಂಗುರಗಳೂ ಕಾಣೆಯಾಗಿರುವುದು ಪತ್ತೆಯಾಗಿದೆ.

ಮನೆಯ ಗೋದ್ರೇಜ್‌ನ ಕೀ ಗೋದ್ರೇಜ್‌ನಲ್ಲಿಯೇ ಇದ್ದು, ಮನೆಯವರು ಹೊರಗಿದ್ದ ಅವಧಿಯಲ್ಲಿ ಯಾರೋ ಮನೆಗೆ ಪ್ರವೇಶಿಸಿ ಗೋದ್ರೇಜ್ ತೆರೆದು ಕಳವು ಮಾಡಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.

ವೈರಿಂಗ್ ಕೆಲಸಕ್ಕೆ ಬಂದಿದ್ದ ಅಶ್ರಫ್, ಫಾರೂಕ್ ಹಾಗೂ ಸುಲೈಮಾನ್ ಅವರ ಮೇಲೆ ಅನುಮಾನವಿರುವುದಾಗಿ ನೌಫಾಲ್ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.15 ರಂದು ಕಲಂ 331(3), 331(4), 305 BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.

ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರು ಮತ್ತು ಬಂಧನ:

ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.

ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

accident

ಬೆಳ್ತಂಗಡಿ: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ; ಕಾರು ಚಾಲಕನಿಗೆ ಗಂಭೀರ ಗಾಯ

Published

on

ಕೊಕ್ಕಡ: ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಕಾರು ಹಾಗೂ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿರುವ ಘಟನೆ ಸೆ. 12ರ ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಕಾರಿನಲ್ಲಿದ್ದ ಹಲವರು ಗಾಯಗೊಂಡಿದ್ದು, ಈ ವೇಳೆ ಕಾರು ಚಾಲಕನ ಕೈ ಮುರಿತವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

accident

ಉಪ್ಪಿನಂಗಡಿ: ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ವಿದ್ಯುತ್ ಆಘಾತಕ್ಕೆ ಬಲಿ

Published

on

ಉಪ್ಪಿನಂಗಡಿ, ಸೆ.11: ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. 

ಮೃತರು ಯಾರು?
ಮೃತರನ್ನು ಬಂದಾರು ನಿವಾಸಿ ಲಿಂಗಪ್ಪ ಗೌಡ ಅವರ ಪುತ್ರ ಜಯಪ್ರಕಾಶ್ (30) ಎಂದು ಗುರುತಿಸಲಾಗಿದೆ. 

ಘಟನೆ ಹೇಗೆ ನಡೆಯಿತು?
ಜಯಪ್ರಕಾಶ್ ಅವರು ಪದ್ಮುಂಜದಲ್ಲಿರುವ ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. 

ಘಟನೆಯನ್ನು ಗಮನಿಸಿದ ಸಹ ಕಾರ್ಮಿಕರು ಹಾಗೂ ಸ್ಥಳೀಯರು ತಕ್ಷಣ ಜಯಪ್ರಕಾಶ್ ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಬೆಳ್ತಂಗಡಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರ ಸ್ಥಿತಿ ಗಂಭೀರವಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. 

ಜಯಪ್ರಕಾಶ್ ಅವರು ಪತ್ನಿ ಹಾಗೂ ಎಳೆಯ ವಯಸ್ಸಿನ ಮಗುವನ್ನು ಅಗಲಿದ್ದಾರೆ. 

ವಿದ್ಯುತ್ ಆಘಾತವೇ ಸಾವಿಗೆ ನಿಖರ ಕಾರಣವೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದು ಮರಣೋತ್ತರ ಪರೀಕ್ಷೆಯ ಬಳಿಕ ಖಚಿತವಾಗಬೇಕಿದೆ. ಶನಿವಾರ ಬೆಳಗ್ಗೆ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯಾಧಿಕಾರಿಗಳು ನಿರ್ಧರಿಸಿದ್ದಾರೆ. 

ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Continue Reading

Trending

Copyright © 2025 Deevatige

error: Content is protected !!