Connect with us

crime

ಸುಪ್ರೀಂ ಕೋರ್ಟ್ನಿಂದ ಶಿಕ್ಷೆ ಅಮಾನತಿಗೆ ತಡೆ; ಸೆಂಗಾರ್‌ಗೆ ಜೈಲುವಾಸ ಮುಂದುವರಿಕೆ

Published

on

ದೆಹಲಿ : ಉನ್ನಾವ್ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಹಾಗೂ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯ ಅಮಾನತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೆಂಗಾರ್ ಅವರಿಗೆ ನೋಟಿಸ್ ನೀಡಿದೆ.


ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ರಜಾ ಪೀಠವು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸೆಂಗಾರ್‌ಗೆ ನೋಟಿಸ್ ಜಾರಿ ಮಾಡಿದೆ.

ದೆಹಲಿ ಹೈಕೋರ್ಟ್ ಈ ಹಿಂದೆ ಸೆಂಗಾರ್‌ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಆತನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಇದರರ್ಥ ಸೆಂಗಾರ್ ಸದ್ಯಕ್ಕೆ ಜೈಲಿನಲ್ಲೇ ಇರಬೇಕಾಗುತ್ತದೆ. 2017ರಲ್ಲಿ ಉನ್ನಾವ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಸೆಂಗಾರ್ ತಪ್ಪಿತಸ್ಥನೆಂದು ಸಾಬೀತಾಗಿತ್ತು. 2019ರಲ್ಲಿ ದೆಹಲಿಯ ವಿಶೇಷ ನ್ಯಾಯಾಲಯವು ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ಮತ್ತು 25 ಲಕ್ಷ ರೂಪಾಯಿ ದಂಡ ವಿಧಿಸಿತ್ತು. ತನ್ನ ಮಗಳ ಮದುವೆಯ ಕಾರಣ ನೀಡಿ ಸೆಂಗಾರ್ ಜಾಮೀನು ಕೋರಿದ್ದಾಗ, ಹೈಕೋರ್ಟ್ ಮಾನವೀಯ ನೆಲೆಯಲ್ಲಿ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿತ್ತು.

ಸೆಂಗಾರ್ ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಆತ ಹೊರಬಂದರೆ ತನಗೆ ಮತ್ತು ತನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಸಂತ್ರಸ್ತೆ ಸುಪ್ರೀಂ ಕೋರ್ಟ್ನಲ್ಲಿ ವಾದಿಸಿದ್ದರು. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ದೆಹಲಿ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ತುರ್ತು ಅರ್ಜಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಒಂದು ಪ್ರಮುಖ ಪ್ರಶ್ನೆಯನ್ನು ಎತ್ತಿದೆ. ಹೈಕೋರ್ಟ್ ತನ್ನ ಆದೇಶದಲ್ಲಿ “ಶಾಸಕರು ಸಾರ್ವಜನಿಕ ಸೇವಕರಲ್ಲ ಎಂಬ ತರ್ಕವನ್ನು ಬಳಸಿರುವ ಬಗ್ಗೆ ನ್ಯಾಯಾಲಯ ಅಚ್ಚರಿ ವ್ಯಕ್ತಪಡಿಸಿದೆ. “ಒಂದು ವೇಳೆ ಈ ತರ್ಕ ಒಪ್ಪುವುದಾದರೆ, ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಸಾರ್ವಜನಿಕ ಸೇವಕನಾಗುತ್ತಾನೆ ಆದರೆ ಒಬ್ಬ ಎಂಪಿ ಅಥವಾ ಎಂಎಲ್‌ಎ ಆಗುವುದಿಲ್ಲವೇ?” ಎಂದು ನ್ಯಾಯಾಲಯ ಪ್ರಶ್ನಿಸಿದೆ.
ಸೆಂಗಾರ್ ಈಗಾಗಲೆ ಸಂತ್ರಸ್ತೆಯ ತಂದೆಯ ಕಸ್ಟಡಿಯಲ್ ಡೆತ್ ಪ್ರಕರಣದಲ್ಲಿ 10 ವರ್ಷಗಳ ಶಿಕ್ಷೆ ಅನುಭವಿಸುತ್ತಿರುವುದರಿಂದ, ಆತನನ್ನು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ನ್ಯಾಯಾಲಯ ಹೇಳಿದೆ ಸಂತ್ರಸ್ತೆಯ ಸುರಕ್ಷತೆಯ ದೃಷ್ಟಿಯಿಂದ ಆಕೆಗೆ ಸುಪ್ರೀಂ ಕೋರ್ಟ್ನಿಂದ ಉಚಿತ ಕಾನೂನು ನೆರವು ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ಸೆಂಗಾರ್‌ಗೆ ಈ ಕುರಿತು ನೋಟಿಸ್ ಜಾರಿ ಮಾಡಲಾಗಿದ್ದು, ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ಸಲ್ಲಿಸಲು ಸೂಚಿಸಲಾಗಿದೆ.ಈ ಪ್ರಕರಣದ ಮುಂದಿನ ವಿಚಾರಣೆಯು ಜನವರಿ 2026ರ ಕೊನೆಯ ವಾರದಲ್ಲಿ ನಡೆಯಲಿದೆ. ಅಲ್ಲಿಯವರೆಗೆ ಸೆಂಗಾರ್ ಜೈಲಿನಲ್ಲೇ ಇರಬೇಕಾಗುತ್ತದೆ.ಸಂತ್ರಸ್ತೆಯು ಸುಪ್ರೀಂ ಕೋರ್ಟ್ನ ಈ ಆದೇಶವನ್ನು ಸ್ವಾಗತಿಸಿದ್ದು, ನ್ಯಾಯದೇವತೆಯ ಮೇಲೆ ತಮಗೆ ಸಂಪೂರ್ಣ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.

ಒಬ್ಬ ‘ಸಾರ್ವಜನಿಕ ಸೇವಕ’ (ಪೊಲೀಸ್, ಸರ್ಕಾರಿ ಅಧಿಕಾರಿ ಅಥವಾ ಜನಪ್ರತಿನಿಧಿ) ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಅತ್ಯಾಚಾರ ಎಸಗಿದರೆ, ಅದನ್ನು ‘ಅಗ್ರಾ ವೇಟೆಡ್ ಪೆನೆಟ್ರೇಟಿವ್ ಸೆಕ್ಷುವಲ್ ಅಸಾಲ್ಟ್’ ಎಂದು ಪರಿಗಣಿಸಲಾಗುತ್ತದೆ. ಇದಕ್ಕೆ ಶಿಕ್ಷೆ ಹೆಚ್ಚು ಕಠಿಣವಾಗಿರುತ್ತದೆ.

ದೆಹಲಿ ಹೈಕೋರ್ಟ್, “ಶಾಸಕರು (ಒಐಂ) ತಾಂತ್ರಿಕವಾಗಿ ಸಾರ್ವಜನಿಕ ಸೇವಕರಲ್ಲ” ಎಂಬ ಕಾರಣ ನೀಡಿ, ಸೆಂಗಾರ್ ವಿರುದ್ಧದ ಈ ಕಠಿಣ ಸೆಕ್ಷನ್ ಅನ್ವಯಿಸುವುದಿಲ್ಲ ಎಂದು ಹೇಳುತ್ತಾ POCSO ಕಾಯ್ದೆಯಡಿ ಅತ್ಯಾಚಾರಕ್ಕೆ ಕನಿಷ್ಠ 7 ರಿಂದ 10 ವರ್ಷಗಳ ಶಿಕ್ಷೆ ಇರುತ್ತದೆ (ಅಪರಾಧ ನಡೆದ ಸಮಯದ ಕಾನೂನಿನಂತೆ). ಸೆಂಗಾರ್ ಈಗಾಗಲೇ ಸುಮಾರು 7 ವರ್ಷ 5 ತಿಂಗಳು ಜೈಲು ಶಿಕ್ಷೆ ಅನುಭವಿಸಿರುವುದರಿಂದ ಹೈಕೋರ್ಟ್ ಆತನಿಗೆ ಜಾಮೀನು ನೀಡಿತ್ತು. ಎಂದು ಹೈಕೋರ್ಟ್ ವಾದಿಸಿತು.

ಸುಪ್ರೀಂ ಕೋರ್ಟ್ ಇದನ್ನು ತಳ್ಳಿಹಾಕುತ್ತಾ, “ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಸಾರ್ವಜನಿಕ ಸೇವಕನಾಗುವಾಗ, ಒಬ್ಬ ಶಾಸಕ ಅಥವಾ ಸಂಸದ ಹೇಗೆ ಹೊರತಾಗುತ್ತಾರೆ?” ಎಂದು ಪ್ರಶ್ನಿಸಿದೆ. ಇದು ಕಾನೂನಿನ ವ್ಯಾಖ್ಯಾನದಲ್ಲಿ ದೊಡ್ಡ ತಪ್ಪು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಸಾರ್ವಜನಿಕ ಸೇವಕನಾಗಿದ್ದು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರೆ, ಅದು ಜೀವಾವಧಿ ಶಿಕ್ಷೆಗೆ ಅರ್ಹವಾಗಿರುತ್ತದೆ. ಸೆಂಗಾರ್ ಒಬ್ಬ ಶಾಸಕನಾಗಿದ್ದುಕೊಂಡು ಈ ಕೃತ್ಯ ಎಸಗಿರುವುದರಿಂದ ಅವರಿಗೆ ಗರಿಷ್ಠ ಶಿಕ್ಷೆ ನೀಡಲಾಗಿತ್ತು.

ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, “ಅಪರಾಧ ನಡೆದಾಗ ಸೆಂಗಾರ್ ಒಬ್ಬ ಪ್ರಭಾವಿ ಶಾಸಕನಾಗಿದ್ದ. ಆತ ತನ್ನ ಅಧಿಕಾರ ಮತ್ತು ಸ್ಥಾನಮಾನದ ಮೂಲಕ ಸಂತ್ರಸ್ತೆಯ ಮೇಲೆ ಹತೋಟಿ ಸಾಧಿಸಿದ್ದರಿಂದ ಇದನ್ನು ಸಾಮಾನ್ಯ ಪ್ರಕರಣವೆಂದು ಪರಿಗಣಿಸಲು ಸಾಧ್ಯವಿಲ್ಲ” ಎಂದು ವಾದಿಸಿದರು.

ಸಿಬಿಐ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕೆಂದು ಪೀಠವನ್ನು ಒತ್ತಾಯಿಸಿದರು. ಈ ವಿಷಯವನ್ನು ಪರಿಗಣಿಸುವ ಅಗತ್ಯವಿರುವುದರಿಂದ ಪರಿಶೀಲಿಸುವುದಾಗಿ ಪೀಠ ಹೇಳಿದೆ. ಡಿಸೆಂಬರ್ 23 ರ ಹೈಕೋರ್ಟ್ ಆದೇಶದ ನಂತರ ಸೆಂಗಾರ್ ಅವರನ್ನು ಕಸ್ಟಡಿಯಿಂದ ಬಿಡುಗಡೆ ಮಾಡಲಾಗುವುದಿಲ್ಲ ಎಂದು ಅದು ಹೇಳಿದೆ.


ಸುಪ್ರೀಂ ಕೋರ್ಟ್ ಸಂತ್ರಸ್ತೆಯ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ. ಸಂತ್ರಸ್ತೆಗೆ ಸುಪ್ರೀಂ ಕೋರ್ಟ್ ಕಾನೂನು ಸೇವಾ ಸಮಿತಿಯಿಂದ ಉಚಿತ ಕಾನೂನು ನೆರವು ನೀಡುವಂತೆ ಸೂಚಿಸಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆಯೂ ಸ್ವತಂತ್ರವಾಗಿ ಮೇಲ್ಮನವಿ ಸಲ್ಲಿಸಲು ಹಕ್ಕು ಹೊಂದಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಸುಪ್ರೀಂ ಕೋರ್ಟ್ ಸೆಂಗಾರ್‌ಗೆ 4 ವಾರಗಳ ಕಾಲಾವಕಾಶ ನೀಡಿದ್ದು, ತನ್ನ ಸಮರ್ಥನೆಯನ್ನು ಸಲ್ಲಿಸುವಂತೆ ಸೂಚಿಸಿದೆ. ಅಲ್ಲಿಯವರೆಗೆ ದೆಹಲಿ ಹೈಕೋರ್ಟ್ನ ಜಾಮೀನು ಆದೇಶವು ಕಾರ್ಯರೂಪಕ್ಕೆ ಬರುವುದಿಲ್ಲ.
ಆದಾಗ್ಯೂ, ಉಚ್ಚಾಟಿತ ಬಿಜೆಪಿ ನಾಯಕ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದು, ಆ ಪ್ರಕರಣದಲ್ಲಿ ಜಾಮೀನು ಪಡೆಯದ ಕಾರಣ ಅವರು ಜೈಲಿನಲ್ಲೇ ಇರುತ್ತಾರೆ.

Continue Reading
Advertisement

Belthangady

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಬೆಳ್ತಂಗಡಿಯಲ್ಲಿ ಸಿಐಡಿ ತನಿಖೆ ಆರಂಭ

Published

on

ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಅತ್ಯಾಚಾರ ಹಾಗೂ ಸುಲಿಗೆ ಆರೋಪದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಚುರುಕುಗೊಳಿಸಿದೆ. ಇಂದು ಸಿಐಡಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಆಗಮಿಸಿ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸುವ ಮೂಲಕ ಅಧಿಕೃತವಾಗಿ ತನಿಖೆ ಆರಂಭಿಸಿದೆ.

ಪ್ರಕರಣದ ಹಿನ್ನೆಲೆ:
ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ಪ್ರಾಂಶುಪಾಲರೊಬ್ಬರು ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2020 ರಿಂದ 2023ರ ಅವಧಿಯಲ್ಲಿ ಜಮೀನು ವಿವಾದವೊಂದರ ವಿಚಾರಣೆಯ ನೆಪದಲ್ಲಿ ತನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಕೇಸ್ ಮರುಚಾಲನೆ ಮಾಡುವ ಬೆದರಿಕೆ ಹಾಕಿ ಸುಮಾರು 16 ಲಕ್ಷ ರೂ. ನಗದು, 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮನೆ ನಿರ್ಮಾಣಕ್ಕಾಗಿ ತೇಗದ ಮರದ ದಿಮ್ಮಿಗಳನ್ನು ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.

ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸೂಚನೆಯಂತೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಈಗಾಗಲೇ ಸಂದೇಶ್ ಪಿ.ಜಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಮಾರ್ಚ್‌ 25ರಂದು ವೇಣೂರು ಪೊಲೀಸ್‌ ಠಾಣೆಯಿಂದ ಬೆಂಗಳೂರು ಸಿಐಡಿ ಕಚೇರಿಗೆ ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸಿದ್ದು, ಸಿಐಡಿ ಡಿವೈಎಸ್‌ಪಿ ನೇತೃತ್ವದ ತಂಡವು ಮಾರ್ಚ್‌ 31ರಂದು ಸಂಜೆ ನಾರಾವಿ ಐಬಿಗೆ ಆಗಮಿಸಿದೆ. ಇಂದು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಸಿಐಡಿ ತಂಡವು ಸಂತ್ರಸ್ತೆಯ ಹೇಳಿಕೆ ಪಡೆಯುವುದು, ಸ್ಥಳಗಳ ಪರಿಶೀಲನೆ ಹಾಗೂ ಸಾಕ್ಷ್ಯಾಧಾರಗಳ ಸಂಗ್ರಹಣೆಯ ಮೇಲೆ ತನಿಖೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಸಂತ್ರಸ್ತರು ಇದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಸಲಿದೆ.

Continue Reading

accident

ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು; ಚಾಲಕ, ನಿರ್ವಾಹಕನ ವಿರುದ್ಧ ಕೇಸ್ ದಾಖಲು

Published

on

ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ: ಮಾರ್ಚ್ 31ರಂದು ಬೆಳಗ್ಗೆ ಕಳಿಯ ಗ್ರಾಮದ ನಿವಾಸಿಗಳಾದ ಚರಿಷ್ಮಾ (17) ಮತ್ತು ಚದ್ಮಕಾ (15) ಎಂಬ ಸಹೋದರಿಯರು ಎಂದಿನಂತೆ ಕಾಲೇಜಿಗೆ ಹೋಗಲು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಕಳಿಯದಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿತ್ತು. ಗೇರುಕಟ್ಟೆ ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಬಾಗಿಲು ದಿಢೀರನೆ ತೆರೆದುಕೊಂಡಿದ್ದು, ಬಾಗಿಲ ಬಳಿಯಿದ್ದ ಇಬ್ಬರೂ ವಿದ್ಯಾರ್ಥಿನಿಯರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.

ರಸ್ತೆಗೆ ಬಿದ್ದ ಪರಿಣಾಮ ಇಬ್ಬರೂ ಸಹೋದರಿಯರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಜಾಗರೂಕತೆಯ ಆರೋಪ: ಬಸ್ ಚಾಲಕ ದಯಾನಂದ ಅವರು ವಾಹನವನ್ನು ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಮತ್ತು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯ ಲೋಪವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೆಕ್ಷನ್ 281: ಅಜಾಗರೂಕ ಚಾಲನೆ. ಸೆಕ್ಷನ್ 125: ಜೀವಕ್ಕೆ ಅಪಾಯ ತರುವಂತಹ ನಿರ್ಲಕ್ಷ್ಯದ ಕೃತ್ಯ.ಸೆಕ್ಷನ್ 125(a): ನಿರ್ಲಕ್ಷ್ಯದಿಂದ ಗಾಯ ಉಂಟುಮಾಡುವುದು.ಸೆಕ್ಷನ್‌ಗಳ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ:

ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತೆಯ ಕೊರತೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

crime

ಪೊಲೀಸ್ ಭೇಟೆ: ದೇವಸ್ಥಾನದ ಕಳ್ಳ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

Published

on

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜಪೆ ಮತ್ತು ಉರ್ವಾ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೇವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ್ದ ಅಂತರರಾಜ್ಯ ಕಳ್ಳ ಹಾಗೂ ಕಳೆದ 9 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಂಜಾರು ದೇವಸ್ಥಾನದ ಹುಂಡಿ ಕಳವು: ತಮಿಳುನಾಡು ಮೂಲದ ಆರೋಪಿ ಅರೆಸ್ಟ್
ಮಾರ್ಚ್ 3ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು, ಮೂರು ಕಾಣಿಕೆ ಹುಂಡಿಗಳಿಂದ ಸುಮಾರು ರೂ. 25,000/- ಹಣವನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಬಜಪೆ ಪೊಲೀಸರು ಮಾರ್ಚ್ 31ರಂದು ಅಂತರರಾಜ್ಯ ಕಳ್ಳ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಎಂಬಾತನನ್ನು ಬಂಧಿಸಿದ್ದಾರೆ.
ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿಯಾದ ಈತ, ರೈಲಿನಲ್ಲಿ ಬಂದು ಕಳ್ಳತನ ನಡೆಸಿ ತಮಿಳುನಾಡಿಗೆ ಪರಾರಿಯಾಗುತ್ತಿದ್ದ. ಈತ ಉಡುಪಿಯ ಬ್ರಹ್ಮಾವರ ಠಾಣೆಯ ಕಳವು ಪ್ರಕರಣ ಹಾಗೂ ಪಣಂಬೂರು ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆ ಪ್ರದೇಶದಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲೂ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಬಜಪೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ಈ ಕಾರ್ಯಾಚರಣೆ ನಡೆಸಿದ್ದಾರೆ.

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮುಂಬೈನಲ್ಲಿ ಸೆರೆ
ಮತ್ತೊಂದು ಪ್ರಕರಣದಲ್ಲಿ, ದರೋಡೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್.ಪಿ.ಸಿ (LPC) ವಾರಂಟ್ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಶೋಕ ನಗರದ ನಿವಾಸಿ ಸುಹಾನ್ @ ಸೋನು (33) ಬಂಧಿತ ಆರೋಪಿ.
ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು. ಮಾರ್ಚ್ 29ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಬೀಡುಬಿಟ್ಟಿದ್ದ ಆರೋಪಿಯನ್ನು ಉರ್ವಾ ಎಎಸ್ಐ ಲಕ್ಷ್ಮಣ್ ಮತ್ತು ತಂಡ ಪತ್ತೆಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ. ಈತನ ಮೇಲೆ ಉರ್ವಾ ಮತ್ತು ಮಂಗಳೂರು ಉತ್ತರ ಠಾಣೆಗಳಲ್ಲಿ ದರೋಡೆ ಸಂಚು ಹಾಗೂ ಹಲ್ಲೆಗೆ ಸಂಬಂಧಿಸಿದಂತೆ ಮೂರು ಪ್ರಮುಖ ಪ್ರಕರಣಗಳು ದಾಖಲಾಗಿವೆ.

ಬಂಧಿತ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸರ ಈ ಚುರುಕಿನ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

Trending

Copyright © 2025 Deevatige