Belthangady
ಮನೆಗಳಲ್ಲಿ ಅನಧಿಕೃತವಾಗಿ ವಸತಿ ನಿಲಯ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ -ಡಿವೈಎಸ್ಪಿ ರೋಹಿಣಿ ಕೆ.ಸಿ.
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2025/12/IMG-20251230-WA0070-1000x577.jpg&description=ಮನೆಗಳಲ್ಲಿ ಅನಧಿಕೃತವಾಗಿ ವಸತಿ ನಿಲಯ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ -ಡಿವೈಎಸ್ಪಿ ರೋಹಿಣಿ ಕೆ.ಸಿ.', 'pinterestShare', 'width=750,height=350'); return false;" title="Pin This Post">
ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಕೆ.ಸಿ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಗಳ ಸಭೆ ನಡೆಯಿತು
ಬೆಳ್ತಂಗಡಿ ತಾಲೂಕಿನಲ್ಲಿ ಕಾನೂನು ಬಾಹಿರವಾಗಿ ಮತ್ತು ಅನಧಿಕೃತವಾಗಿ ಕೆಲವೊಂದು ಮನೆಗಳಲ್ಲಿ ವಸತಿ ನಿಲಯಗಳನ್ನು ನಡೆಸುತ್ತಿದ್ದಾರೆ. ಇಲ್ಲಿ ಸರ್ಕಾರದ ನಿಯಮಾವಳಿಗಳನ್ನು ಪಾಲಿಸಲಾಗುತ್ತಿದೆಯೇ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಮುಖಂಡ ಬಿ.ಕೆ ವಸಂತ ಪ್ರಶ್ನಿಸಿದರು.

ಅನಧಿಕೃತ ವಸತಿ ನಿಲಯಗಳ ಬಗ್ಗೆ ಪೊಲೀಸ್ ಇಲಾಖೆ ಸಮಗ್ರ ಮಾಹಿತಿ ಸಂಗ್ರಹಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ತಿಳಿಸಿದರು. ತಾಲೂಕಿನ ಅಲ್ಲಲ್ಲಿ ವಲಸೆ ಕಾರ್ಮಿಕರಿದ್ದು , ಅವರ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಹಿಂದಿನ ಸಭೆಯಲ್ಲಿ ಹೇಳಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಬೇಸರ ವ್ಯಕ್ತಪಡಿಸಿದ ಬಿ.ಕೆ ವಸಂತ್, ವಲಸೆ ಕಾರ್ಮಿಕರು ಯಾವ ರಾಜ್ಯ, ದೇಶದವರು ಎಂದು ತಿಳಿಯಲು ಅವರ ಅಧಿಕೃತ ದಾಖಲೆಗಳನ್ನು ಸಂಗ್ರಹಿಸುವುದು ಅಗತ್ಯವಿದೆ ಎಂದು ಸಲಹೆ ನೀಡಿದರು.

ಈಗಾಗಲೇ ರಾಜ್ಯದಲ್ಲಿ ವಿದೇಶಿಗರು ಅನಧಿಕೃತವಾಗಿ ವಾಸಿಸುವ ಬಗ್ಗೆ ಮಾಹಿತಿ ಬರುತ್ತಿದ್ದು , ಈ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ ಮಾತನಾಡುತ್ತಾ, ಪರಿಶಿಷ್ಟ ಜಾತಿ /ಪಂಗಡಗಳ ಅನುದಾನ ಉಪಯೋಗಿಸುವ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಸಭೆಯಲ್ಲಿ ಹಾಜರಾಗಬೇಕು. ದಲಿತರ ಕುಂದುಕೊರತೆಗಳ ಸಭೆಗೆ ಅಧಿಕಾರಿಗಳು ಗೈರು ಹಾಜರಾಗಿ , ಸಿಬ್ಬಂದಿಗಳನ್ನು ಕಳುಹಿಸುತ್ತಿರುವುದು ಸರಿಯಲ್ಲ , ಇದು ಕೂಡ ದಲಿತ ದೌರ್ಜನ್ಯಕ್ಕೆ ಸಮ ಎಂದು ಹೇಳಿದರು. ಇದಕ್ಕೆ ಧ್ವನಿಗೂಡಿಸಿದ ಹಿರಿಯ ದಲಿತ ನಾಯಕ ಸಂಜೀವ ಆರ್. ಪರಿಶಿಷ್ಟ ಜಾತಿ/ಪಂಗಡಗಳ ಅನುದಾನ ವಿನಿಯೋಗ ಮಾಡದಿರುವುದು ಕೂಡ ದೌರ್ಜನ್ಯಕ್ಕೆ ಸಮವಾಗಿದೆ. ಅಂತಹ ಅಧಿಕಾರಿಗಳ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಶಿರ್ಲಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪುಷ್ಪರಾಜ್ ಎಂ.ಕೆ. ಮಾತನಾಡುತ್ತಾ ರಸ್ತೆಯ ಇಕ್ಕೆಲಗಳಲ್ಲಿ ಅಧಿಕೃತ ಮತ್ತು ಅನಧಿಕೃತವಾಗಿ ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಲಾಗುತ್ತಿದೆ. ಇದರಿಂದಾಗಿ ಹಲವು ಕಡೆಗಳಲ್ಲಿ ರಸ್ತೆ ಅಪಘಾತಗಳು ಸಂಭವಿಸಿವೆ. ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯತುಗಳಿಗೆ ಸೂಚಿಸಬೇಕೆಂದು ಒತ್ತಾಯಿಸಿದರು.
ನಲಿಕೆ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಶಾಂತಿಗೋಡು ಮಾತನಾಡುತ್ತಾ ಶಿರ್ಲಾಲು ಗ್ರಾಮದ ಬಾಬು ನಲ್ಕೆ ಎಂಬವರ ಪಟ್ಟಾ ಜಮೀನನ್ನು ಸ್ಥಳೀಯ ಮೇಲ್ಜಾತಿಯ ವ್ಯಕ್ತಿಯೊಬ್ಬ ಅತಿಕ್ರಮಿಸಿ , ಜಮೀನಿನ ಕೃಷಿ ನಾಶ ಮಾಡಿರುವ ಬಗ್ಗೆ ದೂರು ನೀಡಿದ್ದರೂ ವೇಣೂರು ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ.
ಜಿಲ್ಲಾಧಿಕಾರಿಯವರು ಜಿಲ್ಲಾ ಎಸ್ಪಿರವರಿಗೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲು ಆದೇಶಿಸಿದ್ದರೂ ವೇಣೂರು ಪೊಲೀಸರು ಅದ್ಯಾಕೋ ಸಿವಿಲ್ ಸ್ವರೂಪದ ಪ್ರಕರಣ ಎಂದು ಹಿಂಬರಹ ನೀಡಿರುವುದು ಸರಿಯಲ್ಲ. ಅಧಿಕೃತ ದಾಖಲೆಗಳನ್ನು ಹೊಂದಿರುವ ಜಮೀನಿನಲ್ಲಿದ್ದ ಕೃಷಿ ನಾಶ ಮಾಡಿರುವುದು ದಲಿತ ದೌರ್ಜನ್ಯವಾಗಿದೆ. ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಿದರು.

ಈ ಬಗ್ಗೆ ತಕ್ಷಣವೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಡಿವೈಎಸ್ಪಿಯವರು ವೇಣೂರು ಪಿಎಸ್ಐ ಗೆ ಸೂಚಿಸಿದರು. ದಸಂಸ(ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ರಮೇಶ್ ಆರ್. ಮಾತನಾಡುತ್ತಾ ಈ ಹಿಂದೆ ಪ್ರಸನ್ನ ಕಾಲೇಜಿನಲ್ಲಿದ್ದ ದೈಹಿಕ ಶಿಕ್ಷಣ ಶಿಕ್ಷಕನೋರ್ವ ರಾಜ್ಯ , ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯಲ್ಲಿ ಸ್ಥಾನ ದೊರಕಿಸಿ ಕೊಡುತ್ತೇನೆಂದು ಆಮಿಷವೊಡ್ಡಿ ನಗರದ ಕೆಲ್ಲಗುತ್ತು , ರೆಂಕೆದಗುತ್ತು ಪರಿಸರದ ಹಲವು ದಲಿತ ಯುವಕರಿಂದ ತಲಾ 8,000 ರೂಪಾಯಿಗಳನ್ನು ಪಡೆದು ಮೋಸ ಮಾಡಿದ್ದಾರೆ, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿ ಎರಡು ತಿಂಗಳಾದರೂ ಆರೋಪಿ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಲಿಕೆ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ಸೇಸಪ್ಪ ಅಳದಂಗಡಿ ಮಾತನಾಡುತ್ತಾ ಅಳದಂಗಡಿಯಲ್ಲಿ ಪೊಲೀಸ್ ಹೊರ ಠಾಣೆ ತೆರೆಯಬೇಕು. ಅಳದಂಗಡಿ, ನಾರಾವಿ ಭಾಗದಲ್ಲಿ ಯಾವುದೇ ಘಟನೆ ನಡೆದರೂ 15-20 ಕಿ.ಮೀ ದೂರದಲ್ಲಿರುವ ವೇಣೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕಾಗಿದೆ ಎಂದರು.
ಕೃಷ್ಣಪ್ಪ ನಾರಾವಿ ಮಾತನಾಡುತ್ತಾ ಪೊಲೀಸ್ ಠಾಣೆ ಸೇರಿದಂತೆ ಸರ್ಕಾರಿ ಇಲಾಖೆಗಳಲ್ಲಿ ದಲಿತರ ಕೆಲಸಗಳನ್ನು ತಡವಾಗಿ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು. ಉಪ ವಿಭಾಗದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರ ಎಲ್ಲಾ ಕೆಲಸಗಳನ್ನು ತ್ವರಿತವಾಗಿ ನಡೆಸುವುದಲ್ಲದೇ, ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿ ನಡೆದುಕೊಳ್ಳಲು ಸೂಚಿಸಿದರು.

ನಾಗರಿಕ ಸೇವಾ ಟ್ರಸ್ಟ್ ನ ಟ್ರಸ್ಟಿ ಬಾಬು ಎ.ಮಾತನಾಡುತ್ತಾ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಸರ್ಕಾರದ ನಿಯಮಾವಳಿಗಳಂತೆ ಶಿಕ್ಷಣ ಸಂಸ್ಥೆಗಳಲ್ಲಿ ಒಬ್ಬನೇ ಒಬ್ಬ ದಲಿತ ಶಿಕ್ಷಕ/ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳದಿರುವುದು ದಲಿತ ದೌರ್ಜನ್ಯವಾಗಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.
ಶೇಖರ್ ಲಾಯಿಲ ಮಾತನಾಡುತ್ತಾ ಜಿಲ್ಲೆಯಲ್ಲಿ ನಕಲಿ ದಾಖಲೆಗಳ ಮೂಲಕ ನಕಲಿ ಜಾತಿ ಪ್ರಮಾಣಪತ್ರಗಳನ್ನು ಪಡೆದು ಚುನಾವಣಾ ಸ್ಪರ್ಧೆ, ಉದ್ಯೋಗ ಪಡೆಯಲಾಗುತ್ತದೆ. ಈ ಬಗ್ಗೆ ಯಾವ ರೀತಿಯ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಸಿಬ್ಬಂದಿಯನ್ನು ಪ್ರಶ್ನಿಸಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯನೋರ್ವ ನಕಲಿ ದಾಖಲೆಗಳನ್ನು ನೀಡಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದುಕೊಂಡ ಬಗ್ಗೆ 2000ನೇ ಇಸವಿಯಲ್ಲಿ ದೂರು ನೀಡಿದ್ದರೂ ಇಂದಿನ ತನಕವೂ ತನಿಖೆ ನಡೆಸದ ಬಗ್ಗೆ ಸಿಬ್ಬಂದಿಯನ್ನು ಪ್ರಶ್ನಿಸಿದರು. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ ಪಿಎಸ್ಐ , ಇನ್ಸ್ಪೆಕ್ಟರ್ , ಡಿವೈಎಸ್ಪಿ ಹುದ್ದೆಗಳು ಸೇರಿದಂತೆ ಬಹುತೇಕ ಹುದ್ದೆಗಳು ಖಾಲಿಯಿದೆ. ಎಸ್ಪಿಯವರು ಎಸ್ಐಟಿಗೆ ನೇಮಕಗೊಂಡು ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇರುವ ಸಿಬ್ಬಂದಿಗಳು ನಾಲ್ಕು ಜಿಲ್ಲೆಗಳ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ ಎಂದರು.
ಯಾವುದೇ ದಾಖಲೆಗಳಿಲ್ಲದೇ ಸಭೆಗೆ ಕೈ ಬೀಸಿಕೊಂಡು ಬಂದು ಹಾಜರಾದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಆಗ ಮಧ್ಯೆ ಪ್ರವೇಶಿಸಿದ ಡಿವೈಎಸ್ಪಿ ಮುಂದಿನ ಸಭೆಗೆ ಸೂಕ್ತ ದಾಖಲೆಗಳೊಂದಿಗೆ ಸಭೆಗೆ ಬರುವಂತೆ ಸೂಚಿಸಿದರು.
ವೇದಿಕೆಯಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ರವಿ ಬಿ.ಎಸ್ , ಉಪ್ಪಿನಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗರಾಜ್ ಉಪಸ್ಥಿತರಿದ್ದರು. ಸಭೆಯಲ್ಲಿ ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಪೊಲೀಸ್ ಠಾಣೆಗಳ ಪಿಎಸ್ಐ ಗಳು ಹಾಜರಿದ್ದರು. ಸಭೆಯಲ್ಲಿ ದಲಿತ ಮುಖಂಡರಾದ ಸೇಸಪ್ಪ ನೆಕ್ಕಿಲು , ಶ್ರೀನಿವಾಸ್ ಉಜಿರೆ , ಸದಾನಂದ ನಾಲ್ಕೂರು , ಪ್ರಭಾಕರ್ ನಾಯ್ಕ್ , ದಯಾನಂದ ಇಂದಬೆಟ್ಟು ಉಪಸ್ಥಿತರಿದ್ದರು. ಡಿವೈಎಸ್ಪಿ ಕಛೇರಿಯ ಎಎಸ್ಐ ಲಾರೆನ್ಸ್ ಹಿಂದಿನ ಸಭೆಯ ವರದಿ ಮಂಡಿಸಿದರು. ಹೆಡ್ ಕಾನ್ಸ್ಟೇಬಲ್ ಪ್ರವೀಣ್ ಎಂ. ಸಹಕರಿಸಿದರು. ಹೆಡ್ ಕಾನ್ಸ್ಟೇಬಲ್ ಮನೋಹರ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.
Belthangady
ಬೆಳ್ತಂಗಡಿ: 50 ಲಕ್ಷದ ರಸ್ತೆ 9 ವರ್ಷಕ್ಕೆ ಗುಂಡಿಮಯ – ಕೈಕಂಬ–ಫಾರೆಸ್ಟ್ ಬಂಗಲೆ ರಸ್ತೆ ದುಸ್ಥಿತಿ
ಬೆಳ್ತಂಗಡಿ: 2017ರಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಡಾಮರೀಕರಣಗೊಂಡ ನಾವೂರು ಗ್ರಾಮದ ಕೈಕಂಬ ಜಂಕ್ಷನ್ನಿಂದ ಫಾರೆಸ್ಟ್ ಬಂಗಲೆಗೆ ಸಂಪರ್ಕಿಸುವ 1.40 ಕಿ.ಮೀ ರಸ್ತೆ ಇದೀಗ ಗುಂಡಿಯಿಂದ ಗುಂಡಿಯಾಗಿ ಸಂಪೂರ್ಣ ಹದಗೆಟ್ಟಿದೆ. “ಇಲ್ಲಿ ರಸ್ತೆಯಲ್ಲಿ ಗುಂಡಿ ಇದೆಯೋ, ಅಥವಾ ಗುಂಡಿಯಲ್ಲಿ ರಸ್ತೆ ಇದೆಯೋ ಅರ್ಥವಾಗದ ಸ್ಥಿತಿ” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ, ಬೆಳ್ತಂಗಡಿ ಮೂಲಕ 2017ರಲ್ಲಿ ನಿರ್ಮಾಣವಾದ ಈ 1 ಕಿ.ಮೀ ರಸ್ತೆ ಇದೀಗ ಇಂಚಿಂಚಿಗೂ ಗುಂಡಿಯಾಗಿದೆ. ಬೇಸಿಗೆಯಲ್ಲಿ ಗುಂಡಿ ಮುಚ್ಚಲು ಮಣ್ಣು ಹಾಕಲಾಗಿತ್ತು. ಆದರೆ ಮಳೆ ಆರಂಭವಾಗುತ್ತಿದ್ದಂತೆ ರಸ್ತೆ ಪೂರ್ತಿ ಕೆಸರುಮಯವಾಗಿ ಕಂಬಳ ಗದ್ದೆಯನ್ನು ನಾಚಿಸುವಂತಾಗಿದೆ.
ಜನರ ಸಂಕಷ್ಟ:
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿ ಸೇರಿದಂತೆ ಫಾರೆಸ್ಟ್ ಬಂಗಲೆ, ಕಣಾಲು, ಕಾರಿಂಜ, ಕುಂಡಡ್ಕ, ಸುಳ್ಳೊಡಿ ಮುಂತಾದ ಪ್ರದೇಶಗಳನ್ನು ಸಂಪರ್ಕಿಸುವ ಏಕೈಕ ಪ್ರಮುಖ ರಸ್ತೆ ಇದಾಗಿದೆ. ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ, ನೂರಾರು ಜನರು ಕೆಲಸಕ್ಕೆ ಇದೇ ರಸ್ತೆಯಲ್ಲಿ ಸಂಚರಿಸಬೇಕಾಗಿದೆ. ಅಂಗನವಾಡಿ, ಕಿ.ಪ್ರಾ ಶಾಲೆ, ಹಾಲು ಉತ್ಪಾದಕರ ಸಂಘವೂ ಇದೆ.

ಗುಂಡಿ ತಪ್ಪಿಸುವ ಭರದಲ್ಲಿ ದ್ವಿಚಕ್ರ ವಾಹನ, ಆಟೋ, ಖಾಸಗಿ ವಾಹನಗಳು ಅಡ್ಡಾದಿಡ್ಡಿ ಚಲಿಸುತ್ತಿದ್ದು, ಅಪಘಾತಗಳೂ ಸಂಭವಿಸಿವೆ. ಆದರೂ ರಸ್ತೆ ದುರಸ್ತಿ ಆಗದಿರುವುದು ದುರಂತ ಎಂದು ಸ್ಥಳೀಯರು ಬೇಸರಿಸಿದ್ದಾರೆ.
ಒತ್ತಾಯ:
“ಕೈಕಂಬದಿಂದ ಮೂರು ಮಾರ್ಗದವರೆಗಿನ ರಸ್ತೆ ಜನ, ವಾಹನ ಸಂಚರಿಸಲು ಅಯೋಗ್ಯವಾಗಿದೆ. ದಿತ್ಯೋಪಯೋಗಿ ರಸ್ತೆಯನ್ನು ತಕ್ಷಣ ದುರಸ್ತಿ ಮಾಡಬೇಕು. ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ವ್ಯವಸ್ಥೆಯೂ ಅಗತ್ಯ” ಎಂದು ಆಟೋ ರಿಕ್ಷಾ ಚಾಲಕ-ಮಾಲೀಕರಾದ ದಿನೇಶ್ ಗೌಡ ಆಗ್ರಹಿಸಿದ್ದಾರೆ.



accident
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಅಪಘಾತದ ಸಮಯದಲ್ಲಿ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು, ಕಾರು ನಿಯಂತ್ರಣ ತಪ್ಪಿ ನೇರವಾಗಿ ಚರಂಡಿಗೆ ಇಳಿದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರಿಗೂ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ. ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
arrest
ಬೆಳ್ತಂಗಡಿ: ಸರಣಿ ಕಳ್ಳತನದ ಅಂತರಾಜ್ಯ ಗ್ಯಾಂಗ್ ಪತ್ತೆ; ಇಬ್ಬರ ಬಂಧನ, ₹23.67 ಲಕ್ಷ ಮೌಲ್ಯದ ಸೊತ್ತು ವಶ
ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂತರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಟ್ಟು ರೂ. 23,67,000/- ಮೌಲ್ಯದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ವಿವರ:
ಹಮೀದ್ (42): ಕಾಸರಗೋಡು ನಿವಾಸಿ (ಮೂಲತಃ ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕರಾಯಿ ನಿವಾಸಿ). ಈತನನ್ನು ಮೇ 15, 2026 ರಂದು ಬಂಧಿಸಲಾಗಿತ್ತು.
ಜಾಬೀರ್ @ ಜಾಬೀ (38): ಕಾಸರಗೋಡು ನಿವಾಸಿ (ಮೂಲತಃ ಕೊಳ್ನಾಡು ಗ್ರಾಮದ ಬಾರೆಬೆಟ್ಟು ನಿವಾಸಿ). ಹಮೀದ್ ನೀಡಿದ ಮಾಹಿತಿ ಮೇರೆಗೆ ಈತನನ್ನು ಜೂನ್ 07, 2026 ರಂದು ಕಾಸರಗೋಡಿನಲ್ಲಿ ಬಂಧಿಸಲಾಗಿದೆ.

ಪ್ರಕರಣದ ಹಿನ್ನೆಲೆ ಮತ್ತು ತನಿಖೆ:
ಕಳೆದ ಏಪ್ರಿಲ್ 5, 2026 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಚಿನ್ನಾಭರಣ ಮತ್ತು ನಗದು ಕಳ್ಳತನವಾಗಿತ್ತು. ಈ ಕುರಿತು ದಾಖಲಾಗಿದ್ದ ಅ.ಕ್ರ: 38/2026 ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸ್ ತಂಡ ಮೊದಲು ಹಮೀದ್ನನ್ನು ತಡೆದು ವಿಚಾರಣೆ ನಡೆಸಿದಾಗ ಕಳ್ಳತನದ ಜಾಲ ಪತ್ತೆಯಾಗಿದೆ.
ವಶಪಡಿಸಿಕೊಂಡ ಸೊತ್ತುಗಳು: ಆರೋಪಿಗಳಿಂದ ಈ ಕೆಳಗಿನ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ:
ಪುಂಜಾಲಕಟ್ಟೆ ಠಾಣಾ ಪ್ರಕರಣಕ್ಕೆ ಸಂಬಂಧಿಸಿ: 68.690 ಗ್ರಾಂ ಚಿನ್ನಾಭರಣ ಮತ್ತು ರೂ. 2,00,000/- ನಗದು.
ಉಪ್ಪಿನಂಗಡಿ ಠಾಣಾ ಪ್ರಕರಣಕ್ಕೆ (ಅ.ಕ್ರ: 28/2025) ಸಂಬಂಧಿಸಿ: 21.810 ಗ್ರಾಂ ಚಿನ್ನಾಭರಣ.
ಇತರ: ಕೃತ್ಯಕ್ಕೆ ಬಳಸಿದ ಕಾರು. (ವಶಪಡಿಸಿಕೊಂಡ ಒಟ್ಟು ಸೊತ್ತಿನ ಮೌಲ್ಯ ರೂ. 23,67,000/-)
5 ಕಳ್ಳತನ ಪ್ರಕರಣಗಳ ಸುಳಿವು:
ಪೊಲೀಸ್ ತನಿಖೆಯ ವೇಳೆ ಈ ಆರೋಪಿಗಳು ಕರಾವಳಿಯ ವಿವಿಧೆಡೆ ಸರಣಿ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಕುಂಬಳೆ, ಉಪ್ಪಿನಂಗಡಿ, ಬಂಟ್ವಾಳ ನಗರ ಮತ್ತು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 5 ಕಳ್ಳತನ ಪ್ರಕರಣಗಳಲ್ಲಿ ಈ ಇಬ್ಬರು ಭಾಗಿಯಾಗಿರುವುದು ದೃಢಪಟ್ಟಿದೆ. ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡ:
ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಉಪವಿಭಾಗಾಧೀಕ್ಷಕಿ (DySP) ಶ್ರೀಮತಿ ರೋಹಿಸಿ ಸಿ.ಕೆ. ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ.
ತಂಡದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿ.ಪಿ.ಐ ರವಿ ಬಿ.ಎಸ್, ಉಪ್ಪಿನಂಗಡಿ ಗ್ರಾಮಾಂತರ ಸಿ.ಪಿ.ಐ ನಾಗರಾಜ್ ಹೆಚ್.ಇ, ಪುಂಜಾಲಕಟ್ಟೆ ಪಿ.ಎಸ್.ಐ ರಾಜೇಶ್ ಕೆ.ವಿ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ಅವರು ತಾಂತ್ರಿಕ ನೆರವು ನೀಡಿದ್ದಾರೆ. ಪೊಲೀಸರ ಈ ಸಮಯಪ್ರಜ್ಞೆ ಮತ್ತು ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.



-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
