Connect with us

Dakshina Kannada

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದೈವೀ ಕಾರ್ಯಗಳಲ್ಲಿ ಕಳಂಕರಹಿತರಿಗೆ ಮಾತ್ರ ಅವಕಾಶ ನೀಡಿ; ಅನಧಿಕೃತ ವ್ಯಕ್ತಿಗಳ ಹಸ್ತಕ್ಷೇಪ ನಿಲ್ಲಿಸಿ; ವ್ಯವಸ್ಥಾಪನಾ ಸಮಿತಿಗೆ ಮನವಿ

Published

on

ಪುತ್ತೂರು : ಇಲ್ಲಿಯ ಹೃದಯಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರನ ಮಹಿಮೆ ಇತಿಹಾಸ ಪ್ರಸಿದ್ದವಾದುದು ಬಹಳ ಜನಾದರಣೀಯವಾದುದು. ಹಾಗೂ ವಿಶೇಷ ದೈವಿಕ ಶಕ್ತಿ ಸಂಪನ್ಮೂಲವಾದುದು. ಹಲವರ ಜೀವನದ ಘಟನೆಗಳಲ್ಲಿ ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವರ ವಿಶೇಷ ಶಕ್ತಿಯ ಸಂಚಯನವಾಗಿದೆ. ದುಷ್ಟರಿಗೆ ಶಿಕ್ಷೆ ನೀಡಿ ಶಿಷ್ಟರ ಪರಿಪಾಲನೆಯಾದ ಅಸಂಖ್ಯಾತ ಉದಾಹರಣೆಗಳು ನಮ್ಮ ಕಣ್ಮುಂದೆ ಇವೆ. ಇಂತಹ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೈವೀ ಕಾರ್ಯಗಳಲ್ಲಿ ಅನಧಿಕೃತ ವ್ಯಕ್ತಿಗಳ ಹಸ್ತಕ್ಷೇಪದ ಬಗ್ಗೆ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಿಗೊಂದು ದೂರು ಮನವಿ ಹೋಗಿದೆ.


ಕರ್ನಾಟಕ ರಾಜ್ಯ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಧೀನಕ್ಕೆ ಒಳಪಟ್ಟ ದೇವಾಲಯ ಇದಾಗಿದ್ದು, ಇಲ್ಲಿ ಧಾರ್ಮಿಕ ದೈವೀ ಕಾರ್ಯಗಳಲ್ಲಿ ಶಿಷ್ಠಾಚಾರ ಉಲ್ಲಂಘನೆಯಾಗುತ್ತಿರುವುದು ನಡೆದಿದೆ. ಇಲ್ಲಿನ ಜಾತ್ರೋತ್ಸವದ ಧ್ವಜಾರೋಹಣ ಮತ್ತು ಧ್ವಜ-ಅವರೋಹಣ ದೈವೀ ಕಾರ್ಯದಲ್ಲಿ ಈವರೆಗೆ ಅಧಿಕಾರ ಮತ್ತು ಅರ್ಹತೆಯಿಲ್ಲದ ಇಷ್ಟ ಬಂದವರೆಲ್ಲರೂ ಅವಕಾಶ ಪಡೆದುಕೊಂಡು ಫೋಸ್ ನೀಡುತ್ತಿರುವುದು ಕಂಡುಬಂದಿದ್ದು, ಮುಂದೆ ದೇವಸ್ಥಾನದ ಅಧಿಕೃತ ಖಾಯಂ ಪದಾರ್ಥಿ ನೌಕರರಿಗೆ ಮತ್ತು ಯಾವುದೇ ಕಳಂಕ ಇಲ್ಲದ ಅರ್ಹರಿಗೆ ಮಾತ್ರ ಅವಕಾಶ ಕೊಟ್ಟು ದೇವಸ್ಥಾನದ ಘನತೆ, ಗೌರವ, ಶಿಸ್ತು ನಿಯಮ ಕಾಪಾಡುವಂತೆ ಮಹಾಲಿಂಗೇಶ್ವರ ದೇವರ ಭಕ್ತ ಶಶಿಧರ ವಿ,ಎನ್ ಮನವಿ ಮಾಡಿದ್ದಾರೆ.

ಶ್ರೀ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ತನ್ನದೇ ಆದ ಶಿಸ್ತು ನಿಯಮ ಶಿಷ್ಟಾಚಾರ ಹೊಂದಿರುವ ಕರ್ನಾಟಕ ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಪ್ರಾಚೀನ ಸಾರ್ವಜನಿಕ ದೇವಸ್ಥಾನ. ಇಲ್ಲಿ ಪ್ರತಿಯೊಂದು ಕೆಲಸ ಕಾರ್ಯಗಳಿಗೂ ಅಧಿಕೃತ ಸಿಬ್ಬಂದಿಗಳ ನೇಮಕ ನಿಯೋಜನೆ ಆಗಿರುತ್ತದೆ. ಅದಾಗಿಯೂ ಸದ್ರಿ ದೇವಸ್ಥಾನದಲ್ಲಿ ಕೆಲವೊಂದು ಪ್ರಮುಖ ಧಾರ್ಮಿಕ ಕಾರ್ಯಗಳಲ್ಲಿ ನೌಕರರೇ ಅಲ್ಲದ ಯಾವುದೇ ಅಧಿಕಾರ ಹಕ್ಕು ಆದೇಶ ಇಲ್ಲದ ವ್ಯಕ್ತಿಗಳು ತೀರಾ ಅನಧಿಕೃತವಾಗಿ ಪಾಲ್ಗೊಳ್ಳುವುದು, ತಾವೇ ಮುಖ್ಯರಂತೆ ಬಿಂಬಿಸಿಕೊಳ್ಳುವುದು ದೇವಸ್ಥಾನದ ಘನತೆ, ಗೌರವ ಮತ್ತು ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ.


ಶ್ರೀ ದೇವಸ್ಥಾನದ ಅಧಿಕೃತ ಮಾಹಿತಿ ತಿಳಿಸುವಂತೆ, ಇಂತಹ ಅನಧಿಕೃತ ವ್ಯಕ್ತಿಗಳ ಚಟುವಟಿಕೆ ದೇವಸ್ಥಾನದ ಶಿಸ್ತು, ನಿಯಮ ಮತ್ತು ಕಾನೂನಿನ ಸ್ಪಷ್ಟ ಉಲ್ಲಂಘನೆ ಆಗುತ್ತದೆ. ಸದರಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವರ್ಷಾವಧಿ ಜಾತ್ರೋತ್ಸವದ ಧ್ವಜಾರೋಹಣ ಮತ್ತು ಅವರೋಹಣವನ್ನು ನಡೆಸಲು ಶ್ರೀ ದೇವಾಲಯದ ಖಾಯಂ ಪದಾರ್ಥಿ ಹುದ್ದೆಯಲ್ಲಿರುವ ನೌಕರರಿಗೆ ಜವಾಬ್ದಾರಿ ನೀಡಲಾಗಿರುತ್ತದೆ. ಅದಾಗ್ಯೂ ಜಾತ್ರೋತ್ಸವದ ಧ್ವಜಾರೋಹಣ ಅವರೋಹಣವನ್ನು ದೇವಸ್ಥಾನದ ಖಾಯಂ ಪದಾರ್ಥಿ ಅಲ್ಲದ ಯಾವುದೇ ಅಧಿಕಾರ, ಆದೇಶ, ಹಕ್ಕು, ಅರ್ಹತೆ ನೈತಿಕತೆಗಳಿಲ್ಲದ ಕಳಂಕಿತ ವ್ಯಕ್ತಿಗಳು ನಡೆಸಿದರೆ ಅದು ದೇವಸ್ಥಾನದ ಘನತೆ ಗೌರವ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.


ಹಿಂದಿನ ವರ್ಷದ ಜಾತ್ರೋತ್ಸವದ ಸಂದರ್ಭದಲ್ಲಿ ಇಂತಹ ಅರ್ಹತೆಯಲ್ಲದವರಿಂದ ಅಧಿಕಾರ ಚಲಾವಣೆಯಾಗಿರುವ ಬಹಳಷ್ಟು ಘಟನೆಗಳ ಸರಮಾಲೆಯೇ ನಡೆದಿರುವುದು ಶ್ರೀ ದೇವಳದ ಸಿ.ಸಿ. ಫೂಟೇಜಿಗಳಲ್ಲಿ ಅಲ್ಲದೆ ವಿವಿಧ ಮಾಧ್ಯಮಗಳ ವಿಡಿಯೋಗಳಿಂದ ಸಾಕ್ಷವಾಗಿ ಕಾಣಬಹುದು.
ಈ ದೂರಿನ ಯಥಾರ್ಥತೆಯನ್ನು ದೃಢೀಕರಿಸುವ ನಿಟ್ಟಿನಲ್ಲಿ ಅವೆಲ್ಲವುಗಳ ನೇರ ಪುನರ್ ಪರಿಶೀಲನೆ ನಡೆಸಲು ದೂರುದಾರರು ಮನವಿ ಮಾಡಿಕೊಳ್ಳುತ್ತಿದ್ದು, ಅವಶ್ಯ ಕಂಡುಬಂದಲ್ಲಿ ತಾನು ಹಾಜರಾಗಿ ಇನ್ನಷ್ಟು ಸ್ಪಷ್ಟತೆಯನ್ನು ನೀಡುವುದಕ್ಕೆ ಸಿದ್ಧರಾಗಿರುವುದಾಗಿ ತಿಳಿಸಿದ್ದಾರೆ.


ದೇವಾಲಯದ ಧಾರ್ಮಿಕ ಕಾರ್ಯಗಳಲ್ಲಿ ಒಂದಾದ ಜಾತ್ರೋತ್ಸವ ಸಂದರ್ಭ ಕೆಲವೊಂದು ಅನಧಿಕೃತ ವ್ಯಕ್ತಿಗಳು, ಸಾರ್ವಜನಿಕರು ನೇರ ಹಸ್ತಕ್ಷೇಪ ನಡೆಸುವುದು, ತಾವೇ ಮುಂದಾಗುವುದು, ಅಥವಾ ಆ ಕೆಲಸಕ್ಕೆ ಅಧಿಕೃತವಾಗಿ ನಿಯೋಜಿಸಲ್ಪಟ್ಟವರನ್ನೇ ನೇರ ಬದಿಗೆ ಸರಿಸುವುದು ಕಂಡುಬಂದಿದ್ದು, ಮುಂದೆ ದೇವಸ್ಥಾನದ ಪ್ರಸಕ್ತ ಖಾಯಂ ಪದಾರ್ಥಿಗಳಾಗಿರುವ ಶ್ರೀ ನಾಗೇಶ್ ಮತ್ತು ಶ್ರೀ ಬಾಲಕೃಷ್ಣರವರಿಗೆ ಆಡಳಿತ ಮಂಡಳಿ ಜವಾಬ್ದಾರಿ ವಹಿಸಿಕೊಟ್ಟು ಆದೇಶ ಹೊರಡಿಸುವಂತೆ ಹಾಗೂ ಸೂಕ್ತ ಮುಂಜಾಗರೂಕತಾ ವ್ಯವಸ್ಥೆಗಳನ್ನು ಕೈಗೊಳ್ಳಬೇಕಾಗಿ ಮತ್ತು ಸೂಕ್ತ್ತ ನಿಗಾ ವಹಿಸಬೇಕೆಂದು ಮನವಿ ಮಾಡಿದ್ದಾರೆ. ಮತ್ತು ತಾವು ಕೈಗೊಂಡ ಕ್ರಮಗಳ ಕುರಿತು ಮರು ಟಪಾಲಿನಲ್ಲಿ ತಿಳಿಸಲು ದೂರುದಾರರು ವಿನಂತಿಸಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

CONGRESS

ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ

Published

on

ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್‌ಗೆ ಸೂಚನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್‌ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

award

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ

Published

on

ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.

ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.

ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.

Continue Reading

CONGRESS

ಮಂಗಳೂರು ಸಚಿವ ಸಂಪುಟ ಸಭೆ: ವಿವಿಧ ಸಂಘಟನೆಗಳ ಪ್ರತಿಭಟನೆ ಮತ್ತು ಬಿಗಿ ಭದ್ರತೆ

Published

on

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶುಕ್ರವಾರ (ಸೆಪ್ಟೆಂಬರ್ 18) ಆಯೋಜಿಸಲಾದ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರು ಆಗಮಿಸಿದ ವೇಳೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದವು. ಅಬ್ದುಲ್ ರಹೀಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವೆಂದು ಆರೋಪಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಮಂಗಳೂರಿನ ರಾವ್ & ರಾವ್ ಸರ್ಕಲ್ ಬಳಿ ಕಪ್ಪುಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಅದೇ ರೀತಿ, ಜೈಲ್ ಜಾಮರ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಕೀಲರನ್ನು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟ ಸಿ.ಪಿ.ಐ.ಎಂ. ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ತುಳು ಸಂಘಟನೆಯವರು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ‌ ಸಹೋದ್ಯೋಗಿಗಳೊಂದಿಗೆ ಕದ್ರಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಡೀಲ್‌ನಲ್ಲಿರುವ ಪ್ರಜ್ಞಾಸೌಧದ ಎರಡನೇ ಮಹಡಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು 33 ಮಂದಿ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಆಯಾ ಸಭಾಂಗಣದಲ್ಲೇ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಿಗದಿತ ಸಮಯಕ್ಕಿಂತ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Continue Reading

Trending

Copyright © 2025 Deevatige

error: Content is protected !!