court
ನ್ಯಾಯಾಲಯಕ್ಕೇ ‘ಖೆಡ್ಡಾ’ ತೋಡಲು ಹೋಗಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಜನಪ್ರಿಯ ವೈದ್ಯ: ಹಾಸನ ನ್ಯಾಯಾಧೀಶರ ಐತಿಹಾಸಿಕ ಆದೇಶ!
ವಿಮೆ ಹಣದ ಆಸೆಗಾಗಿ ಸುಳ್ಳು ದಾಖಲೆ ಸೃಷ್ಟಿಸಿ, ನ್ಯಾಯಾಲಯವನ್ನೇ ದಾರಿ ತಪ್ಪಿಸಲು ಯತ್ನಿಸಿದ ಹಾಸನದ ಪ್ರಖ್ಯಾತ ‘ಜನಪ್ರಿಯ ಆಸ್ಪತ್ರೆ’ಯ ಮಾಲೀಕ ಡಾ. ಅಬ್ದುಲ್ ಬಶೀರ್ ಮತ್ತು ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಈಗ ನ್ಯಾಯಾಲಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದೇಶದ ನ್ಯಾಯಾಂಗ ಇತಿಹಾಸದಲ್ಲೇ ಅಪರೂಪ ಎನ್ನಬಹುದಾದ ಈ ಪ್ರಕರಣದಲ್ಲಿ, ಸುಳ್ಳು ಸಾಕ್ಷ್ಯ ನುಡಿದ ವೈದ್ಯರ ವಿರುದ್ಧವೇ ಎಫ್ಐಆರ್ (FIR) ದಾಖಲಿಸಲು ಹಾಸನ ನ್ಯಾಯಾಲಯ ಆದೇಶಿಸಿದೆ.
ಹಾಸನ: ಅಪಘಾತ ವಿಮೆ ಹಣ ಪಡೆಯುವ ಉದ್ದೇಶದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ, ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ ಹಾಸನದ ಜನಪ್ರಿಯ ಆಸ್ಪತ್ರೆಯ ಮಾಲೀಕ ಡಾ. ಅಬ್ದುಲ್ ಬಶೀರ್ ಮತ್ತು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಾಗರಾಜ್ ಕೆ. ವಿರುದ್ಧ ಹಾಸನದ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಎಫ್ಐಆರ್ ದಾಖಲಿಸಲು ಆದೇಶಿಸಿದೆ. ನ್ಯಾಯಾಂಗ ಇತಿಹಾಸದಲ್ಲೇ ಅತ್ಯಂತ ಮಹತ್ವದ ಮತ್ತು ಅಪರೂಪದ ಪ್ರಕರಣವಾಗಿ ಇದು ಈಗ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ.
ಪ್ರಕರಣದ ಹಿನ್ನೆಲೆ:
2014ರ ಮೇ 26ರಂದು ಮೊಹಮ್ಮದ್ ಗೌಸ್ ಎಂಬಾತ ತನ್ನ ಮನೆಯ ಮಹಡಿಯಿಂದ ಬಿದ್ದು ಗಾಯಗೊಂಡಿದ್ದನು. ಆತನನ್ನು ತಂದೆ ಫಯಾಜ್ ಅವರು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಂದು ಕರ್ತವ್ಯದಲ್ಲಿದ್ದ ವೈದ್ಯ ಡಾ. ಪ್ರಕಾಶ್ ಅವರು ರೋಗಿಯನ್ನು ಪರೀಕ್ಷಿಸಿ, ಸಣ್ಣಪುಟ್ಟ ಗಾಯಗಳಾಗಿರುವುದನ್ನು ನಮೂದಿಸಿ ಎಂಎಲ್ಸಿ (MLC – Medico Legal Case) ವರದಿ ನೀಡಿದ್ದರು. ಇದು ರೋಗಿಯ ತಂದೆಯ ಸಹಿಯೊಂದಿಗೆ ಸರ್ಕಾರಿ ದಾಖಲೆಯಾಗಿತ್ತು.
ಸುಳ್ಳು ಕಥೆ ಸೃಷ್ಟಿ:
ಆದರೆ, ನಂತರದ ದಿನಗಳಲ್ಲಿ ವಿಮೆ ಹಣ ಪಡೆಯಲು ಈ ಪ್ರಕರಣಕ್ಕೆ ತಿರುವು ನೀಡಲಾಯಿತು. ಮೊಹಮ್ಮದ್ ಗೌಸ್ ತನ್ನ ಬಲಗಾಲಿಗೆ ಗಂಭೀರ ಗಾಯವಾಗಿದ್ದು, ಶಾಶ್ವತ ವೈಕಲ್ಯ ಉಂಟಾಗಿದೆ ಮತ್ತು ಚಿಕಿತ್ಸೆಗಾಗಿ 1 ಲಕ್ಷ ರೂಪಾಯಿ ವೆಚ್ಚವಾಗಿದೆ ಎಂದು ಸುಳ್ಳು ಆರೋಪ ಹೊರಿಸಿ ನ್ಯಾಯಾಲಯದಲ್ಲಿ 10 ಲಕ್ಷ ರೂ. ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದ.
ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಹಾಜರಾದ ‘ಜನಪ್ರಿಯ ಆಸ್ಪತ್ರೆ’ಯ ಮಾಲೀಕ ಡಾ. ಅಬ್ದುಲ್ ಬಶೀರ್, ರೋಗಿ ತನ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ ಎಂದು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು. ರೋಗಿಗೆ ಮಟನ್ ಮಾರ್ಕೆಟ್ನಲ್ಲಿ ಬೈಕ್ ಅಪಘಾತವಾಗಿದೆ ಎಂದು ಸುಳ್ಳು ಕಥೆ ಕಟ್ಟಿದ ಅವರು, ಮೊದಲಿನ ಎಂಎಲ್ಸಿ ವರದಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ಹೊಸದಾಗಿ ಎಂಎಲ್ಸಿ ಸಂಖ್ಯೆಯನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ನ್ಯಾಯಾಧೀಶರ ಕಟು ಟಿಪ್ಪಣಿ:
ಪ್ರಕರಣದ ವಿಚಾರಣೆ ನಡೆಸಿದ ಹಾಸನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಆನಂದ್ ಅವರು, ಅಕ್ರಮವನ್ನು ಕೂಲಂಕಷವಾಗಿ ಪರಿಶೀಲಿಸಿದರು. ವಿಚಾರಣೆ ವೇಳೆ, ಈ ಅಕ್ರಮದಲ್ಲಿ ಹಿಮ್ಸ್ (HIMS) ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಾಗರಾಜ್ ಕೆ. ಅವರೂ ಶಾಮೀಲಾಗಿರುವುದು ಬೆಳಕಿಗೆ ಬಂದಿತು.
ನಿಯಮದ ಪ್ರಕಾರ, ಒಂದು ಬಾರಿ ಎಂಎಲ್ಸಿ ನೋಂದಣಿಯಾದ ಮೇಲೆ ಅದೇ ಸಂಖ್ಯೆಯನ್ನು ಮುಂದುವರಿಸಬೇಕು. ಆದರೆ, ಇಲ್ಲಿ ವೈದ್ಯರು ಉದ್ದೇಶಪೂರ್ವಕವಾಗಿ ಎರಡನೇ ಎಂಎಲ್ಸಿ ಮತ್ತು ಒಪಿಡಿ (OPD) ಸಂಖ್ಯೆಯನ್ನು ಸೃಷ್ಟಿಸಿರುವುದು ಸಾಬೀತಾಗಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, “ವೈದ್ಯಕೀಯ ವೃತ್ತಿಯ ಪಾವಿತ್ರ್ಯತೆಯನ್ನು ಹಾಳು ಮಾಡಿ, ನ್ಯಾಯಾಲಯದ ಹಾದಿ ತಪ್ಪಿಸಲು ಯತ್ನಿಸಲಾಗಿದೆ” ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.
ನ್ಯಾಯಾಲಯದ ಮಹತ್ವದ ಆದೇಶ:
ನ್ಯಾಯಾಲಯವನ್ನೇ ಯಾಮಾರಿಸಲು ಯತ್ನಿಸಿದ ವಾದಿ ಮೊಹಮ್ಮದ್ ಗೌಸ್, ಸಾಕ್ಷಿ ಡಾ. ಅಬ್ದುಲ್ ಬಶೀರ್ ಮತ್ತು ಕರ್ತವ್ಯ ಲೋಪವೆಸಗಿದ ವೈದ್ಯಾಧಿಕಾರಿ ಡಾ. ನಾಗರಾಜ್ ಕೆ. ವಿರುದ್ಧ ತಕ್ಷಣವೇ ಎಫ್ಐಆರ್ ದಾಖಲಿಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ.
ವೈದ್ಯಕೀಯ ರಂಗದಲ್ಲಿ ಇಂತಹ ಅಕ್ರಮಗಳು ನಡೆಯುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಾಲಯದ ಈ ದಿಟ್ಟ ಕ್ರಮವು ಇನ್ಶೂರೆನ್ಸ್ ವಂಚನೆ ಮತ್ತು ವೈದ್ಯಕೀಯ ದಾಖಲೆಗಳ ತಿರುಚುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆಯಾಗಿದೆ
Belthangady
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ: ಎಸಿ ಗೆ ಸತತ ಮೂರನೇ ಬಾರಿ ಮುಖಭಂಗ!
ಬೆಳ್ತಂಗಡಿ: ಸೌಜನ್ಯಾ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸುತ್ತಿರುವ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ದೊಡ್ಡ ಮಟ್ಟದ ಸಮಾಧಾನ ನೀಡಿದೆ. ಪುತ್ತೂರು ಸಹಾಯಕ ಕಮಿಷನರ್ (AC) ನೀಡಿದ್ದ ಮೂರನೇ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಾರ್ಚ್ 24 ರಂದು ತಡೆಯಾಜ್ಞೆ ನೀಡಿದೆ.
ಘಟನೆಯ ವಿವರ:
ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ (AC) ಸ್ಟೆಲ್ಲಾ ವರ್ಗೀಸ್ ಅವರು ಉಜಿರೆ ನಿವಾಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಈ ಗಡಿಪಾರು ಆದೇಶಕ್ಕೆ ತಡೆಯಾಜ್ಞೆ ನೀಡಿ ಮಹತ್ವದ ತೀರ್ಪು ಪ್ರಕಟಿಸಿದೆ.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಗಡಿಪಾರು ಆದೇಶಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿತಲ್ಲದೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ , ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜಾರಿಗೊಳಿಸಿ, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

ಸತತ ಮೂರನೇ ಬಾರಿ ಮುಖಭಂಗ:
ಗಮನಾರ್ಹ ಸಂಗತಿಯೆಂದರೆ, ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಎಸಿ ಸ್ಟೆಲ್ಲಾ ವರ್ಗೀಸ್ ಅವರು ಗಡಿಪಾರು ಆದೇಶ ಹೊರಡಿಸುತ್ತಿರುವುದು ಇದು ಮೂರನೇ ಬಾರಿ. ಈ ಹಿಂದಿನ ಎರಡು ಬಾರಿಯೂ ನ್ಯಾಯಾಲಯವು ಆ ಆದೇಶಗಳನ್ನು ವಜಾಗೊಳಿಸಿತ್ತು ಅಥವಾ ತಡೆ ನೀಡಿತ್ತು. ಈಗ ಮೂರನೇ ಬಾರಿಯೂ ಹೈಕೋರ್ಟ್ ತಡೆ ನೀಡಿರುವುದರಿಂದ ಸರ್ಕಾರಿ ಅಧಿಕಾರಿಗೆ ಕಾನೂನುಬದ್ಧವಾಗಿ ಸತತ ಮೂರನೇ ಬಾರಿ ಹಿನ್ನಡೆಯಾದಂತಾಗಿದೆ.
ಹೋರಾಟ ಮತ್ತು ಗಡಿಪಾರು ರಾಜಕೀಯ
ಧರ್ಮಸ್ಥಳದ ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ಮತ್ತು ನೈಜ ಆರೋಪಿಗಳ ಬಂಧನಕ್ಕಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರು ರಾಜ್ಯಾದ್ಯಂತ ಬೃಹತ್ ಹೋರಾಟ ಸಂಘಟಿಸುತ್ತಿದ್ದಾರೆ. ಈ ಹೋರಾಟವು ಜನಮನ್ನಣೆ ಗಳಿಸುತ್ತಿದ್ದಂತೆಯೇ, ಸಮಾಜದಲ್ಲಿ ಅಶಾಂತಿ ಉಂಟುಮಾಡುತ್ತಿದ್ದಾರೆ ಎಂಬ ಕಾರಣ ನೀಡಿ ಆಡಳಿತ ಯಂತ್ರವು ಅವರ ಮೇಲೆ ಗಡಿಪಾರು ಅಸ್ತ್ರವನ್ನು ಪ್ರಯೋಗಿಸಲು ಮುಂದಾಗಿತ್ತು. ಪ್ರತಿ ಬಾರಿಯೂ ಗಡಿಪಾರು ಆದೇಶ ಬಂದಾಗ ತಿಮರೋಡಿ ಅವರು ಇದು “ರಾಜಕೀಯ ಪ್ರೇರಿತ” ಮತ್ತು “ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ” ಎಂದು ಆರೋಪಿಸುತ್ತಾ ಬಂದಿದ್ದಾರೆ. ಹೈಕೋರ್ಟ್ನ ಈ ತಡೆಯಾಜ್ಞೆಯು ತಿಮರೋಡಿ ಬೆಂಬಲಿಗರಲ್ಲಿ ಹರ್ಷ ತಂದಿದ್ದು, ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂಬ ಸಂದೇಶ ರವಾನೆಯಾದಂತಾಗಿದೆ.
court
ಗ್ರಾಮ ಪಂಚಾಯಿತಿ ಚುನಾವಣೆ ಮತ್ತಷ್ಟು ವಿಳಂಬ: ಹೈಕೋರ್ಟ್ಗೆ ಕಾಲಾವಕಾಶ ಕೇಳಿದ ಸರ್ಕಾರ
ಬೆಂಗಳೂರು: ರಾಜ್ಯದ 5,950 ಗ್ರಾಮ ಪಂಚಾಯಿತಿಗಳ ಚುನಾವಣೆ ಮತ್ತಷ್ಟು ವಿಳಂಬವಾಗುವುದು ಬಹುತೇಕ ಖಚಿತವಾಗಿದೆ. ಚುನಾವಣೆ ನಡೆಸಲು ಅಗತ್ಯವಿರುವ ಮೀಸಲು ಪಟ್ಟಿ ಅಂತಿಮಗೊಳಿಸಲು ಕನಿಷ್ಠ ಮೂರು ತಿಂಗಳು ಕಾಲಾವಕಾಶ ಬೇಕೆಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮೌಖಿಕವಾಗಿ ತಿಳಿಸಿದೆ. ಇದರಿಂದಾಗಿ ಸದ್ಯಕ್ಕೆ ಚುನಾವಣೆ ನಡೆಯುವ ಲಕ್ಷಣಗಳು ಕಾಣುತ್ತಿಲ್ಲ.
ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ಪೀಠವು ಸರ್ಕಾರದ ವಸ್ತುಸ್ಥಿತಿ ವರದಿಯನ್ನು ದಾಖಲಿಸಿಕೊಂಡು ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.
ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಸದ್ಯ 96 ಸಾವಿರಕ್ಕೂ ಅಧಿಕ ಸದಸ್ಯರಿದ್ದು, ಹೊಸದಾಗಿ ಜನಸಂಖ್ಯೆಗೆ ಅನುಗುಣವಾಗಿ ಒಟ್ಟು ಸದಸ್ಯರ ಸಂಖ್ಯೆ ಗುರುತಿಸಲು ನಾಲ್ಕು ವಾರಗಳ ಸಮಯ ಬೇಕಾಗುತ್ತದೆ. ಅದಾದ ನಂತರ ಮೀಸಲು ಪ್ರಕ್ರಿಯೆ ಪೂರ್ಣಗೊಳಿಸಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲು ಕನಿಷ್ಠ 3 ತಿಂಗಳು ಬೇಕಾಗುತ್ತದೆ ಎಂದು ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಕೋರ್ಟ್ಗೆ ತಿಳಿಸಿದ್ದಾರೆ.
ಈಗಾಗಲೇ ಜನಗಣತಿ ಆಧಾರಿಸಿ ಪ್ರತಿ ಪಂಚಾಯಿತಿಗೆ ಎಷ್ಟು ಸದಸ್ಯರಿರಬೇಕೆಂದು ನಿರ್ಧರಿಸಲು ಕ್ಷೇತ್ರ ಮರುವಿಂಗಡಣಾ ಆಯೋಗಕ್ಕೆ ಸೂಚಿಸಲಾಗಿದ್ದು, 15 ದಿನಗಳಲ್ಲಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವಿಚಾರಕ್ಕೆ ಬಂದರೆ, 187 ಸಂಸ್ಥೆಗಳ ಪೈಕಿ 167 ಸಂಸ್ಥೆಗಳ ವಾರ್ಡ್ ಮರುವಿಂಗಡಣೆ ಮುಗಿದಿದ್ದು, 21 ಮಾತ್ರ ಬಾಕಿ ಇವೆ ಎಂದು ಸರ್ಕಾರ ವರದಿಯಲ್ಲಿ ವಿವರಿಸಿದೆ. ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿರುವುದರಿಂದ ಏಪ್ರಿಲ್ ಅಂತ್ಯದವರೆಗೆ ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಪ್ರಗತಿ ಕಂಡುಬರುವ ಸಾಧ್ಯತೆ ಇಲ್ಲ.
Belthangady
ಸೌಜನ್ಯ ಕೊಲೆ ಪ್ರಕರಣ: ರಾಜ್ಯ ಸರ್ಕಾರ ಹಾಗೂ ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್
ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇಂದು ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ನೀಡಿದೆ. ಈ ಮೂಲಕ ಪ್ರಕರಣದಲ್ಲಿ ಮತ್ತೆ ನ್ಯಾಯದ ಭರವಸೆ ಚಿಗುರಿದೆ.

ದಶಕಕ್ಕೂ ಹೆಚ್ಚು ಕಾಲ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಹತ್ವದ ತಿರುವು ಲಭಿಸಿದೆ. ಪ್ರಕರಣದ ಮರು ತನಿಖೆಗೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ಈ ಕುರಿತು ವಿವರಣೆ ನೀಡುವಂತೆ ಕರ್ನಾಟಕ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಹಿನ್ನೆಲೆ ಮತ್ತು ನ್ಯಾಯಾಲಯದ ನಡಾವಳಿ:
ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್ನಲ್ಲಿ ಮರು ತನಿಖೆ ಕೋರಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿದಾರರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲರಾದ ಶೋಭಾ ಗುಪ್ತಾ ಅವರು ಪ್ರಕರಣದ ತನಿಖೆಯಲ್ಲಿ ನಡೆದಿರುವ ಲೋಪದೋಷಗಳನ್ನು ನ್ಯಾಯಾಧೀಶರ ಗಮನಕ್ಕೆ ತಂದರು.

ವಕೀಲರ ಪ್ರಮುಖ ವಾದಗಳು:
ಸ್ಥಳೀಯ ಪೊಲೀಸರು ಮತ್ತು ಸಿಬಿಐ ಎರಡೂ ಸಂಸ್ಥೆಗಳು ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುವಲ್ಲಿ ವಿಫಲವಾಗಿವೆ. ಸೌಜನ್ಯ ಅವರ ಶವ ಸಿಕ್ಕ ಸ್ಥಳದಲ್ಲಿ ಲಭ್ಯವಿದ್ದ ಮಹತ್ವದ ಸಾಕ್ಷ್ಯಗಳನ್ನು ಆಧರಿಸಿ ವೈಜ್ಞಾನಿಕ ತನಿಖೆ ನಡೆಸುವಲ್ಲಿ ತನಿಖಾಧಿಕಾರಿಗಳು ಎಡವಿದ್ದಾರೆ.
ಪ್ರಕರಣದಲ್ಲಿ ಸ್ಥಳೀಯವಾಗಿ ಹಲವರ ಮೇಲೆ ಬಲವಾದ ಅನುಮಾನಗಳಿದ್ದರೂ, ಸಿಬಿಐ ಅವರನ್ನು ಸಮರ್ಪಕವಾಗಿ ವಿಚಾರಣೆಗೆ ಒಳಪಡಿಸಿಲ್ಲ. ಆದ್ದರಿಂದ ಸತ್ಯಾಸತ್ಯತೆ ಹೊರಬರಲು ಸ್ವತಂತ್ರ ಮರು ತನಿಖೆಯ ಅಗತ್ಯವಿದೆ ಎಂದು ವಕೀಲರು ವಾದ ಮಂಡಿಸಿದರು.
ಸುಪ್ರೀಂ ಕೋರ್ಟ್ನ ಆದೇಶ:
ಈ ವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ವಿನೋದ್ ಚಂದ್ರನ್ ಅವರಿದ್ದ ದ್ವಿಸದಸ್ಯ ಪೀಠವು, ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಪ್ರತಿವಾದಿಗಳಾದ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಪ್ರತಿವಾದಿಗಳಿಂದ ವರದಿ ಬಂದ ನಂತರವಷ್ಟೇ ಮರು ತನಿಖೆಯನ್ನು ಯಾರು ನಡೆಸಬೇಕು ಮತ್ತು ಅದರ ಸ್ವರೂಪ ಹೇಗಿರಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ. ಅಲ್ಲದೆ, ಧರ್ಮಸ್ಥಳದ ಅಸಹಜ ಸಾವುಗಳ ತನಿಖೆಗಾಗಿ ರಾಜ್ಯ ಸರ್ಕಾರ ಈಗಾಗಲೇ ರಚಿಸಿರುವ ಎಸ್ಐಟಿ (SIT) ಬಗ್ಗೆಯೂ ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನ ಸೆಳೆದಿದ್ದು, ಅದರ ಮೂಲಕವೇ ಹೆಚ್ಚಿನ ತನಿಖೆ ನಡೆಸಲು ಅವಕಾಶವಿದೆ ಎಂಬ ಅಂಶವನ್ನು ಪ್ರಸ್ತಾಪಿಸಿದ್ದಾರೆ.

ಪ್ರಕರಣದ ಮರುನೋಟ:
2012ರ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಧರ್ಮಸ್ಥಳದ ಬಳಿ 17 ವರ್ಷದ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಮರುದಿನ ಆಕೆಯ ಮೃತದೇಹ ನೇತ್ರಾವತಿ ಸ್ನಾನಘಟ್ಟದ ಬಳಿಯ ಪೊದೆಯಲ್ಲಿ ಸಿಕ್ಕಿತ್ತು. ಅಂದಿನಿಂದ ಇಂದಿನವರೆಗೂ ಸೌಜನ್ಯ ಕುಟುಂಬ ಮತ್ತು ಮಹಿಳಾಪರ ಹೋರಾಟಗಾರರು ನಿರಂತರವಾಗಿ ಹೋರಾಟ ನಡೆಸುತ್ತಲೇ ಇದ್ದಾರೆ. ಕಳೆದೊಂದು ವರ್ಷದಿಂದ ಮಹಿಳಾಪರ ಹೋರಾಟಗಾರರು, ಲೇಖಕಿಯರು ‘ಕೊಂದವರು ಯಾರು?’ ಎಂಬ ಆಂದೋಲನ ಕಟ್ಟಿಕೊಂಡು ಸೌಜನ್ಯ ಮಾತ್ರವಲ್ಲದೆ ಧರ್ಮಸ್ಥಳ ಆಸುಪಾಸಿನಲ್ಲಿ ನಡೆದ ಮಹಿಳೆಯರ ಅಸಹಜ ಸಾವಿನ ತನಿಖೆಗೆ ಆಗ್ರಹಿಸಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ.ಈ ಘಟನೆ ಇಡೀ ರಾಜ್ಯಾದ್ಯಂತ ಜನಕ್ರೋಶಕ್ಕೆ ಕಾರಣವಾಗಿದೆ.
-
crime3 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
