Belthangady
ಯಕ್ಷರಂಗದಲ್ಲಿ ‘ಕೃಷ್ಣ’ನ ಕ್ರೋಧ: ಪ್ರೇಕ್ಷಕರ ಶಿಳ್ಳೆಗೆ ಕೆರಳಿದ ಉಜಿರೆ ಅಶೋಕ ಭಟ್; ವೇದಿಕೆಯಲ್ಲೇ ದರ್ಪದ ಮಾತುಗಳ ಸುರಿಮಳೆ!
ಯಕ್ಷಗಾನ ಎನ್ನುವುದು ಕೇವಲ ಮನರಂಜನೆಯಲ್ಲ, ಅದೊಂದು ಶಿಸ್ತಿನ ಕಲೆ. ಆದರೆ ಇತ್ತೀಚೆಗೆ ವೇದಿಕೆಯ ಮೇಲೆ ಕಲಾವಿದರು ಮತ್ತು ಪ್ರೇಕ್ಷಕರ ನಡುವೆ ನಡೆಯುತ್ತಿರುವ ಸಂಘರ್ಷಗಳು ಕಲಾಭಿಮಾನಿಗಳಲ್ಲಿ ಬೇಸರ ಮೂಡಿಸಿವೆ. ಭಾಗವತರ ಆಲಾಪನೆಗೆ ಶಿಳ್ಳೆ ಹೊಡೆದರೆಂದು ಕಲಾವಿದ ಉಜಿರೆ ಅಶೋಕ ಭಟ್ ಅವರು ಕೃಷ್ಣನ ವೇಷದಲ್ಲಿಯೇ ಪ್ರೇಕ್ಷಕರು ಶಿಳ್ಳೆ ಹೊಡೆದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ವೇದಿಕೆಯಲ್ಲೇ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ.
ನಡೆದದ್ದೇನು?
ಭಾಗವತರ ಪದ್ಯಕ್ಕೆ ಕೃಷ್ಣನ ವೇಷಧಾರಿ ಉಜಿರೆ ಅಶೋಕ ಭಟ್ ಅವರು ಅರ್ಥ ಹೇಳಲು ಸಿದ್ಧರಾಗುತ್ತಿದ್ದಂತೆ, ಭಾಗವತರ ಆಲಾಪನೆಗೆ ಪ್ರೇಕ್ಷಕರ ಸಾಲಿನಿಂದ ಕೇಳಿಬಂದ ಜೋರಾದ ಶಿಳ್ಳೆ ಮತ್ತು ಶಬ್ದಗಳಿಂದ ವಿಚಲಿತರಾಗಿದ್ದಾರೆ.. ಇದರಿಂದ ತೀವ್ರ ಅಸಮಾಧಾನಗೊಂಡ ಕಲಾವಿದರು, ಕಥೆಯ ಪ್ರಸಂಗವನ್ನು ಬದಿಗಿಟ್ಟು ನೇರವಾಗಿ ಪ್ರೇಕ್ಷಕರತ್ತ ತಿರುಗಿದರು. “ಇದು ಶಿಳ್ಳೆ ಹೊಡೆಯುವ ಜಾಗವಲ್ಲ, ಯಕ್ಷಗಾನದ ಗಂಭೀರತೆ ಅರ್ಥ ಮಾಡಿಕೊಳ್ಳಿ” ಎಂಬ ಖಡಕ್ ಮಾತುಗಳೊಂದಿಗೆ ಶಿಸ್ತಿನ ಪಾಠ ಆರಂಭಿಸಿದ್ದಾರೆ- “ನೀವು ಶಿಳ್ಳೆ ನಿಲ್ಲಿಸದಿದ್ದರೆ ನಾನು ಹೋಗುತ್ತೇನೆ. ಇದು ದೋಂಬರಾಟವೇ? ಇದು ಯಕ್ಷಗಾನವೇ? ಕೋಳಿ ಕಟ್ಟವೇ? ಕಂಬಳವೇ? ಎಂದು ವೇದಿಕೆಯಲ್ಲೇ ಪ್ರಶ್ನೆ ಮಾಡಿದ್ದಾರೆ. ಶಿಳ್ಳೆ ಹಾಕಿದವರು ಯಾರು? ಹುಚ್ಚರನ್ನು ಬೆಳೆಸಬೇಡಿ, ಕಲಾವಿದರನ್ನು ಬೆಳೆಸಿ, ಆಗದೆ ಇದ್ದರೆ ಬನ್ಸ್ ತಿಂದು ಹೋಗಿ, ಭಾಗವತರ ಕಂಠ ಹಾಳು ಮಾಡುತ್ತೀರಾ ? ನಾವು ಯಕ್ಷಗಾನ ಮಾಡಬೇಕೋ? ಎಂದು ಆಕ್ರೋಶಿತರಾಗಿ ಹೇಳುತ್ತಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದ ವತಿಯಿಂದ ಯಕ್ಷಗಾನ ಮಂಡಳಿಯವರು ಕುಂದಾಪುರದ ಹನ್ನಾಬೈಲಿನಲ್ಲಿ ಮಾ.26 ರಂದು ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ, ಭಾಗವತರು ಪದ ಹಾಡುತ್ತಿರುವ ಸಂದರ್ಭದಲ್ಲಿ ಆಲಾಪನೆ ಮಾಡುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ ಹಾಕಿದ್ದಾರೆ. ಪದ್ಯ ಮುಗಿದ ನಂತರ ಕೃಷ್ಣ ವೇಷಧಾರಿ ಅಶೋಕ್ ಭಟ್ ಗರಂ ಆಗಿ ಶಿಳ್ಳೆ ಹೊಡೆದ ಪ್ರೇಕ್ಷಕರನ್ನು ಉದ್ದೇಶಿಸಿ ಹೇಳಿದ ಮಾತುಗಳು ವೈರಲ್ ಆಗಿದೆ.
ಕಲಾವಿದನ ಆಕ್ರೋಶಕ್ಕೆ ಕಾರಣವೇನು?
ಉಜಿರೆ ಅಶೋಕ ಭಟ್ ಅವರ ವಾದದ ಪ್ರಕಾರ, ಯಕ್ಷಗಾನದ ಅರ್ಥಗಾರಿಕೆ ಎನ್ನುವುದು ಏಕಾಗ್ರತೆಯಿಂದ ನಡೆಯಬೇಕಾದ ಪ್ರಕ್ರಿಯೆ. ಪ್ರೇಕ್ಷಕರು ಅನಗತ್ಯವಾಗಿ ಶಿಳ್ಳೆ ಹಾಕುವುದು ಅಥವಾ ಗದ್ದಲ ಮಾಡುವುದು ಕಲೆಯ ಗೌರವಕ್ಕೆ ಧಕ್ಕೆ ತರುತ್ತದೆ. “ನಾವು ಕಷ್ಟಪಟ್ಟು ಕಲೆ ಪ್ರದರ್ಶಿಸುವಾಗ ಶಿಸ್ತು ಇರಬೇಕು” ಎನ್ನುವುದು ಅವರ ಆಕ್ರೋಶದ ಹಿಂದಿನ ಆಶಯವಾಗಿತ್ತು.
ಪ್ರೇಕ್ಷಕ ಪ್ರಭುಗಳನ್ನು ಮರೆತರೇ ಕಲಾವಿದರು?
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪರ-ವಿರೋಧದ ಚರ್ಚೆಗಳು ಜೋರಾಗಿವೆ:
ಯಕ್ಷಗಾನದ ಪಾವಿತ್ರ್ಯತೆ ಉಳಿಯಬೇಕು, ಕಲಾವಿದನಿಗೆ ಗೌರವ ಸಿಗಬೇಕು. ಶಿಳ್ಳೆ ಹಾಕುವುದು ಕಲೆಗೆ ಮಾಡುವ ಅವಮಾನ ಎಂದು ಒಂದು ವರ್ಗ ವಾದಿಸಿದರೆ , ವೇದಿಕೆಯ ಮೇಲೆ ಕೃಷ್ಣನಂತಹ ದೈವಸ್ವರೂಪಿ ಪಾತ್ರಧಾರಿ ಕಲಾವಿದನಿಗೆ ಸಂಯಮ ಇರಬೇಕು. ಪ್ರೇಕ್ಷಕರನ್ನು ಹೀನಾಯವಾಗಿ ಕಾಣುವುದು ಒಬ್ಬ ವೃತ್ತಿಪರ ಕಲಾವಿದನ ಲಕ್ಷಣವಲ್ಲ. ಕಲಾವಿದನ ಮಾತುಗಳಲ್ಲಿ ಸ್ಪಷ್ಟವಾಗಿ ದರ್ಪ, ಅಹಂಕಾರ ಮತ್ತು ತನ್ನ ಸಾಧನೆಯ ಮೇಲಿನ ಅತಿಯಾದ ಹೆಮ್ಮೆಯ ಭಾವನೆಗಳು ಕಾಣುತ್ತಿರುವುದರಿಂದ ಆತನು ತನ್ನನ್ನು ಇತರರಿಗಿಂತ ಮೇಲಿರುವವನಾಗಿ ಚಿತ್ರಿಸಿಕೊಂಡು, ತನ್ನ ಸಾಧನೆಗಳನ್ನು ದೊಡ್ಡದಾಗಿ ಹೇಳಿಕೊಳ್ಳುವ ವೇಳೆ ಇತರರ ಕೊಡುಗೆಗಳನ್ನು ಕಡಿಮೆ ಮಾಡುವ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದು ಕಂಡುಬಂದಿದೆ. ಒಬ್ಬ ಕಲಾವಿದ ಇವತ್ತು ಈ ಮಟ್ಟಕ್ಕೆ ಬೆಳೆಯಬೇಕಾದರೆ ಪ್ರೇಕ್ಷಕರ ಪ್ರೋತ್ಸಾಹವೇ ಕಾರಣ. ಅಭಿಮಾನದಿಂದ ಪ್ರೇಕ್ಷಕರು ಹಾಕುವ ಶಿಳ್ಳೆಯನ್ನು ಸಕಾರಾತ್ಮಕವಾಗಿ ಸ್ವೀಕರಿಸಬೇಕು. ಪ್ರೇಕ್ಷಕರಿಲ್ಲದೆ ಕಲೆ ಇಲ್ಲ, ಕಲಾವಿದರಿಲ್ಲದೆ ಸಂಸ್ಕೃತಿ ಇಲ್ಲ. ಇಬ್ಬರ ನಡುವೆ ಸಮನ್ವಯ ಇರಬೇಕಾದ ಅನಿವಾರ್ಯತೆ ಇಂದು ಎದುರಾಗಿದೆ. ಒಬ್ಬ ಕಲಾವಿದ ಇವತ್ತು ಈ ಮಟ್ಟಕ್ಕೆ ಬೆಳೆಯಬೇಕಾದರೆ ಅದಕ್ಕೆ ಪ್ರೇಕ್ಷಕರ ಪ್ರೋತ್ಸಾಹ ಮತ್ತು ಅಭಿಮಾನವೇ ಕಾರಣ. ಶಿಳ್ಳೆ ಎನ್ನುವುದು ಅಭಿಮಾನದ ಸಂಕೇತವೂ ಆಗಿರಬಹುದು. ಸಣ್ಣ ತಪ್ಪುಗಳಿಗಾಗಿ ಪ್ರೇಕ್ಷಕ ಪ್ರಭುಗಳನ್ನು ವೇದಿಕೆಯ ಮೇಲಿಂದಲೇ ಹಿಯಾಳಿಸುವುದು ಕಲಾವಿದನಿಗೆ ಶೋಭೆ ತರುವುದಿಲ್ಲ. “ಕಲಾವಿದ ಬೆಳೆಯಲು ಬೇಕಾದ ಪ್ರೇಕ್ಷಕ ಸ್ನೇಹಿ ಮನೋಭಾವವನ್ನು ಅಶೋಕ ಭಟ್ ಅವರು ಮರೆತರೇ?” ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ವೇದಿಕೆಯ ಮೇಲಿಂದ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಳ್ಳುವುದು ಕಲಾವಿದನ ಅಹಂಕಾರವನ್ನು ತೋರಿಸುತ್ತದೆ. ಎಂಬುವುದು ಕಲಾಭಿಮಾನಿಗಳ ಕಡೆಯಿಂದ ಕೇಳಿಬರುತ್ತಿರುವ ವಾದಗಳು ಕಲಾವಿದನ ಈ ದರ್ಪದ ನಡೆ ಯಕ್ಷಗಾನದ ಆಂತರಿಕ ಶಿಸ್ತನ್ನು ಎತ್ತಿ ಹಿಡಿಯುವುದೋ ಅಥವಾ ಪ್ರೇಕ್ಷಕರನ್ನು ಕಲೆಯ ಸಂಭ್ರಮದಿಂದ ದೂರ ತಳ್ಳುವುದೋ ಎಂಬ ಬಗ್ಗೆ ಈಗ ಗಂಭೀರ ಚರ್ಚೆ ನಡೆಯುತ್ತಿದೆ.
ವೇದಿಕೆಯಲ್ಲಿ ಅರ್ಥ ಹೇಳಲು ಬಂದ ಪಾತ್ರಧಾರಿ ಭಾಗವತರಲ್ಲಿ ಅನುಮತಿ ಕೇಳಿದ ಬಳಿಕ ತನ್ನ ಬುದ್ಧಿವಾದದ ಮಾತು ಆರಂಭಿಸಬೇಕಾಗಿತ್ತು. ಅಥವಾ ವ್ಯವಸ್ಥಾಪಕರಲ್ಲಿ ತಿಳಿಸಬೇಕಿತ್ತು ಅದ್ಯಾವುದೂ ಇಲ್ಲದೇ ಏಕಾಏಕಿ ಶಿಳ್ಳೆ ಹೊಡೆದ ಪ್ರೇಕ್ಷಕರಿಗೆ ಬುದ್ಧಿ ಮಾತಿನ ಮೂಲಕ ವೇದಿಕೆಯಲ್ಲೇ ತನ್ನ ಅಹಂಕಾರ ಪ್ರವೃತ್ತಿಯನ್ನು ಅಶೋಕ್ ಭಟ್ ಸಾಬೀತು ಪಡಿಸಿರುವುದು ಯಕ್ಷಾಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
Belthangady
ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು – ಕಾರ್ಮಿಕರ ಮೇಲೆ ಅನುಮಾನ
ಬೆಳ್ತಂಗಡಿ: ಮನೆಯವರು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಸುಮಾರು 15.82 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಆಲಂದಿಲದಲ್ಲಿ ನಡೆದಿದೆ.
ಆಲಂದಿಲ ನಿವಾಸಿ ನೌಫಾಲ್ ಬಿ.ಎಂ. (34) ಎಂಬವರು ಈ ಬಗ್ಗೆ ದೂರು ನೀಡಿದ್ದಾರೆ.
ಘಟನೆಯ ವಿವರ:
ಅವರು ನೀಡಿದ ದೂರಿನಂತೆ ಸೆ. 13 ರಂದು ಮಧ್ಯಾಹ್ನ ಸುಮಾರು 1.45ಕ್ಕೆ ಪತ್ನಿ, ಮಕ್ಕಳು ಹಾಗೂ ತಾಯಿಯನ್ನು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಗುರುವಾಯನಕೆರೆಗೆ ಕಳುಹಿಸಿದ ಬಳಿಕ ನೌಫಾಲ್ ಕೂಡ ಮನೆಗೆ ಬೀಗ ಹಾಕಿ ತರಕಾರಿ ವ್ಯಾಪಾರದ ಕೆಲಸಕ್ಕಾಗಿ ಬೆಳ್ತಂಗಡಿಗೆ ತೆರಳಿದ್ದರು.
ಸೆ.14 ರಂದು ಫಾಲ್ಸ್ ಸೀಲಿಂಗ್ ವೈರಿಂಗ್ ಕೆಲಸಕ್ಕಾಗಿ ಕಾರ್ಮಿಕರನ್ನು ಮನೆಗೆ ಕರೆಸಲಾಗಿತ್ತು. ಮದ್ದಡ್ಕದ ಫಾರೂಕ್ ಎಂಬವರು ಕುದ್ರಡ್ಕದ ಅಶ್ರಫ್ ಹಾಗೂ ಶಿರ್ಲಾಲಿನ ಸುಲೈಮಾನ್ ಅವರನ್ನು ಕರೆದುಕೊಂಡು ಬಂದು ಮನೆಯಲ್ಲಿ ಕೆಲಸ ಮಾಡಿದ್ದರು. ಈ ವೇಳೆ ನೌಫಾಲ್ ಅವರ ತಮ್ಮ ಮಹಮ್ಮದ್ ನೌಷಾದ್ ಮನೆಯಲ್ಲಿದ್ದರು.
ಅದೇ ದಿನ ರಾತ್ರಿ ಸುಮಾರು 8.30ಕ್ಕೆ ನೌಫಾಲ್ ಕುಟುಂಬದೊಂದಿಗೆ ಮನೆಗೆ ವಾಪಸ್ ಬಂದಾಗ, ಬೆಡ್ರೂಂನ ಗೋದ್ರೇಜ್ನಲ್ಲಿ ಇಟ್ಟಿದ್ದ ಚಿನ್ನದ ಬಾಕ್ಸ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.
ಪರಿಶೀಲನೆ ನಡೆಸಿದಾಗ 32 ಗ್ರಾಂ ಮತ್ತು 26 ಗ್ರಾಂ ತೂಕದ ಎರಡು ಚಿನ್ನದ ಸರಗಳು, ಮಗುವಿನ ಚಿನ್ನದ ಸರ, ಕಾಲುಚೈನು, ಬ್ರೇಸ್ಲೆಟ್ ಸೇರಿದಂತೆ 15 ಲಕ್ಷ 82 ಸಾವಿರ ರೂ. ಮೌಲ್ಯದ ಒಟ್ಟು 113 ಗ್ರಾಂ ತೂಕದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವಾಗಿರುವುದು ಬೆಳಕಿಗೆ ಬಂದಿದೆ.
ಇದಲ್ಲದೆ ನೌಫಾಲ್ ಅವರ ತಾಯಿಯ ಗೋದ್ರೇಜ್ನಲ್ಲಿದ್ದ ಒಟ್ಟು 7 ಗ್ರಾಂ ತೂಕದ ಮೂರು ಉಂಗುರಗಳೂ ಕಾಣೆಯಾಗಿರುವುದು ಪತ್ತೆಯಾಗಿದೆ.
ಮನೆಯ ಗೋದ್ರೇಜ್ನ ಕೀ ಗೋದ್ರೇಜ್ನಲ್ಲಿಯೇ ಇದ್ದು, ಮನೆಯವರು ಹೊರಗಿದ್ದ ಅವಧಿಯಲ್ಲಿ ಯಾರೋ ಮನೆಗೆ ಪ್ರವೇಶಿಸಿ ಗೋದ್ರೇಜ್ ತೆರೆದು ಕಳವು ಮಾಡಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.
ವೈರಿಂಗ್ ಕೆಲಸಕ್ಕೆ ಬಂದಿದ್ದ ಅಶ್ರಫ್, ಫಾರೂಕ್ ಹಾಗೂ ಸುಲೈಮಾನ್ ಅವರ ಮೇಲೆ ಅನುಮಾನವಿರುವುದಾಗಿ ನೌಫಾಲ್ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.15 ರಂದು ಕಲಂ 331(3), 331(4), 305 BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
arrest
ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.
ಘಟನೆ ವಿವರ:
ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.
ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರು ಮತ್ತು ಬಂಧನ:
ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.
ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.
accident
ಬೆಳ್ತಂಗಡಿ: ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತ; ಕಾರು ಚಾಲಕನಿಗೆ ಗಂಭೀರ ಗಾಯ
ಕೊಕ್ಕಡ: ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಕಾರು ಹಾಗೂ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿರುವ ಘಟನೆ ಸೆ. 12ರ ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಕಾರಿನಲ್ಲಿದ್ದ ಹಲವರು ಗಾಯಗೊಂಡಿದ್ದು, ಈ ವೇಳೆ ಕಾರು ಚಾಲಕನ ಕೈ ಮುರಿತವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
