accident
ಕನ್ಯಾನ: ಬಾಕ್ಸೈಟ್ ಗಣಿಗಾರಿಕೆ ಸ್ಥಳದಲ್ಲಿ ಭೀಕರ ದುರಂತ; ಟಿಪ್ಪರ್ ಲಾರಿ ಚಲಿಸಿ ಚಾಲಕ ಸ್ಥಳದಲ್ಲೇ ಸಾವು
ವಿಟ್ಲ: ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಅಕ್ರಮ ಎನ್ನಲಾದ ಬಾಕ್ಸೈಟ್ ದಂಧೆ ನಡೆಯುವ ಸ್ಥಳಕ್ಕೆ ತೆರಳಿದ್ದ ಲಾರಿಯಲ್ಲಿ ತಾಂತ್ರಿಕ ವೈಫಲ್ಯ ಕಾಣಿಸಿಕೊಂಡಿತ್ತು. ಇದನ್ನು ಸರಿಪಡಿಸಲು ಚಾಲಕ ಮಹೇಶ್ ಅವರು ಲಾರಿಯ ಕೆಳಗೆ ಹೋಗಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ಲಾರಿ ಮುನ್ನಡೆದಿದ್ದರಿಂದ, ಅವರು ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ನಡೆದ ತಕ್ಷಣ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ ಸದ್ಗುರು ಅಂಬ್ಯುಲೆನ್ಸ್ ಚಾಲಕರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಲಾರಿಯ ಅಡಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ಮೃತದೇಹವನ್ನು ವಿಟ್ಲದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ವಿಟ್ಲ ಠಾಣಾ ಅಕ್ರ 132/2026 ಕಲಂ: 106(1) BNS 2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

ಸಾರ್ವಜನಿಕರ ಆಕ್ರೋಶ: ಪ್ರದೇಶದಲ್ಲಿ ರಾಜಕೀಯ ನಾಯಕರು ಪಕ್ಷಬೇಧ ಮರೆತು ನಡೆಸುತ್ತಿದ್ದಾರೆ ಎನ್ನಲಾದ ಈ ಬಾಕ್ಸೈಟ್ ದಂಧೆಯ ವಿರುದ್ಧ ಸ್ಥಳೀಯ ನಾಗರಿಕರು ನಿರಂತರವಾಗಿ ಹಿಡಿಶಾಪ ಹಾಕುತ್ತಿದ್ದಾರೆ. ಈ ಹಿಂದೆ ಬಾಕ್ಸೈಟ್ ಲಾರಿಗಳ ಅಟ್ಟಹಾಸ ಹಾಗೂ ದಬ್ಬಾಳಿಕೆಯಿಂದಾಗಿ ವಿಟ್ಲ ಸೇರಿದಂತೆ ಸುತ್ತಮುತ್ತಲಿನ ವಾಹನ ಚಾಲಕರು ಮತ್ತು ಸಾರ್ವಜನಿಕರು ತೀವ್ರ ಹೈರಾಣಾಗಿದ್ದರು. ಇದರ ವಿರುದ್ಧ ಪ್ರತಿಭಟನೆಗಳು ನಡೆದಿದ್ದರೂ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ದಂಧೆಕೋರರೊಂದಿಗೆ ಶಾಮೀಲಾಗಿದ್ದಾರೆ ಎಂದು ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ. ಸಾರ್ವಜನಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಈ ದಂಧೆಯು, ಇಂದು ಸ್ವತಃ ತನ್ನದೇ ಲಾರಿಯ ಚಾಲಕನ ಬಲಿ ಪಡೆದಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ




accident
ಬ್ರೇಕಿಂಗ್ ನ್ಯೂಸ್: ಕಾರ್ಕಳ – ಮೂಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರು
ಕಾರ್ಕಳ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ. ರಮಾನಾಥ ರೈ ಹಾಗೂ ಅವರ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದಿಂದ ಮೂಡುಬಿದ್ರೆಯತ್ತ ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿನ (KA 70 A 0099) ನಡುವೆ ಮುಖಾಮುಖಿ ಭೀಕರ ಡಿಕ್ಕಿ ಸಂಭವಿಸಿದೆ.

ಘಟನೆಯ ವಿವರ ಹಾಗೂ ರಕ್ಷಣಾ ಕಾರ್ಯ: ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಜುಗಳು ಪುಡಿಯಾಗಿವೆ. ಕಾರಿನ ಒಳಗೆ ಏರ್ಬ್ಯಾಗ್ಗಳು ತೆರೆದುಕೊಂಡಿದ್ದರೂ ಸಹ, ಡಿಕ್ಕಿಯ ತೀವ್ರತೆಯಿಂದಾಗಿ ಮುಂಭಾಗದಲ್ಲಿ ಕುಳಿತಿದ್ದ ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಒಳಗೆ ಸಿಲುಕಿಕೊಂಡಿದ್ದರು. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಸಾರ್ವಜನಿಕರು ತಕ್ಷಣವೇ ಧಾವಿಸಿ ಬಂದು, ಅತ್ಯಂತ ಪ್ರಯಾಸಪಟ್ಟು ಅವರನ್ನ ಕಾರಿನಿಂದ ಹೊರತೆಗೆದಿದ್ದಾರೆ.

ಆಸ್ಪತ್ರೆಗೆ ದಾಖಲು: ಅಪಘಾತದಲ್ಲಿ ಗಾಯಗೊಂಡಿರುವ ರಮಾನಾಥ ರೈ ಹಾಗೂ ಕಾರು ಚಾಲಕರನ್ನು ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಹಾಗೂ ಕಾರಿನಲ್ಲಿದ್ದ ಇತರೆ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ.
ರಮಾನಾಥ ರೈಯವರು ಒಡಿಯೂರಿನಲ್ಲಿ ನಡೆದ ಒಡಿಯೂರು ಶ್ರೀ ವಿಕಾಸವಾಹಿನಿ ಸಂಭ್ರಮ ಹಾಗೂ ನೇರಳಕಟ್ಟೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಂಗಳೂರಿನ ಕಾರ್ಯಕ್ರಮದ ಮುಗಿಸಿ ಕಾರ್ಕಳದ ಮತ್ತೊಂದು ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
accident
ಬಂಟ್ವಾಳ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಣೆಯಲ್ಲಿ ದುರ್ಘಟನೆ; ಕೌಟುಂಬಿಕ ಕಲಹದ ಹಿನ್ನೆಲೆ ಮಕ್ಕಳನ್ನು ಬಾವಿಗೆ ಎಸೆದ ತಾಯಿ – ಒಂದು ಮಗು ಸಾವು, ಮತ್ತೊಂದು ಮಗು ಆಸ್ಪತ್ರೆಗೆ ದಾಖಲು
ಬಂಟ್ವಾಳ: ದಿನಾಂಕ: 19.09.2026ರಂದು ಮಧ್ಯಾಹ್ನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ಣೆ ಮೈರಕಟ್ಟೆಯಲ್ಲಿ ನಡೆದ ದೊಡ್ಡ ದುರಂತವೊಂದು ಬೆಳಕಿಗೆ ಬಂದಿದೆ. ಪೆರ್ಣೆಯಲ್ಲಿ ವಾಸ್ತವವಿರುವ ಸಿನಾನ್ (32) ಹಾಗೂ ನೂರುನ್ನಿಸಾ (28) ಎಂಬ ದಂಪತಿಗಳ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿದ್ದು, ಈ ವೇಳೆ ಕೋಪಗೊಂಡ ಆರೋಪಿತೆ ನೂರುನ್ನಿಸಾ ಮನೆಯಲ್ಲಿದ್ದ ಆಕೆಯ ಸುಮಾರು ಮೂರುವರೆ ವರ್ಷದ ಮಗು ಹಾಗೂ ಗಂಡನ ತಂಗಿಯ ಮಗುವನ್ನು ಮನೆ ಸಮೀಪದ ಕುಡಿಯುವ ನೀರಿನ ಬಾವಿಗೆ ಎಸೆದಿರುವುದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ.

ಆದರೆ, ಬೆಳಿಗ್ಗೆ ಸ್ಥಳೀಯ ವಾಹಿನಿಗಳಲ್ಲಿ ಹಾಗೂ ಆರಂಭಿಕ ವರದಿಗಳಲ್ಲಿ ಮಕ್ಕಳು ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದಿವೆ ಎಂದು ಪ್ರಸಾರವಾಗಿತ್ತು. ಪ್ರತ್ಯಕ್ಷದರ್ಶಿಗಳು ಹಾಗೂ ಆರಂಭಿಕ ಮಾಹಿತಿಯಂತೆ, ಪೆರ್ಣೆ ಮೈರಕಟ್ಟೆಯಲ್ಲಿ ಮಕ್ಕಳು ಬಾವಿಯ ಸಮೀಪವಿದ್ದ ವೇಳೆ ಆಲಿಯಾ (4) ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ರಕ್ಷಿಸಿ ಮೇಲಕ್ಕೆ ಕರೆತಂದಿದ್ದರು. ಬಳಿಕ ಮತ್ತೊಂದು ಮಗು ಕೂಡ ಬಾವಿಗೆ ಬಿದ್ದಿರುವ ಬಗ್ಗೆ ಆಲಿಯಾ ಮಾಹಿತಿ ನೀಡಿದ್ದಾಳೆ ಎನ್ನಲಾಗಿದ್ದು, ಸ್ಥಳೀಯರು ಪರಿಶೀಲಿಸಿದಾಗ ರಬೀಹ್ (2) ಬಾವಿಯಲ್ಲಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ತಕ್ಷಣ ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ದರೂ ರಬೀಹ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪ್ರಸಾರವಾಗಿತ್ತು.

ನೈಜ ಸತ್ಯ ಬಯಲುಗೊಳಿಸಿದ ಪೊಲೀಸರು:
ಸ್ಥಳೀಯ ಮಾದ್ಯಮಗಳಲ್ಲಿ ಆರಂಭದಲ್ಲಿ ಆಕಸ್ಮಿಕ ಸಾವು ಎಂದು ಬಿತ್ತರವಾಗಿದ್ದರೂ, ಪೊಲೀಸ್ ತನಿಖೆಯಿಂದ ಅಸಲಿ ವಿಚಾರ ಹೊರಬಂದಿದೆ. ದಂಪತಿಗಳ ನಡುವಿನ ಫೋನ್ ಕರೆಯ ಕೌಟುಂಬಿಕ ಕಲಹದ ರಭಸದಲ್ಲಿ ಕೋಪಗೊಂಡ ಆರೋಪಿತೆ ನೂರುನ್ನಿಸಾ ತಾನೇ ಸ್ವತಃ ಮಕ್ಕಳನ್ನು ಬಾವಿಗೆ ಎಸೆದಿರುವುದು ಎಸ್ಪಿ ನೀಡಿರುವ ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ. ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ಮೇಲಕ್ಕೆ ಎತ್ತಿದ1ರ ಪೈಕಿ ಗಂಡನ ತಂಗಿಯ ಮಗು (ರಬೀಹ್ – 3) ಮೃತಪಟ್ಟಿದ್ದು, ಆರೋಪಿತೆಯ ಮಗು (ಆಲಿಯಾ – 4) ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 121/2026 ರಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿತೆ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
accident
ಕನ್ಯಾನ: ಮದ್ಯದ ನಶೆಯಲ್ಲಿ 18 ಚಕ್ರದ ಲಾರಿ ಚಾಲನೆ – ವಿದ್ಯುತ್ ಕಂಬಕ್ಕೆ ಡಿಕ್ಕಿ, ಅದೃಷ್ಟವಶಾತ್ ತಪ್ಪಿದ ಅನಾಹುತ
ಕನ್ಯಾನ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಕ್ರೀಟ್ ರಸ್ತೆಯಲ್ಲಿ ನಿಯಮ ಮೀರಿ ಸಂಚರಿಸುತ್ತಿದ್ದ 18 ಚಕ್ರಗಳ ಬೃಹತ್ ಬಾಕ್ಸೈಟ್ ಸಾಗಾಟದ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಎಸಗಿದ ಘಟನೆ ನಡೆದಿದೆ.
ಕನ್ಯಾನದಿಂದ ಪಾದೆಕಲ್ಲು ಪೆರೋಡಿ ಸರವು ಪ್ರದೇಶಕ್ಕೆ ಬಾಕ್ಸೈಟ್ (ಮಣ್ಣು) ಸಾಗಿಸಲು ತೆರಳುತ್ತಿದ್ದ AP 39 VD 8043 ಸಂಖ್ಯೆಯ ಬೃಹತ್ ಲಾರಿಯನ್ನು ಚಿಕ್ಕಬಳ್ಳಾಪುರ ಬಾಗೇಪಲ್ಲಿ ಮೂಲದ ನಾಗರಾಜ್ ಎಂಬಾತ ಮದ್ಯದ ನಶೆಯಲ್ಲಿ ಚಲಾಯಿಸುತ್ತಿದ್ದ ಎನ್ನಲಾಗಿದೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಂಬ ಛಿದ್ರಗೊಂಡು ತಂತಿಗಳ ಸಹಿತ ಲಾರಿಯ ಮೇಲೆ ಬಿದ್ದಿದೆ. ಆದಾಗ್ಯೂ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯ ನಿವಾಸಿಗಳು ಮದ್ಯ ಸೇವಿಸಿ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗ್ರಾಮಸ್ಥರ ತೀವ್ರ ಆಕ್ರೋಶ:
ಗ್ರಾಮಾಂತರ ಕಾಂಕ್ರೀಟ್ ರಸ್ತೆಯಲ್ಲಿ 12.5 ಟನ್ ಸಾಮರ್ಥ್ಯದ (6 ಚಕ್ರಗಳ) ವಾಹನಗಳಿಗಿಂತ ಹೆಚ್ಚಿನ ಭಾರದ ಸರಕು ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಹೀಗಿದ್ದರೂ ಸಾರಿಗೆ ನಿಯಮಗಳನ್ನು ಗಾಳಿಗೆ ತೂರಿ ಬೃಹತ್ 18 ಚಕ್ರದ ಲಾರಿಗಳು ಅಕ್ರಮವಾಗಿ ಸಂಚರಿಸುತ್ತಿದ್ದರೂ ಕನ್ಯಾನ ಗ್ರಾಮ ಪಂಚಾಯತ್ ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿದೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
