Connect with us

Belthangady

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ: ಆಣೆ-ಪ್ರಮಾಣಕ್ಕೆ ಸಿದ್ಧತೆ ?

Published

on

ವಿಧಾನಪರಿಷತ್‌ ಚುನಾವಣೆ (Legislative Council Elections) ರಾಜ್ಯ ರಾಜಕಾರಣದಲ್ಲಿ ಕ್ರಾಸ್​ ವೋಟಿಂಗ್​ ಬಿರುಗಾಳಿ ಎಬ್ಬಿಸಿದೆ.  ಅಡ್ಡ ಮತದಾನವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ, ಇದೀಗ ಅಡ್ಡ ಮತದಾನದ (Cross Voting) ಮಾಡಿದವರನ್ನ ಕಂಡು ಹಿಡಿಯಲು ಧರ್ಮಸ್ಥಳ ಮಂಜುನಾಥನ ಮೊರೆ ಹೋಗ್ತಿದ್ದಾರೆ. ಧರ್ಮಸ್ಥಳದಲ್ಲೇ ಶಾಸಕಾಂಗ ಸಭೆ ಆಯೋಜಿಸಿದ್ದು, ತಮ್ಮ ಪಕ್ಷದ ಶಾಸಕರಿಂದ ಆಣೆ ಪ್ರಮಾಣ ಮಾಡಿಸಲು ಬಿಜೆಪಿ ನಾಯಕರು ಮುಂದಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ

ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ‘ಅಡ್ಡ ಮತದಾನ’ (ಕ್ರಾಸ್ ವೋಟಿಂಗ್) ನಡೆದಿದೆ ಎನ್ನಲಾದ ವಿವಾದ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರಾವಳಿಯ ಶಾಸಕರೊಬ್ಬರ ಮೇಲೆಯೂ ಗುಮಾನಿಯಿದ್ದು, ಅವರೂ ಸೇರಿದಂತೆ ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆಹಚ್ಚಲು ಮತ್ತು ಪಕ್ಷದೊಳಗಿನ ಗೊಂದಲಗಳಿಗೆ ತೆರೆ ಎಳೆಯಲು ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಮಹತ್ವದ ತೀರ್ಮಾನ ಕೈಗೊಂಡಿದೆ.

ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ: ಮುಂದಿನ ರಾಜಕೀಯ ನಡೆ ಹಾಗೂ ಶಾಸಕರಲ್ಲಿ ಒಗ್ಗಟ್ಟು ಮೂಡಿಸುವ ನಿಟ್ಟಿನಲ್ಲಿ ಅತಿ ಶೀಘ್ರದಲ್ಲೇ, ಅಂದರೆ ಇದೇ ಗುರುವಾರ ಅಥವಾ ಶುಕ್ರವಾರದಂದು ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ (BJP Legislative Party) ವಿಶೇಷ ಸಭೆಯನ್ನು ಕರೆಯಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀರ್ಮಾನಿಸಿದ್ದಾರೆ.

ಮಂಜುನಾಥನ ಸನ್ನಿಧಿಯಲ್ಲಿ ಆಣೆ-ಪ್ರಮಾಣದ ಬೆದರಿಕೆ: ಅಡ್ಡ ಮತದಾನದ ತೀವ್ರ ಪೇಚಿಗೆ ಸಿಲುಕಿರುವ ಕಮಲ ಪಾಳಯ, ಶಾಸಕರ ಮುಂದೆ ‘ದೇವರ ಆಣೆ’ಯ ಬೆದರಿಕೆಯ ಕತ್ತಿ ತೂಗುಹಾಕಿದೆ. ಧರ್ಮಸ್ಥಳದಲ್ಲಿ ಸಭೆ ಮುಗಿದ ನಂತರ ಪಕ್ಷದ ಎಲ್ಲಾ 63 ಶಾಸಕರಿಂದಲೂ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ “ನಾವು ಅಡ್ಡ ಮತದಾನ ಮಾಡಿಲ್ಲ” ಎಂದು ಆಣೆ-ಪ್ರಮಾಣ ಮಾಡಿಸಲು ತೆರೆಮರೆಯಲ್ಲಿ ತಂತ್ರ ರೂಪಿಸಲಾಗಿದೆ.

ಕಡ್ಡಾಯ ಹಾಜರಿಗೆ ಅಧಿಕೃತ ‘ವಿಪ್’ ಅಸ್ತ್ರ: ಸಭೆಗೆ ಯಾರೊಬ್ಬರೂ ಗೈರಾಗದಂತೆ ತಡೆಯಲು ಮತ್ತು ಪಕ್ಷದಲ್ಲಿ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಶಾಸಕರಿಗೂ ಅಧಿಕೃತ ‘ವಿಪ್’ ಜಾರಿ ಮಾಡಲು ತೀರ್ಮಾನಿಸಲಾಗಿದೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಎಲ್ಲಾ ಶಾಸಕರಿಗೂ ವಿಪ್ ಕೊಡುವ ಮೂಲಕ ಸಭೆಗೆ ಕಡ್ಡಾಯವಾಗಿ ಹಾಜರಿರುವಂತೆ ಸೂಚನೆ ನೀಡಲಿದ್ದಾರೆ. ವಿಪ್ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ದೆಹಲಿಗೆ ಪಯಣ – ಹೈಕಮಾಂಡ್‌ಗೆ ವರದಿ: ಧರ್ಮಸ್ಥಳದ ಆಣೆ-ಪ್ರಮಾಣದ ಪ್ರಕ್ರಿಯೆಗೆ ಚಾಲನೆ ನೀಡುವ ಮುನ್ನ ಬಿ.ವೈ. ವಿಜಯೇಂದ್ರ ಮತ್ತು ಆರ್. ಅಶೋಕ್ ಅವರು ಸೋಮವಾರ ಸಂಜೆ ಜಂಟಿಯಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಂಗಳವಾರ ದೆಹಲಿಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಲಿರುವ ಈ ಜೋಡಿ, ರಾಜ್ಯದಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಗಳು, ಅದಕ್ಕೆ ಕಾರಣರಾದ ಶಂಕಿತರು ಮತ್ತು ಅದರ ಹಿಂದಿರುವ ರಾಜಕೀಯ ಕೈವಾಡಗಳ ಬಗ್ಗೆ ಸಂಪೂರ್ಣ ಲಿಖಿತ ಹಾಗೂ ಮೌಖಿಕ ವರದಿಯನ್ನು ಹೈಕಮಾಂಡ್‌ಗೆ ನೀಡಲಿದ್ದಾರೆ. ತದನಂತರ ಹೈಕಮಾಂಡ್ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ಧರ್ಮಸ್ಥಳದಲ್ಲಿ ಅಡ್ಡ ಮತದಾನ ಮಾಡಿದ ಶಾಸಕರ ಪತ್ತೆ ಕಾರ್ಯ ಅಧಿಕೃತವಾಗಿ ಆರಂಭವಾಗಲಿದೆ.

ರಾಜಕೀಯ ಸತ್ಯಶೋಧನೆಗೆ ಧರ್ಮಸ್ಥಳವೇ ಏಕೆ? “ಮಾತು ಬಿಡ ಮಂಜುನಾಥ, ಕಾಸು ಬಿಡ ತಿಮ್ಮಪ್ಪ” ಎನ್ನುವ ಜನಪ್ರಿಯ ಗಾದೆ ಮಾತಿದೆ. ಸಾಮಾನ್ಯವಾಗಿ ಭಕ್ತರು ಅತ್ಯಂತ ಭಕ್ತಿ-ಗೌರವದಿಂದ ಕಾಣುವ ಮಂಜುನಾಥನ ಸನ್ನಿಧಿಯಲ್ಲಿ ಸುಳ್ಳು ಹೇಳಲು ಹೆದರುತ್ತಾರೆ. ಇದೇ ಕಾರಣಕ್ಕೆ ಕ್ರಾಸ್ ವೋಟಿಂಗ್ ಮಾಡಿದವರು ಯಾರು ಎಂಬುದನ್ನು ಶಾಸಕರ ಆತ್ಮಸಾಕ್ಷಿಗೆ ಬಿಟ್ಟು, ದೇವರ ಮುಂದೆ ಸತ್ಯ ಒಪ್ಪಿಸಲು ಈ ತಂತ್ರ ರೂಪಿಸಲಾಗಿದೆ ಎನ್ನಲಾಗಿದೆ.

ಧರ್ಮಸ್ಥಳದಲ್ಲಿ ಆಣೆ-ಪ್ರಮಾಣದ ನಿಯಮಗಳೇನು? ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಿಂದೆ ಸ್ಪಷ್ಟಪಡಿಸಿರುವ ಪ್ರಕಾರ, ಕ್ಷೇತ್ರದಲ್ಲಿ ಆಣೆ-ಪ್ರಮಾಣ ಮಾಡಲು ಕಠಿಣ ನಿಯಮಗಳಿವೆ:

ಪ್ರಮಾಣ ಮಾಡಲು ಇಚ್ಛಿಸುವವರು ಮುಂಚಿತವಾಗಿಯೇ ದೇವಸ್ಥಾನದ ಆಡಳಿತ ಮಂಡಳಿಗೆ ಮಾಹಿತಿ ನೀಡಬೇಕು.

ನಿಗದಿತ ದಿನದ ಹಿಂದಿನ ದಿನವೇ ಕ್ಷೇತ್ರಕ್ಕೆ ಆಗಮಿಸಬೇಕು.

ಮರುದಿನ ಪವಿತ್ರ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಿ, ಖಾಲಿ ಹೊಟ್ಟೆಯಲ್ಲಿ ದೇವರ ಮುಂದೆ ಎರಡೂ ಕಡೆಯವರು ಪ್ರಮಾಣ ಮಾಡಬೇಕಾಗುತ್ತದೆ. ಈ ವೇಳೆ ಕ್ಷೇತ್ರದಲ್ಲಿ ಧರ್ಮಾಧಿಕಾರಿಗಳು ಅಥವಾ ಪಾತ್ರಿಗಳು ಹಾಜರಿರುತ್ತಾರೆ.

ಕರ್ನಾಟಕ ರಾಜಕಾರಣ ಮತ್ತು ಧರ್ಮಸ್ಥಳದ ಆಣೆ-ಪ್ರಮಾಣ ಇತಿಹಾಸ:

ಕರ್ನಾಟಕ ರಾಜಕೀಯದಲ್ಲಿ ರಾಜಕಾರಣಿಗಳು ಧರ್ಮಸ್ಥಳದ ಆಣೆ-ಪ್ರಮಾಣದ ಮೊರೆ ಹೋಗುತ್ತಿರುವುದು ಇದೇ ಮೊದಲೇನಲ್ಲ. ಇದರ ಹಿಂದಿನ ಕೆಲವು ಪ್ರಮುಖ ರೋಚಕ ಇತಿಹಾಸ ಹೀಗಿದೆ:

2011 (ಬಿಎಸ್ವೈ ವಿರುದ್ಧ ಎಚ್‌ಡಿಕೆ): ಬಿ.ಎಸ್. ಯಡಿಯೂರಪ್ಪ ಅವರು ಎರಡನೇ ಬಾರಿ ಸಿಎಂ ಆಗಿದ್ದಾಗ, ಭ್ರಷ್ಟಾಚಾರದ ವಿಚಾರವಾಗಿ ಯಡಿಯೂರಪ್ಪ ಅವರು ರಾಜಿ ಸಂಧಾನಕ್ಕೆ ಯತ್ನಿಸುತ್ತಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದರು. ಮಾತಿಗೆ ಮಾತು ಬೆಳೆದು ಇಬ್ಬರೂ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಸಜ್ಜಾಗಿದ್ದರು. ಇಡೀ ದೇಶವೇ ಇವರತ್ತ ಮುಖ ಮಾಡಿ ನಿಂತಿತ್ತು. ಇಬ್ಬರೂ ನಾಯಕರು ಧರ್ಮಸ್ಥಳಕ್ಕೆ ಬಂದರೂ, ಕೊನೆಗೆ ಆಣೆ-ಪ್ರಮಾಣ ಮಾಡದೆ ವಾಪಸ್ ತೆರಳಿದ್ದರು.

2012 (ವಸಂತ ಬಂಗೇರ ಸವಾಲು): ಮಂಗಳೂರು ಹೋಂಸ್ಟೇ ದಾಳಿ ಪ್ರಕರಣದ ವೇಳೆ ಜಿಲ್ಲೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಅಣತಿಯಂತೆ ಎಲ್ಲವೂ ನಡೆಯುತ್ತಿದೆ ಎಂದು ಬೆಳ್ತಂಗಡಿಯ ಅಂದಿನ ಕಾಂಗ್ರೆಸ್ ಶಾಸಕ ದಿ. ವಸಂತ ಬಂಗೇರ सदनದಲ್ಲಿ ಆರೋಪಿಸಿದ್ದರು. ಇದರಿಂದ ಸಿಟ್ಟಾಗಿದ್ದ ಯಡಿಯೂರಪ್ಪ ಹೆಡ್‌ಸೆಟ್ ನೆಲಕ್ಕೆ ಕುಕ್ಕಿದ್ದರು. ಆಗ ಬಂಗೇರ ಅವರು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ಸಿದ್ಧ ಎಂದಿದ್ದರು.

2022 (ಶಿವಲಿಂಗೇಗೌಡರ ಪ್ರಮಾಣ): ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರ ಮೇಲೆ ಬಿಜೆಪಿ ಮುಖಂಡರು ‘ರಾಗಿ ಕಳ್ಳ’ ಎಂದು ಆರೋಪಿಸಿದಾಗ ನೊಂದ ಗೌಡರು, ನೇತ್ರಾವತಿಯಲ್ಲಿ ಸ್ನಾನ ಮಾಡಿ ಮಂಜುನಾಥನ ಮುಂದೆ ತಾವು ನಿರಪರಾಧಿ ಎಂದು ಪ್ರಮಾಣ ಮಾಡಿ, ಬಳಿಕ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದರು.

2023 (ವರ್ಗಾವಣೆ ದಂಧೆ ಸವಾಲು): ಸಿದ್ದರಾಮಯ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ್ದ ಕುಮಾರಸ್ವಾಮಿ, ಶಾಸಕ ಎಚ್.ಸಿ. ಬಾಲಕೃಷ್ಣ, ಸಿಎಂ ಸಿದ್ದರಾಮಯ್ಯ ಹಾಗೂ ಯತೀಂದ್ರ ಸಿದ್ದರಾಮಯ್ಯ ಅವರು ಧರ್ಮಸ್ಥಳದಲ್ಲಿ ಬಂದು ಆಣೆ ಮಾಡಲಿ ಎಂದು ಸವಾಲು ಹಾಕಿದ್ದರು.

ಮುಡಾ ಹಗರಣದ ಸವಾಲು: ಮುಡಾ ಕಚೇರಿಯಿಂದ ಯಾವುದೇ ದಾಖಲೆ ಕದ್ದಿಲ್ಲ ಎಂದು ಸ್ಪಷ್ಟಪಡಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಕುಮಾರಸ್ವಾಮಿ ಮತ್ತು ಛಲವಾದಿ ನಾರಾಯಣಸ್ವಾಮಿ ಅವರಿಗೆ ಚಾಮುಂಡೇಶ್ವರಿ ಅಥವಾ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲು ಇತ್ತೀಚೆಗೆ ಓಪನ್ ಚಾಲೆಂಜ್ ಹಾಕಿದ್ದರು.

ಈಗ ಬಿಜೆಪಿಗೆ ಕ್ರಾಸ್ ವೋಟಿಂಗ್ ತಲೆಬಿಸಿ: ಸದ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಕ್ರಾಸ್ ವೋಟಿಂಗ್ ತನಿಖೆಗೆ ಸಮಿತಿ ರಚಿಸಲಾಗಿದ್ದರೂ, ನಿಖರ ಮಾಹಿತಿ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹೈಕಮಾಂಡ್‌ಗೆ ಉತ್ತರಿಸಬೇಕಾದ ಅನಿವಾರ್ಯತೆಯಲ್ಲಿರುವ ರಾಜ್ಯ ಬಿಜೆಪಿ ನಾಯಕರು, ಶಾಸಕರನ್ನು ಧರ್ಮಸ್ಥಳಕ್ಕೆ ಕರೆದೊಯ್ದು ಮಂಜುನಾಥನ ಸಾಕ್ಷಿಯಾಗಿ ಶಾಸಕಾಂಗ ಸಭೆ ನಡೆಸಿ, ಆಣೆ-ಪ್ರಮಾಣದ ಮೂಲಕ ʼಗೆರೆ ದಾಟಿದವರು ಯಾರು’ ಎಂಬುದನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ. ರಾಜಕೀಯ ಇತಿಹಾಸದ ಈ ಹೊಸ ಆಣೆ-ಪ್ರಮಾಣದ ಹೈಡ್ರಾಮಾ ಎಲ್ಲಿಗೆ ಬಂದು ನಿಲ್ಲುತ್ತದೆ ಎಂಬುದನ್ನು ಕಾದುನೋಡಬೇಕಿದೆ.




ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Belthangady

2015ರ ಪ್ರಚೋದನಾಕಾರಿ ಭಾಷಣ ಪ್ರಕರಣ: ಆರೋಪಿಗೆ 6 ತಿಂಗಳ ಜೈಲು, ₹10,000 ದಂಡ ವಿಧಿಸಿದ ನ್ಯಾಯಾಲಯ

Published

on

ಬೆಳ್ತಂಗಡಿ: ಸುಮಾರು 10 ವರ್ಷಗಳ ಹಿಂದೆ ನಡೆದಿದ್ದ ಪ್ರಚೋದನಾಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಸಾರ್ವಜನಿಕವಾಗಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬವರಿಗೆ ನ್ಯಾಯಾಧೀಶರಾದ ರಾಮಲಿಂಗಪ್ಪ ಅವರು ಶಿಕ್ಷೆ ಪ್ರಕಟಿಸಿದ್ದಾರೆ.

ಬೆಳ್ತಂಗಡಿ ತಾಲೂಕು ಕಚೇರಿ ಬಳಿ 2015ರ ಜುಲೈ 23ರಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಬೆಳ್ತಂಗಡಿ ವಲಯದ ವತಿಯಿಂದ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತ ಸಮಾಜದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ಹಾಗೂ ಶಾಂತಿ ಕದಡುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 153(ಎ) ಹಾಗೂ 295(ಎ) ಅಡಿಯಲ್ಲಿ (ಅ.ಕ್ರ: 315/2015) ಪ್ರಕರಣ ದಾಖಲಾಗಿತ್ತು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರು , ಆರೋಪಿಯ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಕಲಂ 153(ಎ) ಅಡಿಯಲ್ಲಿ 6 ತಿಂಗಳ ಸಾದಾ ಕಾರಾಗೃಹ ವಾಸ ಹಾಗೂ 10,000 ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ.

ಪರಿಣಾಮಕಾರಿ ತನಿಖೆ ಮತ್ತು ವಾದ ಮಂಡನೆ:

ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕ ಹಾಗೂ ಪ್ರಕರಣದ ತನಿಖಾಧಿಕಾರಿಯಾಗಿದ್ದ ರವಿ ಬಿ.ಎಸ್. ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (Charge Sheet) ಸಲ್ಲಿಸಿದ್ದರು.

ವಿಚಾರಣೆ ವೇಳೆಯಲ್ಲಿ ಸರಕಾರಿ ಅಭಿಯೋಜಕಿಯಾದ (Public Prosecutor) ಶ್ರೀಮತಿ ಆಶೀತ ಅವರು ಸರಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು. ಆರೋಪದ ಮೇಲಿನ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಮಾನ್ಯ ನ್ಯಾಯಾಧೀಶರು, ಆರೋಪಿ ತಪ್ಪಿತಸ್ಥನೆಂದು ನಿರ್ಣಯಿಸಿ ಈ ಶಿಕ್ಷೆಯ ಆದೇಶ ಹೊರಡಿಸಿದ್ದಾರೆ.

Continue Reading

arrest

ಬೆಳ್ತಂಗಡಿ: ಅಕ್ರಮ ಕೋಳಿಅಂಕ ಜೂಜಾಟದ ಅಡ್ಡೆಗೆ ಪೋಲಿಸ್ ದಾಳಿ – ಇಬ್ಬರ ಬಂಧನ, ಸೊತ್ತುಗಳು ಜಪ್ತಿ

Published

on

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ನಿರ್ಮಡ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿಅಂಕ ಜೂಜಾಟದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಂಭವಿಸಿದೆ.

ಧರ್ಮಪ್ಪ ಗೌಡ (38) (ಬಂದಾರು ಗ್ರಾಮದ ನಿರ್ಮಡ ನಿವಾಸಿ) ಮತ್ತು ಹರೀಶ್ ಎಸ್. (30) (ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೆಳ್ಳೂರು ನಿವಾಸಿ) ಬಂಧಿತ ಆರೋಪಿಗಳು.

ದಾಳಿಯ ವಿವರ:

ಆಗಸ್ಟ್ 3ರಂದು ಸಂಜೆ ಸುಮಾರು 5:15ರ ವೇಳೆಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಅವರ ನೇತೃತ್ವದ ಪೊಲೀಸ್ ತಂಡ ನಿರ್ಮಡ ಪ್ರದೇಶಕ್ಕೆ ದಾಳಿ ನಡೆಸಿತು. ಈ ವೇಳೆ ಆರೋಪಿಗಳು ಕೋಳಿಗಳ ಕಾಲಿಗೆ ಬಾಳು (ಸಣ್ಣ ಕತ್ತಿ) ಕಟ್ಟಿ, ಪರಸ್ಪರ ಕಾದಾಟಕ್ಕೆ ಬಿಟ್ಟು ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟದಲ್ಲಿ ತೊಡಗಿರುವುದು ಪತ್ತೆಯಾಗಿದೆ.

ಪೊಲೀಸರನ್ನು ಕಂಡ ತಕ್ಷಣವೇ ಸ್ಥಳದಲ್ಲಿದ್ದ ಕೆಲವರು ಕಾಲ್ಕಿತ್ತಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳು:

ದಾಳಿಯ ವೇಳೆ ಪೊಲೀಸರು ಜೂಜಾಟಕ್ಕೆ ಬಳಸಿದ್ದ ₹350 ನಗದು, 2 ಬಾಳುಗಳು (ಸಣ್ಣ ಕತ್ತಿ), ವಿವಿಧ ತಳಿಯ 4 ಕೋಳಿಗಳು ಹಾಗೂ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ₹74,370 ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿದ್ದಾರೆ.

ಪ್ರಕರಣ ದಾಖಲು:

ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ – 1960ರ ಕಲಂ 11(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ\

Continue Reading

Bantawala

ಕರಾವಳಿಯಲ್ಲಿ ಭೋರ್ಗರೆಯುತ್ತಿರುವ ಮುಂಗಾರು: ನದಿಗಳ ಆರ್ಭಟಕ್ಕೆ ಕಂಗೆಟ್ಟ ದಕ್ಷಿಣ ಕನ್ನಡ, ರೈತರಲ್ಲಿ ಹರ್ಷ – ಜನರಲ್ಲಿ ನೆರೆ ಆತಂಕ

Published

on

ದಕ್ಷಿಣ ಕನ್ನಡ: ಕರಾವಳಿ ಹಾಗೂ ಪಶ್ಚಿಮ ಘಟ್ಟ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ. ಘಟ್ಟ ಪ್ರದೇಶದಲ್ಲಿ ಮಳೆ ಧಾರೆ ಎರೆಯುತ್ತಿರುವುದರಿಂದ ನದಿ, ಕಳೆಗಳು ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಒಂದೆಡೆ ದೀರ್ಘಾವಧಿಯ ನಂತರ ನದಿಗಳು ತುಂಬಿ ಹರಿಯುತ್ತಿರುವುದು ಕೃಷಿಕರಲ್ಲಿ ಹರ್ಷ ತಂದಿದ್ದರೆ, ಇನ್ನೊಂದೆಡೆ ಪ್ರವಾಹ, ಸೇತುವೆ ಕೊಚ್ಚಿಹೋಗಿರುವುದು ಹಾಗೂ ಮನೆ ಹಾನಿಯಂತಹ ಸಾಲು ಸಾಲು ದುರಂತಗಳು ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿವೆ.

1. ಸುಬ್ರಹ್ಮಣ್ಯ: ಕುಮಾರಧಾರಾ ಆರ್ಭಟ, ಮುಳುಗಿದ ಸ್ನಾನಘಟ್ಟ

ಕುಕ್ಕೆ ಸುಬ್ರಹ್ಮಣ್ಯ ಹಾಗೂ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಎಡೆಬಿಡದ ಮಳೆಯಿಂದಾಗಿ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ತೀವ್ರವಾಗಿ ಏರಿಕೆಯಾಗಿದೆ.

ಸ್ನಾನಘಟ್ಟ ಮುಳುಗಡೆ: ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣವಾಗಿ ಜಲಾವೃತಗೊಂಡಿದೆ.

ಪರ್ಯಾಯ ವ್ಯವಸ್ಥೆ: ಭಕ್ತರು ನದಿಗೆ ಇಳಿಯದಂತೆ ಪೊಲೀಸರು ಹಾಗೂ ಆಡಳಿತ ಮಂಡಳಿ ಕಟ್ಟುನಿಟ್ಟಿನ ಕಾವಲು ಕಾಯುತ್ತಿದ್ದು, ಪ್ರವಾಸಿಗರ ಭದ್ರತೆಗಾಗಿ ದೊಡ್ಡ ಡ್ರಮ್‌ಗಳಲ್ಲಿ ನೀರು ತುಂಬಿಸಿ ಪರ್ಯಾಯ ಸ್ನಾನದ ವ್ಯವಸ್ಥೆ ಕಲ್ಪಿಸಲಾಗಿದೆ.

2. ಜೀವ ಕಳೆ ಪಡೆದ ನೇತ್ರಾವತಿ

ಬಂಟ್ವಾಳ ಹಾಗೂ ಧರ್ಮಸ್ಥಳ ಭಾಗದಲ್ಲಿ ನೇತ್ರಾವತಿ ನದಿ ಈ ವರ್ಷದಲ್ಲಿಯೇ ಮೊದಲ ಬಾರಿಗೆ ಭಾರೀ ಮಟ್ಟದಲ್ಲಿ ಏರಿಕೆ ಕಂಡಿದೆ.

ಬಂಟ್ವಾಳದ ಕಂಚಿಕಾರಪೇಟೆಯಲ್ಲಿ ನದಿಯ ಮಟ್ಟ 5.6 ರಿಂದ 5.88 ಮೀಟರ್‌ಗೆ ಏರಿಕೆಯಾಗಿದ್ದು (ಅಪಾಯದ ಮಟ್ಟ: 8.5 ರಿಂದ 9.0 ಮೀ), ಕೃಷಿಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಬಂಟ್ವಾಳದ ಎಎಂಆರ್ (AMR) ಡ್ಯಾಂ ಗರಿಷ್ಠ ಮಟ್ಟ (18.90 ಮೀ) ತಲುಪಿದ್ದು, ತುಂಬೆ ಡ್ಯಾಂನ 8 ಗೇಟ್‌ಗಳನ್ನು ತೆರೆದು ನೀರನ್ನು ಹೊರಬಿಡಲಾಗುತ್ತಿದೆ.

ಉಪ್ಪಿನಂಗಡಿ ಸಂಗಮಕ್ಕೆ ಇನ್ನೆರಡು ದಿನ ಬೇಕು

ಪ್ರಸಿದ್ಧ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಸನ್ನಿಧಿಯಲ್ಲಿ ನೇತ್ರಾವತಿಯಲ್ಲಿ ನೀರಿನ ಹರಿವು ಹೆಚ್ಚಿದ್ದರೂ, ಕುಮಾರಧಾರಾದಲ್ಲಿ ನೀರು ಕಡಿಮೆಯಿರುವುದರಿಂದ ‘ಸಂಗಮ’ಕ್ಕೆ ಇನ್ನು ಎರಡು ದಿನಗಳ ನಿರಂತರ ಮಳೆಯ ಅಗತ್ಯವಿದೆ. ಈಗ ಸುರಿಯುತ್ತಿರುವಂತೆಯೇ ನಿರಂತರವಾಗಿ ಮಳೆ ಸುರಿಯುತ್ತಲೇ ಇದ್ದರೆ ಇನ್ನೆರಡು ದಿನಗಳಲ್ಲಿ ಸಂಗಮದ ಸೂಚನೆ ಸಿಗಬಹುದು.

3. ಬೆಳ್ತಂಗಡಿಯಲ್ಲಿ ನೆರೆ ಅಭಯ: ಮುಳುಗಿದ ದೇವಾಲಯಗಳು, ಕಡಿತಗೊಂಡ ಸಂಪರ್ಕ

ಬೆಳ್ತಂಗಡಿ ತಾಲೂಕಿನಲ್ಲಿ ಮುಂಗಾರಿನ ಆರ್ಭಟ ತೀವ್ರವಾಗಿದ್ದು, ಕಪಿಲ, ಫಲ್ಗುಣಿ, ಮೃತ್ಯುಂಜಯ ಹಾಗೂ ಸೋಮವತಿ ನದಿಗಳು ಉಕ್ಕಿ ಹರಿಯುತ್ತಿವೆ.

ದೇವಸ್ಥಾನಗಳು ಜಲಾವೃತ: ಕಪಿಲ ನದಿ ಉಕ್ಕಿ ಹರಿದ ಪರಿಣಾಮ ಪ್ರಸಿದ್ಧ ಶ್ರೀ ಶಿಶಿಲೇಶ್ವರ ದೇವಸ್ಥಾನ ಹಾಗೂ ಅಮ್ಮುಂಜೆ ದೇವಸ್ಥಾನಗಳು ಜಲಾವೃತಗೊಂಡಿವೆ.

ಸೇತುವೆ ಕೊಚ್ಚಿ ಸಾವು-ನೋವಿನ ಭೀತಿ: ಉಜಿರೆ-ಕನ್ಯಾಡಿ ವ್ಯಾಪ್ತಿಯ ಅಂಬಡಬೆಟ್ಟದಲ್ಲಿ ಹಳ್ಳಕ್ಕೆ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಸಾಕಷ್ಟು ಕುಟುಂಬಗಳ ಸಂಪರ್ಕ ಕಡಿತಗೊಂಡಿದೆ. ಮಾಲಾಡಿ ಸೊಣಂದೂರಿನಲ್ಲಿ ಕಿರು ಸೇತುವೆ ಕುಸಿದಿದೆ.

ಅಣೆಕಟ್ಟು ಹಲಗೆ ತೆರವು ಮಾಡದೆ ಅನಾಹುತ: ಪಜಿರಡ್ಕ ಕಿಂಡಿ ಅಣೆಕಟ್ಟಿನಲ್ಲಿ ಹಲಗೆಗಳನ್ನು ಸರಿಯಾದ ಸಮಯಕ್ಕೆ ತೆರವುಗೊಳಿಸದ ಕಾರಣ 5 ಕಿ.ಮೀ ವ್ಯಾಪ್ತಿಯಲ್ಲಿ ಕಾಯರ್ತೋಡಿ, ಕುಡೆಂಚಿ, ಆನಂಗಳ್ಳಿ ಸೇರಿದಂತೆ ಹಲವು ತೋಟಗಳಿಗೆ ನೀರು ನುಗ್ಗಿ ಬೆಳೆ ನಾಶವಾಗಿದೆ.

ವೇಣೂರಿನಲ್ಲಿ ಹಲವು ಬಸ್‌ಗಳು ನೆರೆ ನೀರಿನಲ್ಲಿ ಸಿಲುಕಿಕೊಂಡರೆ, ಗಾಳಿ-ಮಳೆಗೆ ನೂರಾರು ಅಡಕೆ, ರಬ್ಬರ್ ಮರಗಳು ಧರಾಶಾಹಿಯಾಗಿವೆ.

4. ಸಾಲು ಸಾಲು ಮನೆ ಕುಸಿತ, ವಿದ್ಯುತ್ ವ್ಯತ್ಯಯ

ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರಿನ ಜಯ ಸಪಲ್ಯ, ರಾಯಿ ಗ್ರಾಮದ ಸೀತಾವತಿ ವಿಶ್ವನಾಥ ಪೂಜಾರಿ ಹಾಗೂ ನರಿಕೊಂಬುವಿನ ಪ್ರಶಾಂತ್ ಎಂಬುವವರ ಮನೆಗಳ ಮೇಲೆ ಚಾವಣಿ ಮತ್ತು ತೆಂಗಿನ ಮರಗಳು ಬಿದ್ದು ಮನೆಗಳಿಗೆ ಹಾನಿಯಾಗಿದೆ. ಸುदैವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

🚨 ಭಾರೀ ಮಳೆ ಮುನ್ಸೂಚನೆ: ತುರ್ತು ಕಾರ್ಯಾಚರಣೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಕಟ್ಟುನಿಟ್ಟಿನ ಸೂಚನೆ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಎಲ್ಲ ತಾಲೂಕು ಆಡಳಿತಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಂಪೂರ್ಣ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಸೂಚಿಸಿದ್ದಾರೆ. ಹವಾಮಾನ ಇಲಾಖೆಯು ದಕ್ಷಿಣ ಕನ್ನಡ,ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ರೆಡ್‌ ಆಲರ್ಟ್‌ ಘೋಷಿಸಿದೆ

ಶನಿವಾರ (ಆಗಸ್ಟ್ 1) ಅಧಿಕಾರಿಗಳೊಂದಿಗೆ ಆನ್‌ಲೈನ್ ಮೂಲಕ ಪರಿಶೀಲನಾ ಸಭೆ ನಡೆಸಿದ ಅವರು, ಮಳೆ ಅನಾಹುತಗಳನ್ನು ಸಮರ್ಥವಾಗಿ ನಿಭಾಯಿಸಲು ಹಾಗೂ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಲು ಹಲವು ಪ್ರಮುಖ ನಿರ್ದೇಶನಗಳನ್ನು ನೀಡಿದರು.

🚨 ಜಿಲ್ಲಾಧಿಕಾರಿಗಳು ನೀಡಿದ ಪ್ರಮುಖ ಅಭಯ ಹಾಗೂ ಕಟ್ಟುನಿಟ್ಟಿನ ಸೂಚನೆಗಳು:

24 ಗಂಟೆ ಕಂಟ್ರೋಲ್ ರೂಂ ಸಕ್ರಿಯ: ಮಳೆ ಅನಾಹುತಗಳನ್ನು ನಿವರ್ಹಿಸಲು ಜಿಲ್ಲೆಯ ಎಲ್ಲ ತಾಲೂಕು ಆಡಳಿತಗಳು ದಿನದ 24 ಗಂಟೆಯೂ ಸಾರ್ವಜನಿಕರ ಸೇವೆಗೆ ಲಭ್ಯವಿರಬೇಕು. ಕಂಟ್ರೋಲ್ ರೂಂಗಳು ದಿನಪೂರ್ತಿ ಕಾರ್ಯನಿರ್ವಹಿಸಬೇಕು.

ಗುಡ್ಡ ಕುಸಿತ ಸ್ಥಳಗಳಲ್ಲಿ ನಿಗಾ – ಜನರ ಸ್ಥಳಾಂತರ: ಜಿಲ್ಲೆಯಲ್ಲಿ ಗುಡ್ಡ ಕುಸಿತ ಮತ್ತು ಮಣ್ಣು ಜರಿತ ಪ್ರಕರಣಗಳು ವರದಿಯಾಗುತ್ತಿವೆ. ಈಗಾಗಲೇ ಗುರುತಿಸಿರುವ ಸಂಭಾವ್ಯ ಕುಸಿತ ಸ್ಥಳಗಳಲ್ಲಿ ತೀವ್ರ ನಿಗಾ ವಹಿಸಬೇಕು. ಅಪಾಯದ ಸಾಧ್ಯತೆ ಇರುವ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಮುಂಜಾಗ್ರತಾ ಕ್ರಮವಾಗಿ ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು.

ತಾತ್ಕಾಲಿಕ ತಡೆಗೋಡೆ ವ್ಯವಸ್ಥೆ: ಮಣ್ಣು ಜರಿಯುವ ಸಾಧ್ಯತೆ ಇರುವ ಸ್ಥಳಗಳಲ್ಲಿ ಮರಳು ಚೀಲಗಳನ್ನು ಇಟ್ಟು ತಾತ್ಕಾಲಿಕ ಕ್ರಮ ಕೈಗೊಳ್ಳಬೇಕು. ಅಗತ್ಯಬಿದ್ದರೆ ಖಾಸಗಿ ಜಮೀನುಗಳಲ್ಲೂ ಇಂತಹ ತುರ್ತು ಕ್ರಮಗಳನ್ನು ಕೈಗೊಳ್ಳಬಹುದು.

24 ಗಂಟೆಯೊಳಗೆ ಪರಿಹಾರ ವಿತರಣೆ: ಪ್ರಾಕೃತಿಕ ವಿಕೋಪದಿಂದ ಸಾವುನಪ್ಪಿದವರ ಕುಟುಂಬಗಳಿಗೆ 24 ಗಂಟೆಯೊಳಗೆ ಪರಿಹಾರ ಚೆಕ್ ನೀಡಬೇಕು. ಮಳೆ ಅನಾಹುತದಿಂದ ಸ್ಥಳಾಂತರಗೊಂಡ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಗಮನಹರಿಸಬೇಕು.

ಹೆದ್ದಾರಿ ತಡೆ ತೆರವಿಗೆ ಜೆಸಿಬಿ/ಯಂತ್ರೋಪಕರಣ ಸಿದ್ಧ: ಚಾರ್ಮಾಡಿ, ಸಂಪಾಜೆ, ಶಿರಾಡಿ ಸೇರಿದಂತೆ ಜಿಲ್ಲೆಯ ಪ್ರಮುಖ ಹೆದ್ದಾರಿಗಳಲ್ಲಿ ಭೂಕುಸಿತ, ಗುಡ್ಡ ಜರಿತದಂತಹ ಪ್ರಕರಣಗಳು ಸಂಭವಿಸಿದಲ್ಲಿ ತಕ್ಷಣವೇ ರಸ್ತೆ ತೆರವುಗೊಳಿಸಲು ಅಗತ್ಯ ಯಂತ್ರೋಪಕರಣಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. (ಇದುವರೆಗೆ ಜಿಲ್ಲೆಯಲ್ಲಿ ಹೆದ್ದಾರಿ ತಡೆಯಾದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಡಿಸಿ ತಿಳಿಸಿದ್ದಾರೆ).

ರಕ್ಷಣಾ ಪಡೆಗಳು ಹೈ ಅಲರ್ಟ್: ಅಗ್ನಿಶಾಮಕ ದಳ, ಎಸ್‌ಡಿಆರ್‌ಎಫ್ (SDRF) ಮತ್ತು ಎನ್‌ಡಿಆರ್‌ಎಫ್ (NDRF) ತಂಡಗಳು ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸದಾ ಸನ್ನದ್ಧವಾಗಿರಬೇಕು.

ರಕ್ಷಣಾ ಪಡೆ ರಂಗಕ್ಕೆ: ಮುಳುಗು ತಜ್ಞರು, NDRF ಹಾಗೂ SDRF ನ 65 ಸಿಬ್ಬಂದಿಗಳನ್ನು 28 ಬೋಟ್‌ಗಳೊಂದಿಗೆ ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ.

ಎಚ್ಚರಿಕೆ ಸಂದೇಶ: ನದಿ ತೀರದ ನಿವಾಸಿಗಳು, ಮೀನುಗಾರರು ಮತ್ತು ಪ್ರವಾಸಿಗರು ಸಮುದ್ರ ಹಾಗೂ ಜಲಾಶಯದ ಕಡೆಗೆ ತೆರಳದಂತೆ ಕಟ್ಟುನಿಟ್ಟಿನ ಆಡಳಿತಾತ್ಮಕ ಸೂಚನೆ ನೀಡಲಾಗಿದೆ.

ಮುನ್ಸೂಚನೆ: ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದ್ದು, ಪರಿಸ್ಥಿತಿ ತಿಳಿಯಾಗುವವರೆಗೆ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.

ಸಭೆಯಲ್ಲಿ ಉಪಸ್ಥಿತಿ: ಈ ಆನ್‌ಲೈನ್ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರಸಿಂಹಮೂರ್ತಿ , ಅಪರ ಜಿಲ್ಲಾಧಿಕಾರಿ ರಾಜು ಕೆ. ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು

Continue Reading

Trending

Copyright © 2025 Deevatige

error: Content is protected !!