Connect with us

Bantawala

ಪೆರುವಾಯಿಯಲ್ಲಿ ತೀವ್ರಗೊಂಡ ಪ್ರತಿಭಟನೆ: ಅಧಿಕಾರಿಗಳಿಗೆ ದಿಗ್ಬಂಧನ, ಹೆದ್ದಾರಿ ಬಂದ್ ಮಾಡುವ ಎಚ್ಚರಿಕೆ

Published

on

ವಿಟ್ಲ: ಪೆರುವಾಯಿ ಜಂಕ್ಷನ್ ವ್ಯಾಪ್ತಿಯ ಪೇರಡ್ಕ ಮತ್ತು ಮಾಣಿಲ ಸಂಪರ್ಕ ಸೇತುವೆಗಳ ಪುನರ್ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸ್ಥಳೀಯ ಸಾರ್ವಜನಿಕರು ಹಾಗೂ ವಾಹನ ಸವಾರರು ಇಂದು ಪೆರುವಾಯಿಯಲ್ಲಿ ಬೃಹತ್ ರಸ್ತೆ ತಡೆ ಮತ್ತು ಶಾಂತಿಯುತ ಪ್ರತಿಭಟನೆ ನಡೆಸಿದರು.

ಅಪಾಯದ ಅಂಚಿನಲ್ಲಿರುವ ಈ ಸೇತುವೆಗಳು ಹಾಗೂ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಸಾರ್ವಜನಿಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ಈ ಸಂದರ್ಭದಲ್ಲಿ ನಡೆಯಿತು.

ಜೀವಭಯದಲ್ಲಿ ಸಾರ್ವಜನಿಕರ ಸಂಚಾರ

ಪೆರುವಾಯಿ ಜಂಕ್ಷನ್ ಬಳಿಯಿಂದ ಕೇವಲ 500 ಮೀಟರ್ ದೂರದಲ್ಲಿರುವ, ಕರ್ನಾಟಕ ಮತ್ತು ಕೇರಳವನ್ನು ಸಂಪರ್ಕಿಸುವ ಪೇರಡ್ಕ ಸೇತುವೆ ಹಾಗೂ ಪೆರುವಾಯಿ ಜಂಕ್ಷನ್‌ನಿಂದ 150 ಮೀಟರ್ ದೂರದಲ್ಲಿರುವ ಪೆರುವಾಯಿ – ಮಾಣಿಲ ರಸ್ತೆಯ ಸೇತುವೆ ಈ ಭಾಗದ ಜನರ ಪ್ರಮುಖ ಜೀವನಾಡಿಯಾಗಿದೆ. ಪ್ರತಿದಿನ ಸಾವಿರಾರು ವಾಹನಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಕೃಷಿಕರು ಈ ಮಾರ್ಗವನ್ನೇ ಅವಲಂಬಿಸಿದ್ದಾರೆ.

ಆದರೆ, ದಶಕಗಳ ಹಿಂದೆ ನಿರ್ಮಾಣಗೊಂಡ ಈ ಕಿರಿದಾದ ಸೇತುವೆಗಳು ಇಂದು ಸಂಪೂರ್ಣ ಸಾಮರ್ಥ್ಯ ಕಳೆದುಕೊಂಡಿವೆ. ಭಾರೀ ವಾಹನಗಳ ಸಂಚಾರ ಹೆಚ್ಚಾಗಿದ್ದರೂ ಸೇತುವೆಗಳ ಅಗಲ ಮಾತ್ರ ಅಂದಿನಂತೆಯೇ ಇದೆ. ಮಳೆಗಾಲದಲ್ಲಿ ಪೇರಡ್ಕ ಸೇತುವೆಯ ಮೇಲೆಯೇ ನೀರು ಹರಿಯುತ್ತಿದ್ದು, ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ದುಸ್ಥಿತಿ ಇದೆ.

ಕಳೆದ 3 ವರ್ಷಗಳಲ್ಲಿ 10ಕ್ಕೂ ಹೆಚ್ಚು ಅಪಘಾತಗಳು: ಇತ್ತೀಚೆಗಷ್ಟೇ ಕೋಳಿ ಸಾಗಾಟದ ವಾಹನ ಹಾಗೂ ಐವರು ಯುವಕರಿದ್ದ ಆಲ್ಟೊ ಕಾರು ಸೇತುವೆಯಿಂದ ಕೆಳಗೆ ಬಿದ್ದಿದ್ದವು. ಅಪಾಯಕಾರಿ ತಿರುವಿನಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಲವು ವಾಹನಗಳು ನಜ್ಜುಗುಜ್ಜಾಗಿವೆ. ದೊಡ್ಡ ದುರಂತ ಸಂಭವಿಸುವ ಮುನ್ನ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಅಧಿಕಾರಿಗಳಿಗೆ ಮುತ್ತಿಗೆ – ತರಾಟೆ

ಪ್ರತಿಭಟನೆಯ ತೀವ್ರತೆ ಅರಿತು ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪಂಚಾಯತ್ ಬಂಟ್ವಾಳ ವಿಭಾಗದ ಇಂಜಿನಿಯರ್ ತಾರಾನಾಥ್ ಮತ್ತು ಮಂಗಳೂರು ವಿಭಾಗದ ಇಂಜಿನಿಯರ್ ವೇಣುಗೋಪಾಲ್ ಅವರನ್ನು ಪ್ರತಿಭಟನಾಕಾರರು ಮುತ್ತಿಗೆ ಹಾಕಿ, ತೀವ್ರ ತರಾಟೆಗೆ ತೆಗೆದುಕೊಂಡರು.

ಕೆಲ ದಿನಗಳ ಹಿಂದೆ ನೀಡಿದ್ದ ಗಡುವಿಗೆ ಕೇವಲ ಒಂದು ಲೋಡ್ ಕೆಂಪು ಕಲ್ಲುಗಳನ್ನು ತಂದು ಸುರಿದಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಇದು ಸುರಕ್ಷತಾ ಕ್ರಮವಲ್ಲ, ಜನರ ಕಣ್ಣಿಗೆ ಮಣ್ಣೆರಚುವ ತಂತ್ರ” ಎಂದು ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇಂಜಿನಿಯರ್‌ಗಳಿಂದ ಭರವಸೆ

ಪ್ರತಿಭಟನಾಕಾರರ ತೀವ್ರ ಪ್ರತಿರೋಧದ ಬಳಿಕ ಮಾತನಾಡಿದ ಜಿಲ್ಲಾ ಪಂಚಾಯತ್ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್ ವೇಣುಗೋಪಾಲ್, “ಒಂದು ವಾರದಲ್ಲಿ ತಡೆಬೇಲಿ ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗುವುದು. 15 ದಿನಗಳ ಒಳಗಾಗಿ ತಡೆಗೋಡೆ ಕಾಮಗಾರಿಯನ್ನು ಆರಂಭಿಸುತ್ತೇವೆ” ಎಂದು ಭರವಸೆ ನೀಡಿದರು.

ಲೋಕೋಪಯೋಗಿ ಇಲಾಖೆಯ (PWD) ಇಂಜಿನಿಯರ್ ಅವಿನಾಶ್ ಮಾತನಾಡಿ, ಈಗಾಗಲೇ ಹೊಸ ಸೇತುವೆಯ ನಿರ್ಮಾಣಕ್ಕೆ ಹಾಗೂ ಗ್ರಾಮೀಣ ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಹಂತದಲ್ಲಿ ಮಂಜೂರಾತಿ ದೊರೆತ ತಕ್ಷಣ ಹೊಸ ಸೇತುವೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಪ್ರಮುಖ ಬೇಡಿಕೆಗಳು:

ಪೇರಡ್ಕ ಸೇತುವೆ ಸ್ಥಳದಲ್ಲಿ ಅಪಾಯಕಾರಿ ತಿರುವುಗಳನ್ನು ತೆರವುಗೊಳಿಸಿ, ವಿಶಾಲವಾದ ಹಾಗೂ ನೇರ ಸಂಪರ್ಕ ರಸ್ತೆಯೊಂದಿಗೆ ನೂತನ ಸೇತುವೆ ನಿರ್ಮಿಸಬೇಕು.

ಪೆರುವಾಯಿ–ಮಾಣಿಲ ಸಂಪರ್ಕ ಸೇತುವೆಯನ್ನು ತೆರವುಗೊಳಿಸಿ, ಆಧುನಿಕ ವಿನ್ಯಾಸದೊಂದಿಗೆ ವಿಶಾಲ ಮತ್ತು ಸುರಕ್ಷಿತ ನೂತನ ಸೇತುವೆಯಾಗಿ ಪುನರ್‌ನಿರ್ಮಿಸಬೇಕು.

ಪೆರುವಾಯಿಯಿಂದ ಬಾಳಶೆಟ್ಟಿ ಮೂಲೆ ಮೂಲಕ ಕನ್ಯಾನ ತನಕದ ರಸ್ತೆಯನ್ನು ಲೋಕೋಪಯೋಗಿ ಇಲಾಖೆ (PWD) ವ್ಯಾಪ್ತಿಗೆ ಹಸ್ತಾಂತರಿಸಿ, ಸಮಗ್ರವಾಗಿ ಅಭಿವೃದ್ಧಿಪಡಿಸಬೇಕು.

ಹತ್ತು ವರ್ಷಗಳ ಹಿಂದೆ ಬಾಕಿ ಉಳಿದಿದ್ದ ಓಣಿಬಾಗಿಲಿನಿಂದ ಪಕಳಕುಂಜ ತನಕದ ರಸ್ತೆಯನ್ನು ತಕ್ಷಣವೇ ಅಗಲೀಕರಣಗೊಳಿಸಬೇಕು.

ವಾಹನ ಸಂಚಾರ ಬಂದ್ ಮಾಡುವ ಎಚ್ಚರಿಕೆ

“ನಾವು ಇಲಾಖಾಧಿಕಾರಿಗಳಲ್ಲಿ ಹಾಗೂ ಜನಪ್ರತಿನಿಧಿಗಳಲ್ಲಿ ಭಿಕ್ಷೆ ಬೇಡುತ್ತಿಲ್ಲ, ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ” ಎಂದು ಹೋರಾಟಗಾರರು ಸ್ಪಷ್ಟಪಡಿಸಿದರು. 10 ವರ್ಷಗಳ ಹಿಂದೆ ಇದೇ ತಂಡವು ಮುಳಿಯ ಎಂಬಲ್ಲಿ ಭಾರಿ ಮಟ್ಟದ ರಸ್ತೆ ತಡೆ ನಡೆಸಿ ಯಶಸ್ಸು ಸಾಧಿಸಿತ್ತು ಎಂಬುದನ್ನು ನೆನಪಿಸಿದ ಅವರು, ಈ ಬಾರಿ ಬೇಡಿಕೆಗಳು ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಈ ರಸ್ತೆಯಲ್ಲಿ ಸಂಪೂರ್ಣವಾಗಿ ವಾಹನ ಸಂಚಾರವನ್ನು ಬಂದ್ ಮಾಡಿ ತೀವ್ರ ಸ್ವರೂಪದ ಪ್ರಜಾಪ್ರಭುತ್ವದ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

ನೇತೃತ್ವ: ಈ ಹೋರಾಟದ ಸಾಮೂಹಿಕ ನಾಯಕತ್ವವನ್ನು ಯತೀಶ್ ಪೆರುವಾಯಿ, ಗೋಪಾಲಕೃಷ್ಣ ಶೆಟ್ಟಿ ಸೇನೆರಪಾಲು, ಮೋಕ್ಷಿತ್ ಪೆರುವಾಯಿ, ಮಂಜುನಾಥ ಆಚಾರ್ಯ ಅಶ್ವಥನಗರ,ಪ್ರಭಾಕರ ಶೆಟ್ಟಿ ಕಳಾಯ್ತಿಮಾರ್,ವಿನೀತ್ ಶೆಟ್ಟಿ ಕಾನ, ಅಶೋಕ್ ಮಾಣಿಲ,ಎಂ ಮಹಾಬಲ ಭಟ್ ಮುರುವ, ವಿಷ್ಣು ಕನ್ನಡಗುಳಿ,ಪ್ರಕಾಶ್ಚಂದ್ರ ಶೆಟ್ಟಿ ಎ ಕೆ ನಿಲಯ,ಶೇಖರ ಪೂಜಾರಿ ಕುಂಬಳಕೋಡಿ,ರಾಘವ ಮಾಸ್ಟರ್ ಬೆರಿಪದವು,ಗಿರೀಶ್ ಪಾಟಾಳಿ,ಮನೋಜ್ ಆಚಾರ್ಯ ಪೆರುವಾಯಿ, ಸವಿತಾ ಆಚಾರ್ಯ ಅಶ್ವಥನಗರ, ಸೂರ್ಯ ಪ್ರಭಾ ಎ ಕೆ ನಿಲಯ ವಹಿಸಿದ್ದರು.




ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಹನೀಫ್ ಬಗ್ಗುಮೂಲೆ ಅರ್ಜಿ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಷ್ಟ್ರೀಯ ಕಾಂಗ್ರೆಸ್‌ ಸಮಿತಿಯ ಸಾರಥ್ಯ ವಹಿಸಲು ಪಕ್ಷದ ಹಿರಿಯ, ನಿಷ್ಠಾವಂತ ಹಾಗೂ ನೇರ ನಡೆ-ನುಡಿಯ ಪ್ರಭಾವಿ ನಾಯಕ ಹನೀಫ್ ಬಗ್ಗುಮೂಲೆ ಅವರು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಪಕ್ಷ ಹಾಗೂ ಸಮಾಜಸೇವೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಮೂರು ದಶಕಗಳ ಸುದೀರ್ಘ ರಾಜಕೀಯ ಪಯಣ

ಬಂಟ್ವಾಳ ತಾಲೂಕು ಕುಳ ಗ್ರಾಮದ ಬಗ್ಗುಮೂಲೆ ನಿವಾಸಿಯಾಗಿರುವ ಹನೀಫ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ನಿರಂತರವಾಗಿ ಶ್ರಮಿಸಿದವರು. ಬಾಲ್ಯದಿಂದಲೇ ಸಾಮಾಜಿಕ ಕಳಕಳಿ ಬೆಳೆಸಿಕೊಂಡಿದ್ದ ಇವರು, ಪಕ್ಷದ ಧ್ವಜದಡಿಯಲ್ಲಿ ಉಚಿತ ಮೆಡಿಕಲ್ ಕ್ಯಾಂಪ್‌ಗಳು, ರಕ್ತದಾನ ಶಿಬಿರಗಳು, ಕ್ರೀಡಾ ಕೂಟಗಳು ಹಾಗೂ ಧಾರ್ಮಿಕ ಸಮಾರಂಭಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಜನಮಾನಸದಲ್ಲಿ ಆಪತ್ಬಾಂಧವನಾಗಿ ನೆಲೆಸಿದ್ದಾರೆ.

ಸಂಸ್ಥಾಪನಾ ಹೆಜ್ಜೆಗಳು ಮತ್ತು ವಹಿಸಿದ ಜವಾಬ್ದಾರಿಗಳು

ಇವರ ನಿಸ್ಪಕ್ಷಪಾತ ಸೇವೆ ಮತ್ತು ಸಂಘಟನಾ ಚತುರತೆಯನ್ನು ಗುರುತಿಸಿದ ಕಾಂಗ್ರೆಸ್ ಪಕ್ಷ, ಇವರಿಗೆ ವಿವಿಧ ಹಂತಗಳಲ್ಲಿ ಜವಾಬ್ದಾರಿಗಳನ್ನು ನೀಡಿ ಗೌರವಿಸಿದೆ:

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸೇವಾದಳ: ಅಧ್ಯಕ್ಷರಾಗಿ 3 ವರ್ಷಗಳ ಕಾಲ ಯಶಸ್ವಿ ಸೇವೆ.

ಜಿಲ್ಲಾ ಕಾಂಗ್ರೆಸ್ ಸೇವಾದಳ: ಸಂಘಟನಾ ಕಾರ್ಯದರ್ಶಿಯಾಗಿ ಪಕ್ಷದ ತಳಮಟ್ಟದ ಸಂಘಟನೆ.

ಕೆಪಿಸಿಸಿ (KPCC): ರಾಜ್ಯ ಮಟ್ಟದ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಶ್ರಮಿಕರ ಪರ ಧ್ವನಿ.

ರಾಷ್ಟ್ರೀಯ ರಾಜೀವ ಗಾಂಧಿ ಜ್ಯೋತಿಯಾತ್ರೆ ಸಮಿತಿ: ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ದೇಶಾದ್ಯಂತ ವ್ಯಾಪಕ ಕಾರ್ಯಾಚರಣೆ ಹಾಗೂ ಪಕ್ಷದ ಸಿದ್ಧಾಂತಗಳ ಪ್ರಚಾರ.

ಪ್ರಶಸ್ತಿ ಹಾಗೂ ಪುರಸ್ಕಾರ

ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಜನಸೇವೆ ಸಲ್ಲಿಸಿರುವ ಹನೀಫ್ ಬಗ್ಗುಮೂಲೆ ಅವರ ನಿರಂತರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ “ಗಡಿನಾಡ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸಲು ಮತ್ತು ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಲು ತಮ್ಮ ಅನುಭವ ಮತ್ತು ಬದ್ಧತೆ ಸಹಕಾರಿಯಾಗಲಿದೆ ಎಂಬ ವಿಶ್ವಾಸದೊಂದಿಗೆ ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ.

Continue Reading

Bantawala

ದಕ್ಷಿಣ ಕನ್ನಡ: ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ

Published

on

ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ರಾಯಿ ನಿವಾಸಿ ಜೀವನ್ ಪಿಂಟೊ (48) ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ಶನಿವಾರ ತಡರಾತ್ರಿ ಜೀವನ್ ಪಿಂಟೊ ಅವರು ತೋಡಿನ ಆಚೆಗಿರುವ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದರೂ, ಅವರು ನೀರಿಗೆ ಬಿದ್ದಿದ್ದಾರೋ ಅಥವಾ ಬೇರೆಡೆ ತೆರಳಿದ್ದಾರೋ ಎಂಬುದು ಅಧಿಕೃತವಾಗಿ ದೃಢಪಟ್ಟಿರಲಿಲ್ಲ.

ಸತತ ಶೋಧ ಕಾರ್ಯಾಚರಣೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ನದಿಯಲ್ಲಿ ಹರಿಯುತ್ತಿರುವ ಪ್ರಬಲ ನೀರಿನ ಸೆಳೆತದ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗುತಜ್ಞರು ಮತ್ತು ಗ್ರಾಮಸ್ಥರು ಕಳೆದ ಎರಡು ದಿನಗಳಿಂದ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.

ಸತತ ಕಾರ್ಯಾಚರಣೆಯ ಫಲವಾಗಿ ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮೃತದೇಹವನ್ನು ನದಿಯಿಂದ ಹೊರತೆಗೆದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಹಾಗೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

Continue Reading

Bantawala

ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್‌ ದಾಖಲು!

Published

on

ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ:

ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.

ಮಹಿಳೆಯ ಧೈರ್ಯ, ವೈರಲ್ ವೀಡಿಯೋ:

ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.

ಬಂಟ್ವಾಳ ಠಾಣೆಯಲ್ಲಿ ದೂರು:

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

Trending

Copyright © 2025 Deevatige

error: Content is protected !!