Politics
ಎಂನರೇಗಾದಿಂದ ಮಹಾತ್ಮಗಾಂಧಿ ಹೆಸರು ಕೈಬಿಟ್ಟ ಬೆನ್ನಲ್ಲೇ ‘ಕರ್ಮಶ್ರೀ’ ಯೋಜನೆಗೆ ಗಾಂಧಿ ಹೆಸರು
ಪಶ್ಚಿಮ ಬಂಗಾಳ ; ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ ಮಹಾತ್ಮ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವ ಬೆನ್ನಲ್ಲೆ ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ ‘ಕರ್ಮಶ್ರೀ’ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.
ಅವರು ಕೋಲ್ಕತ್ತಾದ ಧೋನೋ ಧನ್ಯೋ ಸಭಾಂಗಣದಲ್ಲಿ ನಡೆದ ವ್ಯಾಪಾರ ಮತ್ತು ಕೈಗಾರಿಕಾ ಸಮಾವೇಶದಲ್ಲಿ ಮಾತುಗಳನ್ನಾಡುತ್ತಾ, ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೇಂದ್ರ ಕೈಬಿಟ್ಟಿರುವುದಕ್ಕೆ ನನಗೆ ನಾಚಿಕೆಯಾಗುತ್ತಿದೆ, ರಾಷ್ಟ್ರಪಿತನಿಗೆ ಅವರು ಗೌರವ ಸಲ್ಲಿಸದಿದ್ದರೆ ನಾನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್ಆರ್ಇಜಿಎ)’ಯ ಹೆಸರು ಮತ್ತು ನಿಬಂಧನೆಗಳನ್ನು ಬದಲಿಸುವ ‘ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) 2025 (ವಿಬಿ-ಜಿ ರಾಮ್-ಜಿ) ಎಂಬ ಹೊಸ ಮಸೂದೆಗೆ ಗುರುವಾರ (ಡಿಸೆಂಬರ್ 18) ಲೋಕಸಭೆಯ ಅನುಮೋದನೆ ಪಡೆದಿದೆ.

ಈ ಮಸೂದೆ 2005ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದ ನರೇಗಾ ಕಾಯ್ದೆ ಮತ್ತು ಯೋಜನೆಯ ಹೆಸರು, ನಿಬಂಧನೆಗಳನ್ನು ಬದಲಿಸಲಿದೆ. ಮುಖ್ಯವಾಗಿ ಯೋಜನೆಯಿಂದ ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದು ಹಾಕಲಿದೆ.
ನರೇಗಾ ಕಾಯ್ದೆಯ ಹೆಸರು ಬದಲಿಸಿರುವ ಕೇಂದ್ರ ಕೆಲಸದ ದಿನಗಳನ್ನು 100ರಿಂದ 125ಕ್ಕೆ ಹೆಚ್ಚಳ ಮಾಡುವುದಾಗಿ ಹೇಳಿದೆ. ಇದಕ್ಕೆ ಟಕ್ಕರ್ ಕೊಟ್ಟಿರುವ ಮಮತಾ ಬ್ಯಾನರ್ಜಿ ‘ಕರ್ಮಶ್ರೀ’ ಯೋಜನೆಯಡಿ ಪ್ರಸ್ತುತ ಇರುವ ಕೆಲಸದ ದಿನಗಳು 75 ಅನ್ನು 100ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.
“ನಾವು ಈಗಾಗಲೇ ‘ಕರ್ಮಶ್ರೀ’ ಅಡಿಯಲ್ಲಿ ಸಾಕಷ್ಟು ಕೆಲಸದ ದಿನಗಳನ್ನು ಸೃಷ್ಟಿಸಿದ್ದೇವೆ. ಅದನ್ನು ನಾವು ನಮ್ಮ ಸ್ವಂತ ಸಂಪನ್ಮೂಲಗಳಿOದ ನಡೆಸುತ್ತಿದ್ದೇವೆ. ಕೇಂದ್ರ ನಿಧಿಯನ್ನು ನಿಲ್ಲಿಸಿದರೂ, ಜನರಿಗೆ ಕೆಲಸ ಸಿಗುವಂತೆ ನೋಡಿಕೊಳ್ಳುತ್ತೇವೆ. ನಾವು ಭಿಕ್ಷುಕರಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಪಾಲಿಸದ ಕಾರಣ ನೀಡಿ 2005ರ ನರೇಗಾ ಕಾಯ್ದೆಯ ಸೆಕ್ಷನ್ 27 ಅನ್ನು ಅನ್ವಯಿಸಿ ಕೇಂದ್ರ ಸರ್ಕಾರ ಮಾರ್ಚ್ 9,2022ರಿಂದ ಪಶ್ಚಿಮ ಬಂಗಾಳಕ್ಕೆ ಯೋಜನೆಯ ಹಣ ಬಿಡುಗಡೆ ಮಾಡುವುದನ್ನು ಸ್ಥಗಿತಗೊಳಿಸಿದೆ.
ಕೇಂದ್ರ ಸರ್ಕಾರ ಹಣ ನೀಡುವುದನ್ನು ನಿಲ್ಲಿಸಿರುವುದರ ವಿರುದ್ದ ಪಶ್ಚಿಮ ಬಂಗಾಳ ಸರ್ಕಾರ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆಗಸ್ಟ್ 1,2025ರಿಂದ ಪಶ್ಚಿಮ ಬಂಗಾಳದಲ್ಲಿ ಯೋಜನೆಯನ್ನು ಪುನರ್ ಅನುಷ್ಠಾನಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಅಕ್ಟೋಬರ್ 27,2024ರಂದು ಕೇಂದ್ರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ನಲ್ಲಿ ಹಿನ್ನೆಡೆಯಾದ ಕಾರಣ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಪಶ್ಚಿಮ ಬಂಗಾಳದಲ್ಲಿ ವಿಶೇಷ ಷರತ್ತುಗಳೊಂದಿಗೆ ಯೋಜನೆ ಪುನರಾರಂಭಿಸಲು ಮುಂದಾಗಿದೆ ಎಂದು ವರದಿಯಾಗಿದೆ.
ಅಂದಿನಿOದ, ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಯಾವುದೇ ಕೆಲಸ ನಡೆದಿಲ್ಲ. ಯೋಜನೆಯನ್ನು ಸ್ಥಗಿತಗೊಳಿಸುವ ಮೊದಲು, 2014-15 ಮತ್ತು 2021-22 ರ ನಡುವೆ ಪಶ್ಚಿಮ ಬಂಗಾಳದ 51 ಲಕ್ಷದಿಂದ 80 ಲಕ್ಷ ಕುಟುಂಬಗಳು ವಾರ್ಷಿಕವಾಗಿ ಅದರ ಲಾಭ ಪಡೆಯುತ್ತಿದ್ದವು.
DEATH
ಮಾಜಿ ಶಾಸಕ, ಹಿರಿಯ ರಾಜಕಾರಣಿ, ಧಾರ್ಮಿಕ ಕ್ಷೇತ್ರದ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ..
ಮಾಜಿ ಶಾಸಕ, ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ(91) ಇಂದು ನಿಧನರಾಗಿದ್ದಾರೆ. ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ರೀತಿಯಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಬಸ್ರೂರು ಅಪ್ಪಣ್ಣ ಹೆಗ್ಡೆ (Basruru Appanna Hegde) ಅವರು ತಮ್ಮ 91ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಇಂದು ಕೊನೆಯುಸಿರೆಳೆದರು.

ಬೈಂದೂರು ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ
1983-1985 ಅವಧಿಯಲ್ಲಿ ಜನತಾ ಪಕ್ಷದಿಂದ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಶಾಸಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರು ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದ್ದರು. ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳುವಾಗಿದ್ದ ಅಪ್ಪಣ್ಣ ಹೆಗ್ಡೆ ಅವರು ಪ್ರಾಮಾಣಿಕ ಸೇವೆಗೆ ಹೆಸರುವಾಸಿಯಾಗಿದ್ದರು.
ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಹಾಗೂ ಉತ್ತಮ ರೀತಿಯಲ್ಲಿ ಶಾಸಕರಾಗಿ ಕಾರ್ಯನಿರ್ವಹಿಸಿ ಕ್ಷೇತ್ರದ ಅಭಿವೃದ್ಧಿಗೆ ಬಸ್ರೂರು ಅಪ್ಪಣ್ಣ ಹೆಗ್ಡೆ ಮಹತ್ವದ ಕೊಡುಗೆ ನೀಡಿದ್ದರು. ಸ್ಥಳೀಯ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರು ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿಯೂ ಅಪ್ಪಣ್ಣ ಹೆಗ್ಡೆಯವರು ಕಾರ್ಯ ನಿರ್ವಹಿಸಿದ್ದರು.
91ನೇ ವಯಸ್ಸಿಗೆ ಕೊನೆಯುಸಿರೆಳೆದ ಅಪ್ಪಣ್ಣ ಹೆಗ್ಡೆಯವರು 1960 ರಿಂದ 83ವರೆಗೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಅಧ್ಯಕ್ಷರಾಗಿದ್ದರು. ಧಾರ್ಮಿಕ ಕ್ಷೇತ್ರದಲ್ಲಿಯೂ ಅವರ ಸೇವೆ ಗಣನೀಯವಾಗಿದೆ. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
Bantawala
ನರೇಗಾ ಬಚಾವೋ ಸಂಗ್ರಾಮ..ಕೇಂದ್ರ ಸರ್ಕಾರದ ಜನವಿರೋಧಿ ಕ್ರಮ ಖಂಡಿಸಿ ಕನ್ಯಾನದಲ್ಲಿ ಬ್ರಹತ್ ಪ್ರತಿಭಟನೆ..
ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಹೆಸರು ಹಾಗೂ ಅದರ ಮೂಲ ಸ್ವರೂಪವನ್ನು ಬದಲಾಯಿಸಿರುವ ಕ್ರಮವನ್ನು ಖಂಡಿಸಿ, ಕನ್ಯಾನ ವಲಯ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ “ನರೇಗಾ ಬಚಾವೋ ಸಂಗ್ರಾಮ” ದಡಿ ಕನ್ಯಾನ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಇಂದು ಬ್ರಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ಘಾಟಿಸಿ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ಮಜೀದ್ ಕನ್ಯಾನ ಮಾತನಾಡಿದರು.
ಮುಖ್ಯ ಭಾಷಣ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಎಂ.ಎಸ್. ಮಹಮ್ಮದ್, ನರೇಗಾ ಯೋಜನೆಯ ಮೂಲಕ ಗ್ರಾಮೀಣ ಜನರಿಗೆ ದೊರೆಯುತ್ತಿರುವ ಉದ್ಯೋಗ ಭದ್ರತೆ, ಜೀವನಾಧಾರ ಮತ್ತು ಸಾಮಾಜಿಕ ನ್ಯಾಯದ ಮಹತ್ವವನ್ನು ವಿವರಿಸಿ, ಯೋಜನೆಯ ಹೆಸರಿನ ಬದಲಾವಣೆ ಮಾತ್ರವಲ್ಲ, ಅದರ ಆತ್ಮವನ್ನೇ ಕುಗ್ಗಿಸುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಕೆ.ಪಿ. ಅಬ್ದುಲ್ ರಹಿಮಾನ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಗಣೇಶ್ ಭಟ್ ನೀರ್ಪಾಜೆ ಅವರು ಉದ್ಯೋಗ ಖಾತರಿ ಯೋಜನೆಯ ಸಾಧಕ–ಬಾಧಕಗಳ ಕುರಿತು ಮಾತನಾಡಿ, ನರೇಗಾ ಯೋಜನೆ ಗ್ರಾಮೀಣ ಬಡವರ ಪಾಲಿಗೆ ಆಶಾಕಿರಣವಾಗಿದ್ದು, ಅದನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನವನ್ನು ಸಹಿಸಬಾರದೆಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇಖಾ ರಮೇಶ್, ಪಂಚಾಯತ್ ಸದಸ್ಯರು, ಬೂತ್ ಅಧ್ಯಕ್ಷರುಗಳು, ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನೆಯ ಅಂತ್ಯದಲ್ಲಿ, ನರೇಗಾ ಯೋಜನೆಗೆ ಬೆಂಬಲ ಸೂಚಿಸಿ ಹಾಗೂ ‘ವಿಕಸಿತ ಭಾರತ ಗ್ರಾಮೀಣ ಉದ್ಯೋಗ ಖಾತರಿ (ವಿ.ಬಿ. ಗ್ರಾಮ್ ಜಿ)’ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಿ, ಗ್ರಾಮ ಪಂಚಾಯತ್ ಪಿಡಿಒ ಮೂಲಕ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಜೊತೆಗೆ ಈ ವಿಷಯವನ್ನು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ತೀರ್ಮಾನಿಸಲಾಯಿತು.
Bantawala
ನರೇಗಾ ಮರುಸ್ಥಾಪನೆಗೆ ಒತ್ತಾಯ:-ಕೊಳ್ನಾಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಹುಮತದ ತೀರ್ಮಾನ..
ಕೊಳ್ನಾಡು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಅಧ್ಯಕ್ಷರಾದ ಅಶ್ರಫ್ ಕೆ. ಸಾಲೆತ್ತೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷರಾದ ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ ಉಪಸ್ಥಿತರಿದ್ದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಹೆಸರನ್ನು ಬದಲಾಯಿಸಿ ‘ವಿಕಸಿತ ಭಾರತ ಉದ್ಯೋಗ ಖಾತರಿ ಅಜೀವಿಕ ಅಭಿಯಾನ’ ಎಂದು ಮರುನಾಮಕರಣ ಮಾಡಿರುವ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ) ಸಭೆಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೂ, ಹಿರಿಯ ಸದಸ್ಯರೂ ಆಗಿರುವ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಮಾತನಾಡುತ್ತಾ..ನರೇಗಾ ಯೋಜನೆಯ ಮೂಲ ಸ್ವರೂಪವನ್ನು ಕೈಬಿಟ್ಟು ವಿ.ಬಿ.ರಾಮ್ ಜಿ ಯೋಜನೆ ಜಾರಿಗೆ ತರಲಾಗಿರುವುದನ್ನು ಉಗ್ರವಾಗಿ ಖಂಡಿಸಿದರು. ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನೇ ಮರುಸ್ಥಾಪಿಸಬೇಕೆಂದು ಒತ್ತಾಯಿಸಿದರು.

ಈ ವಿಷಯವಾಗಿ ಸಭೆಯಲ್ಲಿ ಚರ್ಚೆ ನಡೆದಿದ್ದು, ಹಾಜರಿದ್ದ 29 ಸದಸ್ಯರ ಪೈಕಿ 20 ಮಂದಿ ಸದಸ್ಯರು ಸುಭಾಶ್ಚಂದ್ರ ಶೆಟ್ಟಿಯವರ ಅಭಿಪ್ರಾಯಕ್ಕೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು. ಎಂಟು ಮಂದಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಬಹುಮತದ ಆಧಾರದ ಮೇಲೆ, ಸದ್ರಿ ನರೇಗಾ ಯೋಜನೆ ಹಾಗೂ ಅದರ ಮೂಲ ಹೆಸರು ಮತ್ತು ಸ್ವರೂಪವನ್ನು ಹಿಂದಿನಂತೆಯೇ ಮುಂದುವರಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಪತ್ರ ಬರೆಯುವಂತೆ ಸಾಮಾನ್ಯ ಸಭೆಯಲ್ಲಿ ಬಹುಮತದ ಮೂಲಕ ನಿರ್ಣಯ ಕೈಗೊಳ್ಳಲಾಯಿತು.

ಸಾಮಾನ್ಯ ಸಭೆಯಲ್ಲಿ ಹಿರಿಯ ಸದಸ್ಯರಾದ ಜಯಂತಿ ಎಸ್. ಪೂಜಾರಿ, ಅಬ್ದುಲ್ ಹಮೀದ್ ಸುರಿಬೈಲ್, ಶ್ರೀಮತಿ ನೆಬಿಸಾ, ಶ್ರೀಮತಿ ರತ್ನಾ, ಸಂಜೀವಿ, ಶ್ರೀಮತಿ ಭಾಗೀರಥಿ, ಶ್ರೀ ಪದ್ಮನಾಭ ಕುಳಾಲು, ಅಬ್ದುಲ್ ರಜಾಕ್, ಶ್ರೀಮತಿ ಸುಲೋಚನಾ ರೈ, ಶ್ರೀಮತಿ ಸವಿತಾ ಬರ್ಕಳ, ನತಾಲಿಯಾ ಕುಟಿನ್ಹಾ, ಶ್ರೀಮತಿ ದೇವಕಿ, ಲವೀನಾ ಫೆರಾವೋ, ಜಯಂತಿ ಜನಾರ್ದನ ಗೌಡ, ಅಬ್ದುಲ್ ರಜಾಕ್ ಸೆರ್ಕಳ, ಪ್ರಶಾಂತ್ ಶೆಟ್ಟಿ ಅಗರಿ, ಲೋಹಿತ್, ಅನಿತಾ ಶೆಟ್ಟಿಗಾರ್, ಸೌಮ್ಯಲತಾ ಕಾಡುಮಠ, ಶ್ರೀ ರಾಜರಾಂ ಹೆಗ್ಡೆ ಕುದ್ರಿಯ, ಶಶಿಕಲಾ, ಹರೀಶ್ ಟೈಲರ್, ಮಹಮ್ಮದ್ ಮಂಚಿ, ಕೃಷ್ಣಪ್ಪ ಪೂಜಾರಿ ಹಾಗೂ ಎ.ಬಿ. ಅಬ್ದುಲ್ಲಾ ಭಾಗವಹಿಸಿದ್ದರು. ದ್ವಿತೀಯ ಲೆಕ್ಕ ಪರಿಶೋಧಕ ದಿನೇಶ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಸಭೆಯನ್ನು ಸ್ವಾಗತಿಸಿ ಧನ್ಯವಾದ ತಿಳಿಸಿದರು.
-
crime7 days agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
crime3 weeks agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..
