Connect with us

manglore police

ಮಂಗಳೂರು: ಜಗಳದ ಬೆನ್ನಲ್ಲೇ ನಿದ್ರಿಸುತ್ತಿದ್ದ ಸ್ವಂತ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ ಮಾಡಿದ ಅಣ್ಣ!

Published

on

ಮಂಗಳೂರು: ಸಣ್ಣ ವಿಷಯಕ್ಕೆ ಆರಂಭವಾದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡು, ನಿದ್ರೆಯಲ್ಲಿದ್ದ ಸ್ವಂತ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್‌ನ ಚೊಕ್ಕಬೆಟ್ಟು ಮಠದ ಬಳಿ ಭಾನುವಾರ ತಡರಾತ್ರಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲೂಕಿನ ತೆಗ್ಯಾಳು ಗ್ರಾಮದ ಮೂಲದ ಮಲ್ಲಿಕಾರ್ಜುನ (20) ಕೊಲೆಯಾದ ದುರ್ದೈವಿ. ಕೊಲೆ ಎಸಗಿದ ಆತನ ಅಣ್ಣ ಸೋಮನಾಥ (21) ಎಂಬುವವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಘಟನೆಯ ವಿವರ:

ಕೊಲೆಯಾದ ಮಲ್ಲಿಕಾರ್ಜುನ ಹಾಗೂ ಆರೋಪಿ ಸೋಮನಾಥ ಚೊಕ್ಕಬೆಟ್ಟು ಮಠದ ಬಳಿ ರೇಖಾ ಎಂಬವರ ಬಾಡಿಗೆ ಮನೆಯಲ್ಲಿ ತಾಯಿಯೊಂದಿಗೆ ವಾಸವಾಗಿದ್ದರು. ಇತ್ತೀಚೆಗಷ್ಟೇ ತಾಯಿ ಸ್ವಗ್ರಾಮಕ್ಕೆ ತೆರಳಿದ್ದರಿಂದ ಮನೆಯಲ್ಲಿ ಸಹೋದರರಿಬ್ಬರೇ ಇದ್ದರು.

ಭಾನುವಾರ ರಾತ್ರಿ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ತೀವ್ರ ಗಲಾಟೆ ನಡೆದಿದೆ. ಜಗಳದ ಬಳಿಕ ಮಲ್ಲಿಕಾರ್ಜುನ ಕೊಠಡಿಯಲ್ಲಿ ಮಲಗಿದ್ದ. ಆಕ್ರೋಶ ತಣಿಯದ ಅಣ್ಣ ಸೋಮನಾಥ, ತಡರಾತ್ರಿ ತಮ್ಮ ಗಾಢ ನಿದ್ರೆಯಲ್ಲಿದ್ದಾಗ ಭಾರಿ ಗಾತ್ರದ ಕಲ್ಲನ್ನು ಆತನ ತಲೆಗೆ ಎತ್ತಿ ಹಾಕಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಮಲ್ಲಿಕಾರ್ಜುನ ಸ್ಥಳದಲ್ಲೇ ಅಸಹಾಯಕವಾಗಿ ಕೊನೆಯುಸಿರೆಳೆದಿದ್ದಾನೆ.

ತಮ್ಮ ಏಳುತ್ತಿಲ್ಲವೆಂದು ನಾಟಕ ಆಡಿದ ಆರೋಪಿ!

ಕೃತ್ಯ ಎಸಗಿದ ಬಳಿಕ ಆರೋಪಿ ಸೋಮನಾಥ ಅತ್ಯಂತ ಚಾಲಾಕಿತನದಿಂದ ನಡೆದುಕೊಂಡಿದ್ದಾನೆ. ಸೋಮವಾರ ಬೆಳಿಗ್ಗೆ ಎದ್ದು ನೆರೆಹೊರೆಯವರ ಬಳಿ ಹೋಗಿ, “ನನ್ನ ತಮ್ಮ ನಿದ್ರೆಯಿಂದ ಏಳುತ್ತಲೇ ಇಲ್ಲ” ಎಂದು ನಾಟಕವಾಡಿದ್ದಾನೆ. ಆತನ ವರ್ತನೆಯಿಂದ ಅನುಮಾನಗೊಂಡ ಸ್ಥಳೀಯರು ತಕ್ಷಣವೇ ಮನೆ ಮಾಲೀಕರಿಗೆ ವಿಷಯ ತಿಳಿಸಿದ್ದು, ಅವರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.

ವಿಚಾರಣೆ ವೇಳೆ ಕೃತ್ಯ ಒಪ್ಪಿಕೊಂಡ ಅಣ್ಣ

ವಿಷಯ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಸುರತ್ಕಲ್ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ರಾತ್ರಿ ಇಬ್ಬರ ನಡುವೆ ಜಗಳ ನಡೆದಿತ್ತು. ಕೋಪದ ಕೈಗೆ ಬುದ್ಧಿಕೊಟ್ಟು ತಾನೇ ತಮ್ಮನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವುದಾಗಿ ಆರೋಪಿ ಪೊಲೀಸರ ಎದುರು ಒಪ್ಪಿಕೊಂಡಿದ್ದಾನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ:

ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್ ಹೆಚ್.ಎಂ., ಪಣಂಬೂರು ಉಪ ವಿಭಾಗದ ಎಸಿಪಿ ಶ್ರೀಕಾಂತ್ ಹಾಗೂ ಸುರತ್ಕಲ್ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ, ಬೆರಳಚ್ಚು ಹಾಗೂ ವಿಧಿವಿಜ್ಞಾನ ತಜ್ಞರ (FSL) ತಂಡ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖ್ಯಾತ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ಕಳೆದ 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, 30ಕ್ಕೂ ಹೆಚ್ಚು ವಾರಂಟ್ ಹಾಗೂ 13ಕ್ಕೂ ಅಧಿಕ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ಪಡೆ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಉಳ್ಳಾಲ ತಾಲೂಕಿನ ಮಾರ್ಗತಲೆ ಮೂಲದ, ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಡಪ್ಪು ನಿವಾಸಿ ಉಮ್ಮರ್ ನವಾಫ್ (33) ಬಂಧಿತ ಆರೋಪಿ.

30ಕ್ಕೂ ಹೆಚ್ಚು ವಾರಂಟ್, ಪ್ರೋಕ್ಲಮೇಷನ್ ಜಾರಿ

ಬಂಧಿತ ಉಮ್ಮರ್ ನವಾಫ್ ವಿರುದ್ಧ ಕೊಲೆ ಯತ್ನ, ಅಪಹರಣ, ದರೋಡೆ, ಹಫ್ತಾ ವಸೂಲಿ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಗಳಿಗೆ ಸಂಬಂಧಿಸಿದಂತೆ ಉಳ್ಳಾಲ, ಪಣಂಬೂರು ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ 13ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಘನ ನ್ಯಾಯಾಲಯವು 30ಕ್ಕೂ ಹೆಚ್ಚು ವಾರಂಟ್‌ಗಳನ್ನು ಹೊರಡಿಸಿತ್ತು. ಅಲ್ಲದೆ, ಉಳ್ಳಾಲ ಠಾಣೆಯ ಮೂರು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದ ಆದೇಶದಂತೆ ‘ಪ್ರೋಕ್ಲಮೇಷನ್’ ಜಾರಿಗೊಳಿಸಲಾಗಿತ್ತು ಹಾಗೂ ಒಂದು ಪ್ರಕರಣದಲ್ಲಿ ಎಲ್.ಪಿ.ಸಿ (LPC) ಮಾಡಲಾಗಿತ್ತು.

ಆರೋಪಿ ಉಮ್ಮರ್ ನವಾಫ್ ಮೇಲಿರುವ ಪ್ರಕರಣಗಳ ವಿವರಗಳು:

  1. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 222/17):
    • ಕಲಂಗಳು: 143, 147, 148 (ಕಾನೂನುಬಾಹಿರ ಗುಂಪುಗಾರಿಕೆ, ಗಲಭೆ), 341 (ಅಕ್ರಮ ತಡೆ), 504, 506 (ಶಾಂತಿ ಭಂಗ, ಜೀವ ಬೆದರಿಕೆ), 324 (ಹಾಕಾಹಾಕಿ/ಹೊಡೆದಾಟ) ಮತ್ತು 307 (ಕೊಲೆ ಯತ್ನ).
  2. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 23/17):
    • ಕಲಂಗಳು: 427 IPC (ಆಸ್ತಿಗೆ ಹಾನಿ) ಮತ್ತು KPDLP ಕಾಯ್ದೆಯ 2(a), 2(b) (ಸಾರ್ವಜನಿಕ ಆಸ್ತಿ ನಷ್ಟ ತಡೆ ಕಾಯ್ದೆ).
  3. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 247/14):
    • ಕಲಂಗಳು: 448 (ಅಕ್ರಮ ಪ್ರವೇಶ) ಮತ್ತು 395 (ದರೋಡೆ).
  4. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 289/17):
    • ಕಲಂಗಳು: 504, 506, 364(a) (ಅಪಹರಣ ಮತ್ತು ಕಪ್ಪಕ್ಕೆ ಬೇಡಿಕೆ), 387 (ಹಫ್ತಾ ವಸೂಲಿಗೆ ಬೆದರಿಕೆ), 395 (ದರೋಡೆ), 149 IPC.
  5. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 276/15) – (ನ್ಯಾಯಾಲಯದಿಂದ LPC ಮಾಡಲಾದ ಪ್ರಕರಣ):
    • ಕಲಂಗಳು: 143, 144, 148, 448, 451, 452 (ಅಕ್ರಮ ಮನೆ ಪ್ರವೇಶ), 326, 307 (ಕೊಲೆ ಯತ್ನ), 397 (ಮಾರಕ ಆಯುಧದೊಂದಿಗೆ ದರೋಡೆ/ಕಳವು), 506, 149 IPC.
  6. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 206/2012) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 323, 427, 504, 506, 149 IPC.
  7. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 27/2017) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 387 IPC (ಭಯ ಹುಟ್ಟಿಸಿ ಹಣ/ಆಸ್ತಿ ವಸೂಲಿ ಮಾಡುವುದು).
  8. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 103/2021):
    • ಕಲಂಗಳು: 364 IPC (ಕೊಲೆ ಮಾಡುವ ಉದ್ದೇಶದಿಂದ ಅಪಹರಣ).
  9. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 71/23):
    • ಕಲಂಗಳು: 504, 506, 307 (ಕೊಲೆ ಯತ್ನ), 324, 427 IPC.
  10. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 183/17) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 448, 504, 324, 323, 506, 427 R/w 149 IPC.
  11. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 159/23):
    • ಕಲಂಗಳು: 341, 394 (ಕಳವು ಮಾಡುವಾಗ ಗಾಯಗೊಳಿಸುವುದು), 307 (ಕೊಲೆ ಯತ್ನ) R/w 34 IPC.
  12. ಪಣಂಬೂರು ಪೊಲೀಸ್ ಠಾಣೆ (PNB ಮೊ.ನಂ 158/2012):
    • ಕಲಂಗಳು: 379 IPC (ಕಳವು).
  13. ಬರ್ಕೆ ಪೊಲೀಸ್ ಠಾಣೆ (ಮೊ.ನಂ 04/15):
    • ಕಲಂಗಳು: 353 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ), 427 R/w 34 IPC.

ಪೊಲೀಸರ ಸಕಾಲಿಕ ಕಾರ್ಯಾಚರಣೆ

ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ (ACP) ಮಾರ್ಗದರ್ಶನದಲ್ಲಿ, ದಕ್ಷಿಣ ಉಪವಿಭಾಗ ಕಚೇರಿಯ ವಿಶೇಷ ಕರ್ತವ್ಯ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿನಾಂಕ 02-08-2026 ರಂದು ಸುಳಿವು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

Continue Reading

arrest

ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆ: ಪೊಲೀಸ್ ಇಲಾಖೆಯ ವಿವಿಧ ಪ್ರಮುಖ ಕಾರ್ಯಾಚರಣೆಗಳು – ಮೂವರು ಆರೋಪಿಗಳ ಬಂಧನ, ಪ್ರಕರಣಗಳಲ್ಲಿ ಮಹತ್ವದ ಬೆಳವಣಿಗೆ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಮೂರು ಪ್ರಮುಖ ಕಾರ್ಯಾಚರಣೆಗಳು ಹಾಗೂ ನ್ಯಾಯಾಂಗ ಪ್ರಕ್ರಿಯೆಗಳಲ್ಲಿ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ, 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯ ಬಂಧನ ಹಾಗೂ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದ ಘಟನೆಗಳು ನಡೆದಿವೆ.

ವರದಿಗಳ ವಿವರ ಇಲ್ಲಿದೆ:

1. ಬೆಳ್ತಂಗಡಿಯಲ್ಲಿ 7.60 ಲಕ್ಷ ರೂ. ಮೌಲ್ಯದ ಎಂಡಿಎಂಎ, ಗಾಂಜಾ ಜಪ್ತಿ: ಓರ್ವನ ಬಂಧನ

ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಜುಲೈ 29ರ ರಾತ್ರಿ ಬೆಳ್ತಂಗಡಿ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಆನಂದ ಎಂ ಹಾಗೂ ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಅನುಮಾನಾಸ್ಪದವಾಗಿ ಆಟೋ ರಿಕ್ಷಾ (KA18 A 7203) ಬಳಿ ನಿಂತಿದ್ದ ಬೆಳ್ತಂಗಡಿ ಕುವೆಟ್ಟು ನಿವಾಸಿ ತ್ವಲಹ್ ಯಾನೆ ಅನ್ವರ್ ಯಾನೆ ಅನ್ಸರ್‌ (21) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಆತನ ತಪಾಸಣೆ ನಡೆಸಿದಾಗ 27 ಗ್ರಾಂ ಗಾಂಜಾ ಹಾಗೂ ಮೊಬೈಲ್ ಪತ್ತೆಯಾಗಿದೆ. ಸ್ಥಳದಲ್ಲಿದ್ದ ರಿಕ್ಷಾ ಹಾಗೂ ಕಾರನ್ನು ಪರಿಶೀಲಿಸಿದಾಗ ಸುಮಾರು 7,60,000 ರೂಪಾಯಿ ಮೌಲ್ಯದ 76.59 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತುವಾದ MDMA (ಎಂಡಿಎಂಎ) ಪತ್ತೆಯಾಗಿದೆ. ಮಾದಕ ವಸ್ತು ಸರಬರಾಜು ಮಾಡಲು ಬಂದಿದ್ದ ಮತ್ತೋರ್ವ ಆರೋಪಿ ಅಮ್ಜತ್‌ ಖರಾರ್‌ ಎಂಬಾತ ತನ್ನ KA21 MA 4990 ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ (ಅಕ್ರ 82/2026) ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

2. 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ವಶಕ್ಕೆ

ಮಂಗಳೂರು: 2015ರಲ್ಲಿ ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ (307) ಪ್ರಕರಣದಲ್ಲಿ ಭಾಗಿಯಾಗಿ, ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಹಾವೇರಿಯಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಚುಂಕಿ ಆಕಾಶಭವನ ಅಲಿಯಾಸ್ ಸಂತೋಷ್ ಎಸ್ (34) ಎಂದು ಗುರುತಿಸಲಾಗಿದೆ. ಈತನು 2015ರಲ್ಲಿ ಮಂಗಳೂರಿನ ಆಕಾಶಭವನದಲ್ಲಿ ನಡೆದ ಮದುವೆಯೊಂದರ ಮದುರಂಗಿ ಶಾಸ್ತ್ರದ ವೇಳೆ ನಡೆದ ಗಲಾಟೆಯಲ್ಲಿ ಅಶೋಕ ಕುಮಾರ ಕೊಟ್ಟಾರಿ ಎಂಬುವರ ಮೇಲೆ ಇತರ ಆರೋಪಿಗಳೊಂದಿಗೆ ಸೇರಿ ತಲವಾರಿನಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿದ್ದನು (ಕಾವೂರು ಠಾಣೆ ಅ.ಕ್ರ 135/2015).

ಪ್ರಕರಣ ದಾಖಲಾದ ದಿನದಿಂದ ದಸ್ತಗಿರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ನ್ಯಾಯಾಲಯವು ಎಲ್ಪಿಸಿ (LPC) ವಾರಂಟ್ (25/2025) ಹೊರಡಿಸಿತ್ತು. ಸಿಸಿಬಿ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜುಲೈ 29, 2026 ರಂದು ಹಾವೇರಿ ಜಿಲ್ಲೆಯ ಚಿಕ್ಕೆರೂರು ಎಂಬಲ್ಲಿ ಈತನನ್ನು ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

3. ಅಪ್ರಾಪ್ತೆಯ ಮೇಲಿನ ದೌರ್ಜನ್ಯ, ನಗ್ನ ವಿಡಿಯೋ ಸ್ಕ್ರೀನ್‌ಶಾಟ್ ಇಟ್ಟು ಬೆದರಿಕೆ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿದ್ದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣದ (ಅ.ಕ್ರ. 130/2025) ಆರೋಪಿಗೆ ಮಂಗಳೂರಿನ ಎಫ್‌ಟಿಎಸ್‌ಸಿ-2 (FTSC-2) ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಕುಂಜತ್ತಬೈಲ್ ದೇವಿ ನಗರ ನಿವಾಸಿ ಸೋನು ಮ್ಯಾಕ್ಲಿನ್ ನೊರೊನ್ಹ (20) ಶಿಕ್ಷೆಗೆ ಒಳಗಾದ ಆರೋಪಿ. ಈತನು 2024ರಿಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವಂತೆ ನಂಬಿಸಿ, ಶಕ್ತಿನಗರ ಹಾಗೂ ಅಳಪೆ ಗ್ರಾಮದ ಮನೆಗಳಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದನು. ಅಲ್ಲದೆ, ಬಾಲಕಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಕಾಲ್ ಮಾಡಿ ಅದರ ಸ್ಕ್ರೀನ್‌ಶಾಟ್ ತೆಗೆದುಕೊಂಡು, ದೈಹಿಕ ಸಂಪರ್ಕಕ್ಕೆ ಬರದಿದ್ದರೆ ಚಿತ್ರಗಳನ್ನು ವೈರಲ್ ಮಾಡುವುದಾಗಿ ಹಾಗೂ ಕುಟುಂಬಸ್ಥರನ್ನು ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದನು.

ಕಂಕನಾಡಿ ನಗರ ಠಾಣೆಯ ಅಂದಿನ ಪೊಲೀಸ್ ಇನ್‌ಸ್ಪೆಕ್ಟರ್ ಟಿ.ಡಿ. ನಾಗರಾಜ್ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಶೇಷ ಸರ್ಕಾರಿ ಅಭಿಯೋಜಕರಾದ ಸಹನಾ ದೇವಿ ಸರ್ಕಾರದ ಪರ ವಾದ ಮಂಡಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಗೌರವಾನ್ವಿತ ನ್ಯಾಯಾಧೀಶರಾದ ಮಾನು ಕೆ.ಎಸ್. ರವರು ಆರೋಪಿಗೆ:

ಪೋಕ್ಸೋ ಕಲಂ 6 ಹಾಗೂ BNS ಕಲಂ 64(2)(m) ಅಡಿಯಲ್ಲಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹50,000 ದಂಡ,

BNS ಕಲಂ 77, ಪೋಕ್ಸೋ ಕಲಂ 15 ಹಾಗೂ IT ಕಾಯ್ದೆಯ ಕಲಂ 66(E) ಅಡಿಯಲ್ಲಿ ತಲಾ 1 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Continue Reading

drugs

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ.

Published

on

ಮಂಗಳೂರಿನಲ್ಲಿ ಮಾದಕ ವಸ್ತುಗಳ ವೈಜ್ಞಾನಿಕ ವಿಲೇವಾರಿ

ಮಂಗ‌ಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ವಿವಿಧ ಪ್ರಮುಖ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಸುಮಾರು ₹82 ಕೋಟಿ ಮೌಲ್ಯದ ಭಾರಿ ಪ್ರಮಾಣದ ಮಾದಕ ವಸ್ತುಗಳನ್ನು ಬುಧವಾರ ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ಸುಟ್ಟು ನಾಶಪಡಿಸಲಾಯಿತು.

ನ್ಯಾಯಾಲಯದ ಅನುಮತಿಯೊಂದಿಗೆ ಮುಲ್ಕಿಯ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿರುವ ‘ರಾಮ್ಕಿ ಎನರ್ಜಿ ಅಂಡ್ ಎನ್ವಿರಾನ್ಮೆಂಟ್ ಲಿಮಿಟೆಡ್’ (Ramky Energy and Environment Ltd.) ಸಂಸ್ಥೆಯ ಆವರಣದಲ್ಲಿ ‘ಡ್ರಗ್ ಡಿಸ್ಪೋಸಲ್ ಸಮಿತಿ’ಯ (Drug Disposal Committee) ನೇರ ಸಮ್ಮುಖದಲ್ಲಿ ಈ ವಿಲೇವಾರಿ ಪ್ರಕ್ರಿಯೆ ನಡೆಯಿತು.

16 ಠಾಣೆಗಳು, 59 ಪ್ರಕರಣಗಳ ಸರಕು ನಾಶ:

ನಗರ ಪೊಲೀಸ್ ವ್ಯಾಪ್ತಿಯ 16 ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 59 ಎನ್‌ಡಿಪಿಎಸ್‌ (NDPS) ಪ್ರಕರಣಗಳಿಗೆ ಸಂಬಂಧಿಸಿದಂತೆ ಜಪ್ತಿ ಮಾಡಲಾಗಿದ್ದ ವಿವಿಧ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ಸುಟ್ಟು ವಿಲೇವಾರಿ ಮಾಡಲಾಗಿದೆ. ನಾಶಪಡಿಸಲಾದ ವಸ್ತುಗಳ ವಿವರ ಹೀಗಿದೆ:

  • ಗಾಂಜಾ: 450 ಕೆ.ಜಿ.
  • ಎಂ.ಡಿ.ಎಂ.ಎ. (MDMA): 43 ಕೆ.ಜಿ. 260 ಗ್ರಾಂ.
  • ಹೈಡ್ರೋ ವೀಡ್ ಗಾಂಜಾ: 880 ಗ್ರಾಂ.
  • ಭಾಂಗ್: 1 ಕೆ.ಜಿ. 200 ಗ್ರಾಂ.
  • ಚರಸ್: 80 ಗ್ರಾಂ.

ಪ್ರಮುಖ ಪ್ರಕರಣಗಳ ಜಪ್ತಿಗಳು:

ನಾಶಪಡಿಸಲಾದ ವಸ್ತುಗಳಲ್ಲಿ ಅತ್ಯಂತ ದೊಡ್ಡ ಮೊತ್ತದ ಜಪ್ತಿ ಎಂದರೆ, 2024ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದ ₹75 ಕೋಟಿ ಮೌಲ್ಯದ 37 ಕೆ.ಜಿ. ಎಂ.ಡಿ.ಎಂ.ಎ.. ಇದರೊಂದಿಗೆ 2025ರಲ್ಲಿ ಮುಲ್ಕಿ ಠಾಣೆಯಲ್ಲಿ ವಶಪಡಿಸಿಕೊಂಡಿದ್ದ ₹4.47 ಕೋಟಿ ಮೌಲ್ಯದ 4 ಕೆ.ಜಿ. ಎಂ.ಡಿ.ಎಂ.ಎ., ಕೊಣಾಜೆ ಠಾಣೆಯ ₹20 ಲಕ್ಷ ಮೌಲ್ಯದ 106 ಕೆ.ಜಿ. ಗಾಂಜಾ ಹಾಗೂ ಮೂಡಬಿದ್ರೆ ಠಾಣೆಯ ₹36 ಲಕ್ಷ ಮೌಲ್ಯದ 111 ಕೆ.ಜಿ. ಗಾಂಜಾ ಪ್ರಮುಖವಾಗಿವೆ.

2026ರ ಸಾಲಿನಲ್ಲಿ ತೀವ್ರಗೊಂಡ ಕಾರ್ಯಾಚರಣೆ:

ಚಾಲ್ತಿ ಸಾಲಿನಲ್ಲಿಯೂ ಡ್ರಗ್ಸ್ ವಿರುದ್ಧ ಮಂಗಳೂರು ನಗರ ಪೊಲೀಸರು ಸಮರ ಮುಂದುವರಿಸಿದ್ದು, ಇದುವರೆಗೆ 87 ಎನ್‌ಡಿಪಿಎಸ್‌ ಪ್ರಕರಣಗಳನ್ನು ದಾಖಲಿಸಿಕೊಂಡು 157 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಗಳ ವೇಳೆ ₹8.18 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು (148 ಕೆ.ಜಿ. ಗಾಂಜಾ, 7 ಕೆ.ಜಿ. MDMA, 1.7 ಕೆ.ಜಿ. ಹೈಡ್ರೋ ವೀಡ್) ಜಪ್ತಿ ಮಾಡಲಾಗಿದೆ. ಅಲ್ಲದೆ, ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 463 ಮಂದಿಯ ವಿರುದ್ಧ 356 ಪ್ರಕರಣಗಳನ್ನು ದಾಖಲಿಸಲಾಗಿದೆ.

ಸಾರ್ವಜನಿಕರಿಗೆ ಮಾಹಿತಿ ನೀಡಲು ಕರೆ:

ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಮಾರಾಟ, ಸಾಗಾಟ ಅಥವಾ ಬಳಕೆಯ ಕುರಿತು ಯಾವುದೇ ಸುಳಿವು ಸಿಕ್ಕಲ್ಲಿ ಇಲಾಖೆ ಸೃಜಿಸಿರುವ ಕ್ಯೂಆರ್ (QR) ಕೋಡ್ ಮೂಲಕ, ತುರ್ತು ಸಂಖ್ಯೆ 112 ಅಥವಾ 9480802321 ಗೆ ಮಾಹಿತಿ ನೀಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ವಿನಂತಿಸಿದ್ದಾರೆ.

Continue Reading

Trending

Copyright © 2025 Deevatige

error: Content is protected !!