Politics
ವಿಟ್ಲ ರಸ್ತೆ ಅಗಲೀಕರಣಕ್ಕೆ ತಾತ್ಕಾಲಿಕ ಬ್ರೇಕ್? ವರ್ತಕರ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ಕುಮಾರ್ ರೈ – ರಿಂಗ್ ರೋಡ್ಗೆ ಆದ್ಯತೆ ನೀಡುವ ಭರವಸೆ
ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪ್ರಮುಖ ರಸ್ತೆಗಳ ಅಗಲೀಕರಣ ಪ್ರಸ್ತಾಪಕ್ಕೆ ಸ್ಥಳೀಯ ವ್ಯಾಪಾರಸ್ಥರು, ಕಟ್ಟಡ ಮಾಲಕರು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ, ವಿಟ್ಲ ವಾಣಿಜ್ಯ ಮತ್ತು ವರ್ತಕರ ಸಂಘದ ನೇತೃತ್ವದಲ್ಲಿ 27 ಸದಸ್ಯರ ನಿಯೋಗವು ಸೋಮವಾರ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ ತಮ್ಮ ಆತಂಕ ಮತ್ತು ಬೇಡಿಕೆಗಳನ್ನು ಮನವರಿಕೆ ಮಾಡಿಕೊಟ್ಟಿತು.
ವಿಟ್ಲ ಪೇಟೆ ನಾಶದ ಭೀತಿಯಲ್ಲಿ ವರ್ತಕರು
ಪೇಟೆಯೊಳಗಿನ ಕಟ್ಟಡಗಳನ್ನು ಕೆಡವಿ ರಸ್ತೆ ಅಗಲೀಕರಣ ಮಾಡುವುದರಿಂದ ವ್ಯಾಪಾರ-ವಹಿವಾಟು ಸಂಪೂರ್ಣ ನಷ್ಟವಾಗಲಿದೆ. ರಸ್ತೆಯ ಎದುರಿನ ಅಂಗಡಿಗಳ ಹಿಂಭಾಗದಲ್ಲಿ ಮನೆಗಳು, ದೈವ-ದೇವರ ಆರಾಧನಾ ಮಂದಿರಗಳು, ನಾಗಬನಗಳು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಟ್ರಸ್ಟ್ ಕಚೇರಿಗಳಿವೆ. ಒಂದು ವೇಳೆ ರಸ್ತೆ ಅಗಲೀಕರಣ ನಡೆದರೆ ನೂರಾರು ಕುಟುಂಬಗಳು ಬೀದಿಗೆ ಬೀಳಲಿವೆ.
೨೦೧೬ರಲ್ಲಿಯೇ ಅಂದಿನ ಜಿಲ್ಲಾಧಿಕಾರಿ ಪೊನ್ನುರಾಜ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಮನವಿಯಂತೆ ವರ್ತಕರು ತಲಾ ೮ ಅಡಿ ಜಾಗ ಬಿಟ್ಟುಕೊಟ್ಟು ಸಹಕರಿಸಿದ್ದರು. ಆ ಸಮಯದಲ್ಲಿ ಮುಂದೆ ಅಗಲೀಕರಣ ಮಾಡುವುದಿಲ್ಲ, ಬೈಪಾಸ್ ರಸ್ತೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಲಾಗಿತ್ತು. ಆದರೆ, ಈಗ ಮತ್ತೆ ಅಗಲೀಕರಣಕ್ಕೆ ಮುಂದಾಗಿರುವುದು ವರ್ತಕರಲ್ಲಿ ಆತಂಕ ಮೂಡಿಸಿದೆ.
ಶಾಸಕರ ಸ್ಪಂದನೆ ಮತ್ತು ‘ರಿಂಗ್ ರೋಡ್’ ಯೋಜನೆ
ಸಾರ್ವಜನಿಕರು ಮತ್ತು ವ್ಯಾಪಾರಸ್ಥರ ಆತಂಕವನ್ನು ಆಲಿಸಿದ ಶಾಸಕ ಅಶೋಕ್ ಕುಮಾರ್ ರೈ, “ಜನರಿಗೆ ಮತ್ತು ವ್ಯಾಪಾರಿಗಳಿಗೆ ತುಂಬಲಾರದ ಸಂಕಷ್ಟ ಬರುವುದಾದರೆ ನಾನು ಈ ರಸ್ತೆ ಅಗಲೀಕರಣ ಪ್ರಸ್ತಾವನೆಯನ್ನು ಇಲ್ಲೇ ಕೈಬಿಡುತ್ತೇನೆ. ನಮ್ಮ ಆಡಳಿತ ಇರುವುದು ಜನರಿಗಾಗಿ” ಎಂದು ಸ್ಪಷ್ಟ ಭರವಸೆ ನೀಡಿದ್ದಾರೆ.
ಅಗಲೀಕರಣದ ಬದಲಿಗೆ ರಿಂಗ್ ರೋಡ್ (ಬೈಪಾಸ್) ನಿರ್ಮಿಸುವುದೇ ಶಾಶ್ವತ ಪರಿಹಾರ ಎಂದು ನಿಯೋಗವು ಶಾಸಕರಲ್ಲಿ ವಿನಂತಿಸಿತು. ಸರಕಾರಿ ಜಾಗ ಲಭ್ಯವಿರುವುದರಿಂದ ಮತ್ತು ಖಾಸಗಿ ಜಾಗ ಕಳೆದುಕೊಳ್ಳುವವರಿಗೆ ಸೂಕ್ತ ಪರಿಹಾರ ಧನ ಸಿಗುವುದರಿಂದ ರಿಂಗ್ ರೋಡ್ ನಿರ್ಮಾಣಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ನಿಯೋಗವು ಮನವರಿಕೆ ಮಾಡಿಕೊಟ್ಟಾಗ, ಈ ಮನವಿಯನ್ನು ಆದ್ಯತೆಯಾಗಿ ಪರಿಗಣಿಸುವುದಾಗಿ ಶಾಸಕರು ತಿಳಿಸಿದರು.
ಪಟ್ಟಣ ಪಂಚಾಯಿತಿ ಕಚೇರಿಗೆ ಹೊಸ ಕಟ್ಟಡದ ಬೇಡಿಕೆ
ವಿಟ್ಲದಲ್ಲಿ ಸಮರ್ಪಕ ಪಟ್ಟಣ ಪಂಚಾಯಿತಿ ಕಚೇರಿ ಇಲ್ಲದಿರುವುದರಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಹಾಲಿ ಕಚೇರಿಯಲ್ಲಿ ಪಾರ್ಕಿಂಗ್ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಇದೆ ಎಂದು ನಿಯೋಗ ಗಮನ ಸೆಳೆಯಿತು.
ಪಟ್ಟಣ ಪಂಚಾಯಿತಿ ಸದಸ್ಯ ಹೋನೆಸ್ಟ್ ಇಕ್ಬಾಲ್, ಹಳೆಯ ಕೆಇಬಿ ಸಮೀಪ ತಾಲೂಕು ಪಂಚಾಯಿತಿಗೆ ಸೇರಿದ ಸುಮಾರು ಎರಡು ಎಕರೆ ಸರ್ಕಾರಿ ಜಾಗದಲ್ಲಿ ಹೊಸ ಪಟ್ಟಣ ಪಂಚಾಯಿತಿ ಕಚೇರಿ ನಿರ್ಮಿಸಬಹುದು ಎಂದು ಶಾಸಕರಿಗೆ ಮಾಹಿತಿ ನೀಡಿದರು. ಭವಿಷ್ಯದಲ್ಲಿ ವಿಟ್ಲ ತಾಲೂಕು ಕೇಂದ್ರವಾದರೂ ಇದೇ ಜಾಗ ಆಡಳಿತಾತ್ಮಕ ಕೇಂದ್ರಕ್ಕೆ ಸೂಕ್ತವಾಗಲಿದೆ ಎಂದರು.
ವಿಟ್ಲ ತಾಲೂಕು ಕೇಂದ್ರಕ್ಕೆ ಸಹಕಾರ
ವಿಟ್ಲವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸುವ ಬೇಡಿಕೆ ಹಲವು ವರ್ಷಗಳಿಂದ ಮುಂದುವರಿದಿದ್ದು, ಈ ಹೋರಾಟಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವಂತೆ ನಿಯೋಗ ಮನವಿ ಮಾಡಿತು. ಈ ಕುರಿತು ಪ್ರಯತ್ನಿಸುವುದಾಗಿ ಶಾಸಕ ಭರವಸೆ ನೀಡಿದರು.
ಪಾರ್ಕಿಂಗ್ ವ್ಯವಸ್ಥೆಗೂ ಆದ್ಯತೆ
ಪಟ್ಟಣದಲ್ಲಿ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದರಿಂದ ವ್ಯಾಪಾರ ಹಾಗೂ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ನಿಯೋಗ ವಿವರಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ, ಪಾರ್ಕಿಂಗ್ ವ್ಯವಸ್ಥೆ ಅಗತ್ಯವಾಗಿದ್ದು, ಸೂಕ್ತ ಜಾಗವನ್ನು ಗುರುತಿಸಿದರೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

2016ರ ಭರವಸೆ ನೆನಪಿಸಿದ ವರ್ತಕರು
ನಿಯೋಗವು 2016ರಲ್ಲಿ ಅಂದಿನ ಜಿಲ್ಲಾಧಿಕಾರಿ ಪೊನ್ನುರಾಜ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿದ್ದ ಜಗನ್ನಾಥ ಸಾಲಿಯಾನ್ ಹಾಗೂ ವಿಟ್ಲ ಕಸಬಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ರಮಾನಾಥ್ ಅವರ ನೇತೃತ್ವದಲ್ಲಿ ರಸ್ತೆ ಅಭಿವೃದ್ಧಿಗಾಗಿ ವರ್ತಕರು ತಲಾ 8 ಅಡಿ ಜಾಗ ಬಿಟ್ಟುಕೊಟ್ಟಿದ್ದನ್ನು ನೆನಪಿಸಿತು. ಆ ವೇಳೆ ಮುಂದೆ ರಸ್ತೆ ಅಗಲೀಕರಣ ಮಾಡುವುದಿಲ್ಲ, ಬದಲಾಗಿ ಬೈಪಾಸ್ ರಸ್ತೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಲಾಗಿತ್ತು ಎಂಬ ವಿಚಾರವನ್ನೂ ತಿಳಿಸಿತು.
ಆದರೆ ಇದುವರೆಗೆ ಬೈಪಾಸ್ ನಿರ್ಮಾಣವಾಗದೆ ಮತ್ತೆ ರಸ್ತೆ ಅಗಲೀಕರಣ ಪ್ರಸ್ತಾಪ ಮುಂದಿಟ್ಟಿರುವುದು ವ್ಯಾಪಾರಿಗಳಲ್ಲಿ ಆತಂಕ ಮೂಡಿಸಿದೆ. ರಸ್ತೆ ಅಗಲೀಕರಣ ನಡೆದರೆ ವಿಟ್ಲ ಪೇಟೆಯ ಅಸ್ತಿತ್ವವೇ ಅಪಾಯಕ್ಕೆ ಸಿಲುಕಲಿದ್ದು, ವ್ಯಾಪಾರ ಹಾಗೂ ಜೀವನೋಪಾಯ ಸಂಪೂರ್ಣ ಕುಸಿಯಲಿದೆ ಎಂದು ವರ್ತಕರು ಆತಂಕ ವ್ಯಕ್ತಪಡಿಸಿದರು.

ಹಿಂದಿನ ಸಭೆಯಲ್ಲಿ ಏನಾಗಿತ್ತು?
ಕೆಲವು ದಿನಗಳ ಹಿಂದೆ ವಿಟ್ಲ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಮೂಲ ಯೋಜನೆಯಲ್ಲಿ 22 ಮೀಟರ್ ರಸ್ತೆ ಅಗಲೀಕರಣ ಪ್ರಸ್ತಾಪ ಇದ್ದರೂ, ವರ್ತಕರ ಹಿತದೃಷ್ಟಿಯಿಂದ ಅದನ್ನು 15 ಮೀಟರ್ಗೆ ಇಳಿಸಿ ಫುಟ್ಪಾತ್ ಸಹಿತ ಅಭಿವೃದ್ಧಿಪಡಿಸುವ ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದ್ದರು. “ನಾನು ಅಭಿವೃದ್ಧಿಯಲ್ಲಿ ರಾಜಕೀಯ ಮಾಡುವವನಲ್ಲ. ನಿಮ್ಮೆಲ್ಲರ ವಿಶ್ವಾಸ ಪಡೆದೇ ಮುಂದುವರಿಯುತ್ತೇನೆ. ನಿಮ್ಮ ತೀವ್ರ ವಿರೋಧದ ನಡುವೆ ಕೆಲಸ ಮಾಡುವ ಹಠ ನನಗಿಲ್ಲ” ಎಂದು ಶಾಸಕರು ತಿಳಿಸಿದ್ದರು. ಆದರೆ ಜಿಲ್ಲಾಧಿಕಾರಿಗಳವರ ನೇತೃತ್ವದಲ್ಲಿ ಮುಂದೆ ಯಾವತ್ತೂ ಅಗಲೀಕರಣ ಮಾಡುವುದಿಲ್ಲ ಎಂದು ಮನವೊಲಿಸಿ ಇಲ್ಲಿ ಕೊನೆಯ ಅಗಲೀಕರಣ 2016ರಲ್ಲಿ ನಡೆದಿತ್ತು. ಆಗಲೂ ಒತ್ತುವರಿ ಮಾಡಿ ನಿರ್ಮಿಸಿರುವ ಕಟ್ಟಡಗಳಿಗೆ ಪರಿಹಾರ ದೊರೆತಿಲ್ಲ.
ನಿಯೋಗದಲ್ಲಿ ಭಾಗವಹಿಸಿದವರು
ನಿಯೋಗದಲ್ಲಿ ವಿಟ್ಲ ವಾಣಿಜ್ಯ ಮತ್ತು ವರ್ತಕರ ಸಂಘದ ಅಧ್ಯಕ್ಷ ಬಾಬು ಕೆ.ವಿ., ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಹಾಗೂ ಉದ್ಯಮಿ ಜಗನ್ನಾಥ ಸಾಲಿಯಾನ್, ವಿಟ್ಲ ಅರಮನೆಯ ಕೃಷ್ಣಯ್ಯ ಬಳ್ಳಾಲ್, ಉದ್ಯಮಿಗಳು ಮತ್ತು ಕಟ್ಟಡ ಮಾಲೀಕರಾದ ಸತೀಶ್ ಆಳ್ವ ಇರಾಗುತ್ತು, ಹೋನೆಸ್ಟ್ ಇಕ್ಬಾಲ್, ಸುದರ್ಶನ್ ಪಡಿಯಾರ್, ಸುಭಾಷ್ಚಂದ್ರ ನಾಯಕ್, ವಿ.ಎ. ರಶೀದ್, ರಾಮದಾಸ್ ಶೆಣೈ, ಆರ್.ಕೆ. ಅಬ್ದುಲ್ಲಾ, ಪ್ರಭಾಕರ ಶೆಟ್ಟಿ, ದಿನೇಶ್ ಆಳ್ವ, ಇಬ್ರಾಹಿಂ ಸೇರಿದಂತೆ ಒಟ್ಟು 27 ಮಂದಿ ಭಾಗವಹಿಸಿ ಶಾಸಕರಿಗೆ ಮನವಿ ಸಲ್ಲಿಸಿದರು.
ನಿಯೋಗದ ಬೇಡಿಕೆಗಳಿಗೆ ಶಾಸಕರು ಧನಾತ್ಮಕವಾಗಿ ಸ್ಪಂದಿಸಿದ್ದು, ಮಾತಿನಂತೆ ನಡೆದುಕೊಳ್ಳುವ ಶಾಸಕರ ಭರವಸೆಯಿಂದಾಗಿ ವಿಟ್ಲದ ಅಭಿವೃದ್ಧಿಗೆ ಮತ್ತು ಪೇಟೆಯ ಉಳಿವಿಗೆ ಹೊಸ ಭರವಸೆ ಮೂಡಿದೆ ಎಂದು ವರ್ತಕರ ಸಂಘದ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ, ರಸ್ತೆ ಅಗಲೀಕರಣದ ಬದಲು ರಿಂಗ್ ರೋಡ್ ನಿರ್ಮಾಣ, ಹೊಸ ಪಟ್ಟಣ ಪಂಚಾಯಿತಿ ಕಚೇರಿ, ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಹಾಗೂ ವಿಟ್ಲವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸುವ ಮೂರು ಪ್ರಮುಖ ಬೇಡಿಕೆಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಸಕಾರಾತ್ಮಕ ಸ್ಪಂದನೆ ನೀಡಿರುವುದು ವಿಟ್ಲದ ಅಭಿವೃದ್ಧಿಗೆ ಹೊಸ ಭರವಸೆ ಮೂಡಿಸಿದೆ ಎಂದು ನಿಯೋಗವು ಇದೊಂದು ಉತ್ತಮ ಬೆಳವಣಿಗೆಯಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.
award
ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ
ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.
ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.
ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.
CONGRESS
ಮಂಗಳೂರು ಸಚಿವ ಸಂಪುಟ ಸಭೆ: ವಿವಿಧ ಸಂಘಟನೆಗಳ ಪ್ರತಿಭಟನೆ ಮತ್ತು ಬಿಗಿ ಭದ್ರತೆ
ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶುಕ್ರವಾರ (ಸೆಪ್ಟೆಂಬರ್ 18) ಆಯೋಜಿಸಲಾದ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರು ಆಗಮಿಸಿದ ವೇಳೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದವು. ಅಬ್ದುಲ್ ರಹೀಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವೆಂದು ಆರೋಪಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಮಂಗಳೂರಿನ ರಾವ್ & ರಾವ್ ಸರ್ಕಲ್ ಬಳಿ ಕಪ್ಪುಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಅದೇ ರೀತಿ, ಜೈಲ್ ಜಾಮರ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಕೀಲರನ್ನು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟ ಸಿ.ಪಿ.ಐ.ಎಂ. ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ತುಳು ಸಂಘಟನೆಯವರು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಕದ್ರಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಡೀಲ್ನಲ್ಲಿರುವ ಪ್ರಜ್ಞಾಸೌಧದ ಎರಡನೇ ಮಹಡಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು 33 ಮಂದಿ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಆಯಾ ಸಭಾಂಗಣದಲ್ಲೇ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಿಗದಿತ ಸಮಯಕ್ಕಿಂತ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
CONGRESS
ಮಂಗಳೂರಿನಲ್ಲಿ ಐತಿಹಾಸಿಕ ರಾಜ್ಯ ವಿಶೇಷ ಸಚಿವ ಸಂಪುಟ ಸಭೆ: ಸಿಎಂ ಹಾಗೂ ಸಚಿವರ ಭೇಟಿ ಮತ್ತು ಕಾರ್ಯಕ್ರಮಗಳ ವರದಿ
ಮಂಗಳೂರು: ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ ರಾಜ್ಯ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸಚಿವರು ಆಗಮಿಸಿದ್ದು, ನಗರದಲ್ಲಿ ಬಿರುಸಿನ ರಾಜಕೀಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಆರಂಭವಾಗಿವೆ.
ಕದ್ರಿ ದೇವಸ್ಥಾನ ಭೇಟಿ ಮತ್ತು ಗಾಂಧೀಜಿ ಸ್ಮರಣೆ
ಪ್ರವಾಸದ ಮೊದಲ ದಿನವಾದ ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿಗಳು ಐತಿಹಾಸಿಕ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, 1934ರಲ್ಲಿ ಮಹಾತ್ಮ ಗಾಂಧೀಜಿಯವರು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉಳಿದುಕೊಂಡಿದ್ದ ಐತಿಹಾಸಿಕ ಮನೆಯ ಸಮೀಪವಿರುವ ಗಾಂಧಿ ಸ್ಕ್ವೇರ್ ಕೆಫೆಗೆ ತೆರಳಿದರು.
ಯುವ ಕಂಟೆಂಟ್ ಕ್ರಿಯೇಟರ್ಸ್ ಜೊತೆ ಉಪಾಹಾರ ಹಾಗೂ ಸಂವಾದ
ಮಂಗಳೂರಿನ ಯುವ ಸೋಶಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ಗಳೊಂದಿಗೆ ಕೆಫೆಯಲ್ಲಿ ಸಾಂಪ್ರದಾಯಿಕ ಉಪಾಹಾರ ಸವಿಯುತ್ತಾ ಸಿಎಂ ಸಂವಾದ ನಡೆಸಿದರು. ಮಂಗಳೂರು ಬನ್ಸ್, ದೋಸೆ ಸೇರಿದಂತೆ ಕರಾವಳಿಯ ವಿಶಿಷ್ಟ ಉಪಾಹಾರಗಳನ್ನು ಸವಿದ ಅವರು, “ಇಲ್ಲಿಗೆ ಬಂದಿರುವುದು ಬಹಳ ಸಂತೋಷ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದರು.
ಜನರ ಬದುಕು ಮುಖ್ಯ – ಸಿಎಂ ಸ್ಪಷ್ಟನೆ
ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೆಲ್ಲಿ ಕರೆದುಕೊಂಡು ಹೋಗುತ್ತಾರೋ ಅಲ್ಲಿಗೆ ಹೋಗುತ್ತೇನೆ. ಯಾರೂ ಗಾಬರಿಯಾಗಬೇಕಿಲ್ಲ; ನಮಗೆ ಜನರ ಬದುಕು ಮುಖ್ಯವೇ ಹೊರತು ಭಾವನೆಗಳ ಮೇಲೆ ರಾಜಕೀಯ ಮಾಡುವವರಲ್ಲ. ಎಲ್ಲರ ಚಿಂತನೆಯನ್ನೊಳಗೊಂಡು ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಸ್ಪಷ್ಟಪಡಿಸಿದರು.
ಸಂಪುಟ ಸಭೆಗೆ ಭರ್ಜರಿ ಸ್ವಾಗತ ಮತ್ತು ಸಿದ್ಧತೆ
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭವ್ಯ ಸ್ವಾಗತಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಪಂಪ್ವೆಲ್ನಿಂದ ಪಡೀಲ್ ವರೆಗೆ ಚೆಂಡೆ ಬ್ಯಾಂಡ್ಗಳು ಹಾಗೂ ವಿವಿಧ ವೇಷಧಾರಿಗಳ ಸಾಂಸ್ಕೃತಿಕ ತಂಡಗಳು ರಸ್ತೆಯುದ್ದಕ್ಕೂ ಗಮನ ಸೆಳೆದವು. ಡಿಸಿ ಕಚೇರಿ ಮುಂದೆ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದು, ಮುಖ್ಯಮಂತ್ರಿಗಳನ್ನು ಕಣ್ತುಂಬಿಕೊಳ್ಳಲು ರಸ್ತೆ ಬದಿ ಕಾದು ನಿಂತಿದ್ದಾರೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
