Connect with us

crime

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತು ; “ನಮಗೆ ಭಯ ಶುರುವಾಗಿದೆ, ನ್ಯಾಯಾಲಯ ದಯವಿಟ್ಟು ಜಾಮೀನು ರದ್ದುಗೊಳಿಸಬೇಕು” ಸಂತ್ರಸ್ತೆ ಮನವಿ

Published

on

ದೇಶವನ್ನೇ ಬೆಚ್ಚಿ ಬೀಳಿಸಿದ 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತಿನಲ್ಲಿಟ್ಟಿದೆ.

ನ್ಯಾಯಾಲಯದ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಇಂಡಿಯಾ ಗೇಟ್ ಬಳಿ ಪ್ರಕರಣದ ಸಂತ್ರಸ್ತೆ, ಆಕೆಯ ತಾಯಿ ಪ್ರತಿಭಟನೆ ನಡೆಸಿ “ನ್ಯಾಯಾಲಯದ ಆದೇಶದಿಂದ ನಾವು ಭಯದಲ್ಲಿ ಬದುಕುವಂತಾಗಿದೆ. ವ್ಯವಸ್ಥೆ ನಮಗೆ ದ್ರೋಹ ಬಗೆದಿದೆ” ಎಂದು ಪ್ರತಿಭಟನೆ ವೇಳೆ ಸಂತ್ರಸ್ತೆ ಹೇಳಿದ್ದಾರೆ. ಇವರಿಗೆ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಯೋಗಿತಾ ಭಯನಾ ಸಾಥ್ ನೀಡಿದರು.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಆಕೆ, “ಜಾಮೀನು ನೀಡಿದ ಸಮಯವು ರಾಜಕೀಯ ಪ್ರೇರಿತವಾಗಿದ್ದು. ಇದಕ್ಕೂ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಸಂಬoಧವಿದೆ ಎಂದಿದ್ದಾರೆ.

“ನಮಗೆ ಅನ್ಯಾಯ ಮಾಡಲಾಗಿದೆ. ಚುನಾವಣೆ ಬರುತ್ತಿದೆ. ಕುಲದೀಪ್ ಸಿಂಗ್ ಸೆಂಗಾರ್ ಪತ್ನಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವಂತೆ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ” ಎಂದು ಹೇಳಿದ್ದಾರೆ. “ಇಂತಹ ಅತ್ಯಾಚಾರ ಆರೋಪಿ ಹೊರಬಂದರೆ, ನಾವು ಹೇಗೆ ಸುರಕ್ಷಿತವಾಗಿರಲು ಸಾಧ್ಯ ಎಂದು? ಪ್ರಶ್ನಿಸಿದ್ದಾರೆ.

“ದೆಹಲಿ ನ್ಯಾಯಾಲಯದಿಂದ ಶಿಕ್ಷೆ ಅಮಾನತಿನಲ್ಲಿಟ್ಟ ಆದೇಶ ಹೊರಬಿದ್ದ ಬಳಿಕ ನಮಗೆ ಭಯ ಶುರುವಾಗಿದೆ. ನ್ಯಾಯಾಲಯ ದಯವಿಟ್ಟು ಜಾಮೀನು ರದ್ದುಗೊಳಿಸಬೇಕು” ಎಂದು ಸಂತ್ರಸ್ತೆ ಮನವಿ ಮಾಡಿದ್ದು, ನೋವಿನ ನಡುವೆಯೂ ಆಕೆ, “ನನಗೆ ನ್ಯಾಯಾಂಗದ ಮೇಲೆ ಇನ್ನೂ ನಂಬಿಕೆ ಇದೆ” ಎಂದು ಹೇಳಿದ್ದು, ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.

ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಮೂವರನ್ನೂ ಸ್ಥಳದಿಂದ ಕರೆದೊಯ್ದರು. ಪೊಲೀಸರು ಅವರನ್ನು ತಮ್ಮ ವಾಹನಕ್ಕೆ ಹತ್ತಿಸಿದ ಮತ್ತು ಪ್ರತಿಭಟನೆಗೆ ಅವಕಾಶ ನೀಡುವಂತೆ ಅವರು ಮನವಿ ಮಾಡಿದ ವಿಡಿಯೋಗಳನ್ನು ಮಾಧ್ಯಮಗಳು ತೋರಿಸಿವೆ.

ಹೋರಾಟಗಾರ್ತಿ ಯೋಗಿತಾ ಅವರು, ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ನೀಡಿದ ಕಾರಣವನ್ನು ಪ್ರಶ್ನಿಸಿದ್ದಾರೆ. ಕಾನೂನು ಹೋರಾಟದ ವೇಳೆ ಪೂರ್ತಿಯಾಗಿ ಸಂತ್ರಸ್ತೆ ಮತ್ತು ಆಕೆಯ ತಾಯಿ ಪ್ರತ್ಯೇಕವಾಗಿ (ಏಕಾಂಗಿಯಾಗಿ) ಇದ್ದರು ಎಂದಿದ್ದಾರೆ.

ಸoತ್ರಸ್ತೆ ಮತ್ತು ಆಕೆಯ ತಾಯಿ ತುಂಬಾ ಕಷ್ಟಗಳನ್ನು ಎದುರಿಸಿ ಕಾನೂನು ಹೋರಾಟ ನಡೆಸುವ ಮೂಲಕ ಅಪರಾಧಿಗೆ ಶಿಕ್ಷೆಯಾಗುವಂತೆ ನೋಡಿಕೊಂಡರು. ಆದರೆ, ಈಗ ಏನಾಯಿತು? ಅಪರಾಧಿಗೆ ಜಾಮೀನು ಸಿಕ್ಕಿತು. ದೇಶದಲ್ಲಿ ಅತ್ಯಾಚಾರಿಗಳು ಜಾಮೀನು ಪಡೆಯುತ್ತಿದ್ದಾರೆ, ಅಮಾಯಕರು ಜೈಲಲ್ಲಿದ್ದಾರೆ. ಹೈಕೋರ್ಟ್ ಆದೇಶದ ಬಳಿಕ ಸಂತ್ರಸ್ತೆ ಮತ್ತು ಆಕೆಯ ತಾಯಿ ಭಯದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಸಂತ್ರಸ್ತೆಯ ಸಹೋದರಿ ಕೂಡ ಜಾಮೀನು ದೊರೆತಿರುವ ಕುರಿತು ಮಾತನಾಡಿದ್ದು, “ಅಪರಿಚಿತ ವ್ಯಕ್ತಿಗಳು ನಮ್ಮ ಮನೆಯ ಸುತ್ತಮುತ್ತ ಓಡಾಡುತ್ತಿದ್ದಾರೆ, ನಮಗೆ ಬೆದರಿಕೆ ಹಾಕುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಅವನು ಸೆಂಗಾರ್ ಮೊದಲು ನನ್ನ ಚಿಕ್ಕಪ್ಪನನ್ನು ಕೊಂದ, ಬಳಿಕ ನನ್ನ ಅಪ್ಪನನ್ನು ಕೊಂದ. ನಂತರ ನನ್ನ ಸಹೋದರಿ ಮೇಲೆ ದೌರ್ಜನ್ಯ ನಡೆಯಿತು. ಎಲ್ಲಾ ಪ್ರಕರಣಗಳು ಆತನಿಗೆ ಸಂಬoಧಿಸಿದೆ. ಆದರೆ, ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ನಾವು ಇನ್ನೂ ಭಯದಲ್ಲಿದ್ದೇವೆ. ಕೊನೆಪಕ್ಷ ನಾವು ಜೈಲಲ್ಲಿ ಇದ್ದರೆ ಜೀವಂತ ಇರಬಹುದು” ಎಂದು ಆತಂಕ, ನೋವು ತೋಡಿಕೊಂಡಿದ್ದಾರೆ. “ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ. ಆದರೆ, ನನ್ನ ಕುಟುಂಬವನ್ನು ನೆನೆದು ಸುಮ್ಮನಾದೆ” ಇದು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ದೆಹಲಿಯ ಇಂಡಿಯಾ ಗೇಟ್ ಎದುರು ನೋವಿನಿಂದ ಹೇಳಿದ ಮಾತು.

ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯವು 2019ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ಇದರ ವಿರುದ್ದ ಸೆಂಗಾರ್ ದೆಹಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮೇಲ್ಮನವಿ ವಿಚಾರಣೆ ಮುಗಿಯುವವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದೆ.

ನ್ಯಾಯಮೂರ್ತಿ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರಿದ್ದ ವಿಭಾಗೀಯ ಪೀಠವು 15 ಲಕ್ಷ ರೂಪಾಯಿಗಳ ಜಾಮೀನು ಬಾಂಡ್ ಸಲ್ಲಿಸಬೇಕೆಂಬ ಷರತ್ತಿನ ಮೇಲೆ ಜಾಮೀನು ಮಂಜೂರು ಮಾಡಿದೆ.

ಆದಾಗ್ಯೂ, ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿಗೆ ಸಂಬoಧಿಸಿದ ಪ್ರತ್ಯೇಕ ಪ್ರಕರಣದಲ್ಲಿ ಸೆಂಗಾರ್‌ಗೆ ಜಾಮೀನು ಸಿಗದ ಕಾರಣ ಆತ ಸದ್ಯಕ್ಕೆ ಬಂಧನದಲ್ಲೇ ಇರುತ್ತಾರೆ. ಆ ಪ್ರಕರಣದಲ್ಲಿ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯೊಂದಿಗೆ ಅವರ ಮೇಲ್ಮನವಿ ಇನ್ನೂ ದೆಹಲಿ ಹೈಕೋರ್ಟ್ನಲ್ಲಿ ಬಾಕಿ ಇದೆ.

ಬೆಚ್ಚಿ ಬೀಳಿಸಿದ ಪ್ರಕರಣ ಬಾಲಕಿಗೆ ನಿರಂತರ ಅತ್ಯಾಚಾರ; ಉನ್ನಾವೋ ಅತ್ಯಾಚಾರ ಪ್ರಕರಣ
17 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಮತ್ತು 25 ಲಕ್ಷ ರೂ. ದಂಡ ವಿಧಿಸಿ ವಿಚಾರಣಾ ನ್ಯಾಯಾಲ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸೆಂಗಾರ್ ಮೇಲ್ಮನವಿ ಸಲ್ಲಿಸಿದ್ದಾರೆ.

ಸೆಂಗಾರ್ 17 ವರ್ಷದ ಬಾಲಕಿಯನ್ನು ಅಪಹರಿಸಿ 2017ರ ಜೂನ್ 11ರಿಂದ 20 ನಡುವೆ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಬಳಿಕ ಆಕೆಯನ್ನು 60 ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದ. ಕೊನೆಗೆ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದರು.

ಈ ನಡುವೆ ಸೆಂಗಾರ್‌ನ ಅನತಿಯಂತೆ ಪೊಲೀಸರು ಬಾಲಕಿಗೆ ನಿರಂತರ ಬೆದರಿಕೆ ಹಾಕಿದ್ದರು. ದೌರ್ಜನ್ಯದ ವಿರುದ್ದ ಮಾತನಾಡದಂತೆ ಬಾಯಿ ಮುಚ್ಚಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಅoತಿಮವಾಗಿ ಅಲಹಾಬಾದ್ ಹೈಕೋರ್ಟ್ನ ಆದೇಶದ ಬಳಿಕ ಪೊಲೀಸರು ಸೆಂಗಾರ್ ವಿರುದ್ದ ಅಪಹರಣ, ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದರು.

ಆಗಸ್ಟ್ 2019ರಲ್ಲಿ, ಘಟನೆಗೆ ಸಂಬoಧಿಸಿದ ನಾಲ್ಕು ಪ್ರಕರಣಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದೆಹಲಿಗೆ ವರ್ಗಾಯಿಸಿ, ದಿನನಿತ್ಯದ ವಿಚಾರಣೆ ನಡೆಸಿ 45 ದಿನಗಳಲ್ಲಿ ಪೂರ್ಣಗೊಳಿಸಬೇಕೆಂದು ಆದೇಶಿಸಿತ್ತು.

ಡಿಸೆಂಬರ್ 2019ರಲ್ಲಿ, ವಿಚಾರಣಾ ನ್ಯಾಯಾಲಯವು ಸೆಂಗಾರ್ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತು. ಅಲ್ಲದೆ, ಕುಟುಂಬ ಬಯಸಿದರೆ ಸುರಕ್ಷಿತ ಮನೆ ಮತ್ತು ಗುರುತಿನ ಬದಲಾವಣೆಯ ಮೂಲಕ ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ಜೀವನ ಮತ್ತು ಸ್ವಾತಂತ್ರ‍್ಯವನ್ನು ರಕ್ಷಿಸಲು ಸಿಬಿಐ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿಚಾರಣಾ ನ್ಯಾಯಾಲಯವು ನಿರ್ದೇಶಿಸಿತು.

ಸೆಂಗಾರ್‌ಗೆ ಗರಿಷ್ಠ ಶಿಕ್ಷೆ ವಿಧಿಸುವಾಗ, ವಿಚಾರಣಾ ನ್ಯಾಯಾಲಯವು ಆತನಿಗೆ ಶಿಕ್ಷೆ ಕಡಿತಗೊಳಿಸುವ ಯಾವುದೇ ಅಗತ್ಯತೆ ಇಲ್ಲ ಎಂದಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಸೇವಕನಾಗಿದ್ದ ಸೆಂಗಾರ್ ಜನರ ನಂಬಿಕೆಗೆ ದ್ರೋಹ ಎಸಗಿದ್ದಾರೆ ಎಂದು ನ್ಯಾಯಾಲಯ ಹೇಳಿತ್ತು.

ನ್ಯಾಯಾಲಯ ಸೆಂಗಾರ್‌ಗೆ ಶಿಕ್ಷೆ ವಿಧಿಸುವ ಮುನ್ನ, ನಂಬರ್ ಪ್ಲೇಟ್ ಇಲ್ಲದ ಲಾರಿಯೊಂದು ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ ಸಂತ್ರಸ್ತೆ ಮತ್ತು ಆಕೆಯ ವಕೀಲರು ಗಂಭೀರವಾಗಿ ಗಾಯಗೊಂಡಿದ್ದರು. ಆಕೆಯ ಇಬ್ಬರು ಚಿಕ್ಕಮ್ಮಂದಿರು ಸಾವನ್ನಪ್ಪಿದ್ದರು.

ಈ ಸಂಬoಧ ಸೆಂಗಾರ್ ವಿರುದ್ದ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಆದರೆ, ಡಿಸೆಂಬರ್ 2021ರಲ್ಲಿ, ಅಪಘಾತವನ್ನು ಸೆಂಗಾರ್ ಅವರೇ ಆಯೋಜಿಸಿದ್ದಾರೆ ಎಂಬುದಕ್ಕೆ ಯಾವುದೇ ಪ್ರಾಥಮಿಕ ಪುರಾವೆಗಳು ದೊರೆಯದ ಕಾರಣ ದೆಹಲಿ ನ್ಯಾಯಾಲಯವು ಅವರನ್ನು ಈ ಪ್ರಕರಣದಿಂದ ಬಿಡುಗಡೆ ಮಾಡಿತು.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್‌ ದಾಖಲು!

Published

on

ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ:

ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.

ಮಹಿಳೆಯ ಧೈರ್ಯ, ವೈರಲ್ ವೀಡಿಯೋ:

ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.

ಬಂಟ್ವಾಳ ಠಾಣೆಯಲ್ಲಿ ದೂರು:

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

arrest

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖ್ಯಾತ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ಕಳೆದ 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, 30ಕ್ಕೂ ಹೆಚ್ಚು ವಾರಂಟ್ ಹಾಗೂ 13ಕ್ಕೂ ಅಧಿಕ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ಪಡೆ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಉಳ್ಳಾಲ ತಾಲೂಕಿನ ಮಾರ್ಗತಲೆ ಮೂಲದ, ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಡಪ್ಪು ನಿವಾಸಿ ಉಮ್ಮರ್ ನವಾಫ್ (33) ಬಂಧಿತ ಆರೋಪಿ.

30ಕ್ಕೂ ಹೆಚ್ಚು ವಾರಂಟ್, ಪ್ರೋಕ್ಲಮೇಷನ್ ಜಾರಿ

ಬಂಧಿತ ಉಮ್ಮರ್ ನವಾಫ್ ವಿರುದ್ಧ ಕೊಲೆ ಯತ್ನ, ಅಪಹರಣ, ದರೋಡೆ, ಹಫ್ತಾ ವಸೂಲಿ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಗಳಿಗೆ ಸಂಬಂಧಿಸಿದಂತೆ ಉಳ್ಳಾಲ, ಪಣಂಬೂರು ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ 13ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಘನ ನ್ಯಾಯಾಲಯವು 30ಕ್ಕೂ ಹೆಚ್ಚು ವಾರಂಟ್‌ಗಳನ್ನು ಹೊರಡಿಸಿತ್ತು. ಅಲ್ಲದೆ, ಉಳ್ಳಾಲ ಠಾಣೆಯ ಮೂರು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದ ಆದೇಶದಂತೆ ‘ಪ್ರೋಕ್ಲಮೇಷನ್’ ಜಾರಿಗೊಳಿಸಲಾಗಿತ್ತು ಹಾಗೂ ಒಂದು ಪ್ರಕರಣದಲ್ಲಿ ಎಲ್.ಪಿ.ಸಿ (LPC) ಮಾಡಲಾಗಿತ್ತು.

ಆರೋಪಿ ಉಮ್ಮರ್ ನವಾಫ್ ಮೇಲಿರುವ ಪ್ರಕರಣಗಳ ವಿವರಗಳು:

  1. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 222/17):
    • ಕಲಂಗಳು: 143, 147, 148 (ಕಾನೂನುಬಾಹಿರ ಗುಂಪುಗಾರಿಕೆ, ಗಲಭೆ), 341 (ಅಕ್ರಮ ತಡೆ), 504, 506 (ಶಾಂತಿ ಭಂಗ, ಜೀವ ಬೆದರಿಕೆ), 324 (ಹಾಕಾಹಾಕಿ/ಹೊಡೆದಾಟ) ಮತ್ತು 307 (ಕೊಲೆ ಯತ್ನ).
  2. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 23/17):
    • ಕಲಂಗಳು: 427 IPC (ಆಸ್ತಿಗೆ ಹಾನಿ) ಮತ್ತು KPDLP ಕಾಯ್ದೆಯ 2(a), 2(b) (ಸಾರ್ವಜನಿಕ ಆಸ್ತಿ ನಷ್ಟ ತಡೆ ಕಾಯ್ದೆ).
  3. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 247/14):
    • ಕಲಂಗಳು: 448 (ಅಕ್ರಮ ಪ್ರವೇಶ) ಮತ್ತು 395 (ದರೋಡೆ).
  4. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 289/17):
    • ಕಲಂಗಳು: 504, 506, 364(a) (ಅಪಹರಣ ಮತ್ತು ಕಪ್ಪಕ್ಕೆ ಬೇಡಿಕೆ), 387 (ಹಫ್ತಾ ವಸೂಲಿಗೆ ಬೆದರಿಕೆ), 395 (ದರೋಡೆ), 149 IPC.
  5. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 276/15) – (ನ್ಯಾಯಾಲಯದಿಂದ LPC ಮಾಡಲಾದ ಪ್ರಕರಣ):
    • ಕಲಂಗಳು: 143, 144, 148, 448, 451, 452 (ಅಕ್ರಮ ಮನೆ ಪ್ರವೇಶ), 326, 307 (ಕೊಲೆ ಯತ್ನ), 397 (ಮಾರಕ ಆಯುಧದೊಂದಿಗೆ ದರೋಡೆ/ಕಳವು), 506, 149 IPC.
  6. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 206/2012) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 323, 427, 504, 506, 149 IPC.
  7. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 27/2017) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 387 IPC (ಭಯ ಹುಟ್ಟಿಸಿ ಹಣ/ಆಸ್ತಿ ವಸೂಲಿ ಮಾಡುವುದು).
  8. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 103/2021):
    • ಕಲಂಗಳು: 364 IPC (ಕೊಲೆ ಮಾಡುವ ಉದ್ದೇಶದಿಂದ ಅಪಹರಣ).
  9. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 71/23):
    • ಕಲಂಗಳು: 504, 506, 307 (ಕೊಲೆ ಯತ್ನ), 324, 427 IPC.
  10. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 183/17) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 448, 504, 324, 323, 506, 427 R/w 149 IPC.
  11. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 159/23):
    • ಕಲಂಗಳು: 341, 394 (ಕಳವು ಮಾಡುವಾಗ ಗಾಯಗೊಳಿಸುವುದು), 307 (ಕೊಲೆ ಯತ್ನ) R/w 34 IPC.
  12. ಪಣಂಬೂರು ಪೊಲೀಸ್ ಠಾಣೆ (PNB ಮೊ.ನಂ 158/2012):
    • ಕಲಂಗಳು: 379 IPC (ಕಳವು).
  13. ಬರ್ಕೆ ಪೊಲೀಸ್ ಠಾಣೆ (ಮೊ.ನಂ 04/15):
    • ಕಲಂಗಳು: 353 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ), 427 R/w 34 IPC.

ಪೊಲೀಸರ ಸಕಾಲಿಕ ಕಾರ್ಯಾಚರಣೆ

ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ (ACP) ಮಾರ್ಗದರ್ಶನದಲ್ಲಿ, ದಕ್ಷಿಣ ಉಪವಿಭಾಗ ಕಚೇರಿಯ ವಿಶೇಷ ಕರ್ತವ್ಯ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿನಾಂಕ 02-08-2026 ರಂದು ಸುಳಿವು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

Continue Reading

crime

ಮಣಿಪಾಲ: ಬಾರ್, ಪಬ್‌ಗಳ ಮೇಲೆ ಪೊಲೀಸರ ಮಿಂಚಿನ ದಾಳಿ; ಮದ್ಯ ಸೇವಿಸುತ್ತಿದ್ದ 64 ಯುವಕರು, 23 ಯುವತಿಯರು

Published

on

ಮಣಿಪಾಲ: 21 ವರ್ಷದೊಳಗಿನವರಿಗೆ ಅಕ್ರಮವಾಗಿ ಮದ್ಯ ಹಾಗೂ ಹುಕ್ಕಾ ಪೂರೈಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪ್ರಮುಖ ಬಾರ್ ಮತ್ತು ಪಬ್‌ಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಮದ್ಯ ಸೇವನೆಯಲ್ಲಿ ತೊಡಗಿದ್ದ 64 ಯುವಕರು, 23 ಯುವತಿಯರು ಹಾಗೂ ಒಬ್ಬ ಅಪ್ರಾಪ್ತ ಬಾಲಕ ಸೇರಿದಂತೆ ಒಟ್ಟು 87 ಮಂದಿ ಸಿಕ್ಕಿಬಿದ್ದಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಅವರ ನಿರ್ದೇಶನದಂತೆ, ಮಣಿಪಾಲ ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಈ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಯಿತು. ಕಾರ್ಯಾಚರಣೆಗಾಗಿ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನೊಳಗೊಂಡ 6 ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು.

ದಾಳಿಗೊಳಗಾದ ಬಾರ್ ಮತ್ತು ಪಬ್‌ಗಳು:

ಪೊಲೀಸರು ಮಣಿಪಾಲ ವ್ಯಾಪ್ತಿಯ ಒಟ್ಟು ಆರು ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು:

  1. ಎಕ್ಸ್ಟಸಿ 7ನೇ ಹೆವೆನ್ ಪಬ್, ಮಣಿಪಾಲ್
  2. ಸಾಯಿ ಸಾಗರ್ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
  3. ಡೌನ್ ದಿ ರೋಡ್ ಬಾರ್ ಮತ್ತು ರೆಸ್ಟೋರೆಂಟ್, ಮಣಿಪಾಲ್
  4. ಡೆಕ್ಸ್ಟರ್ ಬಾರ್ ಮತ್ತು ರೆಸ್ಟೋರೆಂಟ್
  5. ಡೀ ಟೀ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
  6. ಜನನಿ ಬಾರ್ ಮತ್ತು ರೆಸ್ಟೋರೆಂಟ್ (ಎಡ್ಜ್ ಬಾರ್ ಮತ್ತು ರೆಸ್ಟೋರೆಂಟ್), ಈಶ್ವರ್ ನಗರ

ಕಾನೂನು ಉಲ್ಲಂಘನೆ ಮತ್ತು ಪ್ರಕರಣ ದಾಖಲು:

ಕರ್ನಾಟಕ ಅಬಕಾರಿ ಪರವಾನಗಿ ನಿಯಮಗಳ 10(1)(ಇ), ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 36(1)(ಬಿ) ಹಾಗೂ ತಂಬಾಕು ಉತ್ಪನ್ನಗಳ ನಿಯಂತ್ರಣ (COTPA) ಕಾಯ್ದೆಯನ್ನು ಉಲ್ಲಂಘಿಸಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕ-ಯುವತಿಯರಿಗೆ ಮದ್ಯ ಹಾಗೂ ಹುಕ್ಕಾ ಮಾರಾಟ ಮಾಡುತ್ತಿದ್ದದ್ದು ತಪಾಸಣೆ ವೇಳೆ ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ, ನಿಯಮ ಉಲ್ಲಂಘಿಸಿದ ಆಯಾ ಪಬ್ ಮತ್ತು ಬಾರ್‌ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ (ಮ್ಯಾನೇಜರ್) ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ 6 ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.

ಪೊಲೀಸರ ಎಚ್ಚರಿಕೆ:

“21 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ, ಮದ್ಯ/ಹುಕ್ಕಾ ಪೂರೈಸುವ ಅಥವಾ ಅಬಕಾರಿ ಕಾಯ್ದೆ ಹಾಗೂ COTPA ಕಾಯ್ದೆಗಳನ್ನು ಉಲ್ಲಂಘಿಸುವ ಬಾರ್ ಮತ್ತು ರೆಸ್ಟೋರೆಂಟ್‌ಗಳ ವಿರುದ್ಧ ಮುಂಬರುವ ದಿನಗಳಲ್ಲೂ ಇಂತಹುದೇ ಕಠಿಣ ಕಾನೂನು ಕ್ರಮಗಳು ಮುಂದುವರಿಯಲಿವೆ.” ಎಂದು ಪೊಲೀಸರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

Continue Reading

Trending

Copyright © 2025 Deevatige

error: Content is protected !!