Connect with us

Kadaba

ನೂಜಿಬಾಳ್ತಿಲ: ಬಾಲೆಮಾರು-ಕುರ್ನೂಜಿಯಲ್ಲಿ ಮಳೆಗಾಲದಲ್ಲಿ ಹೊಳೆದಾಟಲು ಪರದಾಟ; ಸೇತುವೆ ನಿರ್ಮಾಣಕ್ಕೆ ಭರವಸೆ ನೀಡಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ

Published

on

ಕಡಬ: ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಿಂದ ಇಚ್ಲಂಪಾಡಿ ಸಂಪರ್ಕಿಸುವ ರಸ್ತೆಯ ಬಾಲೆಮಾರು-ಕುರ್ನೂಜಿ ಎಂಬಲ್ಲಿ ಹರಿಯುವ ಹೊಳೆ ದಾಟಲು ಗ್ರಾಮಸ್ಥರು ಮಳೆಗಾಲದಲ್ಲಿ ತೀವ್ರ ಪರದಾಟ ನಡೆಸುತ್ತಿದ್ದಾರೆ. ಇಲ್ಲಿನ ಗ್ರಾಮಸ್ಥರ ದಶಕಗಳ ಸಂಕಷ್ಟವನ್ನು ಆಲಿಸಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ರಾಮಕುಂಜ ಅವರು ಆಃ 2ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೇತುವೆ ನಿರ್ಮಾಣಕ್ಕೆ ಸರಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ತೆಪ್ಪವೇ ಆಸರೆ: ಗ್ರಾಮಸ್ಥರ ಮುಗಿಯದ ಸಂಕಷ್ಟ!

ಬೇಸಿಗೆ ಕಾಲದಲ್ಲಿ ಗ್ರಾಮಸ್ಥರೇ ಸ್ವತಃ ಪಾಲ (ಕಾಲುಸಂಕ) ರಚಿಸಿಕೊಂಡು ಹೊಳೆ ದಾಟುತ್ತಾರೆ. ಆದರೆ ಮಳೆಗಾಲದಲ್ಲಿ ಗುಂಡ್ಯ ಹೊಳೆಯು ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾದಾಗ, ಈ ಹೊಳೆಯಲ್ಲೂ ನೀರು ಆವರಿಸಿ ಪಾಲ ಮುಳುಗಡೆಯಾಗುತ್ತದೆ. ಇದರಿಂದ ಸುತ್ತಮುತ್ತಲಿನ ಸಂಪರ್ಕ ಸಂಪೂರ್ಣ ಕಡಿತಗೊಳ್ಳುತ್ತದೆ.

ತೆಪ್ಪವೇ ಆಸರೆ: ಪಾಲ ಮುಳುಗಡೆಯಾದಾಗ ಅಪಾಯಕಾರಿ ರೀತಿಯಲ್ಲಿ ತೆಪ್ಪವನ್ನೇ ಬಳಸಿಕೊಂಡು ಗ್ರಾಮಸ್ಥರು ಹೊಳೆ ದಾಟಬೇಕಾದ ದುಸ್ಥಿತಿ ಇದೆ.

ಸಾಕಷ್ಟು ಕುಟುಂಬಗಳಿಗೆ ತೊಂದರೆ: ಈ ಭಾಗದಲ್ಲಿ 25ಕ್ಕೂ ಹೆಚ್ಚು ಮನೆಗಳಿದ್ದು, ದಿನನಿತ್ಯ ಶಾಲಾ-ಕಾಲೇಜು ಮಕ್ಕಳು ಹಾಗೂ ಗ್ರಾಮಸ್ಥರು ಪ್ರಾಣ ಕೈಯಲ್ಲಿ ಹಿಡಿದುಕೊಂಡು ಈ ಹೊಳೆ ದಾಟಿಯೇ ತಮ್ಮ ದೈನಂದಿನ ಕೆಲಸಗಳಿಗೆ ತೆರಳಬೇಕಾಗಿದೆ.

ಹಲವು ವರ್ಷಗಳ ಬೇಡಿಕೆ: ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕೆಂದು ಗ್ರಾಮಸ್ಥರು ಹಲವು ವರ್ಷಗಳಿಂದ ಮನವಿ ಮಾಡುತ್ತಲೇ ಬಂದಿದ್ದಾರೆ. ಭರವಸೆಗಳು ಸಿಕ್ಕಿವೆಯೇ ಹೊರತು ಸೇತುವೆ ಭಾಗ್ಯ ಮಾತ್ರ ಇಂದಿಗೂ ಸಿಕ್ಕಿಲ್ಲ ಎಂಬುದು ಸ್ಥಳೀಯರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಸ್ಥಳಕ್ಕೆ ಜಿ.ಕೃಷ್ಣಪ್ಪ ಭೇಟಿ, ಪರಿಶೀಲನೆ

ಇಲ್ಲಿನ ಪರಿಸ್ಥಿತಿಯ ಬಗ್ಗೆ ಸ್ಥಳೀಯರು ಕಾಂಗ್ರೆಸ್ ಮುಖಂಡ ಕರುಣಾಕರ ಗೌಡ ದೊಡ್ಡಉರ್ಕ ಅವರ ಗಮನಕ್ಕೆ ತಂದಿದ್ದರು. ವಿಷಯ ತಿಳಿದ ಜಿ.ಕೃಷ್ಣಪ್ಪ ರಾಮಕುಂಜ ಅವರು ಕರುಣಾಕರ ಗೌಡ ಅವರೊಂದಿಗೆ ಬಾಲೆಮಾರು-ಕುರ್ನೂಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪಿಡಬ್ಲ್ಯುಡಿ ಇಂಜಿನಿಯರ್‌ಗೆ ಸೂಚನೆ:

ಸ್ಥಳೀಯರೊಂದಿಗೆ ಸಂಕಷ್ಟ ಆಲಿಸಿದ ಜಿ.ಕೃಷ್ಣಪ್ಪ ಅವರು, ಸೇತುವೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಅಲ್ಲದೆ, ಸ್ಥಳದಿಂದಲೇ ಲೋಕೋಪಯೋಗಿ ಇಲಾಖೆಯ (PWD) ಇಂಜಿನಿಯರ್ ಅವರಿಗೆ ದೂರವಾಣಿ ಕರೆ ಮಾಡಿ, ತಕ್ಷಣವೇ ಸೇತುವೆ ನಿರ್ಮಾಣಕ್ಕೆ ಅಂದಾಜುಪಟ್ಟಿ (Estimate) ತಯಾರಿಸುವಂತೆ ಸೂಚನೆ ನೀಡಿದರು.

ಭೇಟಿ ವೇಳೆಯಲ್ಲಿದ್ದ ಪ್ರಮುಖರು

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಶೀನಪ್ಪ ಗೌಡ ಕುರ್ನೂಜಿ, ಶೇಖರ ಗೌಡ ಬಾಲೆಮಾರು, ಧನಂಜಯ ಗೌಡ ಬಳ್ಳೇರಿ, ಪ್ರಮೋದ್ ಗೌಡ ಬಳ್ಳೇರಿ, ಚಂದ್ರಶೇಖರ ಗೌಡ ಬಳ್ಳೇರಿ, ಚೇತನ್ ಬಳ್ಳೇರಿ, ಬಾಲಕೃಷ್ಣ ಬಳ್ಳೇರಿ, ಬಾಲಕ್ಕ ಕುರ್ನೂಜಿ, ನಳಿನಿ ಕುರ್ನೂಜಿ, ರಾಮಕ್ಕ ಬಾಲೆಮಾರು, ದೇಜಪ್ಪ ಗೌಡ ಬಾಲೆಮಾರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Agriculture

ಕಸ್ತೂರಿ ರಂಗನ್ ವರದಿ 7ನೇ ಕರಡು ಅಧಿಸೂಚನೆ ವಿರೋಧಿಸಿ ಕುಟ್ರುಪ್ಪಾಡಿ, ಸುಬ್ರಹ್ಮಣ್ಯದಲ್ಲಿ ಬೃಹತ್ ಪ್ರತಿಭಟನೆ

Published

on

ಪುತ್ತೂರು: ಕಸ್ತೂರಿ ರಂಗನ್ ವರದಿಯ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯದ 7ನೇ ಕರಡು ಅಧಿಸೂಚನೆಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಮಂಗಳವಾರ ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ ಎದುರು ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಎದುರು ಬೃಹತ್ ಪ್ರತ್ಯೇಕ ಪ್ರತಿಭಟನೆಗಳು ನಡೆದವು.

ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ ಎದುರು ಆಕ್ರೋಶ

ನೂರಾರು ಸಂಖ್ಯೆಯಲ್ಲಿ ನೆರೆದ ಸಾರ್ವಜನಿಕರು ಹಾಗೂ ರೈತರು ಪ್ರತಿಭಟನೆ ನಡೆಸಿ, ಬಳಿಕ ಕುಟ್ರುಪ್ಪಾಡಿ ಗ್ರಾಮ ಅಭಿವೃದ್ಧಿ ಅಧಿಕಾರಿ (PDO) ಗೋಪಿನಾಥ್ ಅವರ ಮುಖಾಂತರ ಸರ್ಕಾರಕ್ಕೆ ಆಕ್ಷೇಪಣಾ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರು ಮಾತನಾಡಿ, “ಕಸ್ತೂರಿ ರಂಗನ್ ವರದಿ ಜಾರಿಯಾದರೆ ಪಶ್ಚಿಮ ಘಟ್ಟದ ಬಾಧಿತ ಪ್ರದೇಶದ ರೈತರು ಸರ್ವನಾಶವಾಗಲಿದ್ದಾರೆ. ಮೂಲಭೂತ ಸೌಕರ್ಯಗಳನ್ನು ಕಸಿದುಕೊಂಡು ರೈತರನ್ನು ಒಕ್ಕಲೆಬ್ಬಿಸುವ ಈ ರೈತ ವಿರೋಧಿ ನೀತಿಯನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು,” ಎಂದು ಆಗ್ರಹಿಸಿದರು.

ಈ ಹಿಂದೆ ಸಾರ್ವಜನಿಕರ ಪ್ರತಿಭಟನೆಗೆ ಮಣಿದು ರಾಜ್ಯ ಸರ್ಕಾರ ಬಾಧಿತ ಗ್ರಾಮಗಳಲ್ಲಿ ವಿಶೇಷ ಗ್ರಾಮಸಭೆ ಕರೆದು ಜನಾಭಿಪ್ರಾಯ ಸಂಗ್ರಹಿಸಿ, ವರದಿ ಅನುಷ್ಠಾನ ಮಾಡಬಾರದೆಂದು ನಿರ್ಣಯಿಸಿತ್ತು. ಆದರೂ ಈಗ 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿರುವುದು ಅತ್ಯಂತ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಮುಖರ ಉಪಸ್ಥಿತಿ: ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಲಸ್ತ್ಯಾ ರೈ, ಮಲೆನಾಡು ಜನ ಹಿತ ರಕ್ಷಣಾ ಸಮಿತಿಯ ಮುಖಂಡ ಯೋಗೇಂದ್ರ ಬನಾರಿ, ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್, ಪ್ರಮುಖರಾದ ಜನಾರ್ದನ ಗೌಡ ಪಣೆಮಜಲು, ಟಿ.ಎಂ. ಮ್ಯಾಥ್ಯು ಮತ್ತಿತರರು ಮಾತನಾಡಿದರು.

ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣಪ್ಪ ದೇವಾಡಿಗ, ನ್ಯಾಯವಾದಿಗಳಾದ ಶಿವಪ್ರಸಾದ್ ಪುತ್ತಿ, ರಾಮಚಂದ್ರ ದೇರಾಜೆ, ಪ್ರಮುಖರಾದ ರಮಾನಂದ ಎಣ್ಣೆಮಜಲು, ಸತೀಶ್ ಶೆಟ್ಟಿ ಬೀರುಕ್ಕು, ಶಶಾಂಕ್ ಗೋಖಲೆ, ಚಿದಾನಂದ ಕೊಡೆಂಕಿರಿ, ದೇವಯ್ಯ ಗೌಡ ಪನ್ಯಾಡಿ, ಲೀಲಾವತಿ ಪನ್ಯಾಡಿ, ಜಾನಕಿ ಪಟ್ಟೆ, ಅಚ್ಯುತ ಗೌಡ ದೇರಾಜೆ, ಮಹಮ್ಮದಾಲಿ, ಡಿ.ಬಿ. ಮೋಹನ ಗೌಡ ದೇರಾಜೆ ಹಾಗೂ ಧನಂಜಯ ಕೊಡಂಗೆ ಮತ್ತಿತರರು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಎದುರು ಬೃಹತ್ ಧರಣಿ

ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಎದುರು ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಕಿಶೋರ್ ಶಿರಾಡಿ:

“ಕಸ್ತೂರಿ ರಂಗನ್ ವರದಿಯ ಹೆಸರಿನಲ್ಲಿ ಅಧಿಕಾರಿಗಳು ರೈತರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸುತ್ತಿರುವುದು ಖಂಡನೀಯ. ರೈತರ ಹಕ್ಕುಪತ್ರ ರದ್ದತಿ ಹಾಗೂ ಒತ್ತುವರಿ ಕುರಿತು ಅಧಿಕಾರಿಗಳು ಮಾಧ್ಯಮಗಳಿಗೆ ಬಹಿರಂಗವಾಗಿ ಮಾಹಿತಿ ನೀಡಬೇಕು,” ಎಂದು ಒತ್ತಾಯಿಸಿದರು.

“ನಾವು 2013ರಿಂದ ನಿರಂತರವಾಗಿ ಪಕ್ಷಾತೀತ ಹಾಗೂ ಕಾನೂನು ಚೌಕಟ್ಟಿನಲ್ಲಿ ಹೋರಾಟ ಮಾಡುತ್ತಾ ಬಂದಿದ್ದೇವೆ. ಅದರ ಪ್ರತಿಫಲವಾಗಿ ಬಾಧಿತ ಪ್ರದೇಶದ ರೈತರ ಜೀವನಾಡಿ ಉಳಿದಿದೆ. ಈ ಹೋರಾಟಕ್ಕೆ ತಾರ್ಕಿಕ ಅಂತ್ಯ ಸಿಗಬೇಕು. ಸುಮಾರು 100 ಗ್ರಾಮಗಳು ಇದರಿಂದ ಬಾಧಿತವಾಗುವ ಸಾಧ್ಯತೆಯಿದ್ದು, ಜನರಿಗೆ ಮಾರಕವಾಗುವ ಈ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು,” ಎಂದರು.

ನ್ಯಾಯಾಲಯದ ಆದೇಶಗಳ ಜೊತೆಗೆ ಅಂತಿಮವಾಗಿ ಸರ್ಕಾರದ ಸಂಪುಟದ ನಿರ್ಧಾರವೇ ಪ್ರಮುಖವಾಗಿದ್ದು, ಸರ್ಕಾರ ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ತೀರ್ಮಾನ ಕೈಗೊಳ್ಳಬೇಕು. ಒಂದು ವೇಳೆ ಜನರ ಅಭಿಪ್ರಾಯ ಪಡೆಯದೆ ವರದಿಯನ್ನು ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸ್ಥಳೀಯ ರೈತರು, ನಾನಾ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Continue Reading

Kadaba

ಕಡಬ ತಾಲೂಕಿನ ನೆಲ್ಯಾಡಿ, ಶಿರಾಡಿ, ಸವಣೂರು, ಮರ್ದಾಳ ಗ್ರಾ.ಪಂ.ಗಳಿಗೆ ಲೋಕಾಯುಕ್ತ ದಿಢೀರ್ ದಾಳಿ: ಕಡತಗಳ ತೀವ್ರ ಪರಿಶೀಲನೆ

Published

on

ನೆಲ್ಯಾಡಿ / ಕಡಬ: ರಾಜ್ಯ ಲೋಕಾಯುಕ್ತರ ಆದೇಶದಂತೆ ಕಡಬ ತಾಲೂಕಿನ ನೆಲ್ಯಾಡಿ, ಶಿರಾಡಿ, ಸವಣೂರು ಹಾಗೂ ಬಂಟ್ರ ಮರ್ದಾಳ ಗ್ರಾಮ ಪಂಚಾಯತ್ ಕಚೇರಿಗಳಿಗೆ ನಿನ್ನೆ (ಸೆ. 1) ಲೋಕಾಯುಕ್ತ ಪೊಲೀಸರ ಪ್ರತ್ಯೇಕ ತಂಡಗಳು ದಿಢೀರ್ ಭೇಟಿ ನೀಡಿ ಕಡತ ಹಾಗೂ ದಾಖಲೆಗಳ ತೀವ್ರ ಪರಿಶೀಲನೆ ನಡೆಸಿವೆ.

ನೆಲ್ಯಾಡಿ ಹಾಗೂ ಶಿರಾಡಿ ಗ್ರಾ.ಪಂ.ನಲ್ಲಿ ಪರಿಶೀಲನೆ: ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಹಲಾಮೂರ್ತಿ ರಾವ್ ಅವರ ನೇತೃತ್ವದಲ್ಲಿ ಅಧಿಕಾರಿಗಳಾದ ನಾಗರಾಜ್, ಪ್ರಸನ್ನ, ಸುದೀಪ್ ಹಾಗೂ ಜಲಾಲ್ ಅವರನ್ನೊಳಗೊಂಡ ತಂಡವು ನಿನ್ನೆ ಬೆಳಿಗ್ಗೆ 10.30ಕ್ಕೆ ನೆಲ್ಯಾಡಿ ಗ್ರಾಮ ಪಂಚಾಯತ್ ಕಚೇರಿಗೆ ಆಗಮಿಸಿ ರಾತ್ರಿ 7.45ರ ವರೆಗೆ ಸುದೀರ್ಘ ಪರಿಶೀಲನೆ ನಡೆಸಿತು. ಹಾಗೆಯೇ ಮಂಗಳೂರಿನ ಲೋಕಾಯುಕ್ತ ಪೊಲೀಸರ ತಂಡವು ಶಿರಾಡಿ ಗ್ರಾಮ ಪಂಚಾಯತ್ ಕಚೇರಿಗೆ ಬೆಳಿಗ್ಗೆ 10.30ಕ್ಕೆ ಆಗಮಿಸಿ ರಾತ್ರಿ 7.30ರ ವರೆಗೆ ಕಡತಗಳನ್ನು ತಪಾಸಣೆಗೊಳಪಡಿಸಿತು.

ಸವಣೂರು ಮತ್ತು ಮರ್ದಾಳ ಗ್ರಾ.ಪಂ. ಮೇಲೆಯೂ ದಾಳಿ: ಇತ್ತ ಸವಣೂರು ಗ್ರಾಮ ಪಂಚಾಯತ್‌ನಲ್ಲೂ ಲೋಕಾಯುಕ್ತ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸಿತು. ಪಂಚಾಯತ್ ಆಡಳಿತದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ (Suo Moto) ದೂರು ದಾಖಲಿಸಿಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ. ಇನ್ನು ಬಂಟ್ರ ಮರ್ದಾಳ ಗ್ರಾಮ ಪಂಚಾಯತ್‌ಗೆ 10 ಜನರ ಲೋಕಾಯುಕ್ತ ಪೊಲೀಸರ ತಂಡ ಭೇಟಿ ನೀಡಿ ಬೆಳಿಗ್ಗೆ 10.30ರಿಂದ ರಾತ್ರಿ ಸುಮಾರು 8 ಗಂಟೆಯವರೆಗೆ ದಾಖಲೆಗಳನ್ನು ತಡಕಾಡಿದೆ.

ಪರಿಶೀಲಿಸಿದ ಪ್ರಮುಖ ದಾಖಲೆಗಳು: ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುದಾನ ಬಳಕೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಬಿಲ್ ಪಾವತಿ, ಸಾರ್ವಜನಿಕ ಅರ್ಜಿಗಳ ವಿಲೇವಾರಿ, ಕಟ್ಟಡ ನಿರ್ಮಾಣ ಪರವಾನಗಿ, 9/11 ಹಾಗೂ ಖಾತಾ ಬದಲಾವಣೆ, ನಗದು ವ್ಯವಹಾರ ಮತ್ತು ಕಚೇರಿ ಹಾಜರಾತಿ ಪುಸ್ತಕಗಳನ್ನು ಅಧಿಕಾರಿಗಳು ಸಂಪೂರ್ಣವಾಗಿ ತನಿಖೆಗೆ ಒಳಪಡಿಸಿದರು.

ಪರಿಶೀಲನೆ ವೇಳೆ ಆಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO), ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗಳು ಅಗತ್ಯ ಮಾಹಿತಿ ಹಾಗೂ ಪೂರಕ ದಾಖಲೆಗಳನ್ನು ಒದಗಿಸಿದರು. ಎಲ್ಲ ದಾಖಲೆಗಳನ್ನು ಕ್ಲಪ್ತ ಸಮಯದಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಲೋಕಾಯುಕ್ತ ಪೊಲೀಸರು ಸೂಚನೆ ನೀಡಿದ್ದಾರೆ. ಲೋಕಾಯುಕ್ತರ ಈ ದಿಢೀರ್ ಭೇಟಿಯಿಂದ ಪಂಚಾಯತ್‌ಗಳಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Continue Reading

crime

ಕಡಬ: ಅಂದರ್-ಬಾಹರ್ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ; ಓರ್ವನ ಬಂಧನ, ಕಾರು-ಬೈಕ್ ವಶ

Published

on

ಕಡಬ: ಕಾನೂನುಬಾಹಿರವಾಗಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್ ಇಸ್ಪೀಟ್ ಆಟವಾಡುತ್ತಿದ್ದ ಅಡ್ಡೆಯೊಂದರ ಮೇಲೆ ಕಡಬ ಪೊಲೀಸರು ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿ, ವಾಹನಗಳು ಹಾಗೂ ನಗದನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಘಟನೆಯ ವಿವರ: ದಿನಾಂಕ 28.08.2026 ರಂದು ಸಂಜೆ ಕಡಬ ಠಾಣಾ ವ್ಯಾಪ್ತಿಯ ಕಡಬ ಹಳೆನೆರೆಂಕಿ ಗ್ರಾಮದ ‘ಕುನ್ನಿಕು’ ಎಂಬಲ್ಲಿ ಮೋಹನದಾಸ್ ರೈ ಎಂಬವರ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಆಟವಾಡಲಾಗುತ್ತಿದೆ ಎಂಬ ಬಗ್ಗೆ ಕಡಬ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಜಂಬುರಾಜ್ ಮಹಾಜನ್ ಅವರಿಗೆ ಸಾರ್ವಜನಿಕರಿಂದ ಖಚಿತ ಮಾಹಿತಿ ಲಭಿಸಿತ್ತು.

ಮಾಹಿತಿಯನ್ನಾಧರಿಸಿ ಉಪನಿರೀಕ್ಷಕರು ತಮ್ಮ ಸಿಬ್ಬಂದಿಗಳೊಂದಿಗೆ ತಕ್ಷಣ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಈ ವೇಳೆ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಹುತೇಕರು ಪೊಲೀಸರನ್ನು ಕಂಡು ಸ್ಥಳದಿಂದ ಓಡಿ ಪರಾರಿಯಾಗಿದ್ದು, ಕಡಬ ಕುದ್ಮಾರು ನಿವಾಸಿ ಗುರುವ (44) ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳು: ಆಟವಾಡುತ್ತಿದ್ದ ಸ್ಥಳವನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ಇಸ್ಪೀಟ್ ಕಾರ್ಡ್‌ಗಳು, ಪಣಕ್ಕಿಟ್ಟಿದ್ದ ನಗದು ರೂ. 1,700/- ಹಾಗೂ ಪರಾರಿಯಾದ ಆರೋಪಿಗಳು ಬಿಟ್ಟು ಹೋಗಿದ್ದ 02 ದ್ವಿಚಕ್ರ ವಾಹನಗಳು ಮತ್ತು 01 ಕಾರನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 102/2026, ಕಲಂ 78, 80 KP Act ಮತ್ತು 112 BNS-2023 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

Trending

Copyright © 2025 Deevatige

error: Content is protected !!